ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೊಟ್ಟ ಮಾತು ಉಳಿಸಿಕೊಳ್ಳಲಿ!
ಬೆಂಗಳೂರು, ಜು. 30: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಕೊನೆ ಗಳಿಗೆಯಲ್ಲಿ ಮುಖ್ಯಮಂತ್ರಿ ಸ್ಥಾನ ತಪ್ಪಿರುವ ಬಗ್ಗೆ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಪಂಚಮಸಾಲಿ ಸಮುದಾಯಕ್ಕೆ ಸೇರಿದವರಿಗೆ ಸಿಗಬೇಕಾಗಿದ್ದ ಮುಖ್ಯಮಂತ್ರಿ ಹುದ್ದೆಯನ್ನು ತಪ್ಪಿಸಲಾಗಿದೆ ಎಂದಿದ್ದಾರೆ. ಜೊತೆಗೆ ಸಮುದಾಯಕ್ಕೆ ಕೊಟ್ಟ ಮಾತಿನಂತೆ ಮೀಸಲಾತಿ ಕೊಡದಿದ್ದಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದ ಎಚ್ಚರಿಕೆ ಕೊಟ್ಟಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಕೊನೆ ಗಳಿಗೆಯಲ್ಲಿ ಪಂಚಮಸಾಲಿ ಸಮುದಾಯಕ್ಕೆ ಅನ್ಯಾಯ ಆಗಿರುವ ಬಗ್ಗೆ ಸಮಾಜದಲ್ಲಿ ಆಕ್ರೋಶ ಇದೆ. ಕೇಂದ್ರದ ನಾಯಕರು ಈ ಸಮುದಾಯಕ್ಕೆ ಮಾಡಿರುವ ಅನ್ಯಾಯ ಸರಿಪಡಿಸಬೇಕು. ರಾಜಕೀಯ ಪ್ರಾತಿನಿಧ್ಯ ನೀಡಬೇಕು. ಇಲ್ಲದಿದ್ದರೆ ಸಮಾಜ ಇನ್ನಷ್ಟು ಆಕ್ರೋಶ ಗೊಳ್ಳುವ ಸಾಧ್ಯತೆ ಇದೆ. ಈಗಾಗಲೇ ಅದನ್ನು ಮಸ್ಕಿ ವಿಧಾನಸಭೆ ಹಾಗೂ ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ಸಮಾಜ ತೋರಿಸಿಕೊಟ್ಟಿದೆ" ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಸಿದ್ದಾರೆ.
ಜೊತೆಗೆ ಇದೇ ಸಂದರ್ಭದಲ್ಲಿ 'ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೊಟ್ಟಿದ್ದ ಮಾತು ಉಳಿಸಿಕೊಳ್ಳಬೇಕು' ಎಂದು ಆಗ್ರಹಿಸಿದ್ದಾರ. ಏನದು ಮಾಜಿ ಮುಖ್ಯಮಂತ್ರಿಗಳು ಕೊಟ್ಟಿದ್ದ ಭರವಸೆ?
ಮಾಜಿ ಸಿಎಂ ಯಡಿಯೂರಪ್ಪ ಕೊಟ್ಟಿದ್ದ ಭರವಸೆ
"ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವುದಾಗಿ ಹಿಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಾತು ಕೊಟ್ಟಿದ್ದರು. ಈಗ ಅವರ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ಅವರು ಬಂದಿರುವುದು ಸಂತಸದ ಸಂಗತಿ. ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆಗಳು. ನೂತನ ಸಿಎಂ ಬೊಮ್ಮಾಯಿ ಅವರು ಇದೇ ಸೆಪ್ಟಂಬರ್ ಒಳಗೆ ಮೀಸಲಾತಿ ಕೊಡಬೇಕು. ಪಂಚಮಸಾಲಿ ಮೀಸಲಾತಿಗಾಗಿ ಮಲೈ ಮಹಾದೇಶ್ವರ ಬೆಟ್ಟದಿಂದ 'ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್ ಯಾತ್ರೆ' ಆರಂಭ ಮಾಡಲಾಗುವುದು. ಅಂತಿಮ ಸಮಾವೇಶ ಮಾಡುವ ಸ್ಥಳ ನಂತರ ತಿಳಿಸುತ್ತೇವೆ" ಬಸವ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.
ಬಿಜೆಪಿ ಹೈಕಮಾಂಡ್ ಸ್ಪಷ್ಟಪಡಿಸಲಿ!
"ಮೊನ್ನೆ ರಾಜಕೀಯ ಬೆಳವಣಿಗೆ ನಡೆದಾಗ ಮಠಾಧೀಶರು ಮಾಜಿ ಸಿಎಂ ಯಡಿಯೂರಪ್ಪ ಅವರ ಪರ ನಿಂತಿದ್ದರು. ಆದರೆ ನಾವು ಉತ್ತರ ಕರ್ನಾಟಕಕ್ಕೆ ಮುಖ್ಯಮಂತ್ರಿ ಸ್ಥಾನ ಕೊಡಿ ಎಂದು ಆಗ್ರಹಿಸಿದ್ದೇವು. ಪಂಚಮಸಾಲಿ ಸಮುದಾಯಕ್ಕೆ ಸೇರಿದ ಮೂವರು ನಾಯಕರ ಹೆಸರು ಕೊನೆ ಕ್ಷಣದವರೆಗೂ ಮುಖ್ಯಮಂತ್ರಿ ಹುದ್ದೆಗೆ ಇತ್ತು. ಆದರೆ ಅದನ್ನು ಕೊನೆ ಗಳಿಗೆಯಲ್ಲಿ ತಪ್ಪಿಸಲಾಗಿದೆ. ನಾಯಕತ್ವ ಪಂಚಮಸಾಲಿ ಸಮುದಾಯಕ್ಕೆ ಹೋಗುತ್ತದೆ ಎಂದು ಹಾಗೆ ಮಾಡಿದ್ದಾರೆ. ಮುಖ್ಯಮಂತ್ರಿ ಸ್ಥಾನ ತಪ್ಪಿಸುವ ಕೆಲಸ ಯಾರು ಮಾಡಿದ್ದಾರೆ? ಎಂಬುದನ್ನು ಬಿಜೆಪಿ ಹೈಕಮಾಂಡ್ ಸ್ಪಷ್ಟಪಡಿಸಬೇಕು. ಅದರೊಂದಿಗೆ ಈಗ ಆಗಿರುವ ಅನ್ಯಾಯ ಸರಿಪಡಿಸಬೇಕು" ಎಂದು ಸುದ್ದಿಗೋಷ್ಠಿಯಲ್ಲಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದ್ದಾರೆ.
ಬೊಮ್ಮಾಯಿ ಮೇಲೆ ಸಮುದಾಯದ ಋಣವಿದೆ
"ಮೀಸಲಾತಿ ವಿಚಾರವಾಗಿ ಈಗಾಗಲೇ ಗೌಡ ಲಿಂಗಾಯತ, ದೀಕ್ಷಾ ಹಾಗೂ ಪಂಚಮಸಾಲಿ ಸಮುದಾಯಕ್ಕೆ ಬೇಸರವಾಗಿದೆ. ಇನ್ನಾದರೂ ಸಮಾಜಕ್ಕೆ ಆಗಿರುವ ಅನ್ಯಾಯ ಪಡಿಸುವ ಕೆಲಸ ಮಾಡದಿದ್ದರೆ ಮುಂದೆ ಅನುಭವಿಸಬೇಕಾಗುತ್ತದೆ" ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ರಾಜ್ಯ ಬಿಜೆಪಿ ಸರ್ಕಾರವನ್ನು ಎಚ್ಚರಿಸಿದ್ದಾರೆ.
"ನಾವು ಉಪ ಮುಖ್ಯಮಂತ್ರಿ ಸ್ಥಾನಕ್ಕಾಗಿ ಒತ್ತಡ ಹಕುವುದಿಲ್ಲ. ಆ ಪಕ್ಷದ ನಾಯಕರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಮಂತ್ರಿ ಸ್ಥಾನ ಕೊಡಿ ಎಂದೂ ನಾವು ಕೇಳುವುದಿಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಅವರ ಮೇಲೆ ಪಂಚಮಸಾಲಿ ಸಮುದಾಯದ ಋಣ ಇದೆ. ಜೊತೆಗೆ ನಮ್ಮ ರಾಜಕೀಯ ಶಕ್ತಿ ಎಲ್ಲ ರಾಷ್ಟ್ರೀಯ ಪಕ್ಷಗಳಿಗೆ ಅರಿವಾಗಿದೆ. ಅದನ್ನು ಸರಿಪಡಿಸದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿ ಪರಿಣಾಮ ಎದುರಿಸ ಬೇಕಾಗುತ್ತದೆ." ಎಂದು ಸ್ವಾಮೀಜಿ ಹೇಳಿದರು.
ಇನ್ನು ಮಾಜಿ ಸಚಿವ ಮುರುಗೇಶ್ ನಿರಾಣಿ ಅವರು ಪಂಚಮಸಾಲಿ ಸಮುದಾಯ ಒಡೆಯುವ ಕೆಲಸ ಮಾಡಿದ್ದಾರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಬಸವ ಜಯಮೃತ್ಯುಂಜಯ ಸ್ವಾಮೀಜಿ, "ಮುರುಗೇಶ್ ನಿರಾಣಿ ಅವರ ಮೂಲಕ ನಮ್ಮ ಸಮಾಜ ಒಡೆಸುವ ಪ್ರಯತ್ನ ಮಾಡಿದ್ದಾರೆ. ಪುಣ್ಯ, ಪಾಪ ಎಲ್ಲವೂ ಆ ಪ್ರಯತ್ನ ಮಾಡಿದವರಿಗೆ ಸೇರಲಿ. ಮನುಷ್ಯ ತಪ್ಪು ಮಾಡುವುದು ಸಹಜ. ನಾವು ಸಮುದಾಯಕ್ಕಾಗಿ ಆಗ್ರಹ ಮಾಡುತ್ತಿದ್ದೇವೆ. ಮುರುಗೇಶ್ ನಿರಾಣಿ ನಮ್ಮ ಸಮುದಾಯದವರೇ. ಹೀಗಾಗಿ ನಾವು ಅವರ ಪರವಾಗಿದ್ದೇವೆ" ಎಂದು ಬಸವ ಜಯಮೃತ್ಯುಂಜಯ ಶ್ರೀಗಳು ಹೇಳಿದರು.
ಯಡಿಯೂರಪ್ಪ ಕೊಟ್ಟ ಮಾತು ಉಳಿಸಿಕೊಳ್ಳಲಿ
ಇದೇ ಸಂದರ್ಭದಲ್ಲಿ ಮಾತನಾಡಿರುವ ಮಾಜಿ ಶಾಸಕ ವಿಜಯಾನಂದ್ ಕಾಶಪ್ಪನವರ್ ಅವರು, "ಸದನದಲ್ಲಿ ನಮಗೆ ಆಗಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೀಸಲಾತಿ ಕೊಡುತ್ತೇನೆ ಎಂದು ಮಾತು ಕೊಟ್ಟಿದ್ದರು. ಪಂಚಮಸಾಲಿ ಸಮುದಾಯಕ್ಕೆ ರಾಜ್ಯದಲ್ಲಿ 2A, ಕೇಂದ್ರದಲ್ಲಿ ಒಬಿಸಿ ಮೀಸಲಾತಿ ಕೊಡಬೇಕು. ಆದರೆ ಈಗ ಮುಖ್ಯಮಂತ್ರಿ ಬದಲಾಗಿದ್ದಾರೆ. ನೂತನ ಸಿಎಂ ಬಸವರಾಜ ಬೊಮ್ಮಾಯಿ ಮೀಸಲಾತಿ ಬಗ್ಗೆ ಗಮನಹರಿಸಬೇಕು. ಮಾಜಿ ಸಿಎಂ ಯಡಿಯೂರಪ್ಪ ಅವರು ಕೊಟ್ಟಿದ್ದ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ನಿರೀಕ್ಷೆ ಸಮುದಾಯಕ್ಕಿದೆ" ಎಂದಿದ್ದಾರೆ.
"ಸೆಪ್ಟಂಬರ್ 15ರೊಳಗೆ ಮೀಸಲಾತಿ ಘೋಷಣೆ ಮಾಡಬೇಕು. ಇಲ್ಲದಿದ್ದರೆ ಅಕ್ಟೋಬರ್ 30 ರಂದು ಪ್ರತಿಭಟನೆ ಮಾಡಿ, ಅಂದಿನಿಂದ ಹೋರಾಟವನ್ನು ಮುಂದುವರಿಸುತ್ತೇವೆ" ಎಂದು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ.
Recommended Video
ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಕಾಶಪ್ಪನವರ್!
"ಉತ್ತರ ಕರ್ನಾಟಕ ಭಾಗದಲ್ಲಿ ನೆರೆ ಹಾವಳಿ ಪರಿಹಾರ ಒದಗಿಸಲು ಸರ್ಕಾರ ತಕ್ಷಣ ಕಾರ್ಯ ಪ್ರವೃತ್ತವಾಗಬೇಕು. ಸುಮಾರು 712 ಕಿ. ಮೀಟರ್ ಪಾದಯಾತ್ರೆ ಮಾಡಿದ ಬಳಿಕ 23 ದಿನಗಳ ಕಾಲ ಬೆಂಗಳೂರಿನಲ್ಲಿ ಧರಣಿ ನಡೆಸಿದ್ದೇವು. ಈಗ ಬಸವರಾಜ ಬೊಮ್ಮಾಯಿ ಮುಖ್ಯ ಮಂತ್ರಿಯಾಗಿದ್ದಾರೆ. ಅವರಿಗೆ ನಮ್ಮ ಹೋರಾಟದ ಸಂಪೂರ್ಣ ಮಾಹಿತಿ ಇದೆ. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿರುವುದು ಲಿಂಗಾಯತ ಸಮುದಾಯಕ್ಕೆ ಸಂತಸವಾಗಿದೆ. ಅವರು ಸೆಪ್ಟೆಂಬರ್ 15 ರೊಳಗೆ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಪ್ರಕಟ ಮಾಡಬೇಕು. ಇಲ್ಲದಿದ್ದರೆ ದಿ. ಮಾಜಿ ಸಿಎಂ ಜೆ.ಎಚ್. ಪಟೇಲ್ ಅವರ ಜನ್ಮ ದಿನದಿಂದ ಮತ್ತೆ ಧರಣಿ ಸತ್ಯಾಗ್ರಹ ಆರಂಭಿಸುತ್ತೇವೆ" ಎಂದು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಹೇಳಿದ್ದಾರೆ.