Government Employee: ನಿವೃತ್ತ ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿ ಆಗೋದು ಪಕ್ಕಾ
ಬೆಂಗಳೂರು, ಫೆಬ್ರವರಿ 21: ಕರ್ನಾಟಕದ ಸರ್ಕಾರಿ ನೌಕರರು ಹೊಸ ಪಿಂಚಣಿ ಯೋಜನೆ (ಎನ್ಪಿಎಸ್) ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ (ಒಪಿಎಸ್) ಮರು ಜಾರಿಗೊಳಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 7ರಂದು ಮಂಡಿಸುವ 2025-26ನೇ ಸಾಲಿನ ಬಜೆಟ್ನಲ್ಲಿ ಈ ಕುರಿತು ಅಂತಿಮ ಘೋಷಣೆಯಾಗುವ ಸಾಧ್ಯತೆ ಇದೆ. ಹಳೆ ಪಿಂಚಣಿ ಯೋಜನೆ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಸರ್ಕಾರಿ ನೌಕರರು ಸಮಾವೇಶವನ್ನ ನಡೆಸಿದ್ದು, ಹಳೆ ಪಿಂಚಣಿ ಯೋಜನೆ ಕುರಿತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಹತ್ವ ಮಾಹಿತಿಯನ್ನ ನೀಡಿದ್ದಾರೆ.
ಈ ಕುರಿತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಓಪಿಎಸ್ ಬಗ್ಗೆ ನಾವು ಭರವಸೆ ನೀಡಿದ್ದೆವು. ಅದರಂತೆ ಅದನ್ನು ಜಾರಿಗೆ ತರಲು ಬದ್ದರಾಗಿದ್ದೇವೆ. ನೀವು ಬಿಟ್ಟರೂ ಈ ವಿಚಾರವನ್ನು ನಾವು ಬಿಡುವುದಿಲ್ಲ. ಆದರೆ ಸ್ವಲ್ಪ ತಾಳ್ಮೆಯಿರಲಿ ಎಂದು ಹೇಳಿದ್ದಾರೆ. ಅಲ್ಲದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ಹಳೆ ಪಿಂಚಣಿ ಯೋಜನಾ ಜಾರಿ ಕುರಿತು ಭರವಸೆ ನೀಡಿದ್ದಾರೆ. ಸಿಎಂ ಹಾಗೂ ಡಿಸಿಎಂ ಹೇಳಿಕೆಯನ್ನ ಗಮನಿಸಿದರೆ ನಿವೃತ್ತ ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿ ಆಗೋದು ಪಕ್ಕಾ ಎಂದು ಹೇಳಲಾಗಿದೆ.

ಓಪಿಎಸ್ ಜಾರಿ ವಿಚಾರವಾಗಿ ಡಿಸಿಎಂ ಭರವಸೆ ನೀಡಿದಾಗ ನೌಕರರು ಡಿಕೆ, ಡಿಕೆ ಎಂದು ಘೋಷಣೆ ಕೂಗಿದರು. ಆಗ ಸಭಿಕರಿಗೆ ಸುಮ್ಮನಿರಲು ಹೇಳಿದ ಡಿಸಿಎಂ ಅವರು, ನಾನು ಮುಂದಿನ ಬಾರಿ ಚುನಾವಣೆಗೆ ನಿಂತಾಗ, ನನ್ನ ನಾಯಕತ್ವದಲ್ಲಿ ನಡೆದಾಗ ದಯವಿಟ್ಟು ಈ ಪದವನ್ನು ಉಪಯೋಗಿಸಿ. ನಾನು ವಿಧಾನಸೌಧದಲ್ಲಿ ಇರುವವನೇ. ನಾನು ಇನ್ನು ಎಂಟತ್ತು ವರ್ಷ ಬಿಟ್ಟು ಹೋಗುವುದಿಲ್ಲ. ನನ್ನ ಆರೋಗ್ಯ ಇನ್ನೂ ಗಟ್ಟಿಯಾಗಿದೆ. ನನ್ನ ಮೇಲೆ ನಂಬಿಕೆಯಿಡಿ ಎಂದು ಡಿ ಕೆ ಶಿವಕುಮಾರ ಮಾರ್ಮಿಕವಾಗಿ ಹೇಳಿದರು.
ಸರ್ಕಾರದ ರಥ ಎಳೆಯುವವರು ಸರ್ಕಾರಿ ನೌಕರರು. ನೀವು ಇಲ್ಲದಿದ್ದರೆ ಸರ್ಕಾರದ ಚಕ್ರ ಮುಂದಕ್ಕೆ ಸಾಗುವುದಿಲ್ಲ. ನಿಮ್ಮ ಸಂಘ ರಚನಾತ್ಮಕವಾಗಿ ಕೆಲಸ ಮಾಡುತ್ತಿದೆ. ಸರ್ಕಾರಿ ಕೆಲಸ ಕೇವಲ ಹುದ್ದೆಯಲ್ಲ. ಅದೊಂದು ಜವಾಬ್ದಾರಿ. ನೀವು ಹೃದಯ ಶ್ರೀಮಂತಿಕೆಯಿಂದ ಜವಾಬ್ದಾರಿ ಸರಿಯಾಗಿ ನಿಭಾಯಿಸಬೇಕು. ನಾನು 1989ರಿಂದ ವಿಧಾನಸಭೆಯಲ್ಲಿ ಇದ್ದೇನೆ. ಕಾರ್ಯಾಂಗದ ಭಾಗವಾಗಿ ಸರ್ಕಾರಿ ನೌಕರರು ನೀವೀದ್ದೀರಿ. ನಿಮ್ಮ ಜವಾಬ್ದಾರಿ ನನಗೆ ಅರಿವಿದೆ. ನಾವು ದೇವಾಲಯಕ್ಕೆ ಹೋದಾಗ ದೇವರ ಬಳಿ ಏನು ಮಾತನಾಡಬೇಕು ತಿಳಿಯದೇ ಇದ್ದಾಗ ನಮ್ಮ ಮಧ್ಯೆ ಮಾತುಕತೆ ನಡೆಸಲು ಅರ್ಚಕರು ಸಹಾಯ ಮಾಡುತ್ತಾರೆ.
ಅರ್ಚಕಸ್ಯ ಪ್ರಭಾವೇನ ಶಿಲಾಭವತಿ ಶಂಕರಃ" ಅಂದರೆ ಅರ್ಚಕರ ಪ್ರಭಾವದಿಂದ ನಾವು ಶಿಲೆಯಲ್ಲೂ ಶಂಕರನನ್ನು ಕಾಣಬಹುದು ಎಂದು ಅರ್ಥ. ಪ್ರಜಾಪ್ರಭುತ್ವ, ಸಂವಿಧಾನದ ವ್ಯವಸ್ಥೆಯಲ್ಲಿ ಸರ್ಕಾರಿ ನೌಕರರು ಸರ್ಕಾರ ಹಾಗೂ ಜನರ ಮಧ್ಯೆ ಸಂಪರ್ಕ ಸೇತುವೆಯಂತೆ ಇದ್ದಾರೆ. ಜನ ದೇವಾಲಯಕ್ಕೆ ತಮ್ಮ ಕಷ್ಟ ಹೇಳಿಕೊಳ್ಳಲು ಹೋಗುವಂತೆ ಜನ ತಮ್ಮ ಸಮಸ್ಯೆಯನ್ನು ಹೊತ್ತು ನಿಮ್ಮ ಬಳಿಗೆ ಬರುತ್ತಾರೆ ಎಂದು ತಿಳಿಸಿದರು. ಇದನ್ನು ನೀವು ಅರಿಯಬೇಕು. ಮಗುವಿಗೆ ತಾಯಿಯ ಮೇಲೆ ನಂಬಿಕೆ, ಮರಕ್ಕೆ ತನ್ನ ಬೇರಿನ ಮೇಲೆ ನಂಬಿಕೆ. ಪೋಷಕರಿಗೆ ತಮ್ಮ ಮಕ್ಕಳ ಮೇಲೆ ನಂಬಿಕೆ, ಭಕ್ತನಿಗೆ ಭಗವಂತನ ಮೇಲೆ ನಂಬಿಕೆ.
ಈ ಸರ್ಕಾರದ ಅಭಿವೃದ್ಧಿ ವಿಚಾರದಲ್ಲಿ ನನಗೆ ಸರ್ಕಾರಿ ನೌಕರರ ಮೇಲೆ ನಂಬಿಕೆ ಇದೆ. ಮನುಷ್ಯನಿಗೆ ನಂಬಿಕೆಗಿಂತ ದೊಡ್ಡ ಗುಣವಿಲ್ಲ. ಅದೇ ರೀತಿ ನಿಮ್ಮೆಲ್ಲರ ನಂಬಿಕೆಯನ್ನು ನಿಮ್ಮ ಸಂಘದ ಅಧ್ಯಕ್ಷರಾದ ಷಡಕ್ಷರಿ ಅವರು ಉಳಿಸಿಕೊಳ್ಳುತ್ತಾರೆ ಎಂದು ಭಾವಿಸಿದ್ದೇನೆ. ನಾನು ಕೂಡ ಬಡ ನೌಕರನಂತೆ 38 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಶಾಸಕನಾಗಿ ಸರ್ಕಾರದ ವೇತನ ಪಡೆದಿದ್ದೇನೆ. ನನಗೂ ಪಿಂಚಣಿ ಬರುತ್ತದೆ ಎಂದು ಹೇಳಿದರು.
ನಮ್ಮ ಸಮಾಜ ಸದಾ ಸೇವೆ ಮಾಡುವವರನ್ನು ಗುರುತಿಸುತ್ತದೆ. ರಾಮನ ತಂದೆ ದಶರಥ ಹಾಗೂ ರಾಮನ ಭಂಟ ಹನುಮಂತ. ನಮ್ಮಲ್ಲಿ ದಶರಥನಿಗಿಂತ ಹನುಮಂತನ ದೇವಾಲಯಗಳೇ ಹೆಚ್ಚು. ನೀವು ಕೂಡ ನಿಮಗೆ ಅವಕಾಶ ಸಿಕ್ಕಾಗ ಸಮಾಜದ ಕೆಲಸ ಮಾಡಬೇಕು. ಮನುಷ್ಯನಲ್ಲಿ ನಂಬಿಕೆ ಇಲ್ಲದಿದ್ದರೆ ಸಂಬಂಧಗಳು ಉಳಿಯುವುದಿಲ್ಲ. ನಾವು ಜನಪ್ರತಿನಿಧಿಗಳು ಹೇಗೆ ಜನರನ್ನು ಪ್ರತಿನಿಧಿಸುತ್ತೇವೆಯೋ ಅದೇ ರೀತಿ, ಎಲ್ಲಾ ಸರ್ಕಾರಿ ನೌಕರರು ರಾಜ್ಯದ ಏಳುವರೆ ಕೋಟಿ ಜನರನ್ನು ಪ್ರತಿನಿಧಿಸುತ್ತೀರಿ. ನೀವೆಲ್ಲರೂ ಜನರ ಸೇವೆ ಮಾಡುವ ಅವಕಾಶ ಪಡೆದಿದ್ದು, ಇದನ್ನು ಸರಿಯಾಗಿ ಮಾಡಬೇಕು. ಆತ್ಮಸಾಕ್ಷಿಗೆ ತೃಪ್ತಿಯಾಗುವಂತೆ ಕೆಲಸ ಮಾಡಬೇಕು. ಹುಟ್ಟು ಆಕಸ್ಮಿಕ, ಸಾವು ಅನಿವಾರ್ಯ, ಜನನ ಉಚಿತ, ಮರಣ ಖಚಿತ. ಈ ಹುಟ್ಟು ಸಾವಿನ ಮಧ್ಯೆ ನಾವು ಏನು ಸಾಧನೆ ಮಾಡುತ್ತೇವೆ ಎಂಬುದು ಮುಖ್ಯ. ನೀವು ನಿಮ್ಮ ಜೀವನದಲ್ಲಿ ಎಷ್ಟು ಜನರ ಬದುಕು ಬದಲಾವಣೆ ಮಾಡಲು ಪೆನ್ನು ಪೇಪರ್ ಬಳಸುತ್ತೀರಿ ಎಂಬುದು ಮುಖ್ಯ ಎಂದರು.












Click it and Unblock the Notifications