Pawan Kalyan: ರಾಜ್ಯ ಚುನಾವಣಾ ಅಖಾಡಕ್ಕೆ ಪವನ್ ಕಲ್ಯಾಣ್ ಎಂಟ್ರಿ: ಯಾವಾಗ, ಎಲ್ಲೆಲ್ಲಿ ಪ್ರಚಾರ?
ಬೆಂಗಳೂರು, ಏಪ್ರಿಲ್ 11: ಲೋಕಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ಹೆಚ್ಚಾಗಿದ್ದು, ಕರ್ನಾಟಕದಲ್ಲಿ ಚುನಾವಣಾ ಅಬ್ಬರ ಜೋರಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ಬಿಜೆಪಿ ಹಾಗೂ ಜೆಡಿಎಸ್, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್ ಗೆ ಠಕ್ಕರ್ ಕೊಡುವ ನಿಟ್ಟಿನಲ್ಲಿ ಹಲವು ತಂತ್ರಗಾರಿಕೆಯನ್ನ ನಡೆಸುತ್ತಿದ್ದು, ರಾಜ್ಯ ಚುನಾವಣಾ ಅಖಾಡಕ್ಕೆ ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ಎಂಟ್ರಿಯಾಗುತ್ತಿದ್ದಾರೆ.
ಹೌದು, ಕರ್ನಾಟಕದಲ್ಲಿರುವ ತೆಲುಗು ಮತದಾರರನ್ನು ಸೆಳೆಯಲು ರಾಜ್ಯ ಬಿಜೆಪಿ ಘಟಕ ಮಾಸ್ಟರ್ ಪ್ಲಾನ್ ನಡೆಸಿದ್ದು, ಟಾಲಿವುಡ್ ಪವರ್ ಸ್ಟಾರ್ ಹಾಗೂ ಜನಸೇನಾ ಪಕ್ಷದ ಸಂಸ್ಥಾಪಕ ಪವನ್ ಕಲ್ಯಾಣ್ ಅವರನ್ನು ರಾಜ್ಯಕ್ಕೆ ಬಿಜೆಪಿ ಕರೆ ತರುತ್ತಿದೆ. ರಾಜ್ಯದಲ್ಲಿ ತೆಲುಗು ಭಾಷಿಗರು ಹೆಚ್ಚಿರುವ ನಾಲ್ಕು ಕ್ಷೇತ್ರಗಳಲ್ಲಿ ಏಪ್ರಿಲ್ 17 ರಂದು ಪವನ್ ಕಲ್ಯಾಣ್ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಲಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆ 28 ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಹಲವು ಸಮುದಾಯದ ಮತಗಳನ್ನ ಸೆಳೆಯುವ ನಿಟ್ಟಿನಲ್ಲಿ ರಾಜ್ಯಕ್ಕೆ ಪವನ್ ಕಲ್ಯಾಣ್ ಏಪ್ರಿಟ್ 17 ಕ್ಕೆ ಆಗಮಿಸುತ್ತಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಲಿದ್ದಾರೆ.
ತೆಲುಗು ಮತದಾರರು ಹೆಚ್ಚಾಗಿರುವ ಲೋಕಸಭಾ ಕ್ಷೇತ್ರಗಳಾದ ರಾಯಚೂರು, ಬಳ್ಳಾರಿ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ರೋಡ್ ಶೋ ನಡೆಸುವ ಮೂಲಕ ಅಭ್ಯರ್ಥಿಗಳಾದ ರಾಜಾ ಅಮರೇಶ್ವರ ನಾಯಕ, ಬಿ. ಶ್ರೀರಾಮುಲು, ಡಾ. ಸುಧಾಕರ್, ತೇಜಸ್ವಿ ಸೂರ್ಯ ಪರವಾಗಿ ಮತಯಾಚಿಸಲಿದ್ದಾರೆ.
ರಾಯಚೂರು ಆಂಧ್ರಪ್ರದೇಶದ ಜೊತೆ ನಂಟು ಹೊಂದಿದ್ದು, ತೆಲುವು ಭಾಷಿಕರು ಹೆಚ್ಚಿದ್ದಾರೆ. ಜೊತೆಗೆ ಆಂಧ್ರದ ಸಿನಿ ತಾರೆಯರ ಪ್ರಭಾವವೂ ಅವರ ಮೇಲೆ ಹೆಚ್ಚಿದೆ. ಹೀಗಾಗಿ ಅಲ್ಲಿನ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ್ ಪರ ಪ್ರಚಾರ ನಡೆಸಿ ತೆಲುಗು ಭಾಷಿಗರನ್ನು ಸೆಳೆಯುವ ನಿಟ್ಟಿನಲ್ಲಿ ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ಪ್ರಯತ್ನ ನಡೆಸಲಿದ್ದಾರೆ.
ರಾಜ್ಯ ರಾಜಕಾರಣದಲ್ಲೂ ತೆಲುಗು ಪ್ರಭಾವ ಹೆಚ್ಚಾಗಿದ್ದು, ಬಳ್ಳಾರಿಯಂತೂ ತೆಲುಗು ಸೀಮೆಯ ಒಡನಾಟ ಇರಿಸಿಕೊಂಡ ಕ್ಷೇತ್ರವಾಗಿದೆ. ಹೀಗಾಗಿ ಬಿಜೆಪಿ ಅಭ್ಯರ್ಥಿ ಬಿ. ಶ್ರೀರಾಮುಲು ಪರ ಪವನ್ ಕಲ್ಯಾಣ್ ರೋಡ್ ಶೋ ನಡೆಸುವ ಮೂಲಕ ಮತಯಾಚಿಸಿ ಮತದಾರರನ್ನು ಸೆಳೆಯಲಿದ್ದಾರೆ. ಇತ್ತ ಶ್ರೀರಾಮುಲು ಸ್ನೇಹಿತ ಪ್ರಭಾವಿ ರಾಜಕಾರಣಿ ಜನಾರ್ದನ ರೆಡ್ಡಿ ಕೆಲ ದಿನಗಳ ಹಿಂದೆಯಷ್ಟೇ ಬಿಜೆಪಿ ಸೇರ್ಪಡೆಯಾಗಿದ್ದು, ಜನಾರ್ದನ ರೆಡ್ಡಿ ಅವರಿಗೆ ಬಳ್ಳಾರಿ ಪ್ರವೇಶ ಮಾಡದಂತೆ ನಿರ್ಬಂಧ ಇರುವ ಹಿನ್ನೆಲೆ, ರಾಜ್ಯಕ್ಕೆ ಪವನ್ ಕಲ್ಯಾಣ್ ಪ್ರಚಾರ ಪಕ್ಷಕ್ಕೆ ಹೆಚ್ಚಿನ ಲಾಭ ತಂದುಕೊಡಲಿದೆ ಎಂಬುದು ಬಿಜೆಪಿ ನಾಯಕರ ಲೆಕ್ಕಾಚಾರವಾಗಿದೆ.
ಇನ್ನೂ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡ ಡಾ. ಕೆ ಸುಧಾಕರ್ ಅವರು, ಈ ಬಾರಿಯ ಲೋಕಸಭಾ ಚುನಾವಣೆಗೆ ಚಿಕ್ಕಬಳ್ಳಾಪುರದಿಂದ ಕಣಕ್ಕಿಳಿದಿದ್ದು, ಚಿಕ್ಕಬಳ್ಳಾಪುರ ಕೂಡ ತೆಲುಗು ಭಾಷಿಗರು ಹೆಚ್ಚಿರುವ ಕ್ಷೇತ್ರದ್ದು, ಬಿಜೆಪಿ ಅಭ್ಯರ್ಥಿ ಡಾ. ಸುಧಾಕರ್ ಪರ ಪವನ್ ಕಲ್ಯಾಣ್ ಪ್ರಚಾರ ನಡೆಸಲಿದ್ದಾರೆ. ಈ ಕ್ಷೇತ್ರದಲ್ಲಿ ತೆಲುಗು ಮತದಾರರು ಹೆಚ್ಚಾಗಿದ್ದು, ತೆಲುಗು ಮತದಾರರ ಮತಗಳು ಬಿಜೆಪಿ ಕಡೆ ವಾಲಿದರೆ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಸಹಕಾರಿಯಾಗಲಿದೆ ಎನ್ನುವುದು ಬಿಜೆಪಿ ಲೆಕ್ಕಾಚಾರವಾಗಿದೆ.












Click it and Unblock the Notifications