ಬಿಜೆಪಿ ವಿರೋಧಿಗಳ ಮೇಲೆ ಸುಳ್ಳು ಇಡಿ ಕೇಸು ದಾಖಲು: ರಾಮಲಿಂಗಾರೆಡ್ಡಿ ಅರೋಪ
ಬೆಂಗಳೂರು, ಜೂ. 15: ಮೋದಿ ಮತ್ತು ಅಮಿತ್ ಶಾ ದೇಶದ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಕಳೆದ ಒಂದು ದಶಕದಲ್ಲಿ 1569 ಪ್ರಕರಣಗಳು PMLA ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದು, 9 ಕೇಸಿನ್ಲಿ ಅಪರಾಧಗಳು ಸಾಬೀತಾಗಿವೆ. ಕಾಂಗ್ರೆಸ್ ನಾಯಕರ ಜತೆಗೆ ಬಿಜೆಪಿ ವಿರೋಧಿಗಳ ಮೇಲೆ ಸುಳ್ಳು ಕೇಸು ದಾಖಲಿಸಲಾಗುತ್ತಿದೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ.
ರಾಹುಲ್ ಗಾಂಧಿ ಇಡಿ ವಿಚಾರಣೆ ಹಾಗೂ ಕಾಂಗ್ರೆಸ್ ಹೋರಾಟ ಕುರಿತು ಸುದ್ದಿಗಾರರ ಜತೆ ಮಾತನಾಡಿದ ರಾಮಲಿಂಗಾರೆಡ್ಡಿ, ರಾಹುಲ್ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಸಂಸದರನ್ನು ತಳ್ಳಾಡಿ ಬಟ್ಟೆ ಹರಿಯಲಾಗಿದೆ. ನಮ್ಮ ಹಕ್ಕುಗಳನ್ನು ಹತ್ತಿಕ್ಕುತ್ತಿರುವ ಬಿಜೆಪಿಗೆ ನಾಚಿಕೆಯಾಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೇಶದಲ್ಲಿ 1977ರಲ್ಲಿ ಅಧಿಕೃತವಾಗಿ ತುರ್ತು ಪರಿಸ್ಥಿತಿ ಘೋಷಣೆಯಾಗಿತ್ತು. ಇಂದು ಮೋದಿ ಅವರ ಕಾಲದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ಅವರ ವಿರುದ್ಧ ಯಾರೂ ಮಾತನಾಡುವಂತಿಲ್ಲ, ಪ್ರತಿಭಟನೆ ಮಾಡುವಂತಿಲ್ಲ. ಮಾತನಾಡಿದವರ ವಿರುದ್ಧ ಐಟಿ, ಇಡಿ ಸಂಸ್ಥೆಗಳನ್ನು ಛೂ ಬಿಡುವುದು, ಸುಳ್ಳು ಪ್ರಕರಣ ದಾಖಲಿಸುತ್ತಾರೆ. ಎಲ್ಲವನ್ನು ಮಾಡುತ್ತಿದ್ದಾರೆ.

ಇವರ ಜಾತಕ ಇಡೀ ದೇಶಕ್ಕೆ ಗೊತ್ತಿದೆ
ಮೋದಿ, ಅಮಿತ್ ಶಾ ಹಾಗೂ ಸರ್ಕಾರ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. 2017ರಲ್ಲಿ ಚುನಾವಣೆ ಸಮಯದಲ್ಲಿ ನರೇಂದ್ರ ಮೋದಿ ಅವರು ವಿರೋಧ ಪಕ್ಷಗಳ ನಾಯಕರ ಜಾತಕ ನನ್ನ ಬಳಿ ಇದೆ ಎಂದು ಹೇಳಿದ್ದರು. ಇವರ ಜಾತಕ ಇಡೀ ದೇಶಕ್ಕೆ ಗೊತ್ತಿದೆ ಎಂದು ವ್ಯಂಗ್ಯ ಮಾಡಿದರು.

ಗುಜರಾತಿನಲ್ಲಿ ಚುನಾವಣೆಗಳು ಸಮೀಪಿಸುತ್ತಿದೆ
ಈ ಚುನಾವಣೆ ಸಮೀಪಿಸುತ್ತಿದಂತೆ ಇಂತಹ ದಾಳಿಗಳು ಸಹಜ. ಇತ್ತೀಚೆಗೆ ಪಂಚರಾಜ್ಯ ಚುನಾವಣೆ ನಡೆಯುವ ಸಂದರ್ಭದಲ್ಲಿ ಪಶ್ಚಿಮ ಬಂಗಾಳ, ತಮಿಳುನಾಡು ರಾಜ್ಯಗಳಲ್ಲಿ ಇಂತಹ ದಾಳಿ ನಡೆದಿದ್ದವು. ಈಗ ಕರ್ನಾಟಕ ಹಾಗೂ ಗುಜರಾತಿನಲ್ಲಿ ಚುನಾವಣೆಗಳು ಸಮೀಪಿಸುತ್ತಿದ್ದು, ಹೀಗಾಗಿ ಕಾಂಗ್ರೆಸ್ ನಾಯಕರ ಆತ್ಮಸ್ಥೈರ್ಯ ಕುಗ್ಗಿಸಲು ಈ ಪ್ರಯತ್ನ ಮಾಡುತ್ತಿದ್ದಾರೆ. ಕಳೆದ ಒಂದು ದಶಕದಲ್ಲಿ 1569 ಪ್ರಕರಣಗಳು PMLA ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, ಅದರಲ್ಲಿ ಕೇವಲ 9 ಪ್ರಕರಣಗಳಲ್ಲಿ ಮಾತ್ರ ಅಪರಾಧಗಳು ಸಾಬೀತಾಗಿದೆ.

ಸ್ವಾತಂತ್ರ್ಯ ಹೋರಾಟಕ್ಕೆ ಪ್ರಾಣ ತ್ಯಾಗ
ಶಿವಸೇನೆ ನಾಯಕ, ಮಹಾರಾಷ್ಟ್ರ ಸಚಿವ ಅನಿಲ್ ಪರಬ್, ಎನ್ಸಿಪಿ ನಾಯಕ, ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್, ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್, ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ, ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಒಟ್ಟು 1569 ಪ್ರಕರಣ ದಾಖಲಿಸಿದ್ದಾರೆ. ಇವರ ರಾಜಕೀಯ ಷಡ್ಯಂತ್ರಗಳಿಗೆ ನಾವು ಹೆದರುವುದಿಲ್ಲ. ಕಾಂಗ್ರೆಸಿಗರು ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಪ್ರಾಣ ತ್ಯಾಗ ಮಾಡಿ, ತಮ್ಮ ಆಸ್ತಿಯನ್ನು ತ್ಯಾಗ ಮಾಡಿದ್ದಾರೆ. ಆರ್ ಎಸ್ಎಸ್ ನವರಂತೆ ನಾವು ಬ್ರಿಟೀಷರ ಜತೆ ಕೈಜೋಡಿಸಿರಲಿಲ್ಲ ಎಂದು ಬಿಜೆಪಿ ವಿರುದ್ಧ ಗುಡುಗಿದ್ದಾರೆ.

ಬೆಂಗಳೂರು ಅಭಿವೃದ್ಧಿ ಎಂದರೆ ಏನು?
ಮುಖ್ಯಮಂತ್ರಿಗಳು ಅಧಿಕಾರಕ್ಕೆ ಬಂದು 9 ತಿಂಗಳಾಗಿದ್ದು, ಇಷ್ಟು ದಿನ ನಗರದ ರೌಂಡ್ಸ್ ಮಾಡಿರಲಿಲ್ಲ. ಆದರೆ ಈಗ ಬಿಬಿಎಂಪಿ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಕ್ಷೇತ್ರಗಳಲ್ಲಿ ಪ್ರದಕ್ಷಿಣೆ ಹಾಕುತ್ತಿದ್ದಾರೆ. ಮುನಿರತ್ನ, ಉದಯ್ ಗರುಡಾಚಾರ್, ಸೋಮಣ್ಣ ಅವರ ಕ್ಷೇತ್ರಗಳಲ್ಲಿ ಪ್ರದಕ್ಷಿಣೆ ಹಾಕುತ್ತಿದ್ದಾರೆ. ಬೆಂಗಳೂರು ಅಭಿವೃದ್ಧಿ ಎಂದರೆ ಬಿಜೆಪಿ ಶಾಸಕರ ಕ್ಷೇತ್ರ ಅಭಿವೃದ್ಧಿ ಎಂದು ಸಿಎಂ ತಿಳಿದಿದ್ದಾರೆ. ಎಲ್ಲ 28 ಕ್ಷೇತ್ರಗಳು ಅಭಿವೃದ್ಧಿಯಾದರೆ ಬೆಂಗಳೂರು ಅಭಿವೃದ್ಧಿಯೇ ಹೊರತು, ಕೇವಲ 15 ಕ್ಷೇತ್ರಗಳು ಅಭಿವೃದ್ಧಿಯಾದರೆ ಬೆಂಗಳೂರು ಅಭಿವೃದ್ಧಿ ಎಂದು ಹೇಳಲು ಸಾಧ್ಯವೇ? ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.












Click it and Unblock the Notifications