ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರ ಹಲ್ಲೆ: ಕಾಂಗ್ರೆಸ್ ಸರ್ಕಾರಕ್ಕೆ ವಿಜಯೇಂದ್ರ ಎಚ್ಚರಿಕೆ
ಬೆಂಗಳೂರು, ಆಗಸ್ಟ್ 26: ಕೆಪಿಎಸ್ಸಿ ಪರೀಕ್ಷೆಯನ್ನು ಮುಂದೂಡಬೇಕು ಎಂದು ಕೋರಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳನ್ನು ವಿಜಯನಗರ ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಈ ನಡೆಯನ್ನು ಖಂಡಿಸಿ ವಿಜಯನಗರ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.
ಈ ಘಟನೆಯ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪ್ರತಿಕ್ರಿಯಸಿದ್ದು, ಕಾಂಗ್ರೆಸ್ ಸರ್ಕಾರದಲ್ಲಿ ಪ್ರಜಾಸತ್ತಾತ್ಮಕ ರೀತಿಯಲ್ಲಿ ಪ್ರತಿಭಟಿಸುವುದನ್ನು ಹತ್ತಿಕ್ಕುವ ಮೂಲಕ ದೌರ್ಜನ್ಯ ಮೆರೆಯಲು ಪೊಲೀಸ್ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳುವ ಪ್ರವೃತ್ತಿ ಹೆಚ್ಚುತ್ತಿದೆ ಎಂದು ಆರೋಪಿಸಿದರು.

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಬಿ.ವೈ ವಿಜಯೇಂದ್ರ, ಮೈಸೂರು ಮುಡಾ ಹಗರಣದ ಚಳುವಳಿಗಳನ್ನು ಹತ್ತಿಕ್ಕಲು ಇಂಥಾ ಪ್ರಯತ್ನ ನಡೆಸಿದ್ದ ಸರ್ಕಾರ ಇದೀಗ ಕೆ.ಪಿ.ಎಸ್.ಸಿ ಯ ಪರೀಕ್ಷಾರ್ಥಿಗಳಿಗೆ ಅನಾನುಕೂಲ ಉಂಟುಮಾಡುವ ಏಕ ಪಕ್ಷೀಯ ನಿರ್ಧಾರದ ವಿರುದ್ಧ ಹಾಗೂ ಪರೀಕ್ಷಾರ್ಥಿಗಳ ಬಂಧನ ಪ್ರಶ್ನಿಸಿ ಶಾಂತಿಯುತವಾಗಿ ಪ್ರತಿಭಟಿಸಲು ತೆರಳಿದ್ದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ಮೇಲೆ ಪೊಲೀಸ್ ಕ್ರೌರ್ಯ ಮೆರೆದು ಪ್ರಹಾರ ನಡೆಸಿರುವುದು ಅಮಾನುಷ ವರ್ತನೆಯಾಗಿದೆ. ಇದನ್ನು ಕರ್ನಾಟಕ ಬಿಜೆಪಿಯನ್ನು ಅತ್ಯುಗ್ರವಾಗಿ ಖಂಡಿಸುತ್ತದೆ ಎಂದಿದ್ದಾರೆ.
ನ್ಯಾಯಯುತ ಹೋರಾಟಗಳನ್ನು ಪೊಲೀಸ್ ವ್ಯವಸ್ಥೆಯ ಮೂಲಕ ಹತ್ತಿಕ್ಕುವ ಸರ್ವಾಧಿಕಾರಿ ಧೋರಣೆಯನ್ನು ಕಾಂಗ್ರೆಸ್ ಮುಂದುವರೆಸಿದರೆ ಜನಾಂದೋಲನದ ಮೂಲಕ ಸರ್ಕಾರಕ್ಕೆ ತಕ್ಕ ಉತ್ತರ ನೀಡಬೇಕಾಗುತ್ತದೆ ಎಂದು ಎಚ್ಚರಿಸ ಬಯಸುತ್ತೇನೆ. ಅಮಾಯಕ ಯುವ ಕಾರ್ಯಕರ್ತರ ಮೇಲೆ ನಿರ್ದಯವಾಗಿ ಬಲಪ್ರಯೋಗ ಮಾಡಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಈ ಕೂಡಲೇ ಕ್ರಮ ಜರುಗಿಸಿ ಎಂದು ಒತ್ತಾಯಿಸುತ್ತೇನೆ ಎಂದು ಬಿ.ವೈ ವಿಜಯೇಂದ್ರ ಆಗ್ರಹಿಸಿದ್ದಾರೆ.












Click it and Unblock the Notifications