ಎಡಿಜಿಪಿ ಅಲೋಕ್ ಕುಮಾರ್ ವಿರುದ್ಧ ಫೈಟರ್ ರವಿ ಸಲ್ಲಿಸಿದ್ದ ಅರ್ಜಿ ವಜಾ
ಬೆಂಗಳೂರು, ಏಪ್ರಿಲ್ 13; ಕ್ರಿಮಿನಲ್ ಪ್ರಕರಣ ಬಾಕಿಯಿರುವ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಇಲಾಖೆಯ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ವಿರುದ್ಧ ಅವರನ್ನು ಆ ಹುದ್ದೆಯಲ್ಲಿ ಮುಂದುವರಿಸದಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿದ್ದ ಬಿ. ಎಂ. ಮಲ್ಲಿಕಾರ್ಜುನ ಅಲಿಯಾಸ್ ಫೈಟರ್ ರವಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಇದರಿಂದಾಗಿ ಫೈಟರ್ ರವಿಗೆ ಕಾನೂನು ಹೋರಾಟದಲ್ಲಿ ಹಿನ್ನೆಡೆಯಾಗಿದೆ.
ಫೈಟರ್ ರವಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ನ್ಯಾಯಪೀಠ, ಅರ್ಜಿಯು ವಿಚಾರಣಾ ಮಾನ್ಯತೆ ಹೊಂದಿಲ್ಲ. ಇದು ಕೇವಲ ನಿಸ್ಪ್ರಯೋಜಕ ಅರ್ಜಿಯಾಗಿದ್ದು, ವಜಾಗೊಳಿಸುವುದಾಗಿ ಹೇಳಿತು. ಹಾಗಾಗಿ ಅರ್ಜಿಯನ್ನು ಹಿಂಪಡೆಯಲಾಗುವುದು ಎಂದು ಮಲ್ಲಿಕಾರ್ಜುನ ಪರ ವಕೀಲರು ತಿಳಿಸಿದರು. ಅದಕ್ಕೆ ಸಮ್ಮತಿಸಿದ ನ್ಯಾಯಪೀಠ, ಅರ್ಜಿ ಹಿಂಪಡೆದ ಹಿನ್ನೆಲೆಯಲ್ಲಿ ಅರ್ಜಿ ವಜಾಗೊಳಿಸಲಾಗುತ್ತಿದೆ ಎಂದು ತಿಳಿಸಿತು.

ಹೆಸರು ಚೆನ್ನಾಗಿದೆ; ಆದೇಶ ಪ್ರಕಟಿಸುವುದಕ್ಕೂ ಮುನ್ನ ನ್ಯಾಯಮೂರ್ತಿಗಳು, ರೌಡಿ ಶೀಟ್ನಲ್ಲಿ ಫೈಟರ್ ರವಿ ಎಂಬ ಹೆಸರು ಬಳಸದಂತೆ ಪೊಲೀಸ್ ಇಲಾಖೆಗೆ ಹೈಕೋರ್ಟ್ ಇತ್ತೀಚೆಗೆ ಸೂಚನೆ ನೀಡಿತ್ತಲ್ಲವೇ? ಎಂದು ಮಲ್ಲಿಕಾರ್ಜುನಯ್ಯ ಪರ ವಕೀಲರನ್ನು ಪ್ರಶ್ನಿಸಿದರು. ಅದಕ್ಕೆ ವಕೀಲರು ಹೌದೆಂದು ತಿಳಿಸಿದಾಗ, ನೀವು ಅರ್ಜಿಯನ್ನು ಬಹಳ ಜಾಣ್ಮೆಯಿಂದ ಸಿದ್ಧಪಡಿಸಿದ್ದೀರಿ. ಮತ್ತೊಂದು ಅರ್ಜಿಯಲ್ಲಿ ಫೈಟರ್ ರವಿ ಹೆಸರು ಬಳಸದಂತೆ ತಡೆ ಆದೇಶ ಪಡೆದುಕೊಂಡಿದ್ದೀರಿ. ಅದರಲ್ಲಿ ಅರ್ಜಿದಾರರು ಬಿಜೆಪಿಯ ಸಂಭವನೀಯ ಅಭ್ಯರ್ಥಿ ಎಂದು ಹೇಳಿದ್ದಿರಿ. ಇಂದು ಬಿ. ಎಂ. ಮಲ್ಲಿಕಾರ್ಜುನಯ್ಯ ಎಂಬ ಹೆಸರಿನಲ್ಲಿ ಅರ್ಜಿ ಸಲ್ಲಿಸಿ, ಅರ್ಜಿದಾರರು ಪಕ್ಷೇತರರಾಗಿ ಸ್ಪರ್ಧಿಸಬಹುದು ಎಂದು ಹೇಳುತ್ತಿದ್ದೀರಿ. ಏನೇ ಆಗಲಿ ನಿಮ್ಮ ಅರ್ಜಿದಾರರ ಫೈಟರ್ ರವಿ ಎಂಬ ಹೆಸರು ತುಂಬ ಕ್ಯಾಚಿಯಾಗಿದೆ ಎಂದು ಮೌಖಿಕವಾಗಿ ಚಟಾಕಿ ಹಾರಿಸಿದರು.
ಅರ್ಜಿದಾರರ ಆಕ್ಷೇಪವೇನು?; ಭಾರತೀಯ ಚುನಾವಣಾ ಆಯೋಗ 2022ರ ಡಿ. 8ರಂದು ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಯಾವುದೇ ಅಧಿಕಾರಿಯ ವಿರುದ್ಧ ಕ್ರಿಮಿನಲ್ ಪ್ರಕರಣ ವಿಚಾರಣೆಗೆ ಬಾಕಿಯಿದ್ದರೆ, ಅಂತಹವರನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸುವಂತಿಲ್ಲ. ಆದ್ದರಿಂದ, ಕ್ರಿಮಿನಲ್ ಪ್ರಕರಣ ಬಾಕಿ ಇರುವುದರಿಂದ ಅಲೋಕ್ ಕುಮಾರ್ ಅವರನ್ನು ಎಡಿಜಿಪಿ ಹುದ್ದೆಯಲ್ಲಿ ಮುಂದುವರಿಸಬಾರದು. ಅವರನ್ನು ಚುನಾವಣಾ ಕಾರ್ಯಕ್ಕೂ ನಿಯೋಜಿಸಬಾರದು ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ನಿರ್ದೇಶಿಸುವಂತೆ ನೀಡುವಂತೆ ಕೋರಿ ಮಲ್ಲಿಕಾರ್ಜುನ ಹೈಕೋರ್ಟ್ ಮೊರೆ ಹೋಗಿದ್ದರು.

ಕರ್ನಾಟಕದ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಏಪ್ರಿಲ್ 13ರ ಗುರುವಾರ ಚುನಾವಣಾ ಅಧಿಸೂಚನೆ ಪ್ರಕಟವಾಗಿದೆ. ನಾಮಪತ್ರಗಳನ್ನು ಸಲ್ಲಿಕೆ ಮಾಡಲು ಏಪ್ರಿಲ್ 20 ಕೊನೆಯ ದಿನವಾಗಿದೆ. ಏಪ್ರಿಲ್ 21ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್ ಪಡೆಯಲು ಏಪ್ರಿಲ್ 24 ಕೊನೆಯ ದಿನವಾಗಿದೆ.
ರಾಜ್ಯದ 224 ಕ್ಷೇತ್ರಗಳಿಗೆ ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 13ರ ಶನಿವಾರ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕದ ಪೊಲೀಸರು ಈಗಾಗಲೇ ಚುನಾವಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.












Click it and Unblock the Notifications