ಒಂದು ದೇಶ, ಒಂದು ಗ್ಯಾಸ್ ಗ್ರಿಡ್ ಸಾಕಾರಕ್ಕೆ ಬದ್ಧ: ಪ್ರಧಾನಿ ನರೇಂದ್ರ ಮೋದಿ
ಬೆಂಗಳೂರು, ಜ. 05: ಒಂದು ದೇಶ, ಒಂದು ಗ್ಯಾಸ್ ಗ್ರಿಡ್ ಪರಿಕಲ್ಪನೆಯನ್ನು ಸಾಕಾರಗೊಳಿಸುವ ಮೂಲಕ ದೇಶದಲ್ಲಿ ನೈಸರ್ಗಿಕ ಅನಿಲದ ಬಳಕೆಯ ಪ್ರಮಾಣವನ್ನು ಗಣನೀಯವಾಗಿ ಹೆಚ್ಚಿಸಲು ಭಾರತ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ್ ಪೈಪ್ಲೈನ್ ಲೋಕಾರ್ಪಣೆ ಮಾಡಿ ಮಾತನಾಡಿದರು.
ಭಾರತ ಸರ್ಕಾರವು ಇಂಧನ ಪೂರೈಕೆಗೆ ಒಂದು ಸಮಗ್ರ ಯೋಜನೆಯನ್ನು ರೂಪಿಸಿದ್ದು, ಪರಿಸರ ಸ್ನೇಹಿ ಇಂಧನ ಬಳಕೆಗೆ ಆದ್ಯತೆ ನೀಡುತ್ತಿದೆ. ಆ ಮೂಲಕ ಜನ ಸ್ನೇಹಿ ಹಾಗೂ ಉದ್ಯಮ ಸ್ನೇಹಿ ವಾತಾವರಣ ನಿರ್ಮಿಸಲು ಶ್ರಮಿಸುತ್ತಿದೆ ಎಂದು ಪ್ರಧಾನಿ ಮೋದಿ ಭರವಸೆ ನೀಡಿದರು.
1987 ರಿಂದ 2014 ರ ಅವಧಿಯಲ್ಲಿ ದೇಶದಲ್ಲಿ 15 ಸಾವಿರ ಕಿ.ಮೀ. ನೈಸರ್ಗಿಕ ಅನಿಲ ಪೈಪ್ ಲೈನ್ ಅಳವಡಿಸಲಾಗಿತ್ತು. ಆದರೆ ಕಳೆದ ಆರು ವರ್ಷಗಳ ಅವಧಿಯಲ್ಲಿ 16 ಸಾವಿರ ಕಿ.ಮೀ. ನಷ್ಟು ನೈಸರ್ಗಿಕ ಅನಿಲ ಪೈಪ್ ಲೈನ್ ಅಳವಡಿಸುವ ಹೊಸ ಕಾಮಗಾರಿಗಳಿಗೆ ಚಾಲನೆ ನೀಡಿದ್ದು, ಮುಂದಿನ ನಾಲ್ಕಾರು ವರ್ಷಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ಪ್ರಧಾನಿ ಮೋದಿ ತಿಳಿಸಿದರು.
ಸಾರಿಗೆ ಸಂಪರ್ಕ ಹಾಗೂ ಪರಿಸರ ಸ್ನೇಹಿ ಇಂಧನ ವಲಯದಲ್ಲಿ ಪ್ರಗತಿ ಸಾಧಿಸಿದ ದೇಶಗಳು ಅಭಿವೃದ್ಧಿ ನಕ್ಷೆಯಲ್ಲಿ ಮುಂಚೂಣಿಯಲ್ಲಿರುತ್ತವೆ. ಭಾರತವೂ ಅಭಿವೃದ್ಧಿಯ ಮುಂಚೂಣಿಯಲ್ಲಿರಲು ಎಲ್ಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.

ಒಂದು ದೇಶ-ಒಂದು ಗ್ಯಾಸ್ ಗ್ರಿಡ್
ಒಂದು ದೇಶ ಒಂದು ಗ್ಯಾಸ್ ಗ್ರಿಡ್ ಪರಿಕಲ್ಪನೆಯು ಪೂರ್ಣಪ್ರಮಾಣದಲ್ಲಿ ಸಾಕಾರಗೊಂಡಾಗ ರಸಗೊಬ್ಬರ, ರಾಸಾಯನಿಕ, ಪೆಟ್ರೋಲಿಯಂ ಮತ್ತು ಇಂಧನ ವಲಯಗಳಿಗೆ ಹೆಚ್ಚಿನ ಲಾಭವಾಗಲಿದೆ. ಬಡ, ಮಧ್ಯಮ ವರ್ಗದ ಜನರು ಮತ್ತು ಕೈಗಾರಿಕೋದ್ಯಮಿಗಳಿಗೆ ಅನುಕೂಲವಾಗಲಿದೆ. ಅಲ್ಲದೆ ಸಾವಿರಾರು ಕೋಟಿ ವಿದೇಶಿ ವಿನಿಮಯ ಮೊತ್ತ ಉಳಿತಾಯವಾಗಲಿದೆ ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟಿದ್ದಾರೆ.
ದೇಶದಲ್ಲಿ ನೈಸರ್ಗಿಕ ಅನಿಲ ಬಳಕೆ ಶೇ 6.3 ರಷ್ಟಿದ್ದು, 2030ರ ವೇಳೆಗೆ ಇದನ್ನು ಶೇ. 15ಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ. ಕೊಚ್ಚಿ-ಮಂಗಳೂರು ಪೈಪ್ಲೈನ್ ನಿಂದ ಈ ಭಾಗದ ಕೈಗಾರಿಕೋದ್ಯಮಗಳಿಗೆ ಅನುಕೂಲವಾಗಲಿದೆ. ಜೊತೆಗೆ ವಾಹನಗಳಲ್ಲಿ ಸಿಎನ್ಜಿ ಬಳಕೆಗೂ ಉತ್ತೇಜನ ದೊರೆಯಲಿದೆ. ಈ ವ್ಯಾಪ್ತಿಯಲ್ಲಿ ಸುಮಾರು 700 ಸಿಎನ್ಜಿ ಸ್ಟೇಷನ್ಗಳನ್ನು ಸ್ಥಾಪಿಸಲಾಗುವುದು ಎಂದು ಪ್ರಧಾನಿ ಮೋದಿ ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ದ.ಕ., ಉಡುಪಿ ಜಿಲ್ಲೆಗಳಿಗೆ
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಪೈಪ್ ಲೈನ್ ಯೋಜನೆಯಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಭಾಗದಲ್ಲಿ 4 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಪೈಪ್ ಮೂಲಕ ನೈಸರ್ಗಿಕ ಅನಿಲ ಪೂರೈಸಲಾಗುವುದು, ಅಲ್ಲದೆ, ವಾಣಿಜ್ಯ ಚಟುವಟಿಕೆಗಳಿಗೆ, ಉದ್ದಿಮೆಗಳಿಗೆ, ವಿಶೇಷವಾಗಿ ಎಂ.ಸಿ.ಎಫ್ ಹಾಗೂ ಎಂ.ಆರ್. ಪಿ.ಎಲ್ಗಳಿಗೆ ಅನುಕೂಲವಾಗಲಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಧಾಬೋಲ್-ಬೆಂಗಳೂರು ಅನಿಲ್ ಪೈಪ್ ಲೈನ್ ಯೋಜನೆ ಈಗಾಗಲೇ ಕಾರ್ಯಗತವಾಗಿದ್ದು, ಬೆಂಗಳೂರು ನಗರವೊಂದರಲ್ಲೇ 25 ಸಾವಿರ ಮನೆಗಳಿಗೆ ಪೈಪ್ ಮೂಲಕ ನೈಸರ್ಗಿಕ ಅನಿಲ ಪೂರೈಸಲಾಗುತ್ತಿದೆ. ಸುಮಾರು 2.8 ಲಕ್ಷಕ್ಕೂ ಹೆಚ್ಚು ಜನರು ನೈಸರ್ಗಿಕ ಅನಿಲ ಸಂಪರ್ಕ ಕೋರಿ ನೋಂದಾಯಿಸಿಕೊಂಡಿದ್ದು, 1.68 ಲಕ್ಷ ಮನೆಗಳಲ್ಲಿ ಅಗತ್ಯ ಸೌಕರ್ಯ ಕಲ್ಪಿಸಲಾಗಿದೆ.

ಮತ್ತಷ್ಟು ನಗರಗಳಿಗೆ
ಮುಂದಿನ ದಿನಗಳಲ್ಲಿ ರಾಜ್ಯದ ಪ್ರಮುಖ ನಗರಗಳಲ್ಲಿ ನೈಸರ್ಗಿಕ ಅನಿಲ ಬಳಕೆ ಪ್ರಮಾಣ ಹೆಚ್ಚಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ವ್ಯಕ್ತಪಡಿಸಿದ್ದಾರೆ. ಹಲವು ಸವಾಲುಗಳ ನಡುವೆಯೂ ಯೋಜನೆಯನ್ನು ಪೂರ್ಣಗೊಳಿಸಿದ ಪ್ರಧಾನಿ ಮೋದಿ ಅವರು ದೃಢಸಂಕಲ್ಪ ಹಿಂದಿದ್ದರು ಎಂದು ಯಡಿಯೂರಪ್ಪ ಹೇಳಿದ್ದಾರೆ.
ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್ ಅವರು ಮಾತನಾಡಿ, ಹಲವು ಅಡೆತಡೆಗಳ ನಡುವೆಯೂ ಪೂರ್ಣಗೊಂಡ ಈ ಯೋಜನೆಯಿಂದ ಆರ್ಥಿಕ ಅಭಿವೃದ್ಧಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.
Recommended Video

ಅನಿಲ ಬಳಕೆ ಹೆಚ್ಚಳ
ಕೇಂದ್ರ ಪೆಟ್ರೋಲಿಯಂ ಮತ್ತು ಉಕ್ಕು ಸಚಿವ ಧರ್ಮೇಂದ್ರ ಪ್ರಧಾನ್ ಅವರು ಮಾತನಾಡಿ, ಭಾರತ ಸರ್ಕಾರವು ದೇಶದಲ್ಲಿ ನೈಸರ್ಗಿಕ ಅನಿಲ ಪೈಪ್ ಲೈನ್ ವ್ಯಾಪ್ತಿಯನ್ನು ದ್ವಿಗುಣ ಗೊಳಿಸುವ ಮೂಲಕ, ನೈಸರ್ಗಿಕ ಅನಿಲ ಬಳಕೆಯನ್ನು ಶೇ. 6.3 ರಿಂದ ಶೇ. 15ಕ್ಕೆ ಹೆಚ್ಚಿಸಲು ಉದ್ದೇಶಿಸಿದೆ ಎಂದು ನುಡಿದರು.
ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್, ಕರ್ನಾಟಕ ರಾಜ್ಯಪಾಲ ವಜುಭಾಯಿ ವಾಲಾ, ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ, ಕೇಂದ್ರ ವಿದೇಶಾಂಗ ವ್ಯವಹಾರ ಖಾತೆ ರಾಜ್ಯ ಸಚಿವ ವಿ. ಮುರಳೀಧರನ್ ಮತ್ತು ಇತರ ಗಣ್ಯರು ಈ ವರ್ಚುವಲ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.












Click it and Unblock the Notifications