ಗುತ್ತಿಗೆದಾರರಿಗೆ ಬಾಕಿ ಪಾವತಿ: ಮತ್ತೆ ಸರ್ಕಾರಕ್ಕೆ ತರಾಟೆ
ಬೆಂಗಳೂರು, ಡಿಸೆಂಬರ್ 14: ಗುತ್ತಿಗೆದಾರರಿಗೆ ಬಾಕಿ ಹಣ ಪಾವತಿಸಲು ವಿಳಂಬ ಮಾಡುತ್ತಿರುವ ಬಗ್ಗೆ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಯ ಕ್ರಮವನ್ನು ಕರ್ನಾಟಕ ಹೈಕೋರ್ಟ್ ಮತ್ತೆ ತರಾಟೆಗೆ ತೆಗೆದುಕೊಂಡಿದೆ. ಅಲ್ಲದೆ, ಗುತ್ತಿಗೆದಾರರಿಂದ ಕೆಲಸ ಮಾಡಿಸಿಕೊಂಡ ಮೇಲೆ ಬಿಲ್ ಪಾವತಿಸಲು ತಕರಾರೇಕೆ?. ಸರ್ಕಾರವೇ ನಾಗರಿಕರ ಮೊದಲ ಶತ್ರು ಎಂಬ ಮಾತು ಸತ್ಯ ಎಂಬುದಾಗಿ ಭಾಸವಾಗುತ್ತಿದೆ ಎಂದು ಖಾರವಾಗಿ ಪ್ರಶ್ನಿಸಿದೆ.
ಮುಖ್ಯ ನ್ಯಾಯಮೂರ್ತಿ ಪಿ. ಬಿ. ವರಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ನಿಕ್ಷೇಪ ಇನ್ಫ್ರಾ ಪ್ರಾಜೆಕ್ಟ್ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸಿ ಸರ್ಕಾರವನ್ನುಜಾಡಿಸಿತು.

ಟೆಂಡರ್ ಮೊತ್ತ ದುಪ್ಪಟ್ಟು: ಸರ್ಕಾರಿ ವಕೀಲರು, ಗುತ್ತಿದಾರರಿಗೆ ಹಣ ಪಾವತಿಸಲು ಫೆಬ್ರವರಿಯವರೆಗೆ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು. ಅದಕ್ಕೆ ವಿಭಾಗೀಯ ಪೀಠ, ಸರ್ಕಾರದ ವರ್ತನೆಯಿಂದ ಕೆಲಸ ಮಾಡಲು ಗುತ್ತಿಗೆದಾರರು ಹಿಂಜರಿಯುವ ಸ್ಥಿತಿ ಸೃಷ್ಟಿಸುತ್ತಿದ್ದೀರಿ.
ನಿಮ್ಮ ನೀತಿಯಿಂದ ಟೆಂಡರ್ ಮೊತ್ತ ಹಲವು ಪಟ್ಟು ಹೆಚ್ಚಾಗಬಹುದು. ಸರ್ಕಾರಕ್ಕೆ ಇಂತಹ ಸಲಹೆ ನೀಡುತ್ತಿರುವರಾರು?. ನಾವು ಕಾನೂನು ಪದವಿ ಓದುತ್ತಿದ್ದಾಗ 'ಸರ್ಕಾರವೇ ನಾಗರಿಕರ ಮೊದಲ ಶತ್ರು' ಎಂಬ ಮಾತು ಕೇಳಿಬರುತ್ತಿತ್ತು. ಇದೀಗ ಈ ಮಾತು ಸತ್ಯ ಎಂಬ ಭಾವನೆ ಮೂಡುತ್ತಿದೆ ಎಂದು ಹೇಳಿತು.
ಆಗ ಸರ್ಕಾರಿ ವಕೀಲರು, ಅರ್ಜಿದಾರರಿಗೆ ಕಂತಿನಲ್ಲಿ ಬಿಲ್ ಪಾವತಿಸಲಾಗುತ್ತಿದೆ. ಫೆಬ್ರವರಿವರೆಗೆ ಕಾಲಾವಕಾಶ ನೀಡಬೇಕು ಎಂದು ಕೋರಿದರು. ಜತೆಗೆ, ಗುತ್ತಿಗೆ ಕಾಮಗಾರಿಗಳ ಅಕ್ರಮ ಕುರಿತಂತೆ ತನಿಖೆ ನಡೆಸಲು ಸರ್ಕಾರ ಎಸ್ಐಟಿ ಮತ್ತು ಏಕವ್ಯಕ್ತಿ ಆಯೋಗ ರಚನೆ ಮಾಡಿರುವುದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ಗೆ ತಕರಾರು ಅರ್ಜಿ ಸಲ್ಲಿಸಿದ್ದಾರೆ.
ಆ ಅರ್ಜಿಯು ಹೈಕೋರ್ಟ್ ಏಕ ಸದಸ್ಯ ಪೀಠದ ಮುಂದಿದೆ. ಈಗಾಗಲೇ ಎಸ್ಐಟಿ ತನಿಖೆಗೆ ಏಕ ಸದಸ್ಯ ನ್ಯಾಯಪೀಠ ತಡೆ ನೀಡಿದೆ ಎಂದು ವಿಭಾಗೀಯ ಪೀಠದ ಗಮನಕ್ಕೆ ತಂದರು. ಅದನ್ನು ಪರಿಗಣಿಸಿದ ವಿಭಾಗೀಯ ಪೀಠ, ಅರ್ಜಿಯ ಸಂಬಂಧ ಯಾವುದೇ ಮುಂದಿನ ಕ್ರಮ ಕೈಗೊಳ್ಳಬಾರದು ಎಂದು ತಿಳಿಸಿ ವಿಚಾರಣೆಯನ್ನು 2024ರ ಫೆ.13ಕ್ಕೆ ಮುಂದೂಡಿದೆ.
ಅರ್ಜಿಯನ್ನು ಕಳೆದ ನವೆಂಬರ್ 29ರಂದು ವಿಚಾರಣೆ ನಡೆಸಿದ್ದ ವಿಭಾಗೀಯ ಪೀಠ, ಕೆಲವು ಕಾಮಗಾರಿಗಳಿಗೆ ಸ್ಥಳೀಯ ಸಂಸ್ಥೆಗಳು ಟೆಂಡರ್ ಕರೆದು, ಆ ಕಾಮಗಾರಿಗಳನ್ನು ಪೂರ್ಣಗೊಳಿಸಿದ ಬಳಿಕ ಹಣ ಪಾವತಿಗೆ ಅನಗತ್ಯ ವಿಳಂಬ ಮಾಡುವುದು ಎಷ್ಟರ ಮಟ್ಟಿಗೆ ಸರಿ? ಎಂದು ಹೇಳಿತ್ತು.
ಸರ್ಕಾರವು ಗುತ್ತಿಗೆದಾರರನ್ನು ಮೂಲೆಗುಂಪು ಮಾಡಬಾರದು. ಈಗಾಗಲೇ ಇಬ್ಬರು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನೆಷ್ಟು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳಬೇಕು. ಬಾಕಿ ಹಣ ಬಿಡುಗಡೆ ಮಾಡುವುದರಲ್ಲಿಯೇ ಹಿರಿತನವನ್ನು ಏಕೆ ಅನುಸರಿಸಬೇಕು?. ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳಲು ಬಿಡಬಾರದು ಎಂದು ಕಿಡಿ ಕಾರಿತ್ತು.












Click it and Unblock the Notifications