ತನಿಖೆ ನಡೆಸಲು ಪೊಲೀಸರು ನಿರಾಕರಿಸುವಂತಿಲ್ಲ- ಹೈಕೋರ್ಟ್
ಬೆಂಗಳೂರು ಮೇ 18. ಮ್ಯಾಜಿಸ್ಟ್ರೇಟ್ ಒಮ್ಮೆ ಅಪರಾಧ ದಂಡ ಸಂಹಿತೆ ಸೆಕ್ಷನ್ 200 ಅಡಿ ದೂರು ಸ್ವೀಕರಿಸಿದರೆ ಆನಂತರ ಪೊಲೀಸರು ತನಿಖೆ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ.
ಬೆಂಗಳೂರಿನ ಅಶ್ವಿನಿ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಈ ಆದೇಶವನ್ನು ನೀಡಿದೆ.
ತನಿಖೆ ನಡೆಸಲು ಪೊಲೀಸರು ನಿರಾಕರಿಸಿ 2021ರ ಆ.26ರಂದು ನೀಡಿದ್ದ ಹಿಂಬರಹವನ್ನು ರದ್ದುಗೊಳಿಸಿರುವ ನ್ಯಾಯಪೀಠ, ತನಿಖೆ ನಡೆಸಿ 9ನೇ ಹೆಚ್ಚುವರಿ ಮೆಟ್ರೊಪಾಲಿಟನ್ ನ್ಯಾಯಾಲಯದ ಮುಂದೆ 2022ರ ಜು.14ಕ್ಕೆ ಅಂತಿಮ ವರದಿಯನ್ನು ಸಲ್ಲಿಸುವಂತೆ ಆದೇಶಿಸಿದೆ.
ಕೋರ್ಟ್ ಏನು ಹೇಳಿದೆ?
ದಾಖಲೆಗಳನ್ನು ಪರಿಶೀಲಿಸಿ, ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಪೀಠ "ಪೊಲೀಸರು ತನಿಖೆ ನಡೆಸಲು ನಿರಾಕರಿಸಿರುವುದು ಮತ್ತು ದೂರನ್ನು ವಾಪಸ್ ಮಾಡಿರುವುದು, ಕೋರ್ಟ್ ಆದೇಶವನ್ನು ಉಲ್ಲಂಘಿಸಿದಂತಾಗುತ್ತದೆ'' ಎಂದು ಹೇಳಿದೆ.
ಅಲ್ಲದೆ, "ಒಮ್ಮೆ ಕೋರ್ಟ್ ಸಿಆರ್ಪಿಸಿ ಸೆಕ್ಷನ್ 200 ರಡಿ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಆದೇಶ ನೀಡಿದ ಮೇರೆಗೆ ಪೊಲೀಸರು ತನಿಖೆ ನಡೆಸಲು ನಿರಾಕರಿಸುವ ಪ್ರಶ್ನೆಯೇ ಇಲ್ಲ. ಪೊಲೀಸರು ಠಾಣಾ ವ್ಯಾಪ್ತಿಯ ವಿಷಯವನ್ನು ಮುಂದಿಟ್ಟುಕೊಂಡು ತನಿಖೆ ನಿರಾಕರಣೆ ಮಾಡಬಾರದು. ಒಮ್ಮೆ ಮ್ಯಾಜಿಸ್ಟ್ರೇಟ್ ದೂರು ಮಾನ್ಯ ಮಾಡಿ ತನಿಖೆಗೆ ಆದೇಶ ನೀಡಿದ ಮೇಲೆ ಪೊಲೀಸರು ಸಿಆರ್ ಪಿಸಿ ಸೆಕ್ಷನ್ 173ಕ್ಕೆ ವಿರುದ್ಧವಾಗಿ ನಡೆದುಕೊಳ್ಳಲಾಗದು'' ಎಂದು ನ್ಯಾಯಪೀಠ ಆದೇಶದಲ್ಲಿ ಸ್ಪಷ್ಟಪಡಿಸಿದೆ.
ಪ್ರಕರಣದ ಹಿನ್ನೆಲೆ?
ಅರ್ಜಿದಾರರು ಕೆಲವು ವ್ಯಕ್ತಿಗಳ ಮೇಲೆ ಆರೋಪ ಮಾಡಿ ಅಪರಾಧ ದಂಡ ಸಂಹಿತೆ ಸೆಕ್ಷನ್ 200 ಅಡಿ 9ನೇ ಹೆಚ್ಚುವರಿ ಮೆಟ್ರೋಪಾಲಿಟನ್ ನ್ಯಾಯಾಲಯದ ಮುಂದೆ ಖಾಸಗಿ ದೂರು ದಾಖಲಿಸಿ, ಸೆಕ್ಷನ್ 153ರಡಿ ಆ ಕುರಿತು ತನಿಖೆಗೆ ಆದೇಶಿಸಬೇಕು ಎಂದು ಕೋರಿದ್ದರು. ಅದನ್ನು ಪರಿಶೀಲಿಸಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ಪಿಸಿಆರ್ ದಾಖಲಿಸಿಕೊಂಡು ಆ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಜ್ಞಾನಭಾರತಿ ಠಾಣಾ ಪೊಲೀಸರಿಗೆ ನಿರ್ದೇಶನ ನೀಡಿದ್ದರು.
ಆದರೆ, ಅರ್ಜಿದಾರರು ಠಾಣೆಗೆ ಹೋಗಿ ಕೋರ್ಟ್ ಆದೇಶವನ್ನು ನೀಡಿದಾಗ, ಅವರು ಇದು ನಮ್ಮ ಠಾಣಾ ವ್ಯಾಪ್ತಿಗೆ ಬರುವುದಿಲ್ಲ, ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಗೆ ಬರುತ್ತದೆ, ಅಲ್ಲಿಯ ಪೊಲೀಸರಿಗೆ ಮನವಿ ಮಾಡಿ ಎಂದು ದೂರು ವಾಪಸ್ ಕಳಿಸಿದ್ದರು. ಕೋರ್ಟ್ ಆದೇಶ ಪಾಲನೆ ಮಾಡಿರಲಿಲ್ಲ. ಹಾಗಾಗಿ ಅರ್ಜಿದಾರರು, ಪೊಲೀಸರ ವಿರುದ್ಧ ನ್ಯಾಯಾಲಯದ ಮೊರೆ ಹೋಗಿದ್ದರು.