ಐಪಿಎಸ್ ಅಧಿಕಾರಿ ಮಧುಕರ ಶೆಟ್ಟಿ ಸಾವು : ತಜ್ಞರ ಸಮಿತಿ ರಚನೆ
ಬೆಂಗಳೂರು, ಏಪ್ರಿಲ್ 21 : ಐಪಿಎಸ್ ಅಧಿಕಾರಿ ಮಧುಕರ ಶೆಟ್ಟಿ ಸಾವಿಗೆ ಕಾರಣವೇನು? ಎಂಬುದನ್ನು ತಿಳಿಯಲು ಸರ್ಕಾರ ಸಮಿತಿಯನ್ನು ರಚನೆ ಮಾಡಿದೆ. ನಾರಾಯಣ ಹೃದಯಾಲಯದ ಡಾ.ದೇವಿಪ್ರಸಾದ್ ಶೆಟ್ಟಿ ಸಮಿತಿಯ ಅಧ್ಯಕ್ಷರು.
ತೀವ್ರ ಜ್ವರ, ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಕರ್ನಾಟಕ ಮೂಲದ ಐಪಿಎಸ್ ಅಧಿಕಾರಿ ಮಧುಕರ ಶೆಟ್ಟಿ (47) ಹೈದರಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ 2018ರ ಡಿಸೆಂಬರ್ 28ರಂದು ಮೃತಪಟ್ಟಿದ್ದರು. ಸಾವಿಗೆ ನಿಖರವಾದ ಕಾರಣ ತಿಳಿಯಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಒತ್ತಾಯಿಸಲಾಗಿತ್ತು.
ಪಂಚಭೂತಗಳಲ್ಲಿ ಲೀನವಾದ ಖಡಕ್ ಅಧಿಕಾರಿ ಮಧುಕರ್ ಶೆಟ್ಟಿ
ಬೆಂಗಳೂರಿನ ನಾರಾಯಣ ಹೃದಯಾಲಯದ ಡಾ.ದೇವಿಪ್ರಸಾದ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚನೆ ಮಾಡಲಾಗಿದೆ. ಈಗಾಗಲೇ ವಿಚಾರಣೆ ಆರಂಭಿಸಿರುವ ಸಮಿತಿ ಹೈದರಾಬಾದ್ನ ಕಾಂಟಿನೆಂಟಲ್ ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯಕೀಯ ದಾಖಲೆಗಳನ್ನು ಪಡೆದು ಪರಿಶೀಲನೆ ನಡೆಸುತ್ತಿದೆ.
ಸರ್ಕಾರದ ಉಡುಗೊರೆಯನ್ನೇ ನಿರಾಕರಿಸಿದ್ದ ಪ್ರಾಮಾಣಿಕ ಮಧುಕರ್ ಶೆಟ್ಟಿ
1999ನೇ ಬ್ಯಾಚ್ ಐಪಿಎಸ್ ಅಧಿಕಾರಿ ಮಧುಕರ ಶೆಟ್ಟಿ ಅವರು ಹಿರಿಯ ಪತ್ರಕರ್ತರಾಗಿದ್ದ ದಿ.ವಡ್ಡರ್ಸೆ ರಘುರಾಮ ಶೆಟ್ಟಿ ಅವರ ಪುತ್ರರು. ಕರ್ನಾಟಕದ ಲೋಕಾಯುಕ್ತ ಸಂಸ್ಥೆಯಲ್ಲಿಯೂ ಅವರು ಕೆಲಸ ಮಾಡಿದ್ದರು.
ಐಪಿಎಸ್ ಅಧಿಕಾರಿ ಮಧುಕರ ಶೆಟ್ಟಿ ವಿಧಿವಶ
ತಜ್ಞರ ಸಮಿತಿಯಲ್ಲಿರುವವರು
ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ಸಮಿತಿಯಲ್ಲಿ ಡಾ.ಸೀತಾರಾಮ್ ಭಟ್, ನಿಮ್ಹಾನ್ಸ್ ಡಾ.ವಿ.ರವಿ, ರಾಜೀವ್ ಗಾಂಧಿ ಎದೆರೋಗಗಳ ಸಂಸ್ಥಯ ಡಾ.ನಾಗರಾಜ ಇದ್ದಾರೆ. ಎರಡು ವಾರದಲ್ಲಿ ವರದಿ ನೀಡಬೇಕು ಎಂದು ಸಮಿತಿಗೆ ಸೂಚನೆ ನೀಡಲಾಗಿದೆ.
ಡಿಸೆಂಬರ್ 28ರಂದು ಮೃತಪಟ್ಟಿದ್ದರು
ಹೈದರಾಬಾದ್ನ ಸರ್ದಾರ್ ವಲ್ಲಭಭಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಉಪ ನಿರ್ದೇಶಕರಾಗಿದ್ದ ಮಧುಕರ ಶೆಟ್ಟಿ ಅವರು ಹೈದಬಾರಾಬಾದ್ನ ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ಡಿ.28ರಂದು ನಿಧನರಾಗಿದ್ದರು. ಮಧುಕರ ಶೆಟ್ಟಿ ಅವರ ಸಾವಿನ ಬಗ್ಗೆ ಹಲವು ಅನುಮಾನಗಳು ಹುಟ್ಟಿಕೊಂಡಿದ್ದವು.
ಉಡುಪಿ ಜಿಲ್ಲೆಯವರು
1999ನೇ ಬ್ಯಾಚ್ ಐಪಿಎಸ್ ಅಧಿಕಾರಿ ಮಧುಕರ ಶೆಟ್ಟಿ ಅವರು ಉಡುಪಿ ಜಿಲ್ಲೆಯವರು. ಯುಪಿಎಸ್ಸಿ ಪರೀಕ್ಷೆ ಬರೆದು ಐಪಿಎಸ್ ಅಧಿಕಾರಿ ಆಗುವ ಮುನ್ನ ಅವರು ಜವಹರಲಾಲ್ ವಿಶ್ವವಿದ್ಯಾಲಯದಲ್ಲಿ ಸಮಾಜ ಶಾಸ್ತ್ರದಲ್ಲಿ ಎಂ.ಎ ವ್ಯಾಸಂಗ ಮಾಡಿದ್ದರು. ಚಿಕ್ಕಮಗಳೂರು ಎಸ್ಪಿಯಾಗಿ ಕೆಲಸ ಮಾಡಿದ್ದ ಅವರು ಬೆಂಗಳೂರು ಲೋಕಾಯುಕ್ತ ಎಸ್ಪಿಯಾಗಿ ಕಾರ್ಯ ನಿರ್ವಹಣೆ ಮಾಡಿದ್ದರು. 2011ರಲ್ಲಿ ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳಿದ್ದರು.
ಎಚ್1 ಎನ್1ನಿಂದ ಬಳಲುತ್ತಿದ್ದರು
ಡಿಸೆಂಬರ್ 25ರಂದು ತೀವ್ರ ಜ್ವರದ ಹಿನ್ನಲೆಯಲ್ಲಿ ಮಧುಕರ ಶೆಟ್ಟಿ ಅವರನ್ನು ಹೈದಬಾರಾಬಾದ್ನ ಕಾಂಟಿನೆಂಟಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಡಿ.28ರಂದು ಮೃತಪಟ್ಟಿದ್ದರು.