ಲಿಂಗಾಯತಕ್ಕೆ ಪ್ರತ್ಯೇಕ ಧರ್ಮ ಸ್ಥಾನಮಾನ
ಬೆಂಗಳೂರು, ಮಾರ್ಚ್ 03: ಲಿಂಗಾಯತಕ್ಕೆ ಪ್ರತ್ಯೇಕ ಧರ್ಮ ಸ್ಥಾನಮಾನ ನೀಡುವಂತೆ ನಿವೃತ್ತ ನ್ಯಾ. ನಾಗಮೋಹನದಾಸ್ ನೇತೃತ್ವದ ತಜ್ಞರ ಸಮಿತಿಯು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.
ಈ ಶಿಫಾರಸುಗಳನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿ ಒಪ್ಪಿಗೆ ಪಡೆದರೆ ಲಿಂಗಾಯತ ಎಂಬುದು ಸ್ವತಂತ್ರ ಧರ್ಮವಾಗಲಿದೆ. ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ರಾಜ್ಯದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿರುವ ಲಿಂಗಾಯತ/ವೀರಶೈವ ಮತದಾರರು ಈಗ ಯಾವ ರೀತಿ ನಿಲುವು ಹೊಂದುತ್ತಾರೆ ಎಂಬುದು ಗಮನಾರ್ಹವಾಗಲಿದೆ.
ನಿವೃತ್ತ ನ್ಯಾ. ನಾಗಮೋಹನದಾಸ್ ನೇತೃತ್ವದ ತಜ್ಞರ ಸಮಿತಿ 150 ಪುಟಗಳ ವರದಿಯಲ್ಲಿ ಕ್ರಾಂತಿಕಾರಿ ಅಣ್ಣ ಬಸವಣ್ಣನವರು ಸ್ಥಾಪಿಸಿದ ಲಿಂಗಾಯತ ಧರ್ಮ ಹಿಂದೂ ಧರ್ಮಕ್ಕಿಂತ ವಿಭಿನ್ನ ಸಂಸ್ಕೃತಿ, ಪರಂಪರೆ ಹಾಗೂ ಆಚರಣೆಗಳನ್ನು ಹೊಂದಿದೆ ಎಂದು ಉಲ್ಲೇಖಿಸಲಾಗಿದೆ. 2011ರ ಜಾತಿ ಗಣತಿ ಪ್ರಕಾರ ಕರ್ನಾಟಕದಲ್ಲಿ ಲಿಂಗಾಯತರ ಸಂಖ್ಯೆ ಶೇ 9ರಷ್ಟಿದೆ.

ಜೈನ, ಬೌದ್ಧ, ಮುಸ್ಲಿಂ, ಸಿಖ್ ಧರ್ಮಗಳಂತೆ ಪ್ರತ್ಯೇಕ ಧರ್ಮವಾಗುವ ಎಲ್ಲ ಅರ್ಹತೆಗಳೂ ಲಿಂಗಾಯತಕ್ಕಿದೆ ಎಂದು ಹೇಳಲಾಗಿದೆ. ವೀರಶೈವ ಪರಂಪರೆಯಡಿ ಗುರುತಿಸಿಕೊಂಡಿರುವ ಸಮುದಾಯದವರು ಈ ಧರ್ಮದ ಪರಿಧಿಯೊಳಗೆ ಸೇರಿಕೊಳ್ಳಬಹುದು ಎಂದು ವರದಿಯಲ್ಲಿ ಹೇಳಲಾಗಿದೆ.
ಆದರೆ, ಎಸ್.ಎಂ. ಜಾಮದಾರ ನೇತೃತ್ವದ ಜಾಗತಿಕ ಲಿಂಗಾಯತ ಮಹಾಸಭಾ, ಮಾತೆ ಮಹಾದೇವಿ ನೇತೃತ್ವದ ರಾಷ್ಟ್ರೀಯ ಬಸವದಳ, ಸಚಿವ ವಿನಯ ಕುಲಕರ್ಣಿ ನೇತೃತ್ವದ ರಾಷ್ಟ್ರೀಯ ಬಸವ ಸೇನೆ ಮತ್ತಿತರ ಸಂಘಟನೆಗಳು ವೀರಶೈವರನ್ನು ಹೊರಗಿಟ್ಟು ಲಿಂಗಾಯತಕ್ಕೆ ಸೀಮಿತಗೊಳಿಸಿ ಸ್ವತಂತ್ರ ಧರ್ಮಕ್ಕೆ ಮಾನ್ಯತೆ ನೀಡಲು ಶಿಫಾರಸು ಮಾಡಬೇಕು ಎಂದು ಮನವಿ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.












Click it and Unblock the Notifications