ಬಾಗಲಕೋಟೆ : ಎಚ್.ವೈ.ಮೇಟಿಗೆ ಚರಂತಿಮಠ ಸವಾಲು!
ಬಾಗಲಕೋಟೆ, ಮಾರ್ಚ್ 23 : ಹಲವು ವರ್ಷಗಳ ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಒಲಿದ ಕ್ಷೇತ್ರ ಬಾಗಲಕೋಟೆ. ಆದರೆ, ಈ ಬಾರಿಯ ಚುನಾವಣೆಯಲ್ಲಿ ಕ್ಷೇತ್ರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಬಹಳ ಹೋರಾಟ ನಡೆಸಬೇಕಿದೆ.
ಬಾಗಲಕೋಟೆ ಕ್ಷೇತ್ರದ ಹಾಲಿ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಅಬಕಾರಿ ಸಚಿವರಾಗಿದ್ದ ಎಚ್.ವೈ.ಮೇಟಿ. ವಿವಾದದಲ್ಲಿ ಸಿಕ್ಕಿಹಾಕಿಕೊಂಡ ಮೇಟಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಈ ಬಾರಿ ಅವರಿಗೆ ಟಿಕೆಟ್ ಸಿಗಲಿದೆಯೇ?, ಇಲ್ಲವೇ ಎಂಬ ಚರ್ಚೆ ಜೋರಾಗಿ ನಡೆಯುತ್ತಿದೆ.
ವೀರಣ್ಣ ಚರಂತಿಮಠ ಅವರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ. 2013ರ ಚುನಾವಣೆಯಲ್ಲಿ ವೀರಣ್ಣ ಚರಂತಿಮಠ ಅವರು ಸೋಲು ಕಂಡಿದ್ದರು. ಈ ಬಾರಿ ಅವರು ಅಭ್ಯರ್ಥಿ ಎಂದು ಬಿ.ಎಸ್.ಯಡಿಯೂರಪ್ಪ ಮೌಖಿಕವಾಗಿ ಘೋಷಣೆ ಮಾಡಿದ್ದಾರೆ.
ಕಳೆದ ಬಾರಿ ಬಸವರಾಜ ಸಂಗನಗೌಡ ಪಾಟೀಲ್ ಅವರು ಬಾಗಲಕೋಟೆ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಈ ಬಾರಿ ಅಭ್ಯರ್ಥಿ ಯಾರು? ಎಂಬುದು ಇನ್ನೂ ತೀರ್ಮಾನವಾಗಿಲ್ಲ, ಪಕ್ಷ ಅಭ್ಯರ್ಥಿಯಾಗಿ ಹುಡುಕಾಟ ನಡೆಸುತ್ತಿದೆ.

2013ರಲ್ಲಿ ಕಾಂಗ್ರೆಸ್ ಮಡಿಲಿಗೆ
1983ರ ತನಕ ಕಾಂಗ್ರೆಸ್, ನಂತರ ಜನತಾ ಪರಿವಾರ, 1997ರ ಬಳಿಕ ಬಿಜೆಪಿ ವಶದಲ್ಲಿದ್ದ ಕ್ಷೇತ್ರ ಬಾಗಲಕೋಟೆ. 2013ರ ಚುನಾವಣೆಯಲ್ಲಿ ಎಚ್.ವೈ.ಮೇಟಿ ಅವರು ಬಿಜೆಪಿಯ ವೀರಣ್ಣ ಚಿರಂತಿಮಠ ಅವರನ್ನು ಸೋಲಿಸಿ ಕ್ಷೇತ್ರವನ್ನು ಕೈ ವಶ ಮಾಡಿಕೊಂಡರು.
ಕಳೆದ ಬಾರಿಯ ಸೋಲನ್ನು ಬಿಜೆಪಿ ನಾಯಕರು ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸಬೇಕು ಎಂದು ಪಣ ತೊಟ್ಟಿದ್ದಾರೆ. ಕಳೆದ ಬಾರಿ ಸೋತಿದ್ದ ವೀರಣ್ಣ ಚಿರಂತಿಮಠ ಅವರು ಈ ಬಾರಿ ಅಭ್ಯರ್ಥಿಯಾಗುವ ಸಾಧ್ಯತೆ ಇದೆ.

ಎಚ್.ಮೈ.ಮೇಟಿಗೆ ಟಿಕೆಟ್ ಸಿಗಲಿದೆಯೇ?
ಬಾಗಲಕೋಟೆ ಕ್ಷೇತ್ರದಲ್ಲಿ ಜಯಗಳಿಸಿದ್ದ ಎಚ್.ವೈ.ಮೇಟಿ ಅವರಿಗೆ ಸಚಿವ ಸ್ಥಾನ ಸಿಕ್ಕಿತ್ತು. ಅಬಕಾರಿ ಸಚಿವರಾಗಿದ್ದ ಅವರು ವಿವಾದದಲ್ಲಿ ಸಿಲುಕಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು.
ಈಗ ಅವರಿಗೆ ಟಿಕೆಟ್ ಸಿಗಲಿದೆಯೇ? ಎಂಬ ಸುದ್ದಿಗಳು ಹರಿದಾಡುತ್ತಿವೆ. ಕ್ಷೇತ್ರದಲ್ಲಿ ಸಾಧನಾ ಸಮಾವೇಶದಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇಟಿ ಅವರನ್ನು ಹಾಡಿ ಹೊಗಳಿದ್ದರು.

ಹಲವು ನಾಯಕರ ಹೆಸರು ಮುಂಚೂಣಿಯಲ್ಲಿ
ಸಚಿವ ಸ್ಥಾನ ಕಳೆದುಕೊಳ್ಳಲು ಕಾರಣವಾವ ವಿವಾದವೇ ಮೇಟಿ ಅವರಿಗೆ ಟಿಕೆಟ್ ತಪ್ಪಿಸಲಿದೆ? ಎಂಬ ಸುದ್ದಿಗಳು ಹಬ್ಬಿವೆ. ಹಾಗಾದರೆ ಕಾಂಗ್ರೆಸ್ ಅಭ್ಯರ್ಥಿ ಯಾರು?.
ಮಾಜಿ ಶಾಸಕ ಪಿ.ಎಚ್.ಪೂಜಾರ, ಬಸವೇಶ್ವರ ಸಹಹಾರ ಬ್ಯಾಂಕ್ ಅಧ್ಯಕ್ಷ ಪ್ರಕಾಶ್ ತಪಶೆಟ್ಟಿ ಕಾಂಗ್ರೆಸ್ ಟಿಕೆಟ್ಗಾಗಿ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದಾರೆ. ಯಾರಿಗೆ ಟಿಕೆಟ್ ಸಿಗಲಿದೆ ಎಂದು ಕಾದು ನೋಡಬೇಕು.

ವೀರಣ್ಣ ಚಿರಂತಿಮಠ ಬಿಜೆಪಿ ಅಭ್ಯರ್ಥಿ
ಬಿಜೆಪಿಯಿಂದ ವೀರಣ್ಣ ಚರಂತಿಮಠ ಅವರು ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಚರಂತಿಮಠ ಆಪ್ತರು.
2008ರ ಚುನಾವಣೆಯಲ್ಲಿ 46,452 ಮತಗಳನ್ನು ಪಡೆದು ಅವರು ಜಯಗಳಿಸಿದ್ದರು. 2013ರ ಚುನಾವಣೆಯಲ್ಲಿ65,316 ಮತಗಳನ್ನು ಪಡೆದು ಎಚ್.ವೈ.ಮೇಟಿ ವಿರುದ್ಧ ಸೋಲು ಕಂಡಿದ್ದರು. ಈ ಬಾರಿ ಕ್ಷೇತ್ರದಲ್ಲಿ ಗೆಲ್ಲಲು ಬಿಜೆಪಿ ತಂತ್ರ ರೂಪಿಸುತ್ತಿದೆ.

ಜೆಡಿಎಸ್ ಅಭ್ಯರ್ಥಿ ಯಾರು?
2013ರ ಚುನಾವಣೆಯಲ್ಲಿ ಬಸವರಾಜ ಸಂಗನಗೌಡ ಪಾಟೀಲ್ ಬಾಗಲಕೋಟೆ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. 1882 ಮತಗಳನ್ನು ಪಡೆದಿದ್ದರು. ಈ ಬಾರಿ ಪಕ್ಷ ಸೂಕ್ತ ಅಭ್ಯರ್ಥಿಯ ಹುಡುಕಾಟದಲ್ಲಿ ತೊಡಗಿದೆ.












Click it and Unblock the Notifications