ಬಿಟ್ ಕಾಯಿನ್: ಅಮೆರಿಕಾದಲ್ಲಿ ಪ್ರಧಾನಿ ಮೋದಿಗೆ ಮುಜುಗರ?
ಬೆಂಗಳೂರು, ನ 13: "ಪ್ರಧಾನಿ ನರೇಂದ್ರ ಮೋದಿಯವರು ಮೌನವಾಗಿದ್ದಾರೆ ಎಂದಾಕ್ಷಣ ಬಿಟ್ ಕಾಯಿನ್ ಹಗರಣ ಮುಚ್ಚಿ ಹಾಕುತ್ತಾರೆ ಎಂದರ್ಥವಲ್ಲ, ಅಮೆರಿಕದಲ್ಲಿ ಅವರಿಗೆ ಮುಜುಗರ ಆಗಿದೆ, ಹಾಗಾಗಿ, ಹಗರಣವನ್ನುಅವರು ಗಂಭೀರವಾಗಿ ಪರಿಗಣಿಸಿದ್ದಾರೆ" ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಜನತಾ ಪರ್ವ 1.O ಎರಡನೇ ಹಂತದ ಕಾರ್ಯಗಾರ 'ಜನತಾ ಸಂಗಮ'ದ ವೇಳೆ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಕುಮಾರಸ್ವಾಮಿ, "ಪ್ರಧಾನಿ ಮೋದಿ ಅವರು ಇತ್ತೀಚೆಗೆ ಅಮೆರಿಕಕ್ಕೆ ಭೇಟಿ ನೀಡದೇ ಇದ್ದಿದ್ದರೆ ಬಹುಶಃ ಬಿಟ್ ಕಾಯಿನ್ ಹಗರಣ ಬೆಳಕಿಗೆ ಬರುತ್ತಿರಲಿಲ್ಲ. ಅಮೆರಿಕದಲ್ಲಿ ಅವರಿಗೆ ಆಗಿರುವ ಮುಜುಗರವನ್ನು ಅಲ್ಲಗಳೆಯಲು ಸಾಧ್ಯವಿಲ್ಲ" ಎಂದು ಕುಮಾರಸ್ವಾಮಿ ಅಭಿಪಾಯ ಪಟ್ಟರು.
ಇಬ್ಬರು ಬಿಜೆಪಿ, ಒಬ್ಬರು ಜೆಡಿಎಸ್ ನಾಯಕರ ಕುಟುಂಬ ರಾಜಕಾರಣ: ಎಲ್ಲಾ ಟಿಕೆಟಿಗಾಗಿ!
"ಅಮೆರಿಕಾದಲ್ಲಿ ಪ್ರಧಾನಿ ಅವರಿಗೆ ಕೆಲ ತನಿಖಾ ಸಂಸ್ಥೆಗಳ ಮುಖ್ಯಸ್ಥರು ಬಿಟ್ ಕಾಯಿನ್ ಹಗರಣದ ವಿವರ ನೀಡಿದ್ದಾರೆ. ಅಲ್ಲಿ ಅವರಿಗೆ ಕಸಿವಿಸಿ ಆಗಿರುವುದು ನಿಜ. ಹೀಗಾಗಿ ಪ್ರಧಾನಿ ಅವರು ಮೌನವಾಗಿದ್ದರೂ ಇಡೀ ಹಗರಣವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಬಿಟ್ ಕಾಯನ್ ಪ್ರಕರಣ ಕಳೆದ 15 ದಿನಗಳಿಂದ ಸದ್ದು ಮಾಡುತ್ತಿದೆ" ಎಂದು ಕುಮಾರಸ್ವಾಮಿ ಹೇಳಿದರು.
"ಸಾರ್ವಜನಿಕವಾಗಿ ಆರೋಪ ಪ್ರತ್ಯಾರೋಪ ಎರಡೂ ರಾಷ್ಟ್ರೀಯ ಪಕ್ಷಗಳ ನಡುವೆ ನಡೆಯುತ್ತಿರುವುದನ್ನು ಗಮನಿಸುತ್ತಿದ್ದೇನೆ. ಸೂಕ್ಷ್ಮ ವಿಚಾರಗಳ ಬಗ್ಗೆ ಜವಾಬ್ದಾರಿಯುತವಾಗಿ ಮಾತನಾಡದಂತೆ ನಾಯಕರಿಗೆ ಹೇಳಲು ಬಯಸುತ್ತೇನೆ. ನಾನು ಹಾಗೆ ಮಾತನಾಡಲು ಬಯಸುವುದಿಲ್ಲ" ಎಂದು ಕುಮಾರಸ್ವಾಮಿ ಹೇಳಿದರು.
ಸಹೋದರ ರೇವಣ್ಣನ ಮಗ ಪರಿಷತ್ತಿಗೆ ಸ್ಪರ್ಧೆ: ಕುಮಾರಸ್ವಾಮಿ ಹೇಳಿದ್ದೇನು?
ಶ್ರೀಕಿ ಎಂಬ ಯುವಕನನ್ನು ಎಂಟರಿಂದ ಹತ್ತು ಬಾರಿ ಬಂಧನ ಮಾಡಲಾಗಿದೆ
"58,000 ಕೋಟಿ ರೂ. ಅವ್ಯವಹಾರ ಆಗಿದೆ ಅಂತ ಸುದ್ದಿ ಮಾಧ್ಯಮಗಳಲ್ಲಿ ಬರುತ್ತಿದೆ. ನನ್ನಲ್ಲಿ ಇರುವ ಮಾಹಿತಿ ಪ್ರಕಾರ ಶ್ರೀಕಿ ಎಂಬ ಯುವಕನನ್ನು ಎಂಟರಿಂದ ಹತ್ತು ಬಾರಿ ಬಂಧನ ಮಾಡಲಾಗಿದೆ. 2020ರ ನವೆಂಬರ್ ನಿಂದ ಎಂಟತ್ತು ಬಾರಿ ಪೊಲೀಸರು ಕರೆದುಕೊಂಡು ಅರೆಸ್ಟ್ ಮಾಡಿ ಬಿಡುಗಡೆ ಮಾಡಿದ್ದಾಗಿದೆ. ಇನ್ನು ಹದಿನೈದು ದಿನ ಸಮಯ ಕೊಡಿ, ಈ ಹಗರಣದ ಬಗ್ಗೆ ನಾನೇ ಪೂರ್ಣ ಮಾಹಿತಿ ಕೊಡುತ್ತೇನೆ, ಕಾಂಗ್ರೆಸ್ ತನಿಖೆ ಹಾದಿ ತಪ್ಪಿಸುವುದು ಬೇಡ" ಎಂದು ಕುಮಾರಸ್ವಾಮಿ ಹೇಳಿದರು.
ಜನಧನ್ ಖಾತೆಗಳಿಂದ ಹಣ ಎತ್ತಿರುವುದನ್ನು ಕೂಡ ಹೇಳಿದ್ದೇನೆ
"ನಾನು ಈಗಾಗಲೇ ಜನಧನ್ ಖಾತೆಗಳಿಂದ ಹಣ ಎತ್ತಿರುವುದನ್ನು ಕೂಡ ಹೇಳಿದ್ದೇನೆ. ಈ ಬಗ್ಗೆ ಕೂಡ ಕೇಂದ್ರ ಗಂಭೀರವಾಗಿದೆ ಎನ್ನುವುದು ನನ್ನ ಭಾವನೆ. ಸುಖಾಸುಮ್ಮನೆ ಕಾಂಗ್ರೆಸ್ ನಾಯಕರು ತನಿಖೆ ನಡೆಯುತ್ತಿರುವ ಸಂದರ್ಭದಲ್ಲಿ ಆ ತನಿಖೆಯ ಹಾದಿ ತಪ್ಪಿಸುವುದು ಬೇಡ. ಅದಕ್ಕೆ ಅವರು ಕಾರಣರಾಗುವುದು ಬೇಡ.ನಿಖರವಾಗಿ ಯಾವ ರಾಜಕೀಯ ಮುಖಂಡರಿಗೆ ಅಥವಾ ಅಧಿಕಾರಿಗೆ ಹಣ ವರ್ಗಾವಣೆ ಆಗಿದೆ ಎಂಬ ಬಗ್ಗೆ ಕಾಂಗ್ರೆಸ್ ನಾಯಕರು ದಾಖಲೆ ನೀಡುವುದು ಸೂಕ್ತ. ಆಗ ಜನರಿಗೂ ಸರಿಯಾದ ಮಾಹಿತಿ ಸಿಕ್ಕಿದಂತೆ ಆಗುತ್ತದೆ" ಎಂದು ಕುಮಾರಸ್ವಾಮಿಯವರು ಕಾಂಗ್ರೆಸ್ ನಾಯಕರಿಗೆ ಕಿವಿಮಾತನ್ನು ಹೇಳಿದರು.
ಬಿಟ್ ಕಾಯಿನ್ ಹಗರಣದಿಂದ ಸಾರ್ವಜನಿಕರಲ್ಲೂ ಆತಂಕದ ಜತೆಗೆ ನೂರಾರು ಪ್ರಶ್ನೆ
" ಬಿಟ್ ಕಾಯಿನ್ ಹಗರಣದಿಂದ ಸಾರ್ವಜನಿಕರಲ್ಲೂ ಆತಂಕದ ಜತೆಗೆ ನೂರಾರು ಪ್ರಶ್ನೆಗಳೂ ಉಂಟಾಗಿವೆ. 2016 ರಿಂದಲೇ ಬಿಟ್ ಕಾಯಿನ್ ದಂಧೆ ಪ್ರಾರಂಭ ಆಗಿದೆ ಅಂತ ಮಾಹಿತಿ ಇದೆ. 2018ರ ಫೆಬ್ರವರಿಯಲ್ಲಿ ಯುಬಿ ಸಿಟಿಯಲ್ಲಿ ಹಲ್ಲೆಯ ಘಟನೆ ನಡೆದಿತ್ತು. ಅದು ಕೇವಲ ಇಬ್ಬರು ವ್ಯಕ್ತಿಗಳ ನಡುವಿನ ಸಂಘರ್ಷ ಅಲ್ಲ ಅಂತ ಆಗಲೇ ನಾನು ಹೇಳಿದ್ದೆ. ಆಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಇತ್ತು. ಆ ಘಟನೆ ನಡೆದ ಸಂದರ್ಭದಲ್ಲಿ ಶ್ರೀಕಿ ಕೂಡ ಅಲ್ಲಿಯೇ ಇದ್ದ ಎನ್ನುವುದು ಗೊತ್ತು. ಆಗ ಕಾಂಗ್ರೆಸ್ ಕೈಯ್ಯಲ್ಲೇ ಅಧಿಕಾರ ಇತ್ತಲ್ಲ, ಆಗ ಯಾಕೆ ಶ್ರೀಕಿಯನ್ನು ಬಂಧಿಸಲಿಲ್ಲ" ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.
ನಮ್ಮ ಪಕ್ಷದ್ದು ಕುಟುಂಬ ರಾಜಕಾರಣವಾದರೆ ಬಿಜೆಪಿಯವರದ್ದು ಯಾವ ರಾಜಕಾರಣ
"ನಮ್ಮ ಪಕ್ಷದ್ದು ಕುಟುಂಬ ರಾಜಕಾರಣವಾದರೆ ಬಿಜೆಪಿಯವರದ್ದು ಯಾವ ರಾಜಕಾರಣ? ಶಾಸಕ ಅಪ್ಪಚ್ಚು ರಂಜನ್ ಸಹೋದರ ಎಂಎಲ್ಸಿ, ಜಗದೀಶ್ ಶೆಟ್ಟರ್ ತಮ್ಮ ಕೂಡ ಎಂಎಲ್ಸಿ, ಉದಾಸಿ ಕುಟುಂಬದ ಕಥೆ ಏನು? ಕುಟುಂಬ ರಾಜಕಾರಣ ಅಲ್ಲಿಯೂ ಇಲ್ಲವೇ? ಪಕ್ಷಕ್ಕೆ ಬಂದು ಜನರಿಂದ ಗೆದ್ದವರನ್ನು ಹಣ ಕೊಟ್ಟು ಖರೀದಿ ಮಾಡಿದ್ದು ಯಾವ ಪಕ್ಷ? ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಾಗದೆ ಅನ್ಯ ಪಕ್ಷಗಳಿಂದ ಶಾಸಕರನ್ನು ಸೆಳೆದವರು ಯಾರು? ನಿಮ್ಮ ಸರಕಾರಗಳು ಹೇಗೆ ಬಂದವು ಎನ್ನುವುದನ್ನು ನೀವು ಅರ್ಥ ಮಾಡಿಕೊಂಡು ಮಾತನಾಡಬೇಕು" ಎಂದು ಕುಮಾರಸ್ವಾಮಿಯವರು ಬಿಜೆಪಿ ಮುಖಂಡರಿಗೆ ಎಚ್ಚರಿಕೆಯನ್ನು ನೀಡಿದರು.
Recommended Video