ಬಿಜೆಪಿ-ಜೆಡಿಎಸ್ ಮೈತ್ರಿ: ಪ್ರಧಾನಿ ಮೋದಿ, ಅಮಿತ್ ಶಾ ಅಂತಿಮ ನಿರ್ಧಾರ- ಒಳ ಮಾಹಿತಿ ನೀಡಿದ ಬಿಎಸ್ವೈ
ಬೆಂಗಳೂರು, ಸೆಪ್ಟೆಂಬರ್ 13: ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಚರ್ಚೆ ನಡೆಯುತ್ತಲೇ ಇದೆ. ಇದೇ ವೇಳೆ, ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬುಧವಾರ ದೆಹಲಿಗೆ ತೆರಳಿದ್ದಾರೆ. ಇದಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಲೋಕಸಭೆ ಚುನಾವಣೆ ಕುರಿತು ಸಿಇಸಿ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಇಂದು ದೆಹಲಿಯಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆ ಇದೆ. ನಾನು ನಾಳೆ ಮರಳಲು ಬಯಸಿದ್ದೇನೆ. ಲೋಕಸಭೆ ಚುನಾವಣೆ ಸಿದ್ಧತೆ ಕುರಿತು ಚರ್ಚೆ ನಡೆಯಲಿದೆ ಎಂಬುದಾಗಿ ಭಾವಿಸುತ್ತೇನೆ. ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರು ಪ್ರಮುಖ ನಿರ್ಧಾರ ತೆಗೆದುಕೊಳ್ಳುತ್ತಾರೆ. ನಾವು ಅದಕ್ಕೆ ಬದ್ಧರಾಗಿರುತ್ತೇವೆ ಎಂದು ಯಡಿಯೂರಪ್ಪ ಅವರು ದೆಹಲಿಗೆ ತೆರಳುವ ಮೊದಲು ತಿಳಿಸಿದ್ದಾರೆ.
ಈ ಕುರಿತು ಮಾತನಾಡಿರುವ ಜೆಡಿಎಸ್ ನಾಯಕ, ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ, 'ಮೈತ್ರಿ ನಿರ್ಧಾರ ಕುರಿತು ಯಾವುದೇ ನಿರ್ಧಾರ ಕೈಗೊಂಡರೂ ನಾವು ಅದನ್ನು ಒಪ್ಪಿಕೊಳ್ಳುತ್ತೇವೆ. ಈ ವಿಚಾರವಾಗಿ ಗಣೇಶ ಚತುರ್ಥಿ ಹಬ್ಬದ ನಂತರವೇ ಚರ್ಚೆ ನಡೆಯಲಿದೆ' ಎಂದು ಹೇಳಿದ್ದಾರೆ.
ಮೈತ್ರಿಗೆ ಇನ್ನೂ ಸಮಯವಿದೆ ಮತ್ತು ನಾವು ಅವಸರದಲ್ಲಿಲ್ಲ. ವಿಸ್ತೃತ ಚರ್ಚೆ ನಡೆಯಬೇಕು. ಗೌರಿ-ಗಣೇಶ ಹಬ್ಬದ ನಂತರ ನೋಡೋಣ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಕುಮಾರಸ್ವಾಮಿ- ಕೆ ಎಸ್ ಈಶ್ವರಪ್ಪ ಭೇಟಿ
ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಅವರು ಕುಮಾರಸ್ವಾಮಿ ಅವರನ್ನು ಜೆಪಿ ನಗರದ ನಿವಾಸದಲ್ಲಿ ಭೇಟಿಯಾದರು. ಮೈತ್ರಿ ಮಾತುಕತೆ ಆರಂಭವಾದ ಬಳಿಕ ಇದೇ ಮೊದಲ ಬಾರಿಗೆ ರಾಜ್ಯಮಟ್ಟದ ನಾಯಕರು ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದಾರೆ
ಇದಕ್ಕೂ ಮುನ್ನ ಕುಮಾರಸ್ವಾಮಿ ಮಾಜಿ ಸಚಿವ ಆರ್ ಅಶೋಕ ಅವರನ್ನು ಕರೆಸಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಆರು ಸ್ಥಾನಗಳಲ್ಲಿ ಸ್ಪರ್ಧಿಸಲು ಮುಂದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ, ಅಮಿತ್ ಶಾ ಅವರು ನಾಲ್ಕು ಸ್ಥಾನಗಳಿಗೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಯಡಿಯೂರಪ್ಪ ಈ ಹಿಂದೆ ಹೇಳಿದ್ದರು. ಈ ತಿಂಗಳ ಅಂತ್ಯದ ವೇಳೆಗೆ ಸೀಟು ಹಂಚಿಕೆ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.












Click it and Unblock the Notifications