ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ನಿರುದ್ಯೋಗ ದಿನ!
ಬೆಂಗಳೂರು, ಸೆ, 17: ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಪ್ರಯುಕ್ತ ಬೆಂಗಳೂರಿನಲ್ಲಿ ರಾಷ್ಟ್ರೀಯ ನಿರುದ್ಯೋಗ ದಿನ ಆಚರಿಸಲಾಯ್ತು. ದೇಶದ ಯುವ ಸಮೂಹ ಸೇರಿದಂತೆ ಎಲ್ಲಾ ವರ್ಗಗಳನ್ನು ಕಾಂಗ್ರೆಸ್ ಅತೀವ ಸಂಕಷ್ಟಕ್ಕೆದೂಡಿದೆ, ಪ್ರಧಾನಿ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಅತಿ ಹೆಚ್ಚು ನಿರುದ್ಯೋಗ ಸೃಷ್ಟಿ ಮಾಡಿದೆ ಎಂದು ರಾಜ್ಯ ಯುವ ಕಾಂಗ್ರೆಸ್ ಆರೋಪಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ರಾಷ್ಟ್ರೀಯ ನಿರುದ್ಯೋಗ ದಿನವನ್ನಾಗಿ ಆಚರಿಸಿ, ಕೇಂದ್ರ ಸರ್ಕಾರದ ವಿರುದ್ಧ ಯುವ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಯುವ ಜನತೆ, ಕಾರ್ಮಿಕರು, ಉದ್ಯೋಗ ಕಳೆದುಕೊಂಡವರ ಧ್ವನಿಯಾಗಿ ಯುವ ಕಾಂಗ್ರೆಸ್ನಿಂದ ರಾಷ್ಟ್ರೀಯ ನಿರುದ್ಯೋಗ ದಿನವನ್ನು ವಿಭಿನ್ನವಾಗಿ ಆಚರಿಸಿದೆ. ಉದ್ಯೋಗ ಸೃಷ್ಟಿ ಮತ್ತು ಉದ್ಯೋಗ ನಷ್ಟ ತಪ್ಪಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಹಾಕಿದರು.

'ನಿರುದ್ಯೋಗ ದಿನ' ಈ ದೇಶದ ದುರಂತ
ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ. ಮಾತನಾಡಿ, "ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬವನ್ನು ಯುವ ಕಾಂಗ್ರೆಸ್ ದೇಶಾದ್ಯಂತ ನಿರುದ್ಯೋಗ ದಿನವನ್ನಾಗಿ ಆಚರಿಸುತ್ತಿದೆ. ಇದು ಈ ದೇಶದ ದುರಂತವಾಗಿದ್ದು, ಈ ಸರ್ಕಾರದಿಂದ ಜನ ಸಾಮಾನ್ಯರಿಗೆ ನ್ಯಾಯ ದೊರೆಯುವುದಿಲ್ಲ. ವಿರುದ್ಧ ಸ್ವಾತಂತ್ರ್ಯ ಪೂರ್ವದಲ್ಲಿ ನಡೆದ ಕ್ವಿಟ್ ಇಂಡಿಯಾ ಮಾದರಿಯಲ್ಲಿ ಹಾಲಿ ಬಿಜೆಪಿ ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸುತ್ತೇವೆ" ಎಂದರು.

20 ಕೋಟಿ ಉದ್ಯೋಗ ಕಳೆದುಕೊಂಡಿದ್ದಾರೆ!
ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಭರವಸೆಯಂತೆ 2014 ರಿಂದ ಈ ವರೆಗೆ ನಮಗೆ 14 ಕೋಟಿ ಉದ್ಯೋಗ ಸೃಷ್ಟಿಮಾಡಬೇಕಾಗಿತ್ತು. ಆದರೆ ನಾವು 20 ಕೋಟಿ ಉದ್ಯೋಗ ಕಳೆದುಕೊಂಡಿದ್ದೇವೆ. ನಿರುದ್ಯೋಗ ಸಮಸ್ಯೆಯಿಂದ ಬಹಳಷ್ಟು ಮಂದಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ಯುವ ಜನರ ಧ್ವನಿಯಾಗಿ ನಾವು ಹೋರಾಟ ಮಾಡುತ್ತೇವೆ. ಜನರ ಪರಿವಾಗಿ ನಾವು ನಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುತ್ತೇವೆ ಎಂದರು.
ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ಮಾತನಾಡಿ, ದೇಶದಲ್ಲಿ ಶೇ 33 ರಷ್ಟು ಅಪರಾಧ ಪ್ರಕರಣಗಳು ಹೆಚ್ಚಾಗಿದ್ದು, ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚಾಗುತ್ತಿದೆ. ಇದಕ್ಕೆಲ್ಲಾ ನಿರುದ್ಯೋಗ ಸಮಸ್ಯೆಯೇ ಕಾರಣ. ಹೀಗಾಗಿ ನಿರುದ್ಯೋಗದ ವಿರುದ್ಧ ನಮ್ಮ ಹೋರಾಟ ತೀವ್ರಗೊಳಿಸಲಾಗುವುದು ಎಂದು ಹೇಳಿದರು.

ಕಾಗದಗಳಲ್ಲೇ ಉಳಿದ ಮೋದಿ ಆಶ್ವಾಸನೆ!
ಪ್ರತಿವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶ್ವಾಸನೆ ಕಾಗದಗಳಲ್ಲೇ ಉಳಿದಿದೆ. ಯುವ ಸಮೂಹಕ್ಕೆ ಉದ್ಯೋಗ ಒದಗಿಸಲು ಕೇಂದ್ರ ಸರ್ಕಾರ ಯಾವುದೇ ಕಾರ್ಯಕ್ರಮ ಕೈಗೊಂಡಿಲ್ಲ. ಸಣ್ಣ ಮತ್ತು ಮದ್ಯಮ ಉದ್ಯಮ ನೆಲಕಚ್ಚುವಂತೆ ಮಾಡಿದ್ದು, ಇದರ ಪರಿಣಾಮ ಜನ ಜೀವನ ತೀವ್ರ ಬಾಧಿತವಾಗಿದೆ. ದೇಶದ ಎಲ್ಲಾ ಸಂಕಟಗಳಿಗೂ ಮೋದಿ ಸರ್ಕಾರವೇ ಕಾರಣ ಎಂದು ಆಪಾದಿಸಿದರು.
Recommended Video

"ನರೇಂದ್ರ ಮೋದಿ ಉದ್ಯೋಗ ಕೊಡಿ"
ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ ಮತ್ತು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ನೇತೃತ್ವದಲ್ಲಿ ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ವರೆಗೆ ಬೃಹತ್ ಪ್ರತಿಭಟನಾ ಜಾಥ ಆಯೋಜಿಸಲಾಗಿತ್ತು. ಪದವಿಧರರು, ಆಟೋ ಚಾಲಕರು, ಅಸಂಘಟಿತ ಕಾರ್ಮಿಕರ ಪೋಷಾಕು ಧರಿಸಿದ ಯುವ ಕಾರ್ಯಕರ್ತರು "ನರೇಂದ್ರ ಮೋದಿ ಉದ್ಯೋಗ ಕೊಡಿ" ಎಂದು ಘೋಷಣೆ ಕೂಗಿದರು.
ಒಟ್ಟಾರೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ರಾಜ್ಯ ಯುವ ಕಾಂಗ್ರೆಸ್ ಕಾರ್ಯಕರ್ತರು ವಿನೂತನ ಪ್ರತಿಭಟನೆ ನಡೆಸಿದ್ದಾರೆ. ಆ ಮೂಲಕ ನಿರುದ್ಯೋಗ ಸಮಸ್ಯೆ ಕುರಿತು ಕೇಂದ್ರ ಸರ್ಕಾರದ ಗಮನ ಸೆಳೆಯುವ ಪ್ರಯತ್ನವನ್ನು ಮಾಡಿದ್ದಾರೆ.












Click it and Unblock the Notifications