ಅಮುಲ್ V/S ಕೆಎಂಫ್; ಸರ್ಕಾರದ ವಿರುದ್ದ ಮುಗಿಬಿದ್ದ ಕೈ-ದಳ: ಅಮುಲ್ ವಿಚಾರದಲ್ಲಿ ರಾಜಕಾರಣ ಸಲ್ಲದು ಎಂದ ಸಿಎಂ ಬೊಮ್ಮಾಯಿ
ನವದೆಹಲಿ, ಏಪ್ರಿಲ್ 8: ಚುನಾವಣೆ ಹೊತ್ತಲ್ಲೇ ರಾಜ್ಯದಲ್ಲಿ ಅಮುಲ್ V/S ಕೆಎಂಫ್ ವಿವಾದ ತಲೆ ಜೋರಾಗಿದೆ. ಅಮುಲ್ಗೆ ಮಣೆ ಹಾಕಲು ಕೆಎಂಎಫ್ ವಿರುದ್ಧ ಕುತಂತ್ರ ನಡೆಸಿರುವ ಆರೋಪ ಕೇಳಿ ಬರ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ.
ಇನ್ನೂ ಕೆಎಂಎಫ್ ಹಾಲಿನ ಬೂತ್ಗಳಲ್ಲಿ ನಂದಿನಿ ಉತ್ಪನ್ನಗಳ ಅಲಭ್ಯತೆ ಕುರಿತು ದೂರುಗಳು ಕೇಳಿ ಬರ್ತಿವೆ. ಅದರಲ್ಲೂ ಅಮೂಲ್ ರಾಜ್ಯಕ್ಕೆ ಎಂಟ್ರಿ ಕೊಟ್ಟಿರುವ ಹೊತ್ತಲ್ಲೇ ನಂದಿನಿ ಉತ್ಪನ್ನಗಳ ಕೃತಕ ಅಭಾವ ಸೃಷ್ಟಿ ಮಾಡಲಾಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿದ್ದು, ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉತ್ತರಿಸಿದ್ದಾರೆ.

ಈ ಕುರಿತು ಶನಿವಾರ ದೆಹಲಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಂದಿನಿ ನಂಬರ್ ಒನ್ ಬ್ರ್ಯಾಂಡ್ ಆಗಲಿದ್ದು, ಮುಲ್ ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂದು ತಿಳಿಸಿದರು. ಬೇರೆ ರಾಜ್ಯಗಳಲ್ಲಿ ನಂದಿನಿ ಮಾರಾಟವನ್ನು ನಾವು ಕೂಡ ಮಾಡಿದ್ದೇವೆ. ಸ್ಪರ್ಧಾತ್ಮಕ ಮಾರುಕಟ್ಟೆಯಲ್ಲಿ ಅಮುಲ್ ಹಿಮ್ಮೆಟ್ಟಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಇನ್ನೂ ಬಿಜೆಪಿ ಅಭ್ಯರ್ಥಿಗಳ ವಿಚಾರವಾಗಿ ಉತ್ತರಿಸಿ, ಇಂದು(ಶನಿವಾರ) ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ನೇತೃತ್ವದಲ್ಲಿ ಸಭೆ ನಡೆಯಲಿದೆ. ಎಲ್ಲಾ ಅಭ್ಯರ್ಥಿಗಳ ವಿಚಾರ ಚರ್ಚೆ ಮಾಡಲಾಗುವುದು. ನಾಳೆ ಸಂಜೆ ಐದು ಗಂಟೆಗೆ ಸಂಸದಿಯ ಮಂಡಳಿ ಸಭೆ ನಡೆಯಲಿದ್ದು, ಸಭೆಯಲ್ಲಿ ಎಲ್ಲಾ 224 ಕ್ಷೇತ್ರಗಳ ಬಗ್ಗೆಯೂ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.
ಕೆಲವು ವಿಧಾನಪರಿಷತ್ ಸದಸ್ಯರು ಹಾಗೂ ಸಂಸದರು ಟಿಕೆಟ್ ಆಕಾಂಕ್ಷಿಗಳಾಗಿದ್ದು, ಈ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಚರ್ಚೆಯ ಬಳಿಕ ಎಷ್ಟು ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ ಎಂದು ತಿಳಿಸಿದರು.

ಕಾಂಗ್ರೆಸ್ ನಲ್ಲಿ ಟಿಕೇಟ್ ಹಂಚಿಕೆಯ ಗೊಂದಲದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ. ನಮ್ಮ ಶಕ್ತಿ ಮೇಲೆ ನಮಗೆ ನಂಬಿಕೆ ಇದೆ. ಸಹಜವಾಗಿಯೇ ಅದರ ಲಾಭ ಆಗಲಿದೆ ಎಂದರು.
ನಟ ಸುದೀಪ್ ಬಿಜೆಪಿ ಬೆಂಬಲ ನೀಡುವ ಬಗ್ಗೆ ಮಾತನಾಡಿ, ಕಾಂಗ್ರೆಸ್ ಈ ಹಿಂದೆ ನಟರನ್ನು ಕರೆ ತಂದು ಚುನಾವಣಾ ಪ್ರಚಾರ ಮಾಡಿದ್ದಾರೆ. ಅಂಬರೀಶ್ ಪ್ರಚಾರ ಮಾಡಲಿಲ್ಲವೇ,ಶಾಸಕರಾಗಿರಲಿಲ್ಲವೇ ಎಂದು ಪ್ರಶ್ನಿಸಿದರು. ಬಿಜೆಪಿಗೆ ಬೆಂಬಲ ನೀಡುವ ಮುಂಚೆ ಅದರಿಂದಾಗೊ ಎಲ್ಲಾ ಪರಿಣಾಮದ ಬಗ್ಗೆ ಮಾಹಿತಿ ಇದೆ. ಸುದೀಪ್ ಅವರು ನಮಗೆ ಬೆಂಬಲ ನೀಡಿರುವುದರಿಂದ ಸಹಜವಾಗಿ ಕಾಂಗ್ರೆಸ್ ಗೆ ನಡುಕ ಹುಟ್ಟಿದೆ ಎಂದರು.
ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಣೆಯಾಗುವುದೇ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಆ ತರಹದ ಲೆಕ್ಕಾಚಾರ ಚರ್ಚೆಯಲ್ಲಿ ಮಾಡಿದಾಗಲೇ ತಿಳಿಯುವುದು ಎಂದು ಹೇಳಿದರು.ಇನ್ನೂ ನಂದಿನಿ ವಿವಾದದ ಕುರಿತು ಬೆಂಗಳೂರಿನಲ್ಲಿ ಸಚಿವ ಸುಧಾಕರ್ ಮಾತನಾಡಿ, ನಂದಿನಿ ಉತ್ಪನ್ನಗಳು ಬೇರೆ ರಾಜ್ಯ ಹಾಗೂ ದೇಶಗಳಲ್ಲೂ ಮಾರಾಟವಾಗುತ್ತಿದ್ದು, ಯಾವುದೇ ಸ್ಪರ್ಧೆ ಎದುರಿಸಲು ಸಿದ್ಧವಾಗಿವೆ. ಅಮೂಲ್ ಉತ್ಪನ್ನಗಳ ಮಾರಾಟದ ವಿಚಾರವನ್ನು ಕಾಂಗ್ರೆಸ್ನವರು ರಾಜಕೀಯಗೊಳಿಸಿದ್ದಾರೆ ಎಂದು ಹೇಳಿದರು.
ನಂದಿನಿ ಉತ್ಪನ್ನಗಳು ನಮ್ಮ ರಾಜ್ಯದ ಹೆಮ್ಮೆಯಾಗಿದೆ. ಹಿಂದಿನ ಸಿಎಂ ಬಿ.ಎಸ್.ಯಡಿಯೂರಪ್ಪನವರು ಮೊದಲ ಬಾರಿಗೆ ರೈತರಿಗೆ 2 ರೂ. ಪ್ರೋತ್ಸಾಹ ಧನ ನೀಡಿದ್ದರು. ಈಗ 5 ರೂ. ನೀಡಲಾಗುತ್ತಿದೆ. ಅಂದರೆ ನಂದಿನಿಗೆ ರಾಜ್ಯ ಬಿಜೆಪಿ ಸರ್ಕಾರ ಸಂಪೂರ್ಣ ಬೆಂಬಲ ನೀಡಿದೆ.
ಯಾವುದೇ ಉತ್ಪನ್ನ ಯಾವುದೇ ಭಾಗಗಳಲ್ಲಿ ಮಾರಾಟವಾಗಬಹುದು. ಆದರೆ ಕಾಂಗ್ರೆಸ್ನವರು ಇದನ್ನು ರಾಜಕೀಯವಾಗಿಸಿದ್ದಾರೆ. ರಾಜ್ಯದಲ್ಲಿ ಈಗಾಗಲೇ 16 ರಿಂದ 18 ಕಂಪನಿಗಳು ತಮ್ಮ ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡುತ್ತಿವೆ. ಆಗ ಇವರಿಗೆ ಯಾವುದೇ ಸಮಸ್ಯೆ ಇರಲಿಲ್ಲ. ಆದರೆ ಅಮೂಲ್ ಕಂಪನಿ ತನ್ನ ಉತ್ಪನ್ನ ಮಾರಾಟ ಮಾಡಲು ಮುಂದಾದಾಗ ಮಾತ್ರ ಸಮಸ್ಯೆ ಆರಂಭವಾಗಿದೆ ಎಂದರು.
ನಂದಿನಿ ಯಾವುದೇ ಸ್ಪರ್ಧೆಯನ್ನು ಎದುರಿಸಲು ಸಿದ್ಧ ಎಂಬುದು ನಮ್ಮ ವಿಶ್ವಾಸ. ವಿದೇಶಗಳಲ್ಲೂ ನಂದಿನಿ ಉತ್ಪನ್ನ ಮಾರಾಟವಾಗುತ್ತಿದೆ. ತಮಿಳುನಾಡು, ಮಹಾರಾಷ್ಟ್ರ ಮೊದಲಾದ ರಾಜ್ಯಗಳಲ್ಲೂ ನಂದಿನಿ ಹಾಲು ಮಾರಾಟವಾಗುತ್ತಿದೆ. ಕಾಂಗ್ರೆಸ್ನವರು ಎಲ್ಲದರಲ್ಲೂ ರಾಜಕೀಯ ಮಾಡುತ್ತಿದ್ದಾರೆ. ಹಾಗೆಯೇ ಮೊಸಳೆ ಕಣ್ಣೀರು ಹಾಕುತ್ತಿದ್ದರು. ಇದರಿಂದ ಯಾವುದೇ ಪ್ರಯೋಜನವಿಲ್ಲ ಎಂದರು.












Click it and Unblock the Notifications