Chandrayaan-3 ಯಶಸ್ವಿ; ವಿಜ್ಞಾನಿಗಳನ್ನ ಅಭಿನಂದಿಸಲು ಬೆಂಗಳೂರಿಗೆ ಬರಲಿದ್ದಾರೆ ಮೋದಿ!
ಬೆಂಗಳೂರು, ಆಗಸ್ಟ್ 24: ಭಾರತದ ತ್ರಿವಿಕ್ರಮ ಸಾಧನೆಗಳಲ್ಲಿ ಒಂದಾಗಿರುವ ಚಂದ್ರಯಾನ-3ರ ಲ್ಯಾಂಡರ್ ವಿಕ್ರಮ್ ನಿನ್ನೆ ಸಂಜೆ ವೇಳೆಗೆ ಚಂದ್ರನ ಮೇಲೆ ಕಾಲಿಟ್ಟಿದೆ. ಚಂದ್ರಯಾನ-3 ಮಿಷನ್ ಯಶಸ್ವಿಯಾದ ಹಿನ್ನೆಲೆ (ಶನಿವಾರ) ಆಗಸ್ಟ್ 26 ರಂದು ಬೆಂಗಳೂರಿನ ಇಸ್ರೊ ಕೇಂದ್ರಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ.
ಸದ್ಯ ದಕ್ಷಿಣಾ ಆಫ್ರಿಕಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಬ್ರಿಕ್ಸ್ ಶೃಂಗಸಭೆಯಲ್ಲಿ ನಿರತರಾಗಿದ್ದಾರೆ. ನಿನ್ನೆ ಚಂದ್ರನ ದಕ್ಷಿಣ ಧ್ರುವದಲ್ಲಿ ವಿಕ್ರಮ್ ಲ್ಯಾಂಡರ್ ಲ್ಯಾಂಡ್ ಆಗುತ್ತಿದ್ದಂತೆ ಜೊಹಾನ್ಸ್ ಬರ್ಗ್ ನಿಂದ ಪ್ರಧಾನಿ ಮೋದಿಯವರು ದೇಶವನ್ನುದ್ದೇಶಿಸಿ ಮಾತನಾಡಿದ್ದರು. ಅಲ್ಲದೆ ಅಲ್ಲಿಂದಲೇ ಇಸ್ರೊ ಅಧ್ಯಕ್ಷ ಸೋಮನಾಥ್ ಅವರಿಗೆ ಖುದ್ದು ದೂರವಾಣಿ ಕರೆ ಮಾಡಿ ಅಭಿನಂದಿಸಿದ್ದರು. ಚಂದ್ರನ ದಕ್ಷಿಣ ಮೇಲ್ಮೈಯಲ್ಲಿ ಚಂದ್ರಯಾನ-3 ರ ಐತಿಹಾಸಿಕ ಸಾಫ್ಟ್ ಲ್ಯಾಂಡಿಂಗ್ ನಂತರ, ಪ್ರಧಾನಿ ಮೋದಿ ಇದನ್ನು "ಹೊಸ ಯುಗದ ಆರಂಭ" ಎಂದು ಶ್ಲಾಘಿಸಿದರು.

ಇನ್ನೂ ಬೆಂಗಳೂರಿಗೆ ಆಗಸ್ಟ್ 26ರಂದು ಸಂಜೆ 5.55ಕ್ಕೆ ಎಚ್ಎಎಲ್ ಏರ್ಪೋರ್ಟ್ಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ, ಸಂಜೆ 6.30ರವರೆಗೆ ಏರ್ಪೋರ್ಟ್ನಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ರಾತ್ರಿ 7 ಗಂಟೆಗೆ ಇಸ್ರೋ ಕೇಂದ್ರ ಕಚೇರಿಗೆ ಭೇಟಿ ನೀಡಿ ರಾತ್ರಿ 8 ಗಂಟೆಯವರೆಗೆ ಇಸ್ರೋ ಕಚೇರಿಯಲ್ಲಿ ವಿಜ್ಞಾನಿಗಳೊಂದಿಗೆ ಪ್ರಧಾನಿ ಮೋದಿ ಚರ್ಚೆ ಮಾಡಲಿದ್ದಾರೆ ನಂತರ ರಾತ್ರಿ 8.35ಕ್ಕೆ ಬೆಂಗಳೂರಿನಿಂದ ದೆಹಲಿಗೆ ನಿರ್ಗಮಿಸಲಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
ಬುಧವಾರ ಚಂದ್ರಯಾನ 3 ಯಶಸ್ವಿಯಾದ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ಇಸ್ರೋ ಸಂಸ್ಥೆಗೆ ಭೇಟಿ ನೀಡಿ, ವಿಜ್ಞಾನಿಗಳ ಜೊತೆಗೆ ಮಾತನಾಡಿ,ಸನ್ಮಾನಿಸಿ ಇತಿಹಾಸಿಕ ಸಾಧನೆ ಮಾಡಿದ ಇಸ್ರೋ ತಂಡಕ್ಕೆ ಅಭಿನಂಧನೆ ಸಲ್ಲಿಸಲಿದ್ದಾರೆ.

ಇನ್ನೂ ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ದೇಶದ ವಿಜ್ಞಾನಿಗಳ ನಿರಂತರ ಪ್ರಯತ್ನ ಮತ್ತು ದಶಕಗಳ ಪರಿಶ್ರಮ ಇಂದು ಫಲನೀಡಿದೆ. ಚಂದ್ರನ ದಕ್ಷಿಣ ದ್ರುವದಲ್ಲಿ ಚಂದ್ರಯಾನ-3 ರ ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಇಳಿಯುವ ಮೂಲಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಸಾಧನೆಯನ್ನು ಜಗತ್ತು ಬೆರಗುಗಣ್ಣಿನಿಂದ ನೋಡುವಂತೆ ಮಾಡಿದೆ. ಪ್ರತಿಯೊಬ್ಬ ಭಾರತೀಯನಿಗೂ ಇದು ಹೆಮ್ಮೆಯ ಕ್ಷಣ. ಇಂಥದ್ದೊಂದು ಅಸಾಧಾರಣ ಸಾಧನೆಗೈದ ನಾಡಿನ ವಿಜ್ಞಾನಿಗಳಿಗೆ ಅಭಿನಂದನೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.












Click it and Unblock the Notifications