ಸಂಕ್ರಾಂತಿ ದಿನವೂ ಸಿದ್ದರಾಮಯ್ಯ ಮನೆಯಲ್ಲಿ ರಾಜಕೀಯ ಚಟುವಟಿಕೆ, ಸಚಿವರ ಭೇಟಿ
ಬೆಂಗಳೂರು, ಜನವರಿ 14: ಸಂಕ್ರಾಂತಿ ಹಬ್ಬದ ದಿನವೂ ಮುಖ್ಯಮಂತ್ರಿ ಸಿದ್ದರಾಮಯ್ಯ ಫುಲ್ ಬ್ಯುಸಿಯಾಗಿದ್ದರು. ಹಲವು ಸಚಿವರು ಸಿದ್ದರಾಮಯ್ಯ ಭೇಟಿಯಾದರು. ಕೆಪಿಸಿಸಿ ಅಧ್ಯಕ್ಷರ ನೇಮಕ, ಸಿಎಂ ಬದಲಾವಣೆ, ಸಂಪುಟ ಪುನಾರಚನೆ ಮುಂತಾದ ಸುದ್ದಿಗಳ ನಡುವೆಯೇ ಸಿದ್ದರಾಮಯ್ಯ ನಿವಾಸ ಹಬ್ಬದ ದಿನ ಹಲವಾರು ರಾಜಕೀಯ ಚಟುವಟಿಕೆಗಳಿಗೆ ಸಾಕ್ಷಿಯಾಗಿತ್ತು. ಆದರೆ ಹಬ್ಬದ ಶುಭಾಶಯ ಕೋರಲು ಮಾತ್ರ ಆಗಮಿಸಿದ್ದು, ಯಾವುದೇ ರಾಜಕೀಯ ಚರ್ಚೆಗಳು ನಡೆದಿಲ್ಲ ಎಂದು ನಾಯಕರು ಸ್ಪಷ್ಟನೆಯನ್ನು ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಕ್ರಾಂತಿ ಹಬ್ಬದ ದಿನವಾದ ಮಂಗಳವಾರ ಬೆಂಗಳೂರಿನಲ್ಲಿಯೇ ಇದ್ದರು. ಸೋಮವಾರ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಜೊತೆ ವಿವಿಧ ಸಭೆ, ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಿದ್ದರಾಮಯ್ಯ, ಸಂಜೆ ಶಾಸಕಾಂಗ ಪಕ್ಷದ ಸಭೆಯಲ್ಲಿಯೂ ಭಾಗವಹಿಸಿದ್ದರು.

ಮಂಗಳವಾರ ಸಚಿವರಾದ ಎಂ. ಬಿ. ಪಾಟೀಲ್, ಸತೀಶ್ ಜಾರಕಿಹೊಳಿ, ಬೈರತಿ ಸುರೇಶ್ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದರು. ಸಂಕ್ರಾಂತಿ ಹಬ್ಬದ ಶುಭಾಶಯಗಳನ್ನು ತಿಳಿಸಲು ಆಗಮಿಸಿದ್ದೆವು, ಯಾವುದೇ ರಾಜಕೀಯ ಚರ್ಚೆಗಳು ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.
ಎಂ. ಬಿ. ಪಾಟೀಲ್ ಹೇಳಿಕೆ: ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಎಂ. ಬಿ. ಪಾಟೀಲ್, "ಡಿನ್ನರ್ ಪಾಲಿಟಿಕ್ಸ್ಗೆ ಮಹತ್ವ ನೀಡಬೇಕಿಲ್ಲ. ಮುಖ್ಯಮಂತ್ರಿಗಳು ಸತೀಶ್ ಜಾರಕಿಹೊಳಿ ಅವರ ಮನೆಗೆ ಹೋಗಿದ್ದಾರೆ. ನನ್ನ ಮನೆಗೂ ಎರಡು ಸಲ ಬಂದಿದ್ದಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸಿಕೊಡುವುದು ಸರಿಯಲ್ಲ. ವಿರೋಧ ಪಕ್ಷದವರು ನಮ್ಮ ಮನೆಗೆ ಊಟಕ್ಕೆ ಬರುತ್ತಾರೆ. ನಾವು ಅವರ ಮನೆಗೆ ಹೋಗುತ್ತೇವೆ, ಅದರಲ್ಲಿ ತಪ್ಪೇನಿದೆ?" ಎಂದು ಪ್ರಶ್ನೆ ಮಾಡಿದರು.
"ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಸಂಕ್ರಾಂತಿಯ ಶುಭಾಶಯ ತಿಳಿಸಿದೆವು. ಇವತ್ತಿನ ಭೇಟಿಯಲ್ಲಿ ಯಾವ ರಾಜಕೀಯವೂ ಚರ್ಚೆಯಾಗಿಲ್ಲ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿ ಒಳ್ಳೆಯ ಕೆಲಸಗಳನ್ನು ಮಾಡುತ್ತಿದ್ದಾರೆ. ಆ ಹುದ್ದೆ ಈಗ ಖಾಲಿ ಇಲ್ಲ ಎಂದು ನಾನು ಹೇಳಿದ್ದೇನೆ, ಈಗಲೂ ಅದನ್ನು ಹೇಳುತ್ತೇನೆ" ಎಂದರು.
"ಮುಖ್ಯಮಂತ್ರಿ ಸ್ಥಾನದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಯಾವ ಗೊಂದಲವೂ ಇಲ್ಲ. ನಾವೆಲ್ಲರೂ ಚೆನ್ನಾಗಿಯೇ ಇದ್ದೇವೆ. ರಣದೀಪ್ ಸಿಂಗ್ ಸುರ್ಜೇವಾಲಾ ಸಹ ನಿನ್ನೆ ಇದನ್ನೇ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ನಾನು ಕಣ್ಣಿಟ್ಟಿಲ್ಲ. ಸಚಿವನಾಗಿ ನಾನು ನನ್ನ ಕೆಲಸವನ್ನು ಮುಂದುವರಿಸಿಕೊಂಡು ಹೋಗಬೇಕಾಗಿದೆ. ರಾಜಕೀಯದಲ್ಲಿ ನನಗೆ ಸಹಜವಾದ ಆಸೆ ಇದೆ, ದುರಾಸೆಯಂತೂ ಇಲ್ಲ" ಎಂದು ಎಂ. ಬಿ. ಪಾಟೀಲ್ ಸ್ಪಷ್ಟಪಡಿಸಿದರು.
ರಣದೀಪ್ ಸಿಂಗ್ ಸುರ್ಜೇವಾಲಾ ನೇತೃತ್ವದಲ್ಲಿ ಸೋಮವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆದಿತ್ತು. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಸಕರಿಗೆ ಅನುದಾನ ನೀಡುವ ಭರವಸೆಯನ್ನು ನೀಡಿದ್ದರು. ಸಭೆಯಲ್ಲಿ ಬೆಳಗಾವಿ ರಾಜಕೀಯದ ಕುರಿತು ಚರ್ಚೆಗಳು ನಡೆದಿವೆ ಎಂಬ ಸುದ್ದಿಗಳು ಹಬ್ಬಿವೆ.
ಸಿದ್ದರಾಮಯ್ಯ ಸಂಪುಟ ಪುನಾರಚನೆ ಆಗಲಿದೆ. ಕೆಲವು ಸಚಿವರು ಸಚಿವ ಸ್ಥಾನ ಕಳೆದುಕೊಳ್ಳಲಿದ್ದಾರೆ. ಹೊಸ ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ ರಣದೀಪ್ ಸಿಂಗ್ ಸುರ್ಜೇವಾಲಾ ಈ ಕುರಿತು ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.
ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಭಾಗವಾಗಿ ಜನವರಿ 21ರಂದು ಬೆಳಗಾವಿಯಲ್ಲಿ 'ಜೈ ಭಾರತ್, ಜೈ ಭೀಮ್, ಜೈ ಸಂವಿಧಾನ' ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರು ಸಹ ಪಾಲ್ಗೊಳ್ಳಲಿದ್ದಾರೆ.












Click it and Unblock the Notifications