ಕುಮಾರಸ್ವಾಮಿ ಪ್ರತಿನಿಧಿಸುವ ರಾಮನಗರದ ರಾಜಕೀಯ ಚಿತ್ರಣ
Recommended Video
ರಾಮನಗರ, ಏಪ್ರಿಲ್ 03 : ರಾಮನಗರ ಮತ್ತು ಚನ್ನಪಟ್ಟಣ ಎರಡೂ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ. ಕುಮಾರಸ್ವಾಮಿ ಮತ್ತು ಡಿ.ಕೆ.ಶಿವಕುಮಾರ್ ಅವರ ನಡುವಿನ ಪ್ರತಿಷ್ಠೆಯಿಂದಾಗಿ ಜಿಲ್ಲೆಯ ಚುನಾವಣಾ ಕಣ ಕುತೂಹಲ ಮೂಡಿಸಿದೆ.
ಕರ್ನಾಟಕಕ್ಕೆ ಮೂವರು ಮುಖ್ಯಮಂತ್ರಿಗಳನ್ನು ನೀಡಿದ ಕೀರ್ತಿ ರಾಮನಗರದ್ದು. ಕೆಂಗಲ್ ಹನುಮಂತಯ್ಯ, ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಈ ಕ್ಷೇತ್ರದಿಂದ ಗೆದ್ದು ಮುಖ್ಯಮಂತ್ರಿಯಾದರು. ರಾಮನಗರದ ಬಗ್ಗೆ ಕುಮಾರಸ್ವಾಮಿ ಅವರಿಗೆ ಅಪಾರವಾದ ಒಲವಿದೆ.
ರಾಮನಗರ : ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಅಂತಿಮ?
ಹಿಂದೆ ರಾಮನಗರ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆಯಾಗಿತ್ತು. ಎಚ್.ಡಿ.ಕುಮಾರಸ್ವಾಮಿ ಅವರ ರಾಜಕೀಯ ಪ್ರವೇಶದ ಬಳಿಕ ಜೆಡಿಎಸ್ ವಶವಾಗಿದೆ. 2004, 2008, 2013ರ ಚುನಾವಣೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ.
ಕ್ಷೇತ್ರ ಪರಿಚಯ: ರಾಮನಗರದಲ್ಲಿ ಕುಮಾರಸ್ವಾಮಿ ಸೋಲಿಸುವುದು ಸುಲಭವಲ್ಲ
ಈ ಬಾರಿಯ ಚುನಾವಣೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ರಾಮನಗರ ಮತ್ತು ಚನ್ನಪಟ್ಟಣ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಕಾಂಗ್ರೆಸ್ ಪಕ್ಷ ಇಕ್ಬಾಲ್ ಹುಸೇನ್ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ. ಬಿಜೆಪಿ ಅಭ್ಯರ್ಥಿ ಯಾರು? ಎಂಬುದು ಇನ್ನೂ ನಿಗೂಢವಾಗಿದೆ. ಕ್ಷೇತ್ರದ ರಾಜಕೀಯ ಚಿತ್ರಣದ ನೋಟ ಇಲ್ಲಿದೆ...
ಜಿಲ್ಲಾ ಕೇಂದ್ರವಾಗಿ ಘೋಷಣೆ ಮಾಡಿದರು
2004ರ ಚುನಾವಣೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ರಾಮನಗರದಲ್ಲಿ ಗೆಲುವು ಸಾಧಿಸಿದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಮುಖ್ಯಮಂತ್ರಿಯಾದರು. 2007ರ ಆಗಸ್ಟ್ 23ರಂದು ರಾಮನಗರವನ್ನು ಜಿಲ್ಲಾಕೇಂದ್ರವನ್ನಾಗಿ ಘೋಷಣೆ ಮಾಡಿದರು.
ಜಾತಿ ರಾಜಕಾರಣ ಮತ್ತು ಜನಪ್ರಿಯತೆ ಎರಡರ ಮೂಲಕ ಕುಮಾರಸ್ವಾಮಿ ಸತತವಾಗಿ ಕ್ಷೇತ್ರದಲ್ಲಿ ಗೆಲುವು ಸಾಧಿಸುತ್ತಿದ್ದಾರೆ. ದೇವೇಗೌಡರ ಕುಟುಂಬಕ್ಕೆ ರಾಮನಗರ ಅದೃಷ್ಟದ ಜಿಲ್ಲೆ. ಒಕ್ಕಲಿಗ ಸಮುದಾಯ ಹೆಚ್ಚಿರುವ ಕ್ಷೇತ್ರದಲ್ಲಿ ಜೆಡಿಎಸ್ ಪ್ರಾಬಲ್ಯ ಹೆಚ್ಚು.
ರಾಮನಗರ ನಮ್ಮ ಕರ್ಮ ಭೂಮಿ
ರಾಮನಗರ ಕ್ಷೇತ್ರ ನನ್ನ ಕರ್ಮಭೂಮಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಲವಾರು ಸಲ ಹೇಳಿದ್ದಾರೆ. 2004ರಲ್ಲಿ ಮೊದಲ ಬಾರಿಗೆ ಚುನಾವಣೆಗೆ ನಿಂತಾಗ ಜನರು ಅವರನ್ನು ಗೆಲ್ಲಿಸಿ ವಿಧಾನಸೌಧಕ್ಕೆ ಕಳುಹಿಸಿದರು.
2004, 2008, 2013ರ ಚುನಾವಣೆಯಲ್ಲಿಯೂ ಅವರು ಕ್ಷೇತ್ರದಲ್ಲಿ ಗೆಲುವು ಕಂಡಿದ್ದಾರೆ. ರಾಮನಗರ ಜಿಲ್ಲೆಯನ್ನು ಜೆಡಿಎಸ್ ಪಕ್ಷದ ಭದ್ರಕೋಟೆಯಾಗಿ ಮಾಡಿದ್ದಾರೆ. 2018ರ ಚುನಾವಣೆಯಲ್ಲಿಯೂ ಅವರು ರಾಮನಗರದಿಂದ ಸ್ಪರ್ಧೆ ಮಾಡಲಿದ್ದಾರೆ.
ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್?
2004ರ ಚುನಾವಣೆಯಲ್ಲಿ ಕುಮಾರಸ್ವಾಮಿ 69,554, 2008ರ ಚುನಾವಣೆಯಲ್ಲಿ 71,700 ಮತ್ತು 2013ರ ಚುನಾವಣೆಯಲ್ಲಿ 83,447 ಮತಗಳನ್ನು ಪಡೆದು ಜಯಗಳಿಸಿದ್ದಾರೆ. 2013ರ ಚುನಾವಣೆಯಲ್ಲಿ ಕಾಂಗ್ರೆಸ್ನ ಮರಿದೇವರು ತೀವ್ರ ಸ್ಪರ್ಧೆಯೊಡ್ಡಿದ್ದರು.
ಬಾರಿ ಕಾಂಗ್ರೆಸ್ ಜಿಲ್ಲಾ ಪಂಚಾಯಿತಿಯ ಮಾಜಿ ಅಧ್ಯಕ್ಷ ಇಕ್ಬಾಲ್ ಹುಸೇನ್ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿದೆ. ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಹುಸೇನ್ ಅವರ ಹೆಸರಿಗೆ ಒಪ್ಪಿಗೆ ನೀಡಿದ್ದಾರೆ. ಹುಸೇನ್ ಕ್ಷೇತ್ರದಲ್ಲಿ ಪ್ರಚಾರವನ್ನು ಆರಂಭಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಯಾರು?
ರಾಮನಗರದ ಬಿಜೆಪಿ ಅಭ್ಯರ್ಥಿ ಯಾರು? ಎಂಬುದು ಇನ್ನೂ ಕುತೂಹಲಕ್ಕೆ ಕಾರಣವಾಗಿದೆ. ಎಸ್.ಆರ್.ನಾಗರಾಜ್, ಜಗದೀಶ್ ಗೌಡ ಹೆಸರು ಕೇಳಿಬರುತ್ತಿದೆ. ಯಾರಿಗೆ ಟಿಕೆಟ್ ನೀಡಲಾಗುತ್ತದೆ? ಎಂಬುದು ಇನ್ನೂ ಅಂತಿಮವಾಗಿಲ್ಲ.
2008ರ ಚುನಾವಣೆಯಲ್ಲಿ ಎಂ.ರುದ್ರೇಶ್ ಸ್ಪರ್ಧಿಸಿ 24,440 ಮತಗಳನ್ನು ಪಡೆದಿದ್ದರು. 2013ರ ಚುನಾವಣೆಯಲ್ಲಿ ಶಿವಮಾದು ಅವರು ಕೇವಲ 1,776 ಮತಗಳನ್ನು ಪಡೆದಿದ್ದರು.
ಚನ್ನಪಟ್ಟಣದಿಂದಲೂ ಸ್ಪರ್ಧೆ
ಈ ಬಾರಿಯ ಚುನಾವಣೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ರಾಮನಗರ ಮತ್ತು ಚನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ. 2013ರ ಚುನಾವಣೆಯಲ್ಲಿ ಚನ್ನಪಟ್ಟಣದಲ್ಲಿ ಅನಿತಾ ಕುಮಾರಸ್ವಾಮಿ ಸ್ಪರ್ಧಿಸಿದ್ದರು. 6,464 ಮತಗಳ ಅಂತರದಲ್ಲಿ ಸಿ.ಪಿ.ಯೋಗೇಶ್ವರ ವಿರುದ್ಧ ಸೋತಿದ್ದರು.
ಸಮಾಜವಾದಿ ಪಕ್ಷದಲ್ಲಿದ್ದ ಸಿ.ಪಿ.ಯೋಗೇಶ್ವರ ಅವರು ನಂತರ ಕಾಂಗ್ರೆಸ್ ಸೇರಿದರು. ಈಗ ಅವರು ಬಿಜೆಪಿಯಲ್ಲಿದ್ದಾರೆ. ಸಿ.ಪಿ.ಯೋಗೇಶ್ವರ ಅವರನ್ನು ಸೋಲಿಸಲೇಬೇಕು ಎಂದು ಕಾಂಗ್ರೆಸ್ ಪಣ ತೊಟ್ಟಿದೆ. ಮೊತ್ತೊಂದು ಕಡೆ ಕುಮಾರಸ್ವಾಮಿ ಅವರು ಚನ್ನಪಟ್ಟಣದಲ್ಲಿ ಕಣಕ್ಕಿಳಿಯಲಿದ್ದಾರೆ. ಇದರಿಂದಾಗಿ ಕ್ಷೇತ್ರ ಕುತೂಹಲದ ಕಣವಾಗಿದೆ.