ಸಿದ್ದರಾಮಯ್ಯ ಹುಟ್ಟುಹಬ್ಬ; ದೇವೇಗೌಡ ಸೇರಿ ಹಲವು ನಾಯಕರಿಂದ ಶುಭಾಶಯ
ಬೆಂಗಳೂರು, ಆಗಸ್ಟ್ 12; ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ, ಬಾದಾಮಿ ಕ್ಷೇತ್ರದ ಶಾಸಕ ಸಿದ್ದರಾಮಯ್ಯ ಹುಟ್ಟುಹಬ್ಬಕ್ಕೆ ವಿವಿಧ ಪಕ್ಷಗಳ ನಾಯಕರು ಶುಭಾಶಯಗಳನ್ನು ಹೇಳಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ನಾಯಕರು ಶುಭಾಶಯ ಕೋರಿದ್ದಾರೆ.
ಗುರುವಾರ ಸಿದ್ದರಾಮಯ್ಯ 74ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಕರ್ನಾಟಕ ಕಾಂಗ್ರೆಸ್ನ ನಾಯಕರು ಟ್ವೀಟ್, ಫೇಸ್ಬುಕ್ ಪೋಸ್ಟ್ ಮೂಲಕ ನೆಚ್ಚಿನ ನಾಯಕರಿಗೆ ಶುಭಾಶಯಗಳನ್ನು ಸಲ್ಲಿಸಿದ್ದಾರೆ. ಸಿದ್ದರಾಮಯ್ಯ ಮೈಸೂರಿನಲ್ಲಿದ್ದಾರೆ. ಬುಧವಾರವೇ ಹಲವು ಮುಖಂಡರು ಅವರನ್ನು ಭೇಟಿ ಮಾಡಿ ಶುಭಾಶಯಗಳನ್ನು ಸಲ್ಲಿಕೆ ಮಾಡಿದ್ದಾರೆ.
ಹುಟ್ಟುಹಬ್ಬದ ವಿಶೇಷ; ಸಿದ್ದರಾಮಯ್ಯ ಬಿಚ್ಚಿಟ್ಟ ಜನ್ಮ ರಹಸ್ಯ!
ಮೈಸೂರಿನಲ್ಲಿ ಬುಧವಾರ ಮಾತನಾಡಿದ್ದ ಸಿದ್ದರಾಮಯ್ಯ ನನ್ನ ಜನ್ಮ ದಿನಾಂಕ ಆಗಸ್ಟ್ 12,1947 ಅಲ್ಲ ಆಗಸ್ಟ್ 3, 1947 ಎಂದು ಹೇಳಿಕೆ ಕೊಟ್ಟಿದ್ದರು. ನೆಚ್ಚಿನ ನಾಯಕನ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದವರನ್ನು ಗೊಂದಲಕ್ಕೆ ತಳ್ಳಿದ್ದರು. ಸಿದ್ದರಾಮಯ್ಯ ಎಂದೂ ಹುಟ್ಟು ಹಬ್ಬ ಆಚರಣೆ ಮಾಡಿಕೊಳ್ಳುವುದಿಲ್ಲ. ಆದರೆ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಅಲ್ಲಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಾರೆ.
ಸಾಮಾಜಿಕ ನ್ಯಾಯ, ಮೀಸಲಾತಿ ವಿರುದ್ಧ ಬಿಜೆಪಿ ಇದೆ: ಸಿದ್ದರಾಮಯ್ಯ ಆರೋಪ
ಮಾಧ್ಯಮಗಳ ಜೊತೆ ಮಾತನಾಡಿದ್ದ ಸಿದ್ದರಾಮಯ್ಯ "3/8/947 ಇದು ನಾನು ಶಾಲೆಗೆ ದಾಖಲಾದ ದಿನವಾಗಿದ್ದು, ಇದು ತಪ್ಪಾಗಿ 12/8/1947 ಅಂತ ಆಗಿದೆ. ಮೇಷ್ಟ್ರು ಮಾಡಿಕೊಂಡ ಯಡವಟ್ಟಿನಿಂದ ದಿನಾಂಕ ತಪ್ಪಾಗಿದೆ. ಆದರೆ ನಾನು ಎಂದಿಗು ಹುಟ್ಟುಹಬ್ಬ ಆವರಿಸಿಕೊಂಡಿಲ್ಲ" ಎಂದು ಹೇಳಿದ್ದರು.
ಶುಭಾಶಯ ಕೋರಿದ ಮುಖ್ಯಮಂತ್ರಿಗಳು
"ರಾಜ್ಯದ ಮಾಜಿಮುಖ್ಯಮಂತ್ರಿಗಳು ಪ್ರಸ್ತುತ ವಿರೋಧ ಪಕ್ಷದ ನಾಯಕರಾದ ಶ್ರೀ ಸಿದ್ಧರಾಮಯ್ಯ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತನು ಅವರಿಗೆ ಹೆಚ್ಚಿನ ಆಯುರಾರೋಗ್ಯ ನೀಡಲಿಯೆಂದು ಹಾರೈಸುತ್ತೇನೆ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಭಾಶಯ ಕೋರಿದ್ದಾರೆ.
|
ದೇವೇಗೌಡರಿಂದ ಶುಭಾಶಯ
ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರು ಟ್ವೀಟ್ ಮೂಲಕ ಸಿದ್ದರಾಮಯ್ಯಗೆ ಶುಭಾಶಯ ಕೋರಿದ್ದಾರೆ. 'ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಶ್ರೀ ಸಿದ್ದರಾಮಯ್ಯ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತ ನಿಮಗೆ ಸುಖ-ಶಾಂತಿ-ನೆಮ್ಮದಿ ನೀಡಲೆಂದು ಶುಭ ಹಾರೈಸುತ್ತೇನೆ' ಎಂದು ಹೇಳಿದ್ದಾರೆ.
|
ಶುಭ ಹಾರೈಸಿದ ಯಡಿಯೂರಪ್ಪ
ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದು, 'ಮಾಜಿ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕರಾದ ಶ್ರೀ ಸಿದ್ದರಾಮಯ್ಯನವರಿಗೆ ಜನ್ಮದಿನದ ಹಾರ್ದಿಕ ಶುಭಕಾಮನೆಗಳು. ದೇವರ ಆಶೀರ್ವಾದ ಸದಾ ಇರಲಿ ಎಂದು ಹಾರೈಸುತ್ತೇನೆ' ಎಂದು ಹೇಳಿದ್ದಾರೆ.
|
ಡಿ. ಕೆ. ಶಿವಕುಮಾರ್ ಶುಭಾಶಯ
'ನಮ್ಮ ಶಾಸಕಾಂಗ ಪಕ್ಷದ ನಾಯಕರು ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ನಿಮ್ಮ ಜೀವನವು ಸುಖ-ಶಾಂತಿ-ನೆಮ್ಮದಿಯಿಂದ ತುಂಬಿರಲಿ ಎಂದು ಆಶಿಸುತ್ತೇನೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ.
|
ಬಿ. ವೈ. ವಿಜಯೇಂದ್ರ ಟ್ವೀಟ್
ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ಟ್ವೀಟ್ ಮಾಡುವ ಮೂಲಕ ಸಿದ್ದರಾಮಯ್ಯಗೆ ಶುಭ ಕೋರಿದ್ದಾರೆ. 'ಹಿರಿಯರು, ಮಾಜಿ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕರಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಉತ್ತಮ ಆರೋಗ್ಯವನ್ನು, ದೀರ್ಘಾಯುಷ್ಯವನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಹೇಳಿದ್ದಾರೆ.
|
ಡಾ. ಕೆ. ಸುಧಾಕರ್ ಶುಭಾಶಯ
ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಟ್ವೀಟ್ ಮೂಲಕ ಸಿದ್ದರಾಮಯ್ಯಗೆ ಶುಭಾಶಯ ಕೋರಿದ್ದಾರೆ. 'ಹಿರಿಯರು, ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕರಾದ ಶ್ರೀ ಸಿದ್ದರಾಮಯ್ಯನವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ಭಗವಂತ ತಮಗೆ ಉತ್ತಮ ಆಯುರಾರೋಗ್ಯ ಕರುಣಿಸಲಿ ಎಂದು ಹಾರೈಸುತ್ತೇನೆ' ಎಂದು ಹೇಳಿದ್ದಾರೆ.
Recommended Video