ಚಾಮರಾಜಪೇಟೆ : ಗೌಡರ ತಂತ್ರವೋ?, ಜಮೀರ್ ವರ್ಚಸ್ಸೋ?
Recommended Video
ಬೆಂಗಳೂರು, ಮಾರ್ಚ್ 14 : ಬೆಂಗಳೂರು ನಗರದಲ್ಲಿ ಭಾರೀ ಕುತೂಹಲ ಹುಟ್ಟಿಸಿರುವ ಕ್ಷೇತ್ರ ಚಾಮರಾಜಪೇಟೆ. 2004ರ ಬಳಿಕ ಬಿಜೆಪಿ ಮತ್ತು ಕಾಂಗ್ರೆಸ್ ಕ್ಷೇತ್ರದಲ್ಲಿ ಗೆದ್ದಿಲ್ಲ. ಈ ಬಾರಿ ಕ್ಷೇತ್ರದಲ್ಲಿ ಯಾರಿಗೆ ಗೆಲುವು? ಎಂಬ ಲೆಕ್ಕಾಚಾರಗಳು ಆರಂಭವಾಗಿವೆ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಕ್ಷೇತ್ರದಲ್ಲಿ ಸಂಚಾರ ನಡೆಸುತ್ತಿದ್ದಾರೆ.
ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಮುಸ್ಲಿಂ ಪ್ರಾಬಲ್ಯ ಹೊಂದಿರುವ ಕ್ಷೇತ್ರ ಚಾಮರಾಜಪೇಟೆ. ಮೂರು ಬಾರಿ ಕ್ಷೇತ್ರದಲ್ಲಿ ಜೆಡಿಎಸ್ನ ಜಮೀರ್ ಅಹಮದ್ ಖಾನ್ ಗೆಲುವು ಸಾಧಿಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಿದ್ಧತೆ ನಡೆಸುತ್ತಿದ್ದಾರೆ.
ಚುನಾವಣಾ ಪ್ರಚಾರ ಚಿತ್ರಸಂಪುಟ : ಬಿಜೆಪಿ | ಕಾಂಗ್ರೆಸ್ | ಜೆಡಿಎಸ್
ಬಿಜೆಪಿ ಅಭ್ಯರ್ಥಿ ಯಾರು? ಎಂಬ ಬಗ್ಗೆ ಇನ್ನೂ ಚರ್ಚೆ ನಡೆಯುತ್ತಿದೆ. ಜೆಡಿಎಸ್ ಪಕ್ಷದ ವಿರುದ್ಧ ಬಂಡಾಯ ಎದ್ದಿರುವ ಜಮೀರ್ ಅಹಮದ್ ಖಾನ್ ಸೋಲಿಸಲು ಎಚ್.ಡಿ.ದೇವೇಗೌಡರು ರಣತಂತ್ರ ರೂಪಿಸುತ್ತಿದ್ದಾರೆ. ಕಾಂಗ್ರೆಸ್ನಿಂದ ಹಲವು ಜನರು ಟಿಕೆಟ್ಗಾಗಿ ಪ್ರಯತ್ನ ನಡೆಸುತ್ತಲಿದ್ದಾರೆ ಎಂಬುದು ಗುಟ್ಟಾಗಿ ಉಳಿದಿಲ್ಲ.
ಚಾಮರಾಜಪೇಟೆ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಅಂತಿಮ?
ಚಾಮರಾಜಪೇಟೆ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುತ್ತದೆ. ಪಾದರಾಯನಪುರ, ಜಗಜೀವನರಾಮ್ ನಗರ, ರಾಯಪುರಂ, ಛಲವಾದಿಪಾಳ್ಯ, ಕೆ.ಆರ್.ಮಾರುಕಟ್ಟೆ, ಚಾಮರಾಜಪೇಟೆ, ಆಜಾದ್ ನಗರ ವಾರ್ಡ್ಗಳನ್ನು ಚಾಮರಾಜಪೇಟೆ ವಾರ್ಡ್ ಒಳಗೊಂಡಿದೆ.
ಎಸ್.ಎಂ.ಕೃಷ್ಣ ನಂತರ ಜಮೀರ್ ಅಹಮದ್ ಖಾನ್
2005ರಲ್ಲಿ ಎಸ್.ಎಂ.ಕೃಷ್ಣ ರಾಜೀನಾಮೆಯಿಂದ ಚಾಮರಾಜಪೇಟೆ ಕ್ಷೇತ್ರ ತೆರವಾಯಿತು. ಉಪ ಚುನಾವಣೆ ನಡೆದಾಗ ಜಮೀರ್ ಅಹಮದ್ ಖಾನ್ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿ ಜಯಗಳಿಸಿದರು. 19,943 ಮತಗಳನ್ನು ಪಡೆದು 3678 ಮತಗಳಿಂದ ಕಾಂಗ್ರೆಸ್ನ ಆರ್.ವಿ.ದೇವರಾಜ್ ಅವರನ್ನು ಸೋಲಿಸಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದರು.
ನಂತರ 2008, 2013ರ ಚುನಾವಣೆಯಲ್ಲಿ ಚಾಮರಾಜಪೇಟೆ ಕ್ಷೇತ್ರದಿಂದ ಗೆಲ್ಲುವ ಮೂಲಕ ಹ್ಯಾಟ್ರಿಕ್ ಬಾರಿಸಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಿದ ಜಮೀರ್ ಅಹಮದ್ ಖಾನ್ ಜೆಡಿಎಸ್ ಪಕ್ಷದಿಂದ ಅಮಾನತುಗೊಂಡಿದ್ದಾರೆ.
ಜಮೀರ್ ಅಹಮದ್ ಖಾನ್ ಕಾಂಗ್ರೆಸ್ ಸೇರಲಿದ್ದು 2018ರ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿಯೂ ಅವರು ಗುರುತಿಸಿಕೊಂಡಿದ್ದಾರೆ.
ಕಾಂಗ್ರೆಸ್, ಬಿಜೆಪಿ ಗೆದ್ದಿಲ್ಲ
2004ರ ಬಳಿಕ ಕಾಂಗ್ರೆಸ್ ಮತ್ತು ಬಿಜೆಪಿ ಚಾಮರಾಜಪೇಟೆಯಲ್ಲಿ ಗೆಲುವು ಕಂಡಿಲ್ಲ. ಸತತ ಮೂರು ಚುನಾವಣೆಯಲ್ಲಿ ಜಮೀರ್ ಅಹಮದ್ ಖಾನ್ ಆಯ್ಕೆಯಾಗಿದ್ದಾರೆ. ಆದರೆ, ಈಗ ಜೆಡಿಎಸ್ನಿಂದ ಅಮಾನತುಗೊಂಡಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ ಚಾಮರಾಜಪೇಟೆ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಬಿಜೆಪಿ ಮತ್ತು ಕಾಂಗ್ರೆಸ್ ತಂತ್ರ ರೂಪಿಸುತ್ತಿವೆ. ಎರಡೂ ಪಕ್ಷಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ಯಾರು ಅಭ್ಯರ್ಥಿ? ಎಂದು ಪಕ್ಷಗಳು ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ.
ಕಳೆದ ಚುನಾವಣೆಯಲ್ಲಿ ಜಮೀರ್ ಅಹಮದ್ ಖಾನ್ ವಿರುದ್ಧ ಸೋಲು ಕಂಡಿದ್ದ ಕಾಂಗ್ರೆಸ್ನ ಜಿ.ಎ.ಬಾವಾ ಅವರು ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಜಮೀರ್ ಅಹಮದ್ ಕಾಂಗ್ರೆಸ್ ಸೇರಿದರೆ ಅವರಿಗೆ ಟಿಕೆಟ್ ನೀಡಬೇಕಾಗುತ್ತದೆ.
ದೇವೇಗೌಡರ ತಂತ್ರವೇನು?
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಜಮೀರ್ ಅಹಮದ್ ಖಾನ್ ಸೋಲಿಸಲು ಪಣ ತೊಟ್ಟಿದ್ದಾರೆ. ಕ್ಷೇತ್ರದಲ್ಲಿ ಸಂಘಟನೆಯನ್ನು ಎಚ್.ಡಿ.ದೇವೇಗೌಡರು ಚುರುಕುಗೊಳಿಸಿದ್ದಾರೆ. ಬಿಬಿಎಂಪಿ ಸದಸ್ಯ ಇಮ್ರಾನ್ ಪಾಷ ಅವರು ಜೆಡಿಎಸ್ ಅಭ್ಯರ್ಥಿಯಾಗುವ ಸಾಧ್ಯತೆ ಇದೆ.
ಕ್ಷೇತ್ರದಲ್ಲಿ ಮುಸ್ಲಿಂ ಮತಗಳು ನಿರ್ಣಾಯಕವಾಗಲಿವೆ. ಆದರೆ, ಈ ಬಾರಿ ಎಸ್ಡಿಪಿಐ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಾಗಿ ಘೋಷಣೆ ಮಾಡಿದೆ. ಆದ್ದರಿಂದ, ಮತ ವಿಭಜನೆ ಆತಂಕವಾಗಿದೆ.
ಈ ಬಾರಿಯ ಚುನಾವಣೆ ಚಾಮರಾಜಪೇಟೆ ಕ್ಷೇತ್ರದಲ್ಲಿ ಜಮೀರ್ ಅಹಮದ್ ಖಾನ್ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿದೆ. ಎಚ್.ಡಿ.ದೇವೇಗೌಡ ಮತ್ತು ಕುಮಾರಸ್ವಾಮಿ ಅವರ ತಂತ್ರವೇನು? ಎಂಬುದು ಇನ್ನೂ ನಿಗೂಢವಾಗಿದೆ.
ಬಿಜೆಪಿ ಅಭ್ಯರ್ಥಿ ಯಾರು?
ಚಾಮರಾಜಪೇಟೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಾರು? ಎಂಬುದು ಇನ್ನೂ ಕುತೂಹಲದ ಪ್ರಶ್ನೆಯಾಗಿದೆ. ಬಿ.ವಿ.ಗಣೇಶ್, ಲಕ್ಷ್ಮೀನಾರಾಯಣ ಅವರು ಟಿಕೆಟ್ ಆಕಾಂಕ್ಷಿಗಳು. ಮತ್ತೊಂದು ಕಡೆ ಕೆಲವು ತಿಂಗಳ ಹಿಂದೆ ಪಕ್ಷ ಸೇರಿದ ಲಹರಿ ವೇಲು ಅವರು ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ.
2013ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಿ.ವಿ.ಗಣೇಶ್ 17,720 ಮತಗಳನ್ನು ಪಡೆದಿದ್ದರು. 2008ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವಿ.ಎಸ್.ಶಾಮ ಸುಂದರ್ 23,414 ಮತಗಳನ್ನು ಪಡೆದಿದ್ದರು.
ಲಹರಿ ವೇಲು ಅವರು ಅಭ್ಯರ್ಥಿಯಾದರೆ ಗೆಲುವು ಸುಲಭ ಎಂಬ ಸುದ್ದಿಗಳು ಹಬ್ಬಿವೆ. ಬಿಜೆಪಿ ಯಾರಿಗೆ ಟಿಕೆಟ್ ನೀಡಲಿದೆ ಎಂಬುದನ್ನು ಕಾದು ನೋಡಬೇಕು.
ಕ್ಷೇತ್ರದ ಮತದಾರರ ಚಿತ್ರಣ
ಚಾಮರಾಜಪೇಟೆ ಕ್ಷೇತ್ರದಲ್ಲಿ 216896 ಮತದಾರರು ಇದ್ದಾರೆ. 112728 ಪುರುಷ, 104150 ಮಹಿಳಾ ಮತದಾರರು ಇದ್ದಾರೆ. ಮುಸ್ಲಿಂ, ಒಕ್ಕಲಿಗರು ಹಾಗೂ ಬ್ರಾಹ್ಮಣ ಸಮುದಾಯದ ಮತಗಳು ನಿರ್ಣಾಯಕವಾಗಿವೆ.
ಮತ ವಿಭಜನೆಯಾದರೆ ಯಾವ ಪಕ್ಷದ ಅಭ್ಯರ್ಥಿ ಗೆಲ್ಲುತ್ತಾರೆ? ಎಂಬುದನ್ನು ಊಹಿಸುವುದು ಕಷ್ಟ. ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿ ಯಾರು? ಎಂಬುದರ ಮೇಲೆ ಚುನಾವಣಾ ಕಣದ ಚಿತ್ರಣ ಅಂತಿಮಗೊಳ್ಳಲಿದೆ.