ಪಂಚಾಯತಿ ಅಧ್ಯಕ್ಷರ ಅಧಿಕಾರ ಕಡಿತ ಪ್ರಸ್ತಾಪ ಸರ್ಕಾರದ ಮುಂದಿಲ್ಲ: ಸಿಎಂ ಬೊಮ್ಮಾಯಿ
ಬೆಂಗಳೂರು, ಅಕ್ಟೋಬರ್ 11: ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಪ್ರಸ್ತುತ ಇರುವ ಯಾವುದೇ ಅಧಿಕಾರವನ್ನು ಕಡಿತಗೊಳಿಸುವ ಪ್ರಸ್ತಾಪವು ರಾಜ್ಯ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ವಿಚಾರ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಅಂತಹ ಪ್ರಸ್ತಾವನೆ ಇದೆ ಎಂಬ ಆತಂಕ ಹೊಂದಿದ್ದ ಪಂಚಾಯತ್ ಜನಪ್ರತಿನಿಧಿಗಳ ಕುರಿತು ಸರ್ಕಾರದ ಗಮನಕ್ಕೆ ಸಚಿವರು ತಂದರು.
ಇದಕ್ಕೆ ಕೂಡಲೇ ಸ್ಪಂದಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್ ಅಧಿನಿಯಮಗಳಿಗೆ ತಿದ್ದುಪಡಿಗೆ ತರುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಗ್ರಾಮ ಪಂಚಾಯತಿ ಸಂಸ್ಥೆಗಳು, ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿಯಾಗಿವೆ. ಗ್ರಾಮೀಣ ಭಾಗದಲ್ಲಿ ಅತ್ಯಗತ್ಯ ಸೌಲಭ್ಯಗಳನ್ನು ಒದಗಿಸುವ ಹಾಗೂ ಭವಿಷ್ಯದ ರಾಜಕೀಯ ನಾಯಕತ್ವ ರೂಪಿಸುವಲ್ಲಿ ಗ್ರಾಮಪಂಚಾಯತಿಗಳು ಗಣನೀಯವಾದ ಕೊಡುಗೆಯನ್ನು ಸಲ್ಲಿಸುತ್ತಿವೆ ಎಂದು ಬೊಮ್ಮಾಯಿ ತಿಳಿಸಿದರು.
ಮುಖ್ಯಮಂತ್ರಿ ಭೇಟಿ ನಂತರ ಸುದ್ದಿಗಾರರ ಜತೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಗ್ರಾಮ ಪಂಚಾಯತಿ ವ್ಯವಸ್ಥೆಯನ್ನು ಬಲಪಡಿಸುವ ಹಾಗೂ ಅಧಿಕಾರ ವಿಕೇಂದ್ರಿಕರಣ ಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಬದ್ಧತೆಯಿಂದ ಕಾರ್ಯ ನಿರ್ವಹಿಸುತ್ತಿದೆ.

ಗ್ರಾಮ ಪಂಚಾಯಿತಿ ನೌಕರರ ಸೇವಾ ನಿಯಮಾವಳಿಗಳಿಗೆ ತಿದ್ದುಪಡಿ ತಂದು, ಪಂಚಾಯತ್ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರು ಮತ್ತು ಸದಸ್ಯರ ಅಧಿಕಾರವನ್ನು ಮೊಟಕುಗೊಳಿಸುವ ಮಾತುಗಳು ಕೇಳಿ ಬಂದಿದ್ದವು. ಆದರೆ ಅಂತಹ ಪ್ರಸ್ತಾವವಾಗಲಿ, ವಿಚಾರವಾಗಲಿ ಸರ್ಕಾರದ ಮುಂದೆ ಇಲ್ಲ ಎನ್ನುವ ಮೂಲಕ ಮುಖ್ಯಮಂತ್ರಿಗಳು ಗ್ರಾಮ ಪಂಚಾಯತಿಗಳ ಆತಂಕಕ್ಕೆ ತೆರೆ ಎಳೆದಿದ್ದಾರೆ ಎಂದು ಸಚಿವರು ವಿವರಿಸಿದರು.












Click it and Unblock the Notifications