100 ಕೋಟಿ ಲಸಿಕೆ ಡೋಸ್ ಸಂಭ್ರಮಕ್ಕೆ ಕಾಂಗ್ರೆಸ್ ಪ್ರತಿಕ್ರಿಯೆ ಕೊಟ್ಟ ಹರಿಪ್ರಸಾದ್
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಕೊರೊನಾ ಲಸಿಕೆ 100 ಕೋಟಿ ಡೋಸ್ ಕೊಟ್ಟಿದ್ದೇವೆ ಎಂದು ಸಂಭ್ರವಿಸುವ ಬದಲು, ಕೊರೊನಾ ಹೆಸರಿನಲ್ಲಿ ದೇಶದಾದ್ಯಂತ 40 ಲಕ್ಷಕ್ಕೂ ಹೆಚ್ಚು ಜನ ಸತ್ತಿರುವುದಕ್ಕೆ ಕ್ಷಮೆ ಯಾಚಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಒತ್ತಾಯಿಸಿದರು.
100 ಕೋಟಿ ಲಸಿಕೆ ಕೊಟ್ಟಿದ್ದೇವೆ ಎಂದು ಸಂಭ್ರಮಿಸುತ್ತಾ ಕೇಂದ್ರ ಸರ್ಕಾರ ಪ್ರಚಾರ ಪಡೆಯುತ್ತಿದೆ. ಇದರಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಎಷ್ಟು ಲಸಿಕೆ, ಖಾಸಗಿ ಆಸ್ಪತ್ರೆಗಳಲ್ಲಿ ಎಷ್ಟು ಲಸಿಕೆ ನೀಡಲಾಗಿದೆ ಎಂಬುದನ್ನು ಜನರಿಗೆ ತಿಳಿಸಲಿ ಎಂದು ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಸವಾಲು ಹಾಕಿದರು.
ಭಾರತದಲ್ಲಿ 100 ಕೋಟಿ ಡೋಸ್ ಲಸಿಕೆ ವಿತರಣೆ: ಹೇಗಿದೆ ನಾಯಕರ ಪ್ರತಿಕ್ರಿಯೆ?
ಇಂದು ದೇಶದ ಪ್ರಧಾನಮಂತ್ರಿಗಳು ಹಾಗೂ ಆರೋಗ್ಯ ಸಚಿವರು 100 ಕೋಟಿ ಲಸಿಕೆ ನೀಡಿದ್ದೇವೆ ಎಂದು ಸಂಭ್ರಮಿಸುತ್ತಿದ್ದಾರೆ. 100 ಕೋಟಿ ಲಸಿಕೆ ವಿಚಾರ ಸಂಭ್ರಮಿಸುವ ವಿಚಾರವಲ್ಲ. ಪ್ರತಿಯೊಬ್ಬ ನಾಗರಿಕನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಕೋವಿಡ್ ಮಹಾಮಾರಿ ಸಂಕಟ ತಟ್ಟಿದೆ. ಈ ಮಧ್ಯೆ ಎಷ್ಟು ಜನ ಸತ್ತಿದ್ದಾರೆ ಎಂಬ ನೈಜ ಅಂಕಿ ಅಂಶ ಸರ್ಕಾರ ನೀಡುತ್ತಿಲ್ಲ. ಕೋವಿಡ್ ಬಂದಾಗ ಅವೈಜ್ಞಾನಿಕವಾಗಿ ಗಂಟೆ, ತಟ್ಟೆ ಬಾರಿಸಿದರೆ ಹೊರತು, ಅದನ್ನು ಯಾವ ರೀತಿ ಎದುರಿಸಬೇಕು ಎಂದು ಹೇಳುವ ಪ್ರಯತ್ನ ಮಾಡಲಿಲ್ಲ. ಆರೋಗ್ಯ ಸಚಿವರು ಇಂದು ನೀಡಿರುವ ಮಾಹಿತಿಯಲ್ಲಿ ಈ 100 ಕೋಟಿ ಲಸಿಕೆ ಕೊಟ್ಟಿರೋದು 1 ಲಸಿಕೆ ಮಾತ್ರ. ಅದಕ್ಕೆ ಇವರು ಸಂಭ್ರಮಿಸುತ್ತಿದ್ದಾರೆ. 70 ಕೋಟಿ ಜನರಿಗೆ ಒಂದು ಡೋಸ್, ಕೇವಲ 20-30 ಕೋಟಿ ಜನರಿಗೆ 2 ಡೋಸ್ ಲಸಿಕೆ ನೀಡಲಾಗಿದೆ. ಇಡೀ ವಿಶ್ವದಲ್ಲೇ ಲಸಿಕೆ ಉತ್ಪಾದನೆಯಲ್ಲಿ ಅಗ್ರಸ್ಥಾನ ಪಡೆದಿರುವ ಭಾರತದಲ್ಲಿ ಇಷ್ಟು ದಿನಗಳಲ್ಲಿ ಕೇವಲ ಒಂದು ಡೋಸ್ ಮಾತ್ರ ನೀಡುತ್ತಿರುವುದು ಸಂಭ್ರಮಿಸುವ ವಿಚಾರವೇ?' ಎಂದು ಪ್ರಶ್ನಿಸಿದರು.
'ಬೇರೆ ರಾಷ್ಟ್ರಗಳಲ್ಲಿ ಈಗಾಗಲೇ ಎರಡು ಡೋಸ್ಗಳನ್ನು ಪೂರ್ಣಗೊಳಿಸಿ ಬೂಸ್ಟರ್ ಡೋಸ್ ನೀಡಲಾಗುತ್ತಿದೆ. ಆದರೆ ಈ ಬಗ್ಗೆ ಪ್ರಧಾನಮಂತ್ರಿಗಳು ಮಾತನಾಡುತ್ತಿಲ್ಲ. ಇಂತಹ ವಿಚಾರವಾಗಿ ಅವರು ಮಾತನಾಡಿ ಜನರಿಗೆ ಧೈರ್ಯ ತುಂಬಬೇಕಾಗಿದೆ. ಎರಡು ವರ್ಷಗಳಿಂದ ಇವರು ಹೇಳುತ್ತಿರುವುದು 100 ಕೋಟಿ. ಕೇವಲ ಪದಪುಂಜಗಳ ಪ್ರಚಾರ ಯಾವುದೇ ಪ್ರಯೋಜನವಿಲ್ಲ. ಅಮೆರಿಕ 85 ದಿನಗಳಲ್ಲಿ ಮೊದಲ ಡೋಸ್ ಆಗಿ, ನಂತರ ಎರಡನೇ ಡೋಸ್ ಆಗಿ, ಈಗ ಬೂಸ್ಟರ್ ಡೋಸ್ ನೀಡುತ್ತಿದ್ದಾರೆ. ಕೋವಿಡ್ ಸಮಯದಲ್ಲಿ ಲಸಿಕೆ ಸಿಗದ ಸಮಯದಲ್ಲಿ ಜನ ಪ್ರಾಣ ಭಯದಲ್ಲಿ ಖಾಸಗಿ ಆಸ್ಪತ್ರೆಯಲ್ಲಿ 1500 ರಿಂದ 4000 ರೂ. ವರೆಗೂ ಹಣ ಪಾವತಿಸಿ ಹೆಚ್ಚಾಗಿ ಲಸಿಕೆ ಪಡೆದಿದ್ದಾರೆ. ಹೀಗಾಗಿ ಪ್ರಧಾನಮಂತ್ರಿಗಳು ಸಂಭ್ರಮಿಸುವ ಬದಲು ದೇಶದ ಜನರಲ್ಲಿ ಕ್ಷಮೆ ಕೋರಬೇಕು' ಎಂದರು.
ಕೇವಲ ಅಭಿನಂದನೆ ಸಾಲದು:
ಪ್ರಧಾನಿ ಮೋದಿ ಅವರು ಆರೋಗ್ಯ ಕಾರ್ಯಕರ್ತರಿಗೆ ಅಭಿನಂದಿಸಿದ್ದು ಸಂತೋಷ. ಆದರೆ, ಕೇಂದ್ರ ಸರ್ಕಾರ ಅಂಗನವಾಡಿ ಕಾರ್ಯಕರ್ತರು, ನರ್ಸ್ ಸಿಬ್ಬಂದಿ, ವೈದ್ಯರು, ಆರೋಗ್ಯ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರೆ ಸಾಲದು. ಕೋವಿಡ್ ಬಂದಾಗ ಇವರಿಗೆ ಸರಿಯಾದ ರೀತಿಯಲ್ಲಿ ಭತ್ಯೆ, ಇತರೆ ಅನುಕೂಲ ನೀಡುವುದಾಗಿ ಹೇಳಿತ್ತು. ಆದರೆ ಈವರೆಗೂ ಆ ಬಗ್ಗೆ ಚಕಾರ ಎತ್ತಿಲ್ಲ. ಕೇವಲ ಸುಳ್ಳು ಹೇಳಿ ಪ್ರಚಾರ ಗಿಟ್ಟಿಸಿಕೊಂಡರೆ ಪ್ರಯೋಜನೆವಿಲ್ಲ ಎಂದರು.
ಇನ್ನು ಕಾಂಗ್ರೆಸ್ ಅಪಪ್ರಚಾರ ಮಾಡಿದ್ದಕ್ಕೆ ಲಸಿಕೆ ವಿಚಾರದಲ್ಲಿ ಹಿನ್ನಡೆಯಾಗಿದೆ ಎಂಬ ಸಿ.ಟಿ ರವಿ ಅವರ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 'ಕುಣಿಯಲಾಗದವರು ನೆಲ ಡೊಂಕು ಎನ್ನುವ ಹಾಗೆ, ಕೋವಿಡ್ ಆರಂಭದಲ್ಲಿ ಸಗಣಿ ಬಳಿದುಕೊಳ್ಳಿ, ಗಂಜಲ ಕುಡಿಯಿರಿ, ಹಪ್ಪಳ ತಿನ್ನಿ, ಗಂಟೆ ಬಾರಿಸಿ, ದೀಪ ಹಚ್ಚಿ ಎಂದ ನೀವು ಎಂತಹ ಅವಿವೇಕಿಗಳು ಎಂದು ಇಡೀ ದೇಶ ನೋಡಿದೆ. ಭಾರತ ಸರ್ಕಾರದ ಈ ನಿರ್ಧಾರವನ್ನು ನೋಡಿ ಇಡೀ ಜಗತ್ತು ನಕ್ಕಿದೆ. ಮೋದಿ ಅವರ ಸ್ನೇಹಿತರಾದ ಬ್ರೆಜಿಲ್ ಅಧ್ಯಕ್ಷರು ಕೋವಿಡ್ ಸಮಯದಲ್ಲಿ ಇವರು ಮಾಡಿದ ಕ್ರಮಗಳು ಮಾನವೀಯತೆ ಮೇಲೆ ನಡೆದಿರುವ ದೌರ್ಜನ್ಯ ಎಂದು ಹೇಳಿದ್ದಾರೆ. ಹೀಗಾಗಿ ರವಿ ಅವರು ಭಾರತ ಮತ್ತು ಪಾಕಿಸ್ತಾನದ ಬಗ್ಗೆ ಮಾತ್ರ ಮಾತನಾಡಿಕೊಂಡಿರಲಿ. ಈ ವಿಚಾರವನ್ನು ಪ್ರಧಾನಿ, ಆರೋಗ್ಯ ಸಚಿವರೇ ಮಾತನಾಡಲು ಬಿಡಲಿ' ಎಂದು ತಿರುಗೇಟು ಕೊಟ್ಟರು.
'ಬಿಜೆಪಿ ಭ್ರಷ್ಟಾಚಾರದಲ್ಲಿ ಮುಳುಗಿದೆ. ಭ್ರಷ್ಟರನ್ನು ಬಿಡುವುದಿಲ್ಲ ಎಂದು ಇತ್ತೀಚೆಗಷ್ಟೇ ಮತ್ತೆ ಪ್ರಚಾರ ಪಡೆದಿದ್ದಾರೆ. ಆದರೆ ನೀರವ್ ಮೋದಿ, ಚೋಕ್ಸಿ, ವಿಜಯ್ ಮಲ್ಯ ಅವರೆಲ್ಲ ವಿದೇಶದಲ್ಲಿ ಆರಾಮಾಗಿದ್ದಾರೆ. ತಮ್ಮನ್ನು ತಾವು ವಿಶ್ವಗುರು ಎಂದು ಕರೆದುಕೊಳ್ಳುವ ಮೋದಿ ಅವರು ಯಾಕೆ ಅವರನ್ನು ಕರೆತರುತ್ತಿಲ್ಲ. ಇವೆಲ್ಲವೂ ಪ್ರಚಾರ ನಡೆಸಲು ಹೇಳುತ್ತಾರೆಯೇ ಹೊರತು, ಜನರನ್ನು ಕಾಯುವ ವಿಚಾರವಾಗಿ ಯಾವ ಕ್ರಮವೂ ಇಲ್ಲ' ಎಂದರು.
ರಾಹುಲ್ ಗಾಂಧಿ ಅವರ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 'ಈ ವಿಚಾರವಾಗಿ ಹಾನಗಲ್ ಹಾಗೂ ಸಿಂದಗಿ ಉಪಚುನಾವಣೆ ಪ್ರಚಾರದ ಸಂದರ್ಭದಲ್ಲಿ ವಿವರವಾಗಿ ಉತ್ತರಿಸುತ್ತೇನೆ. ಇತ್ತೀಚೆಗೆ ಅದಾನಿ ಪೋರ್ಟ್ ನಲ್ಲಿ 80 ಟನ್ ಹೆರಾಯಿನ್ ಸಿಕ್ಕಿತಲ್ಲ, ಅದರ ಡೀಲರ್ ಯಾರು? ಎಂಬುದಕ್ಕೆ ಕಟೀಲ್ ಅವರು ಮೊದಲು ಉತ್ತರ ನೀಡಲಿ. ಅವರು ಉತ್ತರ ನೀಡಿದ್ದೇ ಆದಲ್ಲಿ ನಾನು ರಾಜಕೀಯ ಬಿಡುತ್ತೇನೆ. ಈ ವಿಚಾರ ಬೇರೆಡೆಗೆ ಸೆಳೆಯಲು ಒಂದೆರಡು ಗ್ರಾಮ್ ಡ್ರಗ್ಸ್ ಇಟ್ಟುಕೊಂಡಿದ್ದ ಹುಡುಗನನ್ನು ಬಂಧಿಸಿದ್ದಾರೆ. ಬಿಜೆಪಿಯವರಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದಿನಬೆಳಗಾಗುವುದರಲ್ಲಿ ಸರ್ಕಾರ, ನಾಯಕರು ಬಡಲಾಗುತ್ತಾರೆ ಎಂಬ ಅರಿವಿಲ್ಲ. ತಾವು 500 ವರ್ಷ ಬದುಕುವ ಭ್ರಮೆಯಲ್ಲಿದ್ದಾರೆ. ಜನ ಇವರಿಗೆ ಆದಷ್ಟು ಬೇಗ ಗಂಟೆ, ತಟ್ಟೆ ಬಾರಿಸಲಿದ್ದಾರೆ' ಎಂದು ಎಚ್ಚರಿಸಿದರು.
Recommended Video