ದೇವಸ್ಥಾನಗಳಲ್ಲಿ ಗಂಟೆ, ಜಾಗಟೆ ಶಬ್ದ ನಿರ್ಬಂಧ ವಾಪಸ್ ಪಡೆದ ಧಾರ್ಮಿಕ ದತ್ತಿ ಇಲಾಖೆ
ಬೆಂಗಳೂರು, ಫೆಬ್ರವರಿ 16: ದೇವಸ್ಥಾನಗಳಲ್ಲಿ ಪೂಜಾ ವಿಧಿ-ವಿಧಾನಗಳಲ್ಲಿ ಒಂದಾದ ಜಾಗಟೆ, ಗಂಟೆ ಬಾರಿಸುವುದು, ಶಂಖ ಊದುವುದರಿಂದ ಶಬ್ದ ಮಾಲಿನ್ಯ ಉಂಟಾಗುತ್ತದೆ ಎಂಬ ಸುತ್ತೋಲೆಯನ್ನು ಧಾರ್ಮಿಕ ದತ್ತಿ ಇಲಾಖೆಯು ತನ್ನ ಆದೇಶವನ್ನು ಹಿಂಪಡೆದಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇಂದು ವಿಧಾನಸಭೆಗೆ ತಿಳಿಸಿದರು.
ವಿಧಾನಸಭೆ ಕಲಾಪದ ಶೂನ್ಯವೇಳೆಯಲ್ಲಿ ಬಿಜೆಪಿ ಶಾಸಕರಾದ ಸಿ.ಟಿ. ರವಿ ಮತ್ತು ರವಿ ಸುಬ್ರಹ್ಮಣ್ಯ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಈಗಾಗಲೇ ಧಾರ್ಮಿಕ ದತ್ತಿ ಇಲಾಖೆ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲಾಗಿದೆ. ಈ ಬಗ್ಗೆ ಯಾರಿಗೂ ಗೊಂದಲ ಬೇಡ ಎಂದು ಸ್ಪಷ್ಟಪಡಿಸಿದರು.

ಯಾವ ಧಾರ್ಮಿಕ ಕೇಂದ್ರಗಳಲ್ಲಿ ಮುಂಜಾನೆ ಈ ರೀತಿಯ ಶಬ್ದ ಉಂಟಾಗುತ್ತಿತ್ತೋ ಅಂತಹ ಎಲ್ಲಾ ಧಾರ್ಮಿಕ ಕೇಂದ್ರಗಳಿಗೂ ನೋಟಿಸ್ ನೀಡಲಾಗಿದೆ. ಇದು ಯಾವುದೇ ಒಂದು ಧರ್ಮ ಅಥವಾ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ನೋಟಿಸ್ ನೀಡಿರಲಿಲ್ಲ. ಇದರಿಂದ ಕೆಲವು ಗೊಂದಲ ಉಂಟಾಗಿದ್ದರಿಂದ ಈಗ ಆದೇಶವನ್ನು ಹಿಂಪಡೆಯಲಾಗಿದೆ ಎಂದರು.

ಇದಕ್ಕೂ ಮುನ್ನ ಚಿಕ್ಕಮಗಳೂರು ಬಿಜೆಪಿ ಸಿ.ಟಿ. ರವಿ ಮಾತನಾಡಿ, ಸಾವಿರಾರು ವರ್ಷಗಳಿಂದ ದೇವಸ್ಥಾನ ಮತ್ತು ಮನೆಗಳಲ್ಲಿ ಪೂಜೆ, ಪುನಸ್ಕಾರ ಮಾಡುವಾಗ ಶಂಖ ಊದುವುದು, ಗಂಟೆ ಬಾರಿಸುವುದು, ಜಾಗಟೆ ಬಾರಿಸುವುದು ನಡೆದುಕೊಂಡು ಬಂದಿರುವ ಸಂಪ್ರದಾಯ. ಸಾವಿರಾರು ವರ್ಷಗಳಿಂದಲೂ ಈ ಬಗ್ಗೆ ಯಾರೂ ಕೂಡ ತಕರಾರು ತೆಗೆದಿರಲಿಲ್ಲ. ಈಗ ಏಕಾಏಕಿ ಆಕ್ಷೇಪ ಇದೆ. ಇದರ ಹಿಂದೆ ಯಾವುದಾದರೂ ಪಿತೂರಿ ಇದೆಯೇ ಎಂದು ಪ್ರಶ್ನಿಸಿದ್ದರು.
ಹಿನ್ನೆಲೆ ಏನು?
ದೇವಸ್ಥಾನದಲ್ಲಿ ದಿನ ನಿತ್ಯ ಮಹಾ ಮಂಗಳಾರತಿ, ಅಭಿಷೇಕ, ವಿಶೇಷ ಪೂಜೆ ಸಂದರ್ಭದಲ್ಲಿ ಬಳಸುವ ದೊಡ್ಡ ಘಂಟೆ, ಎಲೆಕ್ಟ್ರಿಕಲ್ ಘಂಟಾನಾದ ವ್ಯವಸ್ಥೆ, ಢಮರುಗ, ಧನಿವರ್ಧಕಗಳಿಂದ ಶಬ್ದ ಮಾಲಿನ್ಯ ಉಂಟಾಗುತ್ತಿದೆ. ಇವುಗಳಿಂದ ಅಗತ್ಯಕ್ಕಿಂತ ಹೆಚ್ಚಿನ ಡೆಸಿಬಲ್ ಶಬ್ದ ಹೊರ ಹೊಮ್ಮುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಇದನ್ನು ಪರಿಗಣಿಸಿರುವ ಧಾರ್ಮಿಕ ದತ್ತಿ ಇಲಾಖೆ ನೋಟಿಸ್ ಜಾರಿಗೊಳಿಸಿತ್ತು.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪತ್ರದಂತೆ ಶಬ್ದ ಮಾಲಿನ್ಯ ನಿಯಂತ್ರಣ (ತಿದ್ದುಪಡಿ) ಕಾಯ್ದೆ 2010, ಪರಿಸರ ಸಂರಕ್ಷಣಾ ಕಾಯ್ದೆ 1986ರ ಅನ್ವಯ ನಿಗದಿತ ಡೆಸಿಬಲ್ ಶಬ್ದ ಪ್ರಮಾಣಕ್ಕಿಂತ ಹೆಚ್ಚಿನ ಶಬ್ದ ಮಾಡುವ ಸಂಗೀತ ಸಾಧನಗಳನ್ನು ಬಳಸದಂತೆ ತಿಳಿಸಲಾಗಿತ್ತು.












Click it and Unblock the Notifications