Get Updates
Get notified of breaking news, exclusive insights, and must-see stories!

ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ನಿಧನ; ಗಣ್ಯರ ಸಂತಾಪ

ಬೆಂಗಳೂರು, ಮೇ 26: ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಸಾಮಾಜಿಕ ಕಾರ್ಯಕರ್ತ ಎಚ್‌.ಎಸ್. ದೊರೆಸ್ವಾಮಿ ಅವರು ಬುಧವಾರ ಮಧ್ಯಾಹ್ನ ಹೃದಯಾಘಾತದಿಂದ ನಿಧನರಾಗಿದ್ದಾರೆ.

104 ವರ್ಷದ ದೊರೆಸ್ವಾಮಿ ಅವರು ಈಚೆಗೆ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದರು. ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. 12 ದಿನಗಳಿಂದ ಆಸ್ಪತ್ರೆಯಲ್ಲಿದ್ದ ಅವರು ಬುಧವಾರ ಮಧ್ಯಾಹ್ನ 1.30ರ ಸುಮಾರಿಗೆ ನಿಧನರಾಗಿರುವುದಾಗಿ ತಿಳಿದುಬಂದಿದೆ. ದೊರೆಸ್ವಾಮಿ ಅವರ ನಿಧನಕ್ಕೆ ಹಲವು ರಾಜಕೀಯ ನಾಯಕರು, ಗಣ್ಯರು ಸಂತಾಪ ಸೂಚಿಸಿದ್ದಾರೆ...

ದೊರೆಸ್ವಾಮಿಯವರ ಸಾವಿಗೆ ಸಿಎಂ ಸಂತಾಪ

ಹಿರಿಯ ಸ್ವಾತಂತ್ರ್ಯ ಹೋರಾಟಗಾರರು, ಗಾಂಧೀವಾದಿ, ಪತ್ರಕರ್ತ, ಸಮಾಜ ಸೇವಕರು, ನಾಡುನುಡಿ ಜನಪರ ಕಾಳಜಿಗಳಿಗೆ ಸದಾ ಧ್ವನಿಯಾಗಿದ್ದ ಶತಾಯುಷಿ ಎಚ್.ಎಸ್.ದೊರೆಸ್ವಾಮಿ ವಿಧಿವಶರಾದ ಸುದ್ದಿ ಕೇಳಿ ಅತೀವ ದುಃಖವಾಗಿದೆ. ಅವರ ಆತ್ಮಕ್ಕೆ ಸದ್ಗತಿಯನ್ನು ಪ್ರಾರ್ಥಿಸುತ್ತಾ, ದೇವರು ಅವರ ಕುಟುಂಬದವರಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಕೋರುತ್ತೇನೆ ಎಂದು ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

"ಎಲ್ಲರ ಸ್ಫೂರ್ತಿಯಾಗಿದ್ದರು"

ನಮ್ಮನ್ನು ಅಗಲಿ ಹೋದ ದೊರೆಸ್ವಾಮಿ ಅವರು ನಮ್ಮೆಲ್ಲರ ಆತ್ಮಸಾಕ್ಷಿಯಾಗಿದ್ದರು. ತಪ್ಪು ಕಂಆಗ ಎಚ್ಚರಿಸಿ ಸರಿ ಕಂಡಾಗ ಬೆಂಬಲಿಸುತ್ತಿದ್ದರು. ಮಾರ್ಗದರ್ಶಕರಾಗಿದ್ದರು. ಇಳಿ ವಯಸ್ಸಿನಲ್ಲಿಯೂ ಜಗ್ಗದೇ ಕುಗ್ಗದೇ ಅನ್ಯಾಯ ಅಕ್ರಮ ಕಂಡಾಗ ಬೀದಿಗಿಳಿಯುತ್ತಿದ್ದ ಅವರು ಎಲ್ಲರ ಪಾಲಿನ ಸ್ಫೂರ್ತಿಯಾಗಿದ್ದರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

"ಮಹಾನ್ ಹೋರಾಟಗಾರರನ್ನು ಕಳೆದುಕೊಂಡಿದ್ದೇವೆ"

ದೊರೆಸ್ವಾಮಿ ಅವರ ನಿಧನಕ್ಕೆ ತೀವ್ರ ಕಂಬನಿ ಮಿಡಿಯುತ್ತೇನೆ. ಗಾಂಧಿವಾದಿ, ಪ್ರಾತಃಸ್ಮರಣೀಯರು ಹಾಗೂ ನಾಡಿನ ಸಾಕ್ಷಿಪ್ರಜ್ಞೆಯಂತಿದ್ದ ದೊರೆಸ್ವಾಮಿ ಅವರ ನಿಧನದಿಂದ ಶತಮಾನದ ಮಹಾನ್ ಹೋರಾಟಗಾರರನ್ನು ಕಳೆದುಕೊಳ್ಳುವ ಮೂಲಕ ನಾಡು ಹಾಗೂ ದೇಶ ಬಡವಾಗಿದೆ. ಶತಾಯುಷಿಯಾಗಿದ್ದರೂ ದಣಿವರಿಯದ ಅವರ ಹೋರಾಟದ ಕಿಚ್ಚು ಮತ್ತು ಸಾಮಾಜಿಕ ಬದ್ಧತೆ ಅನನ್ಯ. ಹತ್ತಾರು ಬಾರಿ ಅವರನ್ನು ಭೇಟಿ ಮಾಡಿ ಚರ್ಚಿಸಿ, ಮಾರ್ಗದರ್ಶನ ಮತ್ತು ಆಶೀರ್ವಾದ ಪಡೆದಿದ್ದೇನೆ. ಅದು ನನ್ನ ಭಾಗ್ಯ.

ಸ್ವಾತಂತ್ರ್ಯಪೂರ್ವ, ಸ್ವಾತಂತ್ರ್ಯೋತ್ತರ ನಂತರ ಸೆರೆವಾಸ ಅನುಭವಿಸಿದ್ದ ದೊರೆಸ್ವಾಮಿಯವರ ಬದುಕಿನ ಆದರ್ಶ, ಮೌಲ್ಯಗಳು ಎಲ್ಲರಿಗೂ ಸ್ಫೂರ್ತಿ. ಇಂತಹ ಮಹಾನ್ ಚೇತನ ಎರಡು ಶತಮಾನಗಳ ಕಾಲಘಟ್ಟದಲ್ಲಿ ನಮ್ಮೆಲ್ಲರಿಗೂ ಸ್ಫೂರ್ತಿಯ ಸೆಲೆಯಾಗಿ ಮುಂಚೂಣಿಯ ಮಾರ್ಗದರ್ಶಕರಾಗಿದ್ದರು ಎಂಬುದನ್ನು ಅತ್ಯಂತ ವಿನೀತ ಭಾವದಿಂದ ಸ್ಮರಿಸಿಕೊಳ್ಳುತ್ತೇನೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

"ಜೀವನದುದ್ದಕ್ಕೂ ಸಮಾಜದ ಏಳಿಗೆಗೆ ದುಡಿದಿದ್ದರು"

ಸ್ವಾತಂತ್ರ್ಯ ಹೋರಾಟಗಾರರು, ಪತ್ರಕರ್ತರು, ಶತಾಯುಷಿ ಎಚ್. ಎಸ್. ದೊರೆಸ್ವಾಮಿಯವರು ನಿಧನರಾದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ನೋವುಂಟಾಯಿತು. ತಮ್ಮ ಜೀವನದುದ್ದಕ್ಕೂ ಸಮಾಜದ ಏಳಿಗೆಗೆ ದುಡಿದ ಒಬ್ಬ ಮಹಾನ್ ಸಾಮಾಜಿಕ ಹೋರಾಟಗಾರರನ್ನು ಕಳೆದುಕೊಂಡು ನಮ್ಮ ರಾಜ್ಯ ಇಂದು ಬಡವಾಗಿದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರು ಸಂತಾಪ ಸೂಚಿಸಿದ್ದಾರೆ.

 ಕೆ.ಎಸ್. ಈಶ್ವರಪ್ಪ ಸಂತಾಪ

ಕೆ.ಎಸ್. ಈಶ್ವರಪ್ಪ ಸಂತಾಪ

ದಣಿವರಿಯದ ಸ್ವಾತಂತ್ರ್ಯ ಹೋರಾಟಗಾರ, ನಮ್ಮ ನಿಮ್ಮೆಲ್ಲರ ನೆಚ್ಚಿನ ಎಚ್. ಎಸ್. ದೊರೆಸ್ವಾಮಿಯವರು ಇಂದು ನಮ್ಮನ್ನೆಲ್ಲ ಅಗಲಿದ ಸುದ್ದಿ ತಿಳಿದು ತೀವ್ರ ದುಃಖವಾಯ್ತು.
ಅವರ ಅಗಲಿಕೆಯಿಂದ ನಾಡಿಗೆ ತುಂಬಲಾರದ ನಷ್ಟವಾಗಿದೆ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಕುಟುಂಬ, ಹಾಗೂ ಅಭಿಮಾನಿ ವರ್ಗಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಉಪ ಮುಖ್ಯಮಂತ್ರಿ ಅಶ್ವತ್ಥ ನಾರಾಯಣ್ ಸಂತಾಪ

ಡಿಸಿಎಂ ಅಶ್ವತ್ಥ ನಾರಾಯಣ್ ಅವರು ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದು, "ನಾಡಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್. ಎಸ್. ದೊರೆಸ್ವಾಮಿ ಅವರ ನಿಧನದ ಸುದ್ದಿ ದುಃಖ ತಂದಿದೆ. ಅನೇಕ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡು ಸುದೀರ್ಘ ಸಾರ್ವಜನಿಕ ಜೀವನ ನಡೆಸಿದ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ಬರೆದುಕೊಂಡಿದ್ದಾರೆ.

"ಗಾಂಧೀವಾದದ ಕೊಂಡಿ ಕಳಚಿದೆ"

ಹಿರಿಯ ಸ್ವಾತಂತ್ರ್ಯ ಹೋರಾಟಗಾರರು, ಶತಾಯುಷಿ ಎಚ್.ಎಸ್.ದೊರೆಸ್ವಾಮಿಯವರ ನಿಧನದಿಂದ ಗಾಂಧಿವಾದದ ಕೊಂಡಿ ಕಳಚಿಕೊಂಡಿದೆ. ಕೊನೆಯ ದಿನಗಳವರೆಗೆ ಅವರು ಸಮಾಜಕ್ಕೆ ಮಾರ್ಗದರ್ಶನ ಮಾಡಿದರು, ಜನಪರ ಚಳವಳಿಗಳಲ್ಲಿ ಪಾಲ್ಗೊಂಡರು, ಸರ್ಕಾರಗಳು ದಾರಿತಪ್ಪಿದಾಗ ಎಚ್ಚರಿಸುವ ಕೆಲಸ ಮಾಡಿದರು. ಸಾರ್ಥಕವಾಗಿ ಬದುಕಿದರು. ಈ‌ ಮಹಾ ನಾಯಕನಿಗೆ ಶ್ರದ್ಧಾಂಜಲಿಗಳು ಎಂದು ಕರವೇ ಮುಖ್ಯಸ್ಥ ನಾರಾಯಣ ಗೌಡ ಟಿ.ಎ. ಟ್ವೀಟ್ ಮಾಡಿದ್ದಾರೆ.

ಶಾಸಕ ಉದಯ್ ಬಿ ಗರುಡಾಚಾರ್, ತನ್ವೀರ್ ಸೇಠ್ ಅವರುಕೂಡ ಸಂತಾಪ ಸೂಚಿಸಿದ್ದಾರೆ.

"ದೊರೆಸ್ವಾಮಿ ಹುಟ್ಟು ಹೋರಾಟಗಾರರು"

'ನೇರ ನಡೆ, ನುಡಿಯ ದೊರೆಸ್ವಾಮಿ ಅವರು ಹುಟ್ಟು ಹೋರಾಟಗಾರರು. ಎಲ್ಲರಿಗೂ ಮಾರ್ಗದರ್ಶಕರಾಗಿದ್ದರು. ದೊರೆಸ್ವಾಮಿ ಅವರು ಹೋರಾಟಗಾರರಷ್ಟೇ ಅಲ್ಲ, ಪತ್ರಕರ್ತರೂ ಆಗಿದ್ದರು. ಇಳಿ ವಯಸ್ಸಿನಲ್ಲೂ ಸಮಾಜ ಹೋರಾಟಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ರೈತರು, ಶೋಷಿತ ವರ್ಗದವರ ಧ್ವನಿಯಾಗಿದ್ದವರು ದೊರೆಸ್ವಾಮಿ" ಎಂದು ಶಿವಕುಮಾರ್ ಅವರು ಸ್ಮರಿಸಿದ್ದಾರೆ. ಇವರ ಅಗಲಿಕೆ ಇಡೀ ರಾಜ್ಯಕ್ಕೆ ತುಂಬಲಾರದ ನಷ್ಟ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಬಂಧು ಬಳಗದವರು, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಶಿವಕುಮಾರ್ ಅವರು ಸಂತಾಪ ನುಡಿಯಲ್ಲಿ ತಿಳಿಸಿದ್ದಾರೆ.

"ದೊರೆಸ್ವಾಮಿಯವರ ನಿಧನ ತುಂಬಲಾಗದ ನಷ್ಟ"

ನಾಡಿನ ಹಿರಿಯ ಚೇತನ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ದೊರೆಸ್ವಾಮಿ ಅವರ ನಿಧನ ನಾಡಿಗೆ ತುಂಬಲಾರದ ನಷ್ಟ.ಇಂತಹ ಅದಮ್ಯ ಚೇತನದ ನಿಧನ ಅಗಲಿಕೆಯನ್ನು ಭರಿಸುವ ಶಕ್ತಿ ಜಗನ್ಮಾತೆ ಮೃತರ ಕುಟುಂಬಕ್ಕೆ ನೀಡಲಿ.ಅವರ ಆತ್ಮಕ್ಕೆ ದೇವರು ಸದ್ಗತಿ ಶಾಂತಿ ನೀಡಲಿ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಟ್ವೀಟ್ ಮಾಡಿದ್ದಾರೆ.

 ಕನ್ನಡ ನಾಡಿಗೆ ಹಿರಿಯಣ್ಣನಂತೆ ಇದ್ದರು

ಕನ್ನಡ ನಾಡಿಗೆ ಹಿರಿಯಣ್ಣನಂತೆ ಇದ್ದರು

ಎಚ್.ಎಸ್ ದೊರೆಸ್ವಾಮಿ ಅವರ ನಿಧನಕ್ಕೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕನ್ನಡ ನಾಡಿಗೆ ಎಚ್.ಎಸ್ ದೊರೆಸ್ವಾಮಿ ಹಿರಿಯಣ್ಣನಂತೆ ಇದ್ದರು. ದೇಶದ ಸ್ವಾತಂತ್ರಕ್ಕಾಗಿ ಹೋರಾಡಿದ ಪ್ರಮುಖರು. ತಮ್ಮ ಇಳಿವಯಸ್ಸಿನಲ್ಲಿಯೂ ತಮ್ಮ ಇಡೀ ಜೀವನವನ್ನು ಸಮಾಜಸೇವೆಗೆ ಅವರು ಮುಡಿಪಾಗಿಟ್ಟಿದ್ದರು. ಅವರ ನಿಧನದಿಂದ ಕನ್ನಡ ನಾಡು ಬಡವಾಗಿದೆ ಎಂದು ಅವರು ಕಂಬನಿ ಮಿಡಿದಿದ್ದಾರೆ.

"ಯುವಜನತೆಯನ್ನೂ ನಾಚಿಸುವಂತಿದ್ದರು"

ದೊರೆಸ್ವಾಮಿ ಅವರ ನಿಧನಕ್ಕೆ ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರು ಕಂಬನಿ ಮಿಡಿದಿದ್ದಾರೆ. ಮಹಾತ್ಮಗಾಂಧಿ ಅವರ ಪ್ರೇರಣೆಯಿಂದ ಬ್ರಿಟಿಷರ ವಿರುದ್ಧ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ದೊರೆಸ್ವಾಮಿ ಅವರ ನಿಧನ ಕರ್ನಾಟಕಕ್ಕೆ ಮಾತ್ರವಲ್ಲ, ದೇಶಕ್ಕೆ ತುಂಬಲಾರದ ನಷ್ಟ ಎಂದು ಸಂತಾಪ ಸೂಚಿಸಿದ್ದಾರೆ.
ದೊರೆಸ್ವಾಮಿ ಅವರು ಯಾವುದೇ ಯುವ ಜೀವಗಳನ್ನು ನಾಚಿಸುವಂತೆ, ಬೇರೆ ಬೇರೆ ಸಾಮಾಜಿಕ ಚಳವಳಿಗಳಲ್ಲಿ ಇನ್ನೂ ತೊಡಗಿಸಿಕೊಂಡಿದ್ದರು. ಭೂಮಿಗಾಗಿ, ಆದಿವಾಸಿಗಳಿಗಾಗಿ ಸದಾ ಮಿಡಿಯುತ್ತಾ, ಎಲ್ಲ ಹೋರಾಟಗಳಲ್ಲೂ ಸಕ್ರಿಯವಾಗಿ ಕಾಣಿಸಿಕೊಳ್ಳುತ್ತಿದ್ದರು ಎಂದು ಸ್ಮರಿಸಿದ್ದಾರೆ.
ಭೂ ದಾನ ಚಳವಳಿ, ಕರ್ನಾಟಕ ಏಕೀಕರಣ ಚಳವಳಿ, ಕನ್ನಡ ಮಾತೃಭಾಷೆಯಾಗಬೇಕು ಎನ್ನುವ ನಿಟ್ಟಿನಲ್ಲಿ ನಡೆದ ವಿವಿಧ ಚಳವಳಿಗಳಲ್ಲಿ ಇವರು ಗುರುತಿಸಿಕೊಂಡಿದ್ದರು. ಆದುದರಿಂದಲೇ, ದೊರೆಸ್ವಾಮಿಯವರ ಹೋರಾಟವನ್ನು ಸ್ವಾತಂತ್ರ ಪೂರ್ವ ಮತ್ತು ಆನಂತರ ಎಂದು ಕರೆಯುತ್ತಿದ್ದರು ಎಂದು ಹೇಳಿದ್ದಾರೆ.

"ಇಳಿ ವಯಸ್ಸಿನಲ್ಲಿಯೂ ಉತ್ಸಾಹಿಯಾಗಿದ್ದರು"

ದೊರೆಸ್ವಾಮಿಯವರ ನಿಧನಕ್ಕೆ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತೀವ್ರಸಂತಾಪ ಸೂಚಿಸಿದ್ದಾರೆ. ದೊರೆಸ್ವಾಮಿ ಅವರ ನಿಧನದ ಸುದ್ದಿ ಆಘಾತಕಾರಿಯಾಗಿದೆ. ಇಳಿ ವಯಸ್ಸಿನಲ್ಲೂ ಉತ್ಸಾಹಿಯಾಗಿ, ಸಕ್ರಿಯವಾಗಿ ಹೋರಾಟಗಳಲ್ಲಿ ನೇತೃತ್ವ ವಹಿಸುತ್ತಿದ್ದರು. ಅವರ ಅಗಲಿಕೆಯಿಂದ ರಾಜ್ಯಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದಿದ್ದಾರೆ.

ಹೋರಾಟ, ಚಳಿವಳಿಗಳನ್ನು ಸ್ಮರಿಸಿದ ಯೋಗೇಶ್ವರ್

ಹೋರಾಟ, ಚಳಿವಳಿಗಳನ್ನು ಸ್ಮರಿಸಿದ ಯೋಗೇಶ್ವರ್

ದೊರೆಸ್ವಾಮಿ ಅವರ ಹಠಾತ್ ನಿಧನಕ್ಕೆ ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಸಿ.ಪಿ.ಯೋಗೇಶ್ವರ ಸಂತಾಪ ಸೂಚಿಸಿದ್ದಾರೆ. ದೊರೆಸ್ವಾಮಿ ಅವರು ಯುವ ಜನತೆಯನ್ನು ನಾಚಿಸುವಂತೆ ಪ್ರಚಲಿತ ಜನಪರ ಹೋರಾಟಗಳಲ್ಲಿ ಹಾಗೂ ಬೇರೆ ಬೇರೆ ಸಾಮಾಜಿಕ ಚಳವಳಿಗಳಲ್ಲಿ ತೊಡಗಿಸಿಕೊಂಡಿದ್ದರು. ಸೂರು ,ಕೃಷಿ ಭೂಮಿ ಇಲ್ಲದವರು, ಬಡವರು ಮತ್ತು ನಿರ್ಗತಿಕರ ಪರ ಹೋರಾಟಗಳಲ್ಲೂ ಸಕ್ರಿಯವಾಗಿ ಕಾಣಿಸಿಕೊಳ್ಳುತ್ತಿದ್ದರು ಎಂದು ಸ್ಮರಿಸಿದ್ದಾರೆ. ಭೂ ದಾನ ಚಳವಳಿ, ಕರ್ನಾಟಕ ಏಕೀಕರಣ ಚಳವಳಿ, ಕನ್ನಡ ಮಾತೃಭಾಷೆಯಾಗಬೇಕು ಎನ್ನುವ ನಿಟ್ಟಿನಲ್ಲಿ ನಡೆದ ವಿವಿಧ ಚಳವಳಿಗಳಲ್ಲಿ ಇವರು ಗುರುತಿಸಿಕೊಂಡಿದ್ದರು ಎಂದು ಸ್ಮರಿಸಿಕೊಂಡಿದ್ದಾರೆ.

Recommended Video

    DK Shivakumar - ದೊರೆಸ್ವಾಮಿ ನಮಗೆಲ್ಲಾ ಸ್ಪೂರ್ತಿ ! | Oneindia Kannada

    "ಅವರ ಹೋರಾಟ ಎಲ್ಲರಿಗೂ ಮಾದರಿ"

    ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಗಾಂಧೀವಾದಿ, ಪ್ರಗತಿಪರ ಚಿಂತಕ ಎಚ್.ಎಸ್.ದೊರೆಸ್ವಾಮಿ ರವರು ನಿಧನರಾದರೆಂದು ತಿಳಿದು ಅತೀವ ದುಃಖವಾಗಿದೆ. ಸದಾ ಸಮಾಜದ ಪರ ಮಿಡಿಯುತ್ತಿದ್ದ, ಹಿರಿಯ ಮುತ್ಸದ್ದಿಗಳು ಅವರು. ಜನಪರ ಮತ್ತು ಶೋಷಿತರ ಪರವಾದ ಅವರ ಹೋರಾಟ ಎಲ್ಲರಿಗೂ ಮಾದರಿ. ಅವರಿಗೆ ಸದ್ಗತಿ ದೊರೆಯಲಿ ಎಂದಿದ್ದಾರೆ.

    More From
    Prev
    Next
    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+