ಅಕ್ರಮ ಗಣಿಗಾರಿಕೆ ಪ್ರಕರಣ : ಶಾಸಕ ನಾಗೇಂದ್ರ ಪೊಲೀಸ್ ವಶಕ್ಕೆ
ಬೆಂಗಳೂರು, ಜುಲೈ 01 : ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ವಿಚಾರಣೆಗೆ ಪದೇ-ಪದೇ ನಾಗೇಂದ್ರ ಗೈರಾಗುತ್ತಿದ್ದರು.
ಸೋಮವಾರ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ ಅವರು ಬಿ.ನಾಗೇಂದ್ರ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು. ಶಾಸಕರು ನ್ಯಾಯಾಲಯದ ಮುಂದೆ ವಿಚಾರಣೆಗೆ ಹಾಜರಾಗಿದ್ದರು.
ಬಿ.ನಾಗೇಂದ್ರ ಅವರನ್ನು ವಶಕ್ಕೆ ಪಡೆದ ಪೊಲೀಸರು
ಬಳ್ಳಾರಿ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಬಿ.ನಾಗೇಂದ್ರ ಅವರ ವಿರುದ್ಧದ ಅರ್ಜಿಯ ವಿಚಾರಣೆ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಪದೇ-ಪದೇ ನಾಗೇಂದ್ರ ಅವರು ವಿಚಾರಣೆಗೆ ಗೈರಾಗುತ್ತಿದ್ದರು. ಆದ್ದರಿಂದ, ಇಂದು ಅವರನ್ನು ಪೊಲೀಸ್ ಕಸ್ಟಡಿಗೆ ನೀಡಲಾಯಿತು.
ಅಕ್ರಮ ಗಣಿಗಾರಿಗೆ ಪ್ರಕರಣ: ಶಾಸಕ ನಾಗೇಂದ್ರ ಪೊಲೀಸರ ವಶಕ್ಕೆ
2019ರ ಏಪ್ರಿಲ್ನಲ್ಲಿಯೂ ನಾಗೇಂದ್ರ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಹಿಂದೆ ಅನೇಕ ಬಾರಿ ಸಮನ್ಸ್ ನೀಡಿದರೂ ಅದನ್ನು ಪಾಲಿಸದ ಹಿನ್ನಲೆಯಲ್ಲಿ ಒಂದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದರು.
'ಹಿಂದೆ ಸಮನ್ಸ್ ನೀಡಿದರೂ ಅದನ್ನು ಪಾಲಿಸದ ನಡವಳಿಕೆಯನ್ನು ನೀವು ಬೆಳೆಸಿಕೊಂಡಿದ್ದೀರಿ. ಜಾಮೀನು ರಹಿತ ವಾರೆಂಟ್ ರದ್ದುಗೊಂಡು ದೋಷ ಮುಕ್ತಗೊಳ್ಳಲಿದ್ದೇನೆ ಎಂದು ನೀವು ಭಾವಿಸಿದ್ದೀರಿ. ಆದರೆ, ಹಾಗೆ ಆಗುವುದಿಲ್ಲ' ಎಂದು ನ್ಯಾಯಾಧೀಶರು ಹೇಳಿದ್ದರು.
2019ರ ಜನವರಿಯಲ್ಲಿ ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಮತ್ತು ಬಿ.ನಾಗೇಂದ್ರ ವಿರುದ್ಧ ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಹೊರಡಿಸಿತ್ತು.
ಅಕ್ರಮ ಗಣಿಗಾರಿಕೆ ಆರೋಪದಲ್ಲಿ ನಾಗೇಂದ್ರ ಅವರ ವಿರುದ್ಧ ಚೆನ್ನೈನ ಸಿಬಿಐ ಅಧಿಕಾರಿಗಳು ಈಗಾಗಲೇ ತನಿಖೆಯನ್ನು ಪೂರ್ಣಗೊಳಿಸಿದ್ದಾರೆ. ನ್ಯಾಯಾಲಯಕ್ಕೆ ದೋಷರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ.