ರಾಜ್ಯದಲ್ಲಿ ಪ್ಲಾಸ್ಟಿಕ್ ನಿಷೇಧಕ್ಕೆ ಸಚಿವ ಸಂಪುಟದ ಒಪ್ಪಿಗೆ
ಬೆಂಗಳೂರು, ಅಕ್ಟೋಬರ್ 21 : ಕರ್ನಾಟಕದಲ್ಲಿ ಪ್ಲಾಸ್ಟಿಕ್ ತಯಾರಿಕೆ, ಮಾರಾಟ ಮತ್ತು ಬಳಕೆ ನಿಷೇಧಕ್ಕೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ರಾಜ್ಯದಲ್ಲಿ 450 ಪ್ಲಾಸ್ಟಿಕ್ ಉತ್ಪಾದನಾ ಕಂಪನಿಗಳಿದ್ದು, ಇವು 40 ಮೈಕ್ರಾನ್ಗಿಂತಲೂ ಹೆಚ್ಚು ಪ್ರಮಾಣದ ಪ್ಲಾಸ್ಟಿಕ್ ಉತ್ಪಾದನೆ ಮಾಡಿ ರಫ್ತು ಮಾಡಬಹುದಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮಂಗಳವಾರ ನಡೆದ ಸಚಿವ ಸಂಪುಟದಲ್ಲಿ ಸಭೆಯಲ್ಲಿ 40 ಮೈಕ್ರಾನ್ಗಿಂತಲೂ ಕಡಿಮೆ ಪ್ರಮಾಣದ ಎಲ್ಲಾ ರೀತಿಯ ಪ್ಲಾಸ್ಟಿಕ್ ಉತ್ಪನ್ನಗಳ ತಯಾರಿಕೆ, ಸರಬರಾಜು, ಸಂಗ್ರಹಣೆ, ಸಾಗಾಣಿಕೆ, ಮಾರಾಟ, ಹಾಗೂ ಬಳಕೆಯನ್ನು ನಿಷೇಧಿಸಲು ಒಪ್ಪಿಗೆ ನೀಡಲಾಗಿದೆ. [ಪ್ಲಾಸ್ಟಿಕ್ ಅತಿ ಬಳಕೆ ಮನುಕುಲಕ್ಕೆ ತಂದಿಟ್ಟ ಅಪಾಯ]

ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು ಈ ಕುರಿತು ವಿವರಗಳನ್ನು ನೀಡಿದರು. 'ಪ್ಲಾಸ್ಟಿಕ್ ಹಾನಿಕರ, ಅದರ ಬಳಕೆಯಿಂದ ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮದ ಹಿನ್ನೆಲೆಯಲ್ಲಿ ಈ ನಿಷೇಧವನ್ನು ವಿಧಿಸಲಾಗಿದೆ' ಎಂದು ಹೇಳಿದರು. [ಬೆಂಗಳೂರಲ್ಲಿ ಎಲ್ಲಾ ಬಗೆಯ ಪ್ಲಾಸ್ಟಿಕ್ ಕೈ ಚೀಲ ನಿಷೇಧ]
'ರಾಜ್ಯದಲ್ಲಿ 450 ಪ್ಲಾಸ್ಟಿಕ್ ಉತ್ಪಾದನಾ ಕಂಪನಿಗಳಿವೆ. ಈ ಕಂಪನಿಗಳು 40 ಮೈಕ್ರಾನ್ಗಿಂತಲೂ ಹೆಚ್ಚು ಪ್ರಮಾಣದ ಪ್ಲಾಸ್ಟಿಕ್ ಉತ್ಪಾದನೆ ಮಾಡಿ ರಫ್ತು ಮಾಡಬಹುದಾಗಿದೆ. ಸರ್ಕಾರದ ಈ ನಿರ್ಧಾರದಿಂದ ಪ್ಲಾಸ್ಟಿಕ್ ತಯಾರಿಕಾ ಕಂಪನಿಗಳಿಗೆ ಯಾವುದೇ ನಷ್ಟ ಉಂಟಾಗುವುದಿಲ್ಲ' ಎಂದು ಸಚಿವರು ಸ್ಪಷ್ಟಪಡಿಸಿದರು. [ನೀವು ತಿನ್ನುವ ಅಕ್ಕಿ ಯಾವುದರಿಂದ ಮಾಡಿದ್ದು!?]
ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಈಗಾಗಲೇ 40 ಮೈಕ್ರಾನ್ಗಿಂತಲೂ ಕಡಿಮೆ ಪ್ರಮಾಣದ ಪ್ಲಾಸ್ಟಿಕ್ ಬಳಕೆ ನಿಷೇಧ ಜಾರಿಯಲ್ಲಿದೆ. ಸದ್ಯ, ಇದನ್ನು ಇಡೀ ರಾಜ್ಯಕ್ಕೆ ವಿಸ್ತರಣೆ ಮಾಡಲಾಗಿದೆ.
ರಸ್ತೆ ನಿರ್ಮಾಣ : 'ಸಂಸ್ಕರಿಸಿದ ಪ್ಲಾಸ್ಟಿಕ್ ಅನ್ನು ಡಾಂಬರ್ ಜೊತೆ ಮಿಶ್ರಣ ಮಾಡಿದರೆ ರಸ್ತೆಯ ಬಾಳಿಕೆ ಹೆಚ್ಚಲಿದೆ. ಈ ತಂತ್ರಜ್ಞಾನ ಬಳಕೆಗೆ ಉತ್ತೇಜನ ನೀಡುವಂತೆ ಲೋಕೋಪಯೋಗಿ ಇಲಾಖೆಗೆ ಸೂಚನೆ ನೀಡಲಾಗುತ್ತದೆ. ಪ್ಲಾಸ್ಟಿಕ್ ಮರುಸಂಸ್ಕರಣೆಗೂ ಪ್ರೋತ್ಸಾಹ ನೀಡಲಾಗುತ್ತದೆ' ಎಂದು ಸಚಿವರು ಹೇಳಿದರು.











Click it and Unblock the Notifications