ಮಹಾಸಮರಕ್ಕೆ ಬುಧವಾರ ಅಧಿಸೂಚನೆ ಪ್ರಕಟ
ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಕಾವು ನಿಧಾನವಾಗಿ ಏರುತ್ತಿದೆ. ಮಾ.19ರ ಬುಧವಾರ ಚುನಾವಣಾ ಅಧಿಸೂಚನೆ ಪ್ರಕಟವಾಗಲಿದ್ದು, ಅಧಿಕೃತವಾಗಿ ಚುನಾವಣಾ ಪ್ರಕ್ರಿಯೆಗಳು ಆರಂಭವಾಗಲಿದೆ. ಈಗಾಗಲೇ ಪಕ್ಷಗಳು ಚುನಾವಣಾ ಪ್ರಚಾರ ಆರಂಭಿಸಿದ್ದು, ಬುಧವಾರದಿಂದ ನಾಮಪತ್ರ ಸಲ್ಲಿಕೆ ಭರಾಟೆ ಪ್ರಾರಂಭವಾಗಲಿದೆ.
ಏಪ್ರಿಲ್ 17ರಂದು ರಾಜ್ಯದ 28 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮಾ.19ರಂದು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಲಿದೆ. ಬುಧವಾರದಿಂದಲೇ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗಲಿದ್ದು, 26ರ ವರಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ. [ಚುನಾವಣೆ ವೇಳಾಪಟ್ಟಿ]
ಕರ್ನಾಟಕದ ಪ್ರಮುಖ ರಾಜಕೀಯ ಪಕ್ಷಗಳು ಈಗಾಗಲೇ ಬಿರುಸಿನಿಂದ ಪ್ರಚಾರ ಕಾರ್ಯ ಆರಂಭಿಸಿದ್ದು, ಬಾಕಿ ಇರುವ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಮಂಗಳವಾರ ಸಂಜೆಯೊಳಗೆ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್, ಆಮ್ ಆದ್ಮಿ ಪಕ್ಷಗಳು ಪ್ರಚಾರ ನಡೆಸುತ್ತಿದ್ದು, ಬುಧವಾರದಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಚುನಾವಣೆಗೆ ಪಕ್ಷಗಳು ಸಿದ್ಧವಾಗಿದೆ.
ಪಕ್ಷಗಳ ಸಿದ್ಧತೆ
ಲೋಕಸಭೆ ಚುನಾವಣೆಗೆ ಪಕ್ಷಗಳು ಸಿದ್ಧತೆ ಆರಂಭಿಸಿದ್ದರೂ ಇನ್ನೂ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಿಲ್ಲ. ಕಾಂಗ್ರೆಸ್ 24, ಬಿಜೆಪಿ 25, ಜೆಡಿಎಸ್ 12 ಮತ್ತು ಆಮ್ ಆದ್ಮಿ ಪಕ್ಷ 13 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಉಳಿದ ಕ್ಷೇತ್ರಗಳ ಅಭ್ಯರ್ಥಿಗಳನ್ನು ಇನ್ನೂ ಅಂತಿಮಗೊಳಿಸಿಲ್ಲ.
ಕಾಂಗ್ರೆಸ್ ಕಥೆ ಏನು?
ಎಲ್ಲಾ ಪಕ್ಷಗಳಿಗಿಂತ ಮೊದಲೇ ಚುನಾವಣೆ ಸಿದ್ಧತೆ ಆರಂಭಿಸಿದರೂ ಕಾಂಗ್ರೆಸ್ನಲ್ಲಿ ಉತ್ತರ ಕನ್ನಡ, ಹಾವೇರಿ, ಧಾರವಾಡ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯನ್ನು ಇನ್ನೂ ಅಂತಿಮಗೊಳಿಸಿಲ್ಲ. ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಆಂತರಿಕ ಚುನಾವಣೆ ಮೂಲಕ ಸಿ.ನಾರಾಯಣ ಸ್ವಾಮಿ ಆಯ್ಕೆ ಆಗಿದ್ದು, ಅವರ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಬೇಕಿದೆ.
ಬಿಜೆಪಿಯ 3 ಕ್ಷೇತ್ರ ಬಾಕಿ
ಕರ್ನಾಟಕ ಬಿಜೆಪಿ ಬಳ್ಳಾರಿ, ಬೀದರ್, ಹಾಸನ ಕ್ಷೇತ್ರಗಳ ಅಭ್ಯರ್ಥಿಗಳನ್ನು ಇನ್ನೂ ಘೋಷಿಸಿಲ್ಲ. ಬಳ್ಳಾರಿಯಲ್ಲಿ ಬಿ.ಶ್ರೀರಾಮುಲು ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಇದ್ದು, ಅಪ್ಪ ಅಥವ ಮಗ ಎಂಬ ಗೊಂದಲದಿಂದ ಬೀದರ್ ಹಾಗೆ ಉಳಿದಿದೆ. ಇನ್ನೂ ಹಾಸನ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಎದುರಾಳಿ ಯಾರು ಎಂಬುದು ತೀರ್ಮಾನವಾಗಿಲ್ಲ.
ಜೆಡಿಎಸ್ ನ 16 ಕ್ಷೇತ್ರ ಬಾಕಿ
ಮೊದಲು 12 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಜೆಡಿಎಸ್ ಪಕ್ಷದ ಮೈಸೂರು, ಮಂಡ್ಯ, ಬೆಂಗಳೂರು ಸೆಂಟ್ರಲ್, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಸೇರಿದಂತೆ 16 ಕ್ಷೇತ್ರಗಳ ಅಭ್ಯರ್ಥಿಯನ್ನು ಬಾಕಿ ಉಳಿಸಿಕೊಂಡಿದೆ. ಮಂಗಳವಾರ ಸಂಜೆಯೊಳಗೆ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.
ಆಮ್ ಆದ್ಮಿ ಪಕ್ಷದ ಸಿದ್ಧತೆ
ಕರ್ನಾಟಕದಲ್ಲಿ ಮೊದಲ ಚುನಾವಣೆ ಎದುರಿಸುತ್ತಿರುವ ಆಮ್ ಆದ್ಮಿ ಪಕ್ಷ ಈಗಾಗಲೇ 13 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ರಾಜ್ಯಕ್ಕೆ ಬಂದು ಒಂದು ಸುತ್ತಿನ ಪ್ರಚಾರವನ್ನು ಮಾಡಿ ಹೋಗಿದ್ದಾರೆ. ಪಕ್ಷ ಉಳಿದ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಿದೆಯೇ ಎಂದು ಕಾದು ನೋಡಬೇಕು. [ಆಮ್ ಆದ್ಮಿ ಅಭ್ಯರ್ಥಿಗಳ ಪರಿಚಯ]
ಚುನಾವಣಾ ವೇಳಾಪಟ್ಟಿ
ಚುನಾವಣಾ ಆಯೋಗವು ಮಾರ್ಚ್ 19ರ ಬುಧವಾರ ಅಧಿಸೂಚನೆ ಹೊರಡಿಸಲಿದೆ, ಮಾ.19ರಿಂದ 26 ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಮಾರ್ಚ್ 27ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ವಾಪಸ್ ಪಡೆಯಲು ಮಾ.29 ಕೊನೆಯ ದಿನವಾಗಿದೆ. ಏಪ್ರಿಲ್ 17ರಂದು ಚುನಾವಣೆ ನಡೆಯಲಿದ್ದು, ಮೇ 16ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.