ಬೆಂಗಳೂರಲ್ಲಿ ರಸ್ತೆ ಗುಂಡಿ; ಬಿಜೆಪಿ ಸರ್ಕಾರಕ್ಕೆ ಎಚ್ಡಿಕೆ ಟ್ವೀಟ್ ಬಾಣ!
ಬೆಂಗಳೂರು, ಅಕ್ಟೋಬರ್ 19; 'ಪಾಲಿಕೆ ಮಾಡಿದ ಪಾಪಕ್ಕೆ ನತದೃಷ್ಟ ಮಹಿಳೆ ಉಮಾದೇವಿ ಅವರು ಬಲಿಯಾಗಿದ್ದಾರೆ. ಅವರಿಗೆ ಪರಿಹಾರ ಕೊಟ್ಟು ಕೈತೊಳೆದುಕೊಳ್ಳುವುದಲ್ಲ. ಇನ್ನಾದರೂ ಗುಂಡಿಗಳನ್ನು ಮುಚ್ಚಬೇಕು ಹಾಗೂ ರಸ್ತೆಗಳನ್ನು ವೈಜ್ಞಾನಿಕವಾಗಿ ನಿರ್ವಹಣೆ ಮಾಡಬೇಕು' ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಬುಧವಾರ ಅವರು ಬೆಂಗಳೂರಿನ ರಸ್ತೆ ಗುಂಡಿ ವಿಚಾರದ ಬಗ್ಗೆ ಸರಣಿ ಟ್ವೀಟ್ ಮಾಡಿದ್ದಾರೆ. ಕರ್ನಾಟಕದ ಬಿಜೆಪಿ ಸರ್ಕಾರ, ಬೃಹತ್ ಬೆಂಗಳೂರು ಮಹಾನಗರ ಕಾರ್ಯ ವೈಖರಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಸ್ತೆ ಗುಂಡಿ ತಪ್ಪಿಸಲು ಮಹಿಳೆ ಯತ್ನ: ಮಹಿಳೆಗೆ KSRTC ಬಸ್ ಡಿಕ್ಕಿ ಸ್ಥಿತಿ ಗಂಭೀರ
'ಮೃತ ಮಹಿಳೆ ಶ್ರೀಮತಿ ಉಮಾದೇವಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. ರಾಜ್ಯ ಸರಕಾರ ಅವರಿಗೆ ಸುಕ್ತ ಪರಿಹಾರ ಬಿಡುಗಡೆ ಮಾಡಬೇಕು ಎಂಬುದು ನನ್ನ ಒತ್ತಾಯ' ಎಂದು ಎಚ್. ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಬಿಬಿಎಂಪಿ: ಪೂರ್ವ ವಲಯದಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಆಯುಕ್ತ ಸೂಚನೆ
'ನಾಡಪ್ರಭು ಶ್ರೀ ಕೆಂಪೇಗೌಡರು ಕಟ್ಟಿದ ವಿಶ್ವಮಾನ್ಯ ನಗರ ಬೆಂಗಳೂರಿಗೆ ಪಿಂಚಣಿದಾರರೂರು, ಉದ್ಯಾನ ನಗರ, ಸಿಲಿಕಾನ್ ವ್ಯಾಲಿ ಎಂದೆಲ್ಲ ಹೆಸರುಗಳಿದ್ದವು. ಈಗ ಅವು ಗುಂಡಿಗಳೂರು, ಅಧ್ವಾನ ನಗರ, ಗುಂಡಿಗಳ ವ್ಯಾಲಿ ಎಂದಾಗಿದೆ. ಕಾಮಗಾರಿಗಳಲ್ಲಿ ಪರ್ಸಂಟೇಜ್ ವ್ಯವಸ್ಥೆಯೇ ಇಂಥ ಕುಖ್ಯಾತಿಗೆ ಕಾರಣ' ಎಂದು ಕುಮಾರಸ್ವಾಮಿ ಟ್ವೀಟ್ನಲ್ಲಿ ಆರೋಪಿಸಿದ್ದಾರೆ.
ಬಿಬಿಎಂಪಿ: ಅ.31ರೊಳಗೆ ವಿವಿಧ ರಸ್ತೆ ಯೋಜನೆ ಪೂರ್ಣಗೊಳಿಸಿ
ಗಾಯಗೊಂಡಿದ್ದ ಮಹಿಳೆ ಸಾವು; ಸೋಮವಾರ ಬೆಂಗಳೂರು ನಗರದ ರಾಜಾಜಿನಗರದ ಗ್ಲೋಬಲ್ ಮಾಲ್ ಮುಂಭಾಗ ರಸ್ತೆ ಗುಂಡಿ ತಪ್ಪಿಸಲು ಹೋಗಿ ಗಾಯಗೊಂಡಿದ್ದ ಉಮಾದೇವಿ (42) ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು.
ವಸಂತನಗರದಲ್ಲಿ ಕೆಲಸ ಮಾಡುತ್ತಿದ್ದ ಉಮಾದೇವಿ ಪುತ್ರಿ ಜೊತೆ ಬೈಕ್ನಲ್ಲಿ ಹೋಗುವಾಗ ರಸ್ತೆ ಗುಂಡಿ ತಪ್ಪಿಸಲು ಮುಂದಾಗಿದ್ದರು. ಆಗ ಹಿಂದಿನಿಂದ ಬಂದ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿತ್ತು. ಅಪಘಾತದಲ್ಲಿ ಅವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.
ಪಾಲಿಕೆ ಮಾಡಿದ ಪಾಪಕ್ಕೆ ನತದೃಷ್ಟ ಮಹಿಳೆ ಉಮಾದೇವಿ ಅವರು ಬಲಿಯಾಗಿದ್ದಾರೆ. ಅವರಿಗೆ ಪರಿಹಾರ ಕೊಟ್ಟು ಕೈತೊಳೆದುಕೊಳ್ಳುವುದಲ್ಲ. ಇನ್ನಾದರೂ ಗುಂಡಿಗಳನ್ನು ಮುಚ್ಚಬೇಕು ಹಾಗೂ ರಸ್ತೆಗಳನ್ನು ವೈಜ್ಞಾನಿಕವಾಗಿ ನಿರ್ವಹಣೆ ಮಾಡಬೇಕು. 6/7
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 19, 2022
2 ಸಾವಿರ ಗುಂಡಿಗಳಿವೆ; ಬೆಂಗಳೂರು ನಗರದ ರಸ್ತೆ ಗುಂಡಿಗಳ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ನಗರ ಸಂಚಾರ ನಡೆಸಿದ್ದರು. ರಸ್ತೆ ಗುಂಡಿಗಳ ಬಗ್ಗೆ ಪರಿಶೀಲನೆ ನಡೆಸಿ, ಅದನ್ನು ಮುಚ್ಚಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.
"ರಸ್ತೆಗಳಲ್ಲಿನ ಗುಂಡಿ ಮುಚ್ಚಲು ನಾವು ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದೇವೆ. ಆದರೆ ಮಳೆಯಿಂದಾಗಿ ಕಾಮಗಾರಿ ನಿರೀಕ್ಷಿತ ಮಟ್ಟದಲ್ಲಿ ಸಾಗುತ್ತಿಲ್ಲ. ಪ್ರಮುಖ ರಸ್ತೆಗಳಲ್ಲೇ ಇನ್ನೂ ಎರಡು ಸಾವಿರ ಗುಂಡಿಗಳಿವೆ" ಎಂದು ತುಷಾರ್ ಗಿರಿನಾಥ್ ಹೇಳಿದ್ದರು.
"ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ಆಗುತ್ತಿಲ್ಲ. ಇಂಜನಿಯರ್ಗಳು ಕೆಲಸ ಮಾಡುತ್ತಿಲ್ಲ ಎಂದು ಹೇಳಲು ಸಾಧ್ಯವಿಲ್ಲ. ಮಳೆಯಿಂದಾಗಿ ಹಾಟ್ ಮಿಕ್ಸ್ ಮಾಡಲು ಸಾಧ್ಯವಾಗುತ್ತಿಲ್ಲ. ಕೋಲ್ಡ್ ಮಿಕ್ಸ್ ಘಟಕಕ್ಕೆ ಬೇಕಾದ ಸಾಮಾಗ್ರಿ ಪೂರೈಕೆ ಆಗುತ್ತಿಲ್ಲ. ಆದ್ದರಿಂದ ಸದ್ಯ ಕಲ್ಲು ಹಾಗೂ ವೆಟ್ ಮಿಕ್ಸ್ ಹಾಕಲು ತುರ್ತು ಕ್ರಮ ಕೈಗೊಂಡಿದ್ದೇವೆ" ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ.
6 ಸಾವಿರ ಕೋಟಿ ಅನುದಾನ; ಬೆಂಗಳೂರಿನ ರಸ್ತೆ ಗುಂಡಿ ವಿಚಾರದ ಕುರಿತು ಕಂದಾಯ ಸಚಿವ ಆರ್. ಅಶೋಕ ಮಾತನಾಡಿದ್ದಾರೆ. "ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚುವುದು, ಡಾಂಬರೀಕರಣ ಸೇರಿದಂತೆ ವಿವಿಧ ಕಾಮಗಾರಿಗಳಿಗೆ 6 ಸಾವಿರ ಕೋಟಿ ಅನುದಾನ ಒದಗಿಸಲಾಗಿದೆ. ಮಳೆಯಿಂದ ಕೆಲಸ ಮಾಡಲಾಗುತ್ತಿಲ್ಲ" ಎಂದು ಹೇಳಿದ್ದರು.
ರಸ್ತೆ ಗುಂಡಿ ತಪ್ಪಿಸಲು ಹೋಗಿ ಮಹಿಳೆ ಮೃತಪಟ್ಟ ಪ್ರಕರಣದ ಬಳಿಕ ಮಾತನಾಡಿದ್ದ ಸಚಿವರು, "ಸಮಸ್ಯೆ ನಮಗೂ ಅರ್ಥವಾಗಿದೆ. ರಸ್ತೆ ಗುಂಡಿ ಮುಚ್ಚುವ ಕುರಿತು ಬಿಬಿಎಂಪಿ ಆಯುಕ್ತರ ಜೊತೆ ನಾನು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚರ್ಚೆ ನಡೆಸಿದ್ದೇವೆ, ಮಳೆಯಿಂದ ಕಾಮಗಾರಿಗೆ ಅಡ್ಡಿಯಾಗಿದೆ" ಎಂದು ತಿಳಿಸಿದ್ದರು.