ಮೇ 7ರ ಚುನಾವಣೆ: ಉತ್ತರ ಕರ್ನಾಟಕದತ್ತ ನಾಯಕರ ಚಿತ್ತ!
ಬೆಂಗಳೂರು, ಏಪ್ರಿಲ್ 27: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ಶುಕ್ರವಾರ ಮುಕ್ತಾಯಗೊಂಡಿದೆ. ಶೇ 69.23ರಷ್ಟು ಮತದಾನವಾಗಿದೆ. ರಾಜಕೀಯ ಪಕ್ಷಗಳು, ನಾಯಕರ ಚಿತ್ತ ಈಗ ಉತ್ತರ ಕರ್ನಾಟಕದ ಕಡೆ ಹೋಗಿದೆ. ಮೇ 7ರ ಮಂಗಳವಾರ 14 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.
ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆ. ಪಿ. ನಡ್ಡಾ, ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸೇರಿದಂತೆ ಹಲವು ನಾಯಕರು ಉತ್ತರ ಕರ್ನಾಟಕ ಭಾಗದಲ್ಲಿ ಪ್ರಚಾರದ ಕಾವು ಹೆಚ್ಚಿಸಲಿದ್ದಾರೆ.

14 ಕ್ಷೇತ್ರಗಳ ಪೈಕಿ ಶಿವಮೊಗ್ಗ, ದಾವಣಗೆರೆ ಹೊರತುಪಡಿಸಿ ಉಳಿದ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಪೈಪೋಟಿ ಇದೆ. ಶಿವಮೊಗ್ಗದಲ್ಲಿ ಪಕ್ಷೇತರ ಅಭ್ಯರ್ಥಿ ಕೆ. ಎಸ್. ಈಶ್ವರಪ್ಪ ಮತ್ತು ದಾವಣಗೆರೆಯಲ್ಲಿ ವಿನಯ್ ಕುಮಾರ್ ಚುನಾವಣಾ ಚಿತ್ರಣ ಬದಲಿಸಿದ್ದಾರೆ.
ಯಾವ-ಯಾವ ಕ್ಷೇತ್ರಗಳು?; ಮೇ 7ರ ಮಂಗಳವಾರ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ.
ಕರ್ನಾಟಕದ 2ನೇ ಹಂತದ ಚುನಾವಣೆಯಲ್ಲಿ ಪ್ರಹ್ಲಾದ್ ಜೋಶಿ, ಜಗದೀಶ್ ಶೆಟ್ಟರ್, ಭಗವಂತ ಬೂಬ, ಬಿ. ಶ್ರೀರಾಮುಲು ಸೇರಿದಂತೆ ಹಲವು ಘಟಾನುಘಟಿ ನಾಯಕರ ಭವಿಷ್ಯ ಅಡಗಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ (ಬೆಳಗಾವಿ), ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ, ಸಚಿವ ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತಾ ಪಾಟೀಲ್, ಸಚಿವ ಈಶ್ವರ ಖಂಡ್ರೆ ಪುತ್ರ ಸಾಗರ್ ಖಂಡ್ರೆ ಸೇರಿ ಹಲವು ಯುವ ನಾಯಕರ ಅದೃಷ್ಟ ತಿಳಿಯಲಿದೆ.
ಸ್ಟಾರ್ ಪ್ರಚಾರಕರು ಸಹ ಉತ್ತರ ಕರ್ನಾಟಕ ಭಾಗಕ್ಕೆ ಪ್ರವೇಶ ಮಾಡಿದ್ದಾರೆ. ಕಲಬುರಗಿಗೆ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರಕ್ಕಾಗಿ ಎರಡು ದಿನ ಉತ್ತರ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಶನಿವಾರ ಸಂಜೆ 7.30ಕ್ಕೆ ಅವರು ಬೆಳಗಾವಿಗೆ ಆಗಮಿಸುತ್ತಿದ್ದಾರೆ.
ಬೆಳಗಾವಿ, ಶಿರಸಿ, ದಾವಣಗೆರೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರವನ್ನು ನಡೆಸಲಿದ್ದಾರೆ. ಕುಮಟಾ, ಮುಂಡಗೋಡದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರವನ್ನು ನಡೆಸಿ ಅಭ್ಯರ್ಥಿಗಳ ಪರವಾಗಿ ಮತಬೇಟೆಯಾಡಲಿದ್ದಾರೆ.
2ನೇ ಹಂತದ ಮತದಾನ ನಡೆಯುವ 14 ಕ್ಷೇತ್ರಗಳಲ್ಲಿ 2019ರ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಒಂದು ಸ್ಥಾನವನ್ನು ಸಹ ಗೆದ್ದಿಲ್ಲ. ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿಗೆ ಬೆಂಬಲ ನೀಡಿದೆ. ಸೀಟು ಹಂಚಿಕೆಯಲ್ಲಿ ಜೆಡಿಎಸ್ಗೆ 3 ಕ್ಷೇತ್ರ ಸಿಕ್ಕಿದ್ದು, ಈ 14 ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳೇ ಇಲ್ಲ.
2ನೇ ಹಂತದ ಚುನಾವಣೆ ನಡೆಯವ ಕ್ಷೇತ್ರಗಳಲ್ಲಿ ಕಲಬುರಗಿ ಸಹ ಸೇರಿದೆ. ಕಲಬುರಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತವರು ಕ್ಷೇತ್ರ. ಎಸ್ಸಿ ಮೀಸಲು ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ. ಕಲಬುರಗಿ ಗೆಲ್ಲುವುದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ದೊಡ್ಡ ಟಾಸ್ಕ್ ಆಗಿದೆ.
ಕಣದಲ್ಲಿರುವ ಪ್ರಮುಖರು; ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಶಿವಮೊಗ್ಗದಲ್ಲಿ ಪಕ್ಷೇತರ ಅಭ್ಯರ್ಥಿ ಕೆ. ಎಸ್. ಈಶ್ವರಪ್ಪ. ಬೀದರ್ನಲ್ಲಿ ಕೇಂದ್ರ ಸಚಿವ ಭಗವಂತ ಖೂಬ, ಶಿವಮೊಗ್ಗ ಕಾಂಗ್ರೆಸ್ನ ಗೀತಾ ಶಿವರಾಜ್ ಕುಮಾರ್, ಬಳ್ಳಾರಿ ಬಿಜೆಪಿಯ ಬಿ. ಶ್ರೀರಾಮುಲು ಸೇರಿ ಹಲವರು ಕಣದಲ್ಲಿದ್ದಾರೆ.












Click it and Unblock the Notifications