ಸಚಿವ ಸ್ಥಾನಕ್ಕಾಗಿ ಇಷ್ಟೆಲ್ಲ ನಡುಬಗ್ಗಿಸಿ ನಿಲ್ಲಬೇಕೇ? ಹೆಚ್ಡಿಕೆ ವಿರುದ್ಧ ಸಿದ್ದರಾಮಯ್ಯ ವ್ಯಂಗ್ಯ
ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿಯೇತರ ಸರ್ಕಾರವಿರುವ ಏಕೈಕ ಕಾರಣಕ್ಕೆ ಕಳೆದ ಎರಡೂವರೆ ವರ್ಷಗಳಿಂದ ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಾಜ್ಯದ ಮೇಲೆ ದ್ರೋಹ ಎಸಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯದ ಪರ ನಿಲ್ಲಬೇಕಾದ ಬಿಜೆಪಿ ಸಂಸದರಿಗೆ ಮೋದಿ ಎದುರು ಬಂದಾಗ ಕೈಕಾಲು ನಡುಗುತ್ತದೆ ಎಂದು ಸಿಎಂ ವ್ಯಂಗ್ಯವಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸುದೀರ್ಘವಾಗಿ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಕನ್ನಡಿಗರು ಬೆವರು ಸುರಿಸಿ ಕಟ್ಟುವ ತೆರಿಗೆಯಲ್ಲಿ ನ್ಯಾಯಯುತ ಪಾಲು ನೀಡದೆ ಕೇಂದ್ರ ಸರ್ಕಾರ ವಂಚಿಸುತ್ತಿದೆ ಎಂದು ದೂರಿದ್ದಾರೆ. ಕರ್ನಾಟಕದ ನೀರಾವರಿ, ರೈಲ್ವೆ, ಹೆದ್ದಾರಿ ಸೇರಿದಂತೆ ಎಲ್ಲ ರೀತಿಯ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನ ಮತ್ತು ಅನುಮತಿಗಳನ್ನು ನೀಡದೆ ರಾಜ್ಯವನ್ನು ಕಡೆಗಣಿಸಲಾಗುತ್ತಿದೆ ಎಂದು ದೂರಿದ್ದಾರೆ.

ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಗೆ ಮತ ನೀಡದಿದ್ದರೆ, ಪ್ರಧಾನಿ ಮೋದಿ ಅವರ ಆಶೀರ್ವಾದದಿಂದ ವಂಚಿತರಾಗುತ್ತೀರಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಬೆದರಿಕೆ ಹಾಕಿದ್ದರು. ಅದೇ ಹೇಳಿಕೆಯನ್ನು ಕೇಂದ್ರ ಸರ್ಕಾರ ಈಗ ಅಕ್ಷರಶಃ ಕಾರ್ಯರೂಪಕ್ಕೆ ತಂದಂತಿದೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.
ಕೇಂದ್ರದಲ್ಲಿ ಬಿಜೆಪಿ ಪಕ್ಷದಿಂದ ಗೆದ್ದು ಸಂಸದರು ಹಾಗೂ ಸಚಿವರಾಗಿರುವವರು ಪ್ರಧಾನಿಗಳ ಎದುರು ಈ ಮಲತಾಯಿ ಧೋರಣೆಯ ವಿರುದ್ಧ ಮಾತನಾಡುವ ಧೈರ್ಯವನ್ನೇ ಕಳೆದುಕೊಂಡಿದ್ದಾರೆ. ಮತ ನೀಡಿದ ಜನರ ಬಗ್ಗೆ ಕಾಳಜಿ ಇಲ್ಲದ ಮೈಕ್ ಮುಂದೆ ಮಾತ್ರ ದ್ವೇಷ ಬಿತ್ತುವ ಭಾಷಣ ಮಾಡುತ್ತಾರೆ. ಆದರೆ ಮೋದಿ ಎದುರು ಬಂದಾಗ ಅವರ ಕೈಕಾಲು ನಡುಗುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.
ಕರ್ನಾಟಕದಲ್ಲಿ ಬಿಜೆಪಿಯೇತರ ಸರ್ಕಾರವಿದೆ ಎನ್ನುವ ಏಕೈಕ ಕಾರಣಕ್ಕೆ ಕೇಂದ್ರದ @narendramodi ಅವರ ಸರ್ಕಾರ ಕಳೆದ ಎರಡೂವರೆ ವರ್ಷಗಳಲ್ಲಿ ಮಾಡಿದ ದ್ರೋಹಗಳು ಒಂದೆರೆಡಲ್ಲ.
— Siddaramaiah (@siddaramaiah) January 21, 2026
ಕನ್ನಡಿಗರು ಬೆವರು ಸುರಿಸಿ ಕಟ್ಟುವ ತೆರಿಗೆಯಲ್ಲಿ ನ್ಯಾಯಯುತ ಪಾಲು ನೀಡದೆ ವಂಚಿಸುತ್ತಿರುವುದಲ್ಲದೆ, ಕರ್ನಾಟಕದ ನೀರಾವರಿ, ರೈಲ್ವೆ, ಹೆದ್ದಾರಿ ಸೇರಿದಂತೆ ಎಲ್ಲಾ… pic.twitter.com/F75rL4ZjBB
ಜೆಡಿಎಸ್ ನಿಲುವು ಅಸಹ್ಯ
ಇದೇ ವೇಳೆ ಕರ್ನಾಟಕದ ಪ್ರಾದೇಶಿಕ ಪಕ್ಷ ಜೆಡಿಎಸ್ ಹಾಗೂ ಅದರ ನಾಯಕರಾದ ಹೆಚ್.ಡಿ.ಕುಮಾರಸ್ವಾಮಿ ನಡೆಗೂ ಸಿದ್ದರಾಮಯ್ಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕನ್ನಡಿಗರಿಗೆ ಇಷ್ಟೆಲ್ಲ ಅನ್ಯಾಯವಾಗುತ್ತಿದ್ದರೂ ಅದರ ವಿರುದ್ಧ ದನಿಯೆತ್ತದೆ, ಕೇವಲ ಸ್ವಹಿತಕ್ಕಾಗಿ ಕೇಂದ್ರ ಸರ್ಕಾರದ ಅಡಿಯಾಳಿನಂತೆ ವರ್ತಿಸುತ್ತಿರುವ ಜೆಡಿಎಸ್ ನಿಲುವು ಅಸಹ್ಯ ಹುಟ್ಟಿಸುವಂತಿದೆ ಎಂದು ಕಿಡಿಕಾರಿದ್ದಾರೆ. ಒಂದು ಸಚಿವ ಸ್ಥಾನಕ್ಕಾಗಿ ಇಷ್ಟೆಲ್ಲಾ ನಡುಬಗ್ಗಿಸಿ ನಿಲ್ಲಬೇಕೇ? ಇದು ನನ್ನೊಬ್ಬನ ಪ್ರಶ್ನೆ ಅಲ್ಲ, ನೊಂದ ಎಲ್ಲ ಕನ್ನಡಿಗರ ಪ್ರಶ್ನೆ ಎಂದು ಸಿಎಂ ಹೇಳಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರ ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಮತ್ತಷ್ಟು ಚರ್ಚೆ ಮತ್ತು ಪ್ರತಿಕ್ರಿಯೆಗಳಿಗೆ ಕಾರಣವಾಗುವ ಸಾಧ್ಯತೆ ಇದೆ.












Click it and Unblock the Notifications