ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ-ಇಂಧನ ಸಚಿವ ಕೆ.ಜೆ ಜಾರ್ಜ್
ಬೆಂಗಳೂರು ಸೆಪ್ಟೆಂಬರ್ 15: ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೋವಿಡ್ ಕಾರಣದಿಂದ ಕಡಿಮೆಯಾಗಿದ್ದ ವಿದ್ಯುತ್ ಬೇಡಿಕೆ ಕಾರಣದಿಂದ ಹೆಚ್ಚಿನ ವಿದ್ಯುತ್ ಉತ್ಪಾದನೆಗೆ ಒತ್ತು ನೀಡಿರಲಿಲ್ಲ. ಹೆಚ್ಚಿನ ವಿದ್ಯುತ್ ಉತ್ಪಾದನೆಗೆ ಅಗತ್ಯವಿರುವ ಯೋಜನೆಗಳನ್ನ ರೂಪಿಸಲಾಗುತ್ತಿದ್ದು, ನವೀಕರಿಸಬಹುದಾದ ಉತ್ಪನ್ನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದರು.
ಸರ್.ಎಂ ವಿಶ್ವೇಶ್ವರಯ್ಯ ಅವರ 163 ನೇ ಜನ್ಮದಿನಾಚರಣೆ ಹಾಗೂ ಇಂಜಿನಿಯರ್ಸ್ ದಿನದ ಪ್ರಯುಕ್ತ ಕರ್ನಾಟಕ ವಿದ್ಯುತ್ ಮಂಡಳಿ ಇಂಜಿನಿಯರುಗಳ ಸಂಘದಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನ್ನ ಇಲಾಖೆಯಲ್ಲಿ ಉತ್ತಮ ಅಧಿಕಾರಿಗಳು ಇದ್ದಾರೆ. ಇದರಿಂದಾಗಿ ಇಲಾಖೆಯ ಮೂಲಕ ಬಹಳಷ್ಟು ಒಳ್ಳೆಯ ಕೆಲಸಗಳನ್ನು ಮಾಡಲಾಗುತ್ತಿದೆ ಎಂದರು.

ಈ ಬಾರಿ ಅತ್ಯುತ್ತಮ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಮಳೆಯ ಕೊರತೆಯಿಂದ ವಿದ್ಯುತ್ ಉತ್ಪಾದನೆ ಕಡಿಮೆಯಾಗಿದೆ. ಕೋವಿಡ್ ಇದ್ದ ಕಾರಣ ವಿದ್ಯುತ್ಗೆ ಹೆಚ್ಚಿನ ಬೇಡಿಕೆ ಇರಲಿಲ್ಲ. ಈಗ ಆರ್ಥಿಕ ಚಟುವಟಿಕೆ ಗರಿಗೆದರಿದ್ದು, ವಿದ್ಯುತ್ ಬೇಡಿಕೆ ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ಸೋಲಾರ್ ಮತ್ತು ವಿಂಡ್ ಎನರ್ಜಿಯ ಮೂಲಕ ವಿದ್ಯುತ್ ಉತ್ಪಾದನೆಗೆ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಹೇಳಿದರು.
ಸೋಲಾರ್ ಮತ್ತು ವಿಂಡ್ ಎನರ್ಜಿ ಉಪಯೋಗಿಸಿಕೋಂಡರೆ ಇನ್ನೂ ಉತ್ಪಾದನೆ ಆಗುತ್ತದೆ. ಸಬ್ ಸ್ಟೇಷನ್ಗಳ ಪಕ್ಕ ಸೋಲಾರ್ ಎನರ್ಜಿ ಉತ್ಪಾದನೆ ಮಾಡುವ ನಿಟ್ಟಿನಲ್ಲಿ ಯೋಜನೆಗಳು ಪ್ರಾರಂಭವಾಗಿವೆ. 2,500 ಮೆಗಾವ್ಯಾಟ್ನ ಯೋಜನೆಗಳನ್ನು ಸಚಿವ ಸಂಪುಟ ಸಭೆಗೆ ತರಲು ಸಿದ್ದವಾಗಿದೆ. ಈ ಎಲ್ಲಾ ಯೋಜನೆಗಳನ್ನು ಪ್ರಾರಂಭಿಸಿದರೆ ಮುಂದಿನ ವಿದ್ಯುತ್ ಬೇಡಿಕೆಗೆ ಸಜ್ಜಾಗಲಿದ್ದೇವೆ ಎಂದರು.
ಈ ಸಂದರ್ಭದಲ್ಲಿ ತುಮಕೂರು ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ವೀರೇಶಾನಾಂದ ಸರಸ್ವತಿ ಸ್ವಾಮೀಜಿ, ಇಂಧನ ಇಲಾಖೆಯ ಕಾರ್ಯದರ್ಶಿಗಳಾದ ಗೌರವ್ ಗುಪ್ತಾ, ಕೆಪಿಟಿಸಿಎಲ್ ಎಂಡಿ ಪಂಕಜ್ ಕುಮಾರ್ ಪಾಂಡೆ, ಕರ್ನಾಟಕ ವಿದ್ಯುತ್ ಮಂಡಳಿ ಇಂಜಿನಿಯರುಗಳ ಸಂಘ ಅಧ್ಯಕ್ಷರಾದ ಕೆ.ಶಿವಣ್ಣ ಮತ್ತು ಪ್ರಧಾನ ಕಾರ್ಯದರ್ಶಿ ಟಿ.ಎನ್ ಸುಧಾಕರ್ ರೆಡ್ಡಿ ಉಪಸ್ಥಿತರಿದ್ದರು.












Click it and Unblock the Notifications