ಪ್ರಜ್ವಲ್ ಪ್ರಕರಣ: ಮೋದಿಗೆ ಮತ್ತೊಮ್ಮೆ ಪತ್ರ ಬರೆದ ಸಿದ್ದರಾಮಯ್ಯ: ಪತ್ರದಲ್ಲಿ ಏನಿದೆ?
ಬೆಂಗಳೂರು, ಮೇ 23: ರಾಜ್ಯ ರಾಜಕಾರಣದಲ್ಲಿ ಸದ್ಯ ಹಾಸನ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ ಅಶ್ಲೀಲ ವಿಡಿಯೋ ಪ್ರಕರಣ ವಿಚಾರ ಜೋರಾಗಿ ಸದ್ದು ಮಾಡುತ್ತಿದೆ. ಇತ್ತ ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದು ಮಾಡಬೇಕು ಎಂದು ಎರಡನೇ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರಕ್ಕೆ ಪತ್ರ ಬರೆದಿದ್ದಾರೆ.
ಹೌದು, ಹಾಸನ ಹಾಲಿ ಸಂಸದ ಹಾಗೂ ಹಾಸನ ಮೈತ್ರಿ ಅಭ್ಯರ್ಥಿಯಾಗಿರುವ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದು ಮಾಡಬೇಕು. ಈ ವಿಚಾರದಲ್ಲಿ ವಿದೇಶಾಂಗ ಸಚಿವಾಲಯ ಮಧ್ಯ ಪ್ರವೇಶಿಸಬೇಕು ಎಂದು ಆಗ್ರಹಿಸಿ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹಿಂದೆ ಪತ್ರ ಬರೆದಿದ್ದು, ಇದೀಗ ಬುಧವಾರ ಎರಡನೇ ಪತ್ರ ಬರೆದಿದ್ದಾರೆ. ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ಪೋರ್ಟ್ ಅನ್ನು ರದ್ದುಗೊಳಿಸಬೇಕು. ಭಾರತಕ್ಕ ವಾಪಸ್ ಕರೆತರಲು ತ್ವರಿತ ಕ್ರಮವಹಿಸಬೇಕೆಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಪತ್ರದಲ್ಲಿ ಏನಿದೆ?
ಪ್ರಜ್ವಲ್ ರೇವಣ್ಣ ಮೇಲೆ ಆರೋಪ, ಗಂಭೀರ ಘಟನೆಗಳ ಬಗ್ಗೆ ಗಮನ ಸೆಳೆಯಲು ನಾನು ಮತ್ತೊಮ್ಮೆ ನಿಮಗೆ ಬರೆಯುತ್ತೇನೆ. ಈ ಘಟನೆಗಳು ಕರ್ನಾಟಕ ರಾಜ್ಯದ ಜನರ ಆತ್ಮಸಾಕ್ಷಿಯನ್ನು ಬೆಚ್ಚಿ ಬೀಳಿಸಿದೆ. ಅಲ್ಲದೇ ರಾಷ್ಟ್ರವ್ಯಾಪಿ ಆತಂಕಕ್ಕೂ ಕಾರಣವಾಗಿವೆ. ಪ್ರಸ್ತುತ ಸಾರ್ವತ್ರಿಕ ಚುನಾವಣೆಯಲ್ಲಿ ಮರು ಚುನಾವಣೆಗೆ ಸ್ಪರ್ಧಿಸಿರುವ ಹಾಸನ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ, ಮಾಜಿ ಪ್ರಧಾನಿ ಮೊಮ್ಮಗ ಏಪ್ರಿಲ್ 27 ರಂದು ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ ಸಂಗತಿ ಎಂದು ಸಿದ್ದರಾಮಯ್ಯ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
2024 ರಲ್ಲಿ ಜರ್ಮನಿಗೆ ತನ್ನ ರಾಜತಾಂತ್ರಿಕ ಪಾಸ್ಪೋರ್ಟ್ ಹೊಂದಿರುವ ಆ1135500 ಅನ್ನು ಬಳಸಿಕೊಂಡು ದೇಶ ಬಿಟ್ಟು ಹೋಗಿದ್ದಾರೆ. ಅವರ ವಿರುದ್ಧ ಆರೋಪಗಳು ಬಂದಾಗ, ಹೇಯ ಕೃತ್ಯಗಳು ಹೊರಬಂದ ಬಳಿಕ ಮೊದಲ ಎಫ್ಐಆರ್ ದಾಖಲಾಗುವ ಕೆಲವೇ ಗಂಟೆಗಳ ಮೊದಲು ಪಲಾಯನ ಮಾಡಿದ್ದಾರೆ. ದೇಶದಿಂದ ಪಲಾಯನ ಮಾಡಲು ಮತ್ತು ಕ್ರಿಮಿನಲ್ ಮೊಕದ್ದಮೆಗಳಿಂದ ತಪ್ಪಿಸಿಕೊಳ್ಳಲು ತಮ್ಮ ರಾಜತಾಂತ್ರಿಕ ಸವಲತ್ತುಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ.

ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸುವ ಮೂಲಕ ಕರ್ನಾಟಕ ಸರ್ಕಾರವು ತ್ವರಿತ ಕ್ರಮಗಳನ್ನು ಕೈಗೊಂಡಿದೆ. ಪ್ರಜ್ವಲ್ ರೇವಣ್ಣ ಮಹಿಳೆಯರ ವಿರುದ್ಧದ ಅಪರಾಧಗಳ ಬಗ್ಗೆ ಎಸ್ಐಟಿ ತನಿಖೆ ನಡೆಸುತ್ತಿದೆ. ಕ್ರಿಮಿನಲ್ ಆರೋಪಗಳನ್ನು ಎದುರಿಸಲು ಆರೋಪಿ ಉಪಸ್ಥಿತಿಗೆ ಎಸ್ಐಟಿ ಪ್ರಯತ್ನಿಸುತ್ತಿದೆ. ಸಿಆರ್ಪಿಸಿ ಕಲಂ 41ಎ ಅಡಿಯಲ್ಲಿ ತನಿಖಾಧಿಕಾರಿಯಿಂದ ಲುಕ್ಔಟ್ ಸುತ್ತೋಲೆ ಬ್ಲೂ ಕಾರ್ನರ್ ನೋಟಿಸ್ ಜಾರಿ ಆಗಿದೆ.
ಎರಡು ಬಾರಿ ನೋಟಿಸ್ ಜಾರಿ ಮಾಡಿದ್ದರೂ ಆರೋಪಿ ಪ್ರಜ್ವಲ್ ರೇವಣ್ಣ ಅವರು ಇಂದಿಗೂ ತಲೆಮರೆಸಿಕೊಂಡಿದ್ದಾರೆ. ಇದು ತೀವ್ರ ಕಳವಳಕಾರಿ ಸಂಗತಿ. ಪ್ರಜ್ವಲ್ ರೇವಣ್ಣ ವಿರುದ್ಧದ ಎಫ್ಐಆರ್ನಲ್ಲಿ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಮಹಿಳೆಯರ ವಸ್ತ್ರಾಪಹರಣ ಮತ್ತು ಬಲಿಪಶುಗಳಿಗೆ ಬೆದರಿಕೆ ಹಾಕುವ ಸಲುವಾಗಿ ಬಲವಂತವಾಗಿ ಲೈಂಗಿಕ ಕ್ರಿಯೆಗಳನ್ನು ವೀಡಿಯೊ-ಗ್ರಾಫಿಂಗ್ ಸ್ವರೂಪದ ಆರೋಪಗಳಿವೆ. ಸವಲತ್ತುಗಳ ದುರುಪಯೋಗ ಮತ್ತು ಉದ್ದೇಶಪೂರ್ವಕವಾಗಿ ಕಾನೂನು ಪ್ರಕ್ರಿಯೆಗಳಿಗೆ ಅಸಹಕಾರ ತೋರುತ್ತಿದ್ದಾರೆ. ಹಾಗಾಗಿ ಕೇಂದ್ರ ಸರ್ಕಾರದಿಂದ ಗಂಭೀರವಾದ ಕ್ರಮ ತೆಗೆದುಕೊಳ್ಳಬೇಕು.
ಆರೋಪಿಯ ಉಪಸ್ಥಿತಿಯನ್ನು ತನಿಖೆ ಮತ್ತು ವಿಚಾರಣೆಯನ್ನು ಎದುರಿಸಲು ರಾಜತಾಂತ್ರಿಕ ಪಾಸ್ಪೋರ್ಟ್ ರದ್ದುಗೊಳಿಸುವುದು ಸಾಧನವಾಗಿದೆ. ಇದನ್ನು ಒತ್ತಿ ಹೇಳುವ ಅಗತ್ಯವಿಲ್ಲ. ಇದೇ ರೀತಿಯ ಕಳವಳವನ್ನು ವ್ಯಕ್ತಪಡಿಸುವ ನನ್ನ ಹಿಂದಿನ ಪತ್ರವು ಸಹ ಪರಿಸ್ಥಿತಿಯ ಗಂಭೀರತೆಯನ್ನ ಪ್ರಸ್ತಾಪಿಸಿತ್ತು. ಆದರೆ, ನನಗೆ ತಿಳಿದಿರುವಂತೆ, ಕ್ರಮ ತೆಗೆದುಕೊಳ್ಳದಿರುವುದು ನಿರಾಶಾದಾಯಕವಾಗಿದೆ. ಆದ್ದರಿಂದ ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಪಾಸ್ಪೋರ್ಟ್ ಕಾಯಿದೆ, 1967 ರ ಸೆಕ್ಷನ್ 10(3)(ಎಚ್) ಅಡಿಯಲ್ಲಿ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ಪೋರ್ಟ್ ಅನ್ನು ರದ್ದುಗೊಳಿಸಿ ತ್ವರಿತ ಅಗತ್ಯ ಕ್ರಮ ತೆಗೆದುಕೊಳ್ಳಿ ಎಂದು ನಾನು ಮನವಿ ಮಾಡುತ್ತೇನೆ. ಕಾನೂನು ಮತ್ತು ಸಾರ್ವಜನಿಕ ಹಿತಾಸಕ್ತಿಯಿಂದ ದೇಶಕ್ಕೆ ಸುರಕ್ಷಿತವಾಗಿ ಮರಳಬೇಕು ಎಂದು ಸಿಎಂ ತಮ್ಮ ಸುದೀರ್ಘ ಪತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.












Click it and Unblock the Notifications