ಜನ ಹಣ ಪಡೆದು ಮತ ಹಾಕುವ ತನಕ ದೇಶ ಬದಲಾಗಲ್ಲ; ಹೈಕೋರ್ಟ್
ಬೆಂಗಳೂರು, ಏಪ್ರಿಲ್ 07; ಸ್ಮಶಾನ ಭೂಮಿ ಇಲ್ಲದ ಗ್ರಾಮದವರು ಮುಂದೆ ಬಂದು ಮನವಿ ಮಾಡುವಂತೆ ಕೋರಿ ರಾಜ್ಯದ 21 ಜಿಲ್ಲೆಗಳಲ್ಲಿಯೂ ಸ್ಥಳೀಯ ಮತ್ತು ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಪ್ರಕಟಣೆ ಹೊರಡಿಸಿದರೂ ಜನರು ಮುಂದೆ ಬರುತ್ತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೇ, ಜನ ಹಣ ಪಡೆದು ಮತ ಹಾಕುವುದು ನಿಲ್ಲಿಸಬೇಕು, ಅವರು ಬುದ್ದಿ ಕಲಿತು ಎಚ್ಚೆತ್ತುಕೊಳ್ಳುವವರೆಗೂ ದೇಶ ಬದಲಾಗಲ್ಲ, ನ್ಯಾಯಾಂಗದಿಂದಲೂ ಏನೂ ಮಾಡಲು ಆಗುವುದಿಲ್ಲ ಎಂದು ಹೇಳಿದೆ.
ಬೆಂಗಳೂರಿನ ಮೊಹಮ್ಮದ್ ಇಕ್ಬಾಲ್, ರಾಜ್ಯದಲ್ಲಿ ಸ್ಮಶಾನ ಭೂಮಿ ಇಲ್ಲದ ಗ್ರಾಮ ಮತ್ತು ಪಟ್ಟಣ ಪ್ರದೇಶಗಳಿಗೆ ಅಗತ್ಯವಾದ ಸ್ಮಶಾನ ಭೂಮಿ ಒದಗಿಸುವಂತೆ ಸರ್ಕಾರಕ್ಕೆ ನೀಡಿದ್ದ ನಿರ್ದೇಶನ ಜಾರಿಯಾಗದ ಹಿನ್ನೆಲೆಯಲ್ಲಿ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ನ್ಯಾಯಮೂರ್ತಿ ಬಿ. ವೀರಪ್ಪ ಮತ್ತು ನ್ಯಾಯಮೂರ್ತಿ ಟಿ. ವೆಂಕಟೇಶ್ ನಾಯಕ್ ಅವರಿದ್ದ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ಕೆಲ ಕಾಲ ವಾದ ಆಲಿಸಿದ ಬಳಿಕ ನ್ಯಾಯಾಲಯ, ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆಯುತ್ತಿದೆ. ಆದರೂ, ಜನತೆಗೆ ಈವರೆಗೂ ಬುದ್ದಿ ಬಂದಿಲ್ಲ. ಹಣ ಪಡೆದು ಮತ ಹಾಕುವ ಚಾಳಿ ಮುಂದುವರೆಸುತ್ತಿದ್ದಾರೆ. ಜನ ಎಚ್ಚೆತ್ತುಕೊಳ್ಳದಿದ್ದರೆ ನಾವೇನು ಮಾಡುವುದಕ್ಕೆ ಸಾಧ್ಯವಿಲ್ಲ. ಜನ ಸರಿಯಾದರೆ ಎಲ್ಲವೂ ಸರಿಯಾಗಲಿದೆ ಎಂದು ನ್ಯಾಯಪೀಠ ತಿಳಿಸಿತು. ಅಲ್ಲದೆ, ಈ ಅರ್ಜಿಯಲ್ಲಿ ಸಾರ್ವಜನಿಕ ಹಿತಾಸಕ್ತಿಯೂ ಖಾಸಗಿ ಹಿತಾಸಕ್ತಿ ಇದಿಯೋ ಗೊತ್ತಿಲ್ಲ ಎಂದು ತರಾಟೆಗೆ ತೆಗೆದುಕೊಂಡಿತು.
ಕೋರ್ಟ್ ಆದೇಶ ಪಾಲನೆ:
ವಿಚಾರಣೆ ವೇಳೆ ಸರ್ಕಾರದ ಪರವಾಗಿ ಹಾಜರಿದ್ದ ವಕೀಲರು, ಯಾವ ಯಾವ ಗ್ರಾಮಗಳಲ್ಲಿ ಸ್ಮಶಾನ ಭೂಮಿ ಇಲ್ಲ ಎಂಬುದರ ಕುರಿತು ಮಾಹಿತಿ ಪಡೆಯಲು ಪತ್ರಿಕಾ ಪ್ರಕಟಣೆ ಹೊರಡಿಸುವಂತೆ ನ್ಯಾಯಪೀಠ ಈ ಹಿಂದೆ ನೀಡಿದ್ದ ಸೂಚನೆ ಅನುಪಾಲನೆ ಮಾಡಿರುವ ಸಂಬಂಧ ವರದಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು. ಅಲ್ಲದೆ, ರಾಜ್ಯದ 31 ಎಲ್ಲ ಜಿಲ್ಲೆಗಳಲ್ಲಿ ರಾಜ್ಯ ಮಟ್ಟದ ಮತ್ತು ಸ್ಥಳೀಯ ಪತ್ರಿಕೆಗಳಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಆದರೆ, ಈವರೆಗೂ ಯಾವುದೇ ಹಳ್ಳಿಯಿಂದ ಸ್ಮಶಾನ ಭೂಮಿ ಲಭ್ಯವಿಲ್ಲದ ಗ್ರಾಮದಿಂದ ಮನವಿ ಬಂದಿಲ್ಲ. ಮನವಿ ಬಂದಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ನ್ಯಾಯಪೀಠಕ್ಕೆ ವಿವರಿಸಿದರು. ಈ ಮಾಹಿತಿ ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು ಏಪ್ರಿಲ್ 20ಕ್ಕೆ ಮುಂದೂಡಿತು.

ಅರ್ಜಿದಾರರಿಗೆ ಪ್ರಶ್ನೆ?;
ನ್ಯಾಯಾಂಗ ನಿಂಧನೆ ಅರ್ಜಿ ಸಲ್ಲಿಸಿರುವ ಮಹಮ್ಮದ್ ಇಕ್ಬಾಲ್ ಅವರನ್ನು ಉದ್ದೇಶಿಸಿದ ನ್ಯಾಯಪೀಠ, ರಾಜ್ಯದಲ್ಲಿ ಎಷ್ಟು ಗ್ರಾಮಗಳಿವೆ ಎಂಬುದರ ಕುರಿತು ಮಾಹಿತಿ ಇದೆಯೇ? ಎಂದು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ಇಲ್ಲ ಎಂಬುದಾಗಿ ತಿಳಿಸಿದರು. ಇದರಿಂದ ಅಸಮಾಧಾನಗೊಂಡ ನ್ಯಾಯಪೀಠ, 2018ರಿಂದ ಅರ್ಜಿ ವಿಚಾರಣೆ ನಡೆಯುತ್ತಿದೆ. ಇದನ್ನು ನ್ಯಾಯಾಲಯ ಮೇಲ್ವಿಚಾರಣೆ ಮಾಡುತ್ತಿದೆ. ಅಲ್ಲದೆ, ನ್ಯಾಯಾಲಯ ಪ್ರತಿ 15ದಿನಕ್ಕೊಮ್ಮೆ ಎಷ್ಟು ಗ್ರಾಮಗಳಿಗೆ ಸ್ಮಶಾನ ಭೂಮಿ ಒದಗಿಸಲಾಗಿದೆ ಎಂಬ ಅಂಶವನ್ನು ಪಡೆದು ವಿಚಾರಣೆ ನಡೆಸುತ್ತಿದೆ. ಆದರೂ ರಾಜ್ಯದಲ್ಲಿ ಎಷ್ಟು ಗ್ರಾಮಗಳಿವೆ ಎಂಬುದು ಅರ್ಜಿದಾರರಿಗೆ ಗೊತ್ತಿಲ್ಲ ಎಂದರೆ ಹೇಗೆ? ಎಂದು ಪ್ರಶ್ನಿಸಿತು.
ಹೇಗಿದೆ ಪ್ರಕಟಣೆ?; ಸ್ಮಶಾನ ಭೂಮಿ ಇಲ್ಲದ ಗ್ರಾಮದವರು ಮುಂದೆ ಬಂದು ಮನವಿ ಮಾಡುವಂತೆ ಈಗಾಗಲೇ ಪ್ರಕಟಣೆ ಹೊರಡಿಸಲಾಗಿದೆ. ಸಾರ್ವಜನಿಕರು ತಮ್ಮ ಗ್ರಾಮಗಳಲ್ಲಿ ಸ್ಮಶಾನ ಜಮೀನು ಇಲ್ಲದಿರುವ ಬಗ್ಗೆ ಮಾಹಿತಿ ಸಲ್ಲಿಸುವಂತೆ ತಹಶೀಲ್ದಾರ್ ಪ್ರಕಟಣೆ ಮೂಲಕ ಮನವಿ ಮಾಡುತ್ತಿದ್ದಾರೆ.
ಮಾನ್ಯ ಉಚ್ಛ ನ್ಯಾಯಾಲಯ ಕರ್ನಾಟಕ ಇವರ ರಿಟ್ ಅರ್ಜಿ ಸಂಖ್ಯೆ: 15165/2018 ಮತ್ತು ಸಿಸಿಸಿ ಸಂಖ್ಯೆ: 343/2020 ರಲ್ಲಿ ಹೊರಡಿಸಲಾಗಿರುವ ಆದೇಶ ಹಾಗೂ ಕರ್ನಾಟಕ ಸರ್ಕಾರವು ದಿನಾಂಕ 16/07/2009ರಂದು ಹೊರಡಿಸಿದ ಆದೇಶದ ಪ್ರಕಾರ, ಗ್ರಾಮಗಳಲ್ಲಿ ಸ್ಮಶಾನ ಜಮೀನು ಇಲ್ಲದಿರುವ ಬಗ್ಗೆ ಮಾಹಿತಿಯನ್ನು ಗ್ರಾಮ ಆಡಳಿತ ಅಧಿಕಾರಿ, ಕಂದಾಯ ನಿರೀಕ್ಷಕರು ಅಥವಾ ತಹಶೀಲ್ದಾರರಿಗೆ ಲಿಖಿತ ರೂಪದಲ್ಲಿ ಸಲ್ಲಿಸಬೇಕು.
ಈ ಬಗ್ಗೆ ಯಾವ ವ್ಯಕ್ತಿಯು ಲಿಖಿತವಾಗಿ ತಿಳಿಸುತ್ತಾನೋ, ಆತನ ಹೆಸರು, ತಂದೆಯ ಹೆಸರು, ಆಧಾರ ಸಂಖ್ಯೆ, ಗ್ರಾಮ, ಪಟ್ಟಣ, ಶಹರ, ತಾಲ್ಲೂಕು ಅಥವಾ ಜಿಲ್ಲಾ ವಿವರವನ್ನು ನಮೂದಿಸಿ ಅರ್ಜಿಯನ್ನು ಸಲ್ಲಿಸುವಂತೆ ಹೊರಡಿಸುತ್ತಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ಕುರಿತು ಪ್ರತಿ ಜಿಲ್ಲೆಯಲ್ಲಿಯೂ ಪ್ರಕಟಣೆಹೊರಡಿಸಲಾಗುತ್ತಿದೆ.












Click it and Unblock the Notifications