ಕೆ. ಆರ್. ಪುರಂ ಇನ್ಸ್ಪೆಕ್ಟರ್ ನಂದೀಶ್ ಸಾವು: ತನಿಖೆಗೆ ಎಚ್ಡಿಕೆ ಆಗ್ರಹ
ಬೆಂಗಳೂರು, ಅ.28: ಕೆ. ಆರ್. ಪುರಂ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ನಂದೀಶ್ ಮಾನಸಿಕವಾಗಿ ನೊಂದು ಹೃದಯಾಘಾತದಿಂದ ಮೃತಪಟ್ಟ ಘಟನೆ ಹಾಗೂ ಅವರ ಸಾವಿಗೆ ಕಾರಣವಾದ ಅಂಶಗಳ ಬಗ್ಗೆ ಉನ್ನತ ಮಟ್ಟದ ತನಿಖೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಇದು ಉತ್ತರ ಭಾರತದ ಅಧಿಕಾರಿಗಳ ದರ್ಪದಿಂದ ಹಾಗೂ ಸರ್ಕಾರದಿಂದಲೇ ಆಗಿರುವ ಕಗ್ಗೊಲೆಯೇ ಹೊರತು ಬರೀ ಹೃದಯಾಘಾತ ಅಲ್ಲ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ಆಗಲೇಬೇಕು ಎಂದು ಆಗ್ರಹಿಸಿದ್ದಾರೆ.
'ಈ ಸಾವಿಗೆ ಬಿಜೆಪಿ ಹೈಕಮಂಡ್ ಕೃಪಾಕಟಾಕ್ಷ ಇರುವ, ಅದರಲ್ಲೂ ಉತ್ತರ ಭಾರತ ಮೂಲದ ಹಿರಿಯ ಅಧಿಕಾರಿಗಳ ಉದ್ದತಟನ, ಕಿರುಕುಳ, ಸರ್ಕಾರದ ನಡವಳಿಕೆ, ಕಾಸಿಗಾಗಿ ಹುದ್ದೆ ಕೊಡುತ್ತಿರುವುದೇ ಕಾರಣ' ಎಂದು ಎಚ್. ಡಿ. ಕುಮಾರಸ್ವಾಮಿ ನೇರ ಆರೋಪ ಮಾಡಿದ್ದಾರೆ.

ನಂದೀಶ್ ಪತ್ನಿ ಕಣ್ಣೀರಿಗೆ ಸರ್ಕಾರ ಉತ್ತರ ಕೊಡಬೇಕು
'ರಾಜ್ಯದಲ್ಲಿ ಒಂದು ದುರ್ಘಟನೆ ನಡೆದಿದೆ. ಪೊಲೀಸ್ ಅಧಿಕಾರಿಯೊಬ್ಬರು ಹೃದಯಾಘಾತದಿಂದ ತೀರಿಕೊಂಡರು. ಅಧಿಕಾರಿ ನಂದೀಶ್ ಅವರು ಹೃದಯಾಘಾತಕ್ಕೆ ಬಲಿಯಾಗಲು ಕಾರಣ ಏನು ಅನ್ನೋದು ನನ್ನ ಪ್ರಶ್ನೆ. ಅವರು ಮಾನಸಿಕ ಒತ್ತಡಕ್ಕೆ ಒಳಗಾಗಿ ಹೀಗೆ ಆಗಿದೆ ಅಂತ ಅವರ ಧರ್ಮಪತ್ನಿ ಅವರೇ ಹೇಳಿದ್ದಾರೆ. ಕೆಲಸ ಬೇಡ ಪತಿಯನ್ನು ತಂದುಕೊಡಿ ಎಂದು ಕಣ್ಣೀರು ಹಾಕಿದ್ದಾರೆ. ಇದಕ್ಕೆ ಸರಕಾರ ಉತ್ತರ ಕೊಡಬೇಕು' ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
'ಕೆ. ಆರ್. ಪುರಂ ಭಾಗದಲ್ಲಿ ಯಾವುದೋ ಒಂದು ಪಬ್ ಇವರ ವ್ಯಾಪ್ತಿಯಲ್ಲಿ ಇತ್ತು. ಬೆಳಗಿನಜಾವದವರೆಗೆ ತೆಗೆದಿತ್ತು, ಇದಕ್ಕೆ ಈ ಪೊಲೀಸ್ ಸಹಕಾರವಿತ್ತೆಂದು ನಂದೀಶ್ ಅವರನ್ನು ಸಸ್ಪೆಂಡ್ ಮಾಡಿದ್ದಾರಂತೆ. ಸರ್ಕಾರ ಮಧ್ಯರಾತ್ರಿ ಒಂದು ಗಂಟೆಯವರೆಗೆ ರೆಸ್ಟೋರೆಂಟ್ ತೆರೆಯುವ ಅವಕಾಶ ಕೊಟ್ಟಿದೆ. ಆ ಪಬ್ ಎಷ್ಟೊತ್ತು ತೆಗೆದಿತ್ತು, ಅಲ್ಲಿ ಯಾರಿದ್ದರು? ರಾಜಕಾರಣಿ ಬೆಂಬಲಿಗರು ಎಷ್ಟು ಜನ ಅಲ್ಲಿ ಇದ್ದರು? ಪೊಲೀಸ್ ಅಧಿಕಾರಿಗಳು ಕೂಡ ಡಾನ್ಸ್ ಮಾಡಿದ್ದಾರೆ ಅಂತ ರಿಫೋರ್ಟ್ ಇದೆ. ಇದರ ಬಗ್ಗೆ ತನಿಖೆ ಮಾಡಬೇಕು' ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇನ್ಸ್ಪೆಕ್ಟರ್ ನಂದೀಶ್ ಹಿನ್ನಲೆಯನ್ನು ತಿಳಿದುಕೊಂಡಿದ್ದೇನೆ
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಅನಧಿಕೃತವಾಗಿ ಕ್ಯಾಸಿನೋ, ಮಟ್ಕಾ ದಂಧೆ ಕೂಡ ನಡೆಯುತ್ತಿದೆ. ಸರ್ಕಾರ ಮಾತ್ರ ಕಣ್ಣು ಮುಚ್ಚಿ ಕುಳಿತಿದೆ ಎಂದು ಅವರು ಆರೋಪಿಸಿದ್ದಾರೆ.
'ಇನ್ಸ್ಪೆಕ್ಟರ್ ನಂದೀಶ್ ಹಿನ್ನಲೆಯನ್ನು ತಿಳಿದುಕೊಂಡಿದ್ದೇನೆ. ಹಿಂದುಳಿದ ವರ್ಗಕ್ಕೆ ಸೇರಿದ ವ್ಯಕ್ತಿ. ಸಸ್ಪೆಂಡ್ ರಿವೋಕ್ಗಾಗಿ ಹಲವು ಮುಖಂಡರ ಮನೆಗೂ ಹೋಗಿದ್ದರಂತೆ. ಪೊಲೀಸ್ ಅಧಿಕಾರಿ ಬಳಿ 70 ರಿಂದ 80 ಲಕ್ಷ ಕೊಟ್ಟು ಪೋಸ್ಟಿಂಗ್ ಮಾಡಿ, ನಂತರ ಹೀಗೆ ಆದಾಗ ಅವರು ಎಲ್ಲಿ ಹಣ ವಸೂಲಿ ಮಾಡಬೇಕು. ತಪ್ಪು ನಿಮ್ಮದೇ ಇಟ್ಟುಕೊಂಡರೆ ಹೇಗೆ? ಸರ್ಕಾರದ ನಡವಳಿಕೆಯಿಂದ ಆದ ಕಗ್ಗೊಲೆಯೇ ಇದು. ಇದರ ಬಗ್ಗೆ ಉನ್ನತ ತನಿಖೆಯಾಗಬೇಕು' ಎಂದು ಆಗ್ರಹಿಸಿದ್ದಾರೆ.

ನಂದೀಶ್ ಅವರಿಗೆ ಮಾನಸಿಕ ಕಿರುಕುಳ ನೀಡಲಾಗಿದೆ: ಆರೋಪ
ಈ ಸರ್ಕಾರ ನೇಮಕಾತಿ, ವರ್ಗಾವಣೆಗೆ ಲಕ್ಷಾಂತರ ಹಣ ಪಡೆದು ಕೊಳ್ಳೆ ಹೊಡೆಯುತ್ತಿದೆ. ಅದೇ ರೀತಿ ಒತ್ತಡ ತಂದು ನಂದೀಶ್ ಅವರಿಂದ ಹಣ ವಸೂಲಿ ಮಾಡಲಾಗಿದೆ. ಅವರಿಗೆ ಮಾನಸಿಕ ಕಿರುಕುಳ ನೀಡಲಾಗಿದೆ. ಬಿಜೆಪಿ ಹೈಕಮಾಂಡ್ ರಕ್ಷಣೆ ಇದೆ ಅಂತ ಹೀಗೆ ಮಾಡುತ್ತಿದ್ದಾರೆ ಹಿರಿಯ ಅಧಿಕಾರಿಗಳು. ಹಲವಾರು ಪ್ರಕರಣಗಳಲ್ಲಿ ಐಎಎಸ್ ಸೇರಿ ಕೆಲ ಅಧಿಕಾರಿಗಳ ಮನೆಗಳಲ್ಲಿ ಕೋಟಿ ಕೋಟಿ ಹಣ ಸಿಗುತ್ತದೆ. ನಂತರ ನೋಡಿದರೆ ಅಂತಹ ಅಧಿಕಾರಿಗಳು ಆಯಕಟ್ಟಿನ ಜಾಗಕ್ಕೆ ಬರುತ್ತಾರೆ. ಇವರೇ ದಾಳಿ ಮಾಡ್ತಾರೆ. ಅಂತಹ ವ್ಯಕ್ತಿಗಳಿಗೆ ಒಳ್ಳೊಳ್ಳೆ ಪೋಸ್ಟಿಂಗ್ ಕೊಡುತ್ತಾರೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಂದೀಶ್ ವಿಧಾನಪರಿಷತ್ ಸದಸ್ಯರೊಬ್ಬರ ಸಂಬಂಧಿ ಎನ್ನುವ ಮಾಹಿತಿ ಇದೆ. ರಾಜಕಾರಣಿಯ ಸಂಬಂಧಿ ಅಧಿಕಾರಿಗೇ ಹೀಗೆ ಆದರೆ ಯಾವ ಹಿನ್ನೆಲೆ ಇಲ್ಲದ ಅಧಿಕಾರಿಗಳ ಪರಿಸ್ಥಿತಿ ಏನು? ಗೃಹ ಸಚಿವರು ಇದಕ್ಕೆ ಉತ್ತರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಹಿರಿಯ ಅಧಿಕಾರಿಗಳಿಗೆ ಬಿಜೆಪಿ ಹೈ ಕಮಾಂಡ್ ಬೆಂಬಲ, ಅದಕ್ಕೆ ದರ್ಪ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಲ್ಲಪ್ಪ ಹಂಡಿಬಾಗ್ ಎಂಬ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಾಗ ಅವರ ಪರವಾಗಿ ಹೋರಾಟ ಮಾಡಿದ್ದು ನಾವು. ಡಿವೈಎಸ್ಪಿ ಗಣಪತಿ ಅವರು ಆತ್ಮಹತ್ಯೆ ಮಾಡಿಕೊಂಡಾಗ ಅವರ ಕುಟುಂಬದ ಪರ ದನಿ ಎತ್ತಿದ್ದು ಕೂಡ ನಾವು. ಬೇರೆ ರಾಜ್ಯಗಳಿಂದ ಇಲ್ಲಿಗೆ ಬರುವ ಹಿರಿಯ ಅಧಿಕಾರಿಗಳಿಗೆ ಬಿಜೆಪಿ ಹೈ ಕಮಾಂಡ್ ಬೆಂಬಲ ಇದೆ. ಅದಕ್ಕೆ ಅವರು ದರ್ಪ ತೋರಿಸುತ್ತಿದ್ದಾರೆ. ಈ ಬಗ್ಗೆ ಸರ್ಕಾರ ಗಮನ ಹರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಸ್ವೇಚ್ಚಾಚಾರವಾಗಿ ದಂಧೆ ನಡೆಸಲು ಯಾಕೆ ಬಿಡಬೇಕು ಎನ್ನುವುದು ನನ್ನ ಪ್ರಶ್ನೆ. ರಾಮನಗರ ಜಿಲ್ಲೆಯಲ್ಲಿ ಏನಾಗುತ್ತಿದೆ ಎನ್ನುವುದು ಕೂಡ ನನಗೆ ಗೊತ್ತಿದೆ. ಎಲ್ಲಿ? ಹೇಗೆ? ಪೋಸ್ಟಿಂಗ್ ಕೊಡ್ತಾ ಇದ್ದಾರೆ ಅಂತಲೂ ಗೊತ್ತಿದೆ. ನಾನು ಹಣ ಪಡೆದು ಪೋಸ್ಟಿಂಗ್ ಕೊಟ್ಟಿದ್ದರೆ ತಲೆ ಬಾಗುತ್ತೇನೆ ಎಂದು ಹೇಳಿದ್ದಾರೆ.












Click it and Unblock the Notifications