PM Modi Bengaluru Visit : ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ
ಬೆಂಗಳೂರು, ನವೆಂಬರ್ 11; ಒಂದು ದಿನದ ಕರ್ನಾಟಕ ಭೇಟಿಗಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದರು. ನಗರದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಸಮಾವೇಶವನ್ನು ಉದ್ದೇಶಿಸಿ ಸಹ ಮಾತನಾಡಲಿದ್ದಾರೆ.
ಶುಕ್ರವಾರ ಬೆಳಗ್ಗೆ 9 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಪ್ರಹ್ಲಾದ್ ಜೋಶಿ ಮುಂತಾದವರು ನರೇಂದ್ರ ಮೋದಿ ಸ್ವಾಗತಿಸಿದರು.

ನರೇಂದ್ರ ಮೋದಿ ಹೆಚ್ಎಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ವಿಧಾನಸೌಧಕ್ಕೆ ತೆರಳಲಿದರು. ಕನಕ ಜಯಂತಿ ದಿನವಾದ ಇಂದು ಕನಕದಾಸ ಪ್ರತಿಮೆಗೆ ಅವರು ಮಾಲಾರ್ಪಣೆ ಮಾಡಲಿದ್ದಾರೆ. ಬಳಿಕ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ತೆರಳಲಿದ್ದಾರೆ.
ವಂದೇ ಭಾರತ್ ರೈಲಿಗೆ ಚಾಲನೆ; ಪ್ರಧಾನಿ ನರೇಂದ್ರ ಮೋದಿ ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ದಕ್ಷಿಣ ಭಾರತದ ಮೊದಲ, ಭಾರತದ 5ನೇ ವಂದೇ ಭಾರತ್ ರೈಲಿಗೆ ಚಾಲನೆ ನೀಡಲಿದ್ದಾರೆ.
ಚೆನ್ನೈ-ಬೆಂಗಳೂರು-ಮೈಸೂರು ನಡುವೆ ಈ ರೈಲು ಸಂಚಾರ ನಡೆಸಲಿದೆ. ವಂದೇ ಭಾರತ್ ಎಕ್ಸ್ಪ್ರೆಸ್ ದೇಶದ ಅತಿ ವೇಗದ ರೈಲು. ಈ ರೈಲು ಸಂಚಾರದಿಂದ ಪ್ರವಾಸೋದ್ಯಮಕ್ಕೆ ಸಹ ಉತ್ತೇಜನ ಸಿಗುವ ನಿರೀಕ್ಷೆ ಇದೆ.
ಬೆಳಗ್ಗೆ 10.20ಕ್ಕೆ ನರೇಂದ್ರ ಮೋದಿ ಕರ್ನಾಟಕ-ಭಾರತ್-ಗೌರವ್ ಕಾಶಿ ದರ್ಶನ ವಿಶೇಷ ರೈಲು ಸೇವೆಗೆ ಚಾಲನೆ ನೀಡಲಿದ್ದಾರೆ.
ಬೆಳಗ್ಗೆ 11.30ಕ್ಕೆ ಪ್ರಧಾನಿ ನರೇಂದ್ರ ಮೋದಿ ದೇವನಹಳ್ಳಿಯಲ್ಲಿರುವ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಲಿದ್ದಾರೆ. ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಲಿದ್ದಾರೆ.












Click it and Unblock the Notifications