ಬಕ್ರೀದ್; ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧ
ಬೆಂಗಳೂರು, ಜುಲೈ 26 : ಬಕ್ರೀದ್ ಹಬ್ಬದ ಆಚರಣೆ ಸಂದರ್ಭದಲ್ಲಿ ಈದ್ಗಾ ಮೈದಾನಗಳಲ್ಲಿ ನಡೆಯುವ ಸಾಮೂಹಿಕ ಪ್ರಾರ್ಥನೆಗೆ ರಾಜ್ಯ ಸರ್ಕಾರ ನಿರ್ಬಂಧ ಹೇರಿದೆ. ಕೊರೊನಾ ವೈರಸ್ ಸೋಂಕು ಹರಡುವ ಭೀತಿಯಲ್ಲಿ ಹೆಚ್ಚು ಜನರು ಸೇರದಂತೆ ಸೂಚನೆ ನೀಡಲಾಗಿದೆ.
ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಯಲ್ಲಿ ಜುಲೈ 31ರಂದು ಮತ್ತು ರಾಜ್ಯದ ಇತರ ಜಿಲ್ಲೆಯಲ್ಲಿ ಆಗಸ್ಟ್ 1ರಂದು ಬ್ರಕೀದ್ ಹಬ್ಬದ ಆಚರಣೆ ಮಾಡಲಾಗುತ್ತದೆ. ಬಕ್ರೀದ್ ಸಮಯದಲ್ಲಿ ನೂರಾರು ಜನರು ಸೇರಿ ಸಾಮೂಹಿಕ ಪ್ರಾರ್ಥನೆ ಮಾಡುವಂತಿಲ್ಲ.
ಅಲ್ಪ ಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಕೆ ಕಾರ್ಯದರ್ಶಿ ಎ. ಬಿ. ಇಬ್ರಾಹಿಂ ಈ ಕುರಿತು ಆದೇಶ ಹೊರಡಿಸಿದ್ದಾರೆ. "ಕೋವಿಡ್ 19 ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ" ಎಂದು ಹೇಳಿದ್ದಾರೆ.

ಪ್ರಾರ್ಥನೆ ವೇಳೆ ಅಗತ್ಯ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಬೇಕು. ಮಸೀದಿಗಳಲ್ಲಿ ಗರಿಷ್ಠ 50 ಜನರು ಮಾತ್ರ ಸೇರಬಹುದು. ಹೆಚ್ಚು ಜನರು ಆಗಮಿಸಿದರೆ 2 ಅಥವ 3 ತಂಡಗಳಾಗಿ ಪ್ರಾರ್ಥನೆ ಸಲ್ಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಸೂಚನೆಗಳು
* ಪ್ರಾರ್ಥನೆ ಮಾಡುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು
* 60 ವರ್ಷದ ದಾಟಿದ, 10 ವರ್ಷದ ಒಳಗಿನ ಮಕ್ಕಳು ಮನೆಯಲ್ಲಿಯೇ ಪ್ರಾರ್ಥನೆ ಮಾಡಬೇಕು
* ಮಸೀದಿ ಪ್ರವೇಶಿಸುವ ಮುನ್ನ ದೇಹದ ಉಷ್ಣತೆ ಪರೀಕ್ಷೆ ಕಡ್ಡಾಯ
* ಕೈಗಳನ್ನು ಸ್ಯಾನಿಟೈಸರ್ ಅಥವ ಸಾಬೂನಿನಿಂದ ತೊಳೆದುಕೊಳ್ಳಬೇಕು
* ಹಸ್ತ ಲಾಘವ ಅಥವ ಆಲಿಂಗನಕ್ಕೆ ಅವಕಾಶವಿಲ್ಲ












Click it and Unblock the Notifications