Pay ಚೆಲುವರಾಯಸ್ವಾಮಿ ಅಭಿಯಾನ: ಬಿಜೆಪಿ ಕಾರ್ಯಕರ್ತರ ಕೇಸಿಗೆ ತಡೆ
ಬೆಂಗಳೂರು, ಡಿಸೆಂಬರ್ 20: ಕರ್ನಾಟಕದ ಕೃಷಿ ಸಚಿವ ಎನ್. ಚೆಲುವರಾಯ ಸ್ವಾಮಿ ವಿರುದ್ಧ 'ಪೇ ಚೆವರಾಯಸ್ವಾಮಿ' ಅಭಿಯಾನ ನಡೆಸಿ ಸಾರ್ವಜನಿಕ ಪ್ರದೇಶದಲ್ಲಿ ಭಿತ್ತಿಪತ್ರ ಅಂಟಿಸಿದ ಆರೋಪದಡಿ ಮಂಡ್ಯದ ಐವರು ಬಿಜೆಪಿ ಕಾರ್ಯಕರ್ತರ ವಿರುದ್ಧದ ಕೇಸಿಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.
ಬಿಜೆಪಿ ಕಾರ್ಯಕರ್ತರಾದ ಸಿ. ಟಿ. ಮಂಜುನಾಥ್, ಎಸ್. ಶಿವಕುಮಾರ್ ಆರಾಧ್ಯ, ಪ್ರಸನ್ನ ಕುಮಾರ್, ಶಿವ ಕುಮಾರ್ ಮತ್ತು ವಿನೂ ಭಾಯ್ ಅವರು ಸದ್ಯಕ್ಕೆ ನಿರಾಳರಾಗುವಂತೆ ಆಗಿದ್ದು, ಬಂಧನ ಭೀತಿಯಿಂದ ಪಾರಾಗಿದ್ದಾರೆ. ಅವರ ವಿರುದ್ಧ ದಾಖಲಾಗಿದ್ದ ದೋಷಾರೋಪ ಪಟ್ಟಿಗೆ ಮತ್ತು ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಪ್ರಕರಣ ಸಂಬಂಧ ತಮ್ಮ ವಿರುದ್ಧ ಕರ್ನಾಟಕ ಮುಕ್ತ ಪ್ರದೇಶಗಳ ವಿರೂಪ ತಡೆ ಕಾಯ್ದೆಯಡಿ ದಾಖಲಿಸಿರುವ ದೋಷಾರೋಪ ಪಟ್ಟಿ ಮತ್ತು ಮಂಡ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನ ಹಿರಿಯ ಸಿವಿಲ್ ಮತ್ತು ಸಿಜೆಎಂ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ ಸಿ. ಟಿ. ಮಂಜುನಾಥ್ ಸೇರಿ ಐವರು ಬಿಜೆಪಿ ಕಾರ್ಯಕರ್ತರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ ಚಂದನಗೌಡರ್ ಅವರ ನ್ಯಾಯಪೀಠ ಈ ಆದೇಶ ಮಾಡಿತು. ಜತೆಗೆ, ಪ್ರತಿವಾದಿಯಾಗಿರುವ ಮಂಡ್ಯ ಪಶ್ವಿಮ ಠಾಣಾ ಪೊಲೀಸರು ಮತ್ತು ದೂರುದಾರ ರುದ್ರೇಗೌಡಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.
ಪ್ರಕರಣದ ಹಿನ್ನೆಲೆ: ಅರ್ಜಿದಾರರು ಸಚಿವ ಎನ್. ಚೆಲುರಾಯಸ್ವಾಮಿ ಮತ್ತು ಸರ್ಕಾರದ ವಿರುದ್ಧ 'ಪೇ ಸಿಎಸ್/ ಪೇ ಚೆಲುವರಾಯಸ್ವಾಮಿ ಅಭಿಯಾನ'ದ ಹೆಸರಿನಲ್ಲಿ 2023ರ ಆ.10ರಂದು ಮಂಡ್ಯದ ಸಂಜಯ್ ಸರ್ಕಲ್ನಲ್ಲಿ ಪ್ರತಿಭಟನೆ ನಡೆಸಿದ್ದರು. ಜತೆಗೆ, ಚೆಲುವರಾಯ ಸ್ವಾಮಿ ಮತ್ತು ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ 6ರಿಂದ 8 ಲಕ್ಷ ರೂ. ಪಾವತಿಸುವಂತೆ ಅಡಿ ಬರಹ ಬರೆದು, ಕ್ಯೂಆರ್ ಕೋಡ್ ಸ್ಯಾನ್ ಜೊತೆಗೆ ಚೆಲುವರಾಯ ಸ್ವಾಮಿ ಅವರ ಪೋಟೋ ಇರುವ ಭಿತ್ತಿಪತ್ರವನ್ನು ಸಂಜಯ ಸರ್ಕಲ್ನಲ್ಲಿ ಅಂಟಿಸಿದ್ದರು.
ಈ ಸಂಬಂಧ ಮಂಡ್ಯದ ಕಾವೇರಿ ನಗರದ ರುದ್ರೇಗೌಡ ದೂರು ನೀಡಿದ್ದರು. ಅದನ್ನು ಆಧರಿಸಿ ಅರ್ಜಿದಾರರಾದ ಸಿ. ಟಿ. ಮಂಜುನಾಥ್, ಎಸ್. ಶಿವಕುಮಾರ್ ಆರಾಧ್ಯ, ಪ್ರಸನ್ನ ಕುಮಾರ್, ಶಿವ ಕುಮಾರ್ ಮತ್ತು ವಿನೂ ಭಾಯ್ ವಿರುದ್ಧ ಮಂಡ್ಯ ಪಶ್ಚಿಮ ಠಾಣಾ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.
ನಂತರ ತನಿಖೆ ಪೂರ್ಣಗೊಳಿಸಿ ಭಿತ್ತಿ ಪತ್ರ ಅಂಟಿಸಿ ಸಾರ್ವಜನಿಕ ಪ್ರದೇಶದ ಸೌಂದರ್ಯ ಹಾಳು ಮಾಡಿದ ಆರೋಪದ ಮೇಲೆ ಕರ್ನಾಟಕ ಮುಕ್ತ ಪ್ರದೇಶಗಳ ವಿರೂಪ ತಡೆ ಕಾಯ್ದೆಯಡಿ 2023ರ ಆ.30ರಂದು ಅಧೀನ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಇದರಿಂದ ತಮ್ಮ ವಿರುದ್ಧದ ದೋಷಾರೋಪ ಪಟ್ಟಿ ಮತ್ತು ವಿಚಾರಣಾ ನ್ಯಾಯಾಲಯ ವಿಚಾರಣೆ ರದ್ದುಪಡಿಸುವಂತೆ ಕೋರಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.












Click it and Unblock the Notifications