ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಎಸ್ಐಟಿ ತನಿಖೆ, ಅರ್ಜಿ ವಾಪಸ್!
ಬೆಂಗಳೂರು, ಮಾರ್ಚ್ 28; ಲಂಚ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಚನ್ನಗಿರಿಯ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಎಸ್ಐಟಿ ತನಿಖೆ ಕೋರಿ ಕರ್ನಾಟಕ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ದಾವಣಗೆರೆಯ ಶ್ರೀರಾಮಸೇನೆ ಘಟಕ ಸಲ್ಲಿಸಿದ್ದ ಪಿಐಎಲ್ ಮುಖ್ಯ ನ್ಯಾಯಮೂರ್ತಿ ಪಿ. ಬಿ. ವರಳೆ ನೇತೃತ್ವದ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ಕೆಲ ಕಾಲ ಅರ್ಜಿದಾರರ ವಾದ ಆಲಿಸಿದ ನ್ಯಾಯಪೀಠ, ತನಿಖಾಧಿಕಾರಿ ವರ್ಗಾವಣೆಯಾದ ಕೂಡಲೇ ತನಿಖೆಯಲ್ಲಿ ಲೋಪವೆನ್ನಲಾಗದು. ಸರಿಯಾಗಿ ತನಿಖೆ ನಡೆದಿಲ್ಲವೆಂಬುದಕ್ಕೆ ಸಮರ್ಪಕ ಕಾರಣ ಉಲ್ಲೇಖಿಸಿಲ್ಲ. ತನಿಖೆಯಲ್ಲಿ ಲೋಪಗಳಿದ್ದರೆ ಅದನ್ನು ಸಕ್ಷಮ ಪ್ರಾಧಿಕಾರದ ಗಮನಕ್ಕೆ ತರಬಹುದು ಎಂದು ಅಭಿಪ್ರಾಯಪಟ್ಟಿತು.

ಆಗ ಅರ್ಜಿದಾರರ ಪರ ವಕೀಲರು, ವಿಚಾರವನ್ನು ಸಕ್ಷಮ ಪ್ರಾಧಿಕಾರದ ಗಮನಕ್ಕೆ ತರುವುದಾಗಿ ಹೇಳಿ ಪಿಐಎಲ್ ವಾಪಸ್ ಪಡೆದರು. ಅದಕ್ಕೂ ಮುನ್ನ ಅರ್ಜಿದಾರರ ಪರ ವಕೀಲರು, ಪ್ರಕರಣದ ತನಿಖಾಧಿಕಾರಿಯನ್ನು ವರ್ಗಾಯಿಸಲಾಗಿದೆ. ತನಿಖೆಯಲ್ಲಿ ಲೋಪದೋಷವಿದೆ, ಹಾಗಾಗಿ ಸಿಬಿಐ ತನಿಖೆ ನಡೆಸಬೇಕು, ಇಲ್ಲವೇ ತನಿಖೆಗೆ ಸ್ವತಂತ್ರ ತನಿಖಾ ತಂಡವನ್ನು ರಚಿಸಬೇಕು ಎಂದು ನ್ಯಾಯಪೀಠವನ್ನು ಕೋರಿದರು.
ಸೋಮವಾರ ಸಂಜೆ ಬಂಧನ: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತಕ್ಕೆ (ಕೆಎಸ್ಡಿಎಲ್) ಕಚ್ಚಾ ತೈಲ ಪೂರೈಸುವ ಗುತ್ತಿಗೆಯ ಕಾರ್ಯಾದೇಶ ನೀಡಲು ಲಂಚಕ್ಕೆ ಬೇಡಿಕೆಯಿಟ್ಟ ಆರೋಪ ಪ್ರಕರಣದಲ್ಲಿ ಬಿಜೆಪಿ ಶಾಸಕ ಕೆ. ಮಾಡಾಳು ವಿರೂಪಾಕ್ಷಪ್ಪರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ಸಂಜೆ ಬಂಧಿಸಿದ್ದಾರೆ. ಅತ್ತ ಆತ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾ ಮಾಡುತ್ತಿದ್ಧಂತೆಯೇ ಇತ್ತ ವಿರೂಪಾಕ್ಷಪ್ಪ ಬಂಧನವಾಗಿತ್ತು.

ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಎಫ್ಐಆರ್ನಲ್ಲಿ ಮೊದಲ ಆರೋಪಿಯಾಗಿರುವ ಚನ್ನಗಿರಿಯ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿ, ಮಾರ್ಚ್ 17ರಂದು ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಕೆ. ನಟರಾಜನ್ ಅವರ ನೇತೃತ್ವದ ಏಕಸದಸ್ಯ ಪೀಠವು ಸೋಮವಾರ ಆದೇಶ ಪ್ರಕಟಿಸಿತ್ತು. ಮಾರ್ಚ್ 7ರಂದು ಮಾಡಾಳ್ ವಿರೂಪಾಕ್ಷಪ್ಪ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯವು ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.
5 ಲಕ್ಷ ರೂಪಾಯಿ ವೈಯಕ್ತಿಕ ಬಾಂಡ್ ಸಲ್ಲಿಸಬೇಕು. ಆದೇಶವಾದ 48 ಗಂಟೆಗಳ ಒಳಗೆ ತನಿಖಾಧಿಕಾರಿಯ ಮುಂದೆ ಹಾಜರಾಗಬೇಕು. ತನಿಖೆಗೆ ಎಲ್ಲಾ ರೀತಿಯಲ್ಲೂ ಸಹಕಾರ ನೀಡಬೇಕು. ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಸಾಕ್ಷ್ಯ ನಾಶಕ್ಕೆ ಯತ್ನಿಸಬಾರದು ಎಂಬ ಷರತ್ತುಗಳನ್ನು ವಿಧಿಸಿತ್ತು. ಆನಂತರ ಮಾರ್ಚ್ 17ರಂದು ವಾದ-ಪ್ರತಿ ವಾದ ಆಲಿಸಿದ್ದ ನ್ಯಾಯಾಲಯವು ಆದೇಶ ಕಾಯ್ದಿರಿಸಿತ್ತು. ಪ್ರಕರಣದಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಪುತ್ರ ಪ್ರಶಾಂತ್ ಮಾಡಾಳ್ ಅವರ ವಿರುದ್ಧ ಭ್ರಷ್ಟಚಾರ ನಿಯಂತ್ರಣ ಕಾಯಿದೆ ಸೆಕ್ಷನ್ 7(ಎ), 7ಬಿ ಅಡಿ ಪ್ರಕರಣ ದಾಖಲಿಸಲಾಗಿದ್ದು, ಶಾಸಕ ವಿರೂಪಾಕ್ಷಪ್ಪ ಅವರನ್ನು ಮೊದಲ ಆರೋಪಿ, ಪುತ್ರ ಪ್ರಶಾಂತ್ ಅವರನ್ನು ಎರಡನೇ ಆರೋಪಿಯನ್ನಾಗಿಸಲಾಗಿದೆ. ಅಲ್ಲದೇ, ಸಿದ್ದೇಶ್, ನಿಕೋಲಸ್ ಮತ್ತು ಗಂಗಾಧರ್ ಎಂಬ ಮೂವರನ್ನೂ ಪ್ರಕರಣದಲ್ಲಿ ಆರೋಪಿಗಳನ್ನಾಗಿಸಲಾಗಿದೆ.
ಪ್ರಕರಣದ ಹಿನ್ನೆಲೆ: ಬೆಂಗಳೂರಿನ ಶ್ರೇಯಸ್ ಕಶ್ಯಪ್ ಅವರು ಕೆ. ಆರ್. ರಸ್ತೆಯಲ್ಲಿ ಕೆಮಿಕಲ್ಸ್ ಕಾರ್ಪೊರೇಶನ್ ಎಂಬ ಪಾಲುದಾರಿಕೆ ಕಂಪೆನಿ ಹೊಂದಿದ್ದು, ಅವರ ಪರಿಚಯಸ್ಥರಾದ ಟಿ. ಎ. ಎಸ್ ಮೂರ್ತಿ ಅವರು ಚಾಮರಾಜಪೇಟೆಯಲ್ಲಿ ಡೆಲಿಸಿಯಾ ಕೆಮಿಕಲ್ಸ್ ಎಂಬ ಪಾಲುದಾರಿಕೆ ಕಂಪೆನಿ ಹೊಂದಿದ್ದಾರೆ. ಈ ಕಂಪೆನಿಗಳು ಕೆಎಸ್ಡಿಎಲ್ ರಾಸಾಯನಿಕ ಆಯಿಲ್ ಪೂರೈಸಲು 2023ರ ಜನವರಿಯಲ್ಲಿ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಿ ಯಶಸ್ವಿಯಾಗಿದ್ದವು.
ಈ ಸಂಬಂಧ ಕಾರ್ಯಾದೇಶ ಮತ್ತು ಹಣ ಬಿಡುಗಡೆ ಮಾಡಿಸಲು 81 ಲಕ್ಷ ಲಂಚ ರೂ. ನೀಡುವಂತೆ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಪ್ರಶಾಂತ್ ಅವರು ಬೇಡಿಕೆ ಇಟ್ಟಿದ್ದಾರೆ ಎಂದು ಶ್ರೇಯಸ್ ಕಶ್ಯಪ್ ಬೆಂಗಳೂರಿನ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ದೂರು ನೀಡಿದ್ದರು. ಕುಮಾರ ಪಾರ್ಕ್ನ ಕ್ರೆಸೆಂಟ್ ರಸ್ತೆಯಲ್ಲಿರುವ ಖಾಸಗಿ ಕಚೇರಿಗೆ ಗುತ್ತಿಗೆದಾರ 40 ಲಕ್ಷ ರೂ. ಲಂಚದ ಹಣ ತಲುಪಿಸುವ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಮಾಡಾಳ್ ಪ್ರಶಾಂತ್ ಸೇರಿ ಐವರನ್ನು ಬಂಧಿಸಿದ್ದರು.












Click it and Unblock the Notifications