ಮಸೀದಿಗಳ ಧ್ವನಿವರ್ಧಕ ತೆರವು; ಏನಿದು ಸುತ್ತೋಲೆ?
ಬೆಂಗಳೂರು, ನವೆಂಬರ್ 05 : ರಾಜ್ಯಾದ್ಯಂತ ಮಸೀದಿಗಳಲ್ಲಿರುವ ಧ್ವನಿ ವರ್ಧಕ ತೆರವುಗೊಳಿಸುವ ಕುರಿತು ಪೊಲೀಸ್ ಮಹಾ ನಿರ್ದೇಶಕರು ಸುತ್ತೋಲೆಯೊಂದನ್ನು ಹೊರಡಿಸಿದ್ದಾರೆ. ಕಾನೂನಿನ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ನವೆಂಬರ್ 2ರಂದು ಪೊಲೀಸ್ ಮಹಾನಿರ್ದೇಶಕರ ಕಚೇರಿಯಿಂದ ಸುತ್ತೋಲೆ ರವಾನೆಯಾಗಿದೆ. ರಾಜ್ಯದ ಎಲ್ಲಾ ಪೊಲೀಸ್ ಆಯುಕ್ತರಿಗೆ, ಜಿಲ್ಲಾ ಪೊಲೀಸ್ ಅಧೀಕ್ಷಕರುಗಳಿಗೆ ಈ ಸುತ್ತೋಲೆಯನ್ನು ಕಳಿಸಲಾಗಿದೆ.
ಬೆಂಗಳೂರು ಮೂಲದ ವಕೀಲ ಹರ್ಷ ಮುತಾಲಿಕ್ ಸಲ್ಲಿಸಿದ್ದ ಮನವಿಯನ್ನು ಉಲ್ಲೇಖಿಸಿ ಈ ಸುತ್ತೋಲೆ ಕಳಿಸಲಾಗಿದೆ. 30/9/2020ರಂದು ವಕೀಲರು ಪೊಲೀಸ್ ಮಹಾ ನಿರ್ದೇಶಕರಿಗೆ ಮನವಿಯೊಂದನ್ನು ಸಲ್ಲಿಕೆ ಮಾಡಿದ್ದರು.

ರಾಜ್ಯಾದ್ಯಂತ ಇರುವ ಮಸೀದಿಗಳಿಗೆ ಅಳವಡಿಸಿರುವ ಧ್ವನಿವರ್ಧಕಗಳ ನಿಷೇಧಿಸಿ ತೆರವುಗೊಳಿಸಲು ಸೂಚನೆ ನೀಡಬೇಕು ಎಂದು ಹರ್ಷ ಮುತಾಲಿಕ್ ಮನವಿಯನ್ನು ಸಲ್ಲಿಸಿದ್ದರು.
ಸುತ್ತೋಲೆಯಲ್ಲಿ ಏನಿದೆ? : ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ ಮನವಿಯನ್ನು ಇದರೊಂದಿಗೆ ಲಗತ್ತಿಸಲಾಗಿದೆ. ಸದರಿ ಮನವಿಯಲ್ಲಿ ರಾಜ್ಯಾದ್ಯಂತ ಎಲ್ಲಾ ಮಸೀದಿಗಳಲ್ಲಿ ಮುಸ್ಲಿಂ ಬಾಂಧವರು ಸಲ್ಲಿಸುವ ಪ್ರಾರ್ಥನೆಯಲ್ಲಿ ಹೆಚ್ಚು ಧ್ವನಿ ಉಂಟಾಗುತ್ತಿರುವುದರಿಂದ ಅನೇಕ ತೊಂದರೆ ಉಂಟಾಗುತ್ತಿದೆ.

ಈ ಬಗ್ಗೆ ಮಸೀದಿಗಳಲ್ಲಿ ಧ್ವನಿವರ್ಧಕಗಳ ನಿರ್ಬಂಧ ಹೇರಿ ಅವುಗಳನ್ನು ತೆರವುಗೊಳಿಸಬೇಕೆಂದು ಆಕ್ಷೇಪ ವ್ಯಕ್ತಪಡಿಸಿರುತ್ತಾರೆ. ಆದ್ದರಿಂದ, ಈ ಬಗ್ಗೆ ಮಾಹಿತಿ ಹಾಗೂ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಸುಪ್ರೀಂಕೋರ್ಟ್ ಆದೇಶ : ಈ ಹಿಂದೆ ಸುಪ್ರೀಂಕೋರ್ಟ್ ಸಹ ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ಬಗ್ಗೆ ವಿವರವಾದ ಮಾರ್ಗಸೂಚಿ ಹೊರಡಿಸಿತ್ತು. ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆ ತನಕ ಧ್ವನಿವರ್ಧಕ ಬಳಕೆ ಮಾಡಲು ನಿರ್ಬಂಧವಿದೆ. ಧ್ವನಿವರ್ಧಕದಲ್ಲಿನ ಶಬ್ದ 75 ಡೆಸಿಬಲ್ಗಿಂತ ಹೆಚ್ಚಿರಬಾರದು ಎಂದು ಮಾರ್ಗಸೂಚಿ ಹೇಳುತ್ತದೆ.












Click it and Unblock the Notifications