ಪ್ರಜ್ವಲ್ ಕೇಸ್: ವಿಡಿಯೋ ಹಂಚಿದ್ದವರು ಜಾಮೀನಿಗಾಗಿ ಹೈಕೋರ್ಟ್ಗೆ
ಬೆಂಗಳೂರು, ಮೇ 25: ಪ್ರಜ್ವಲ್ ರೇವಣ್ಣ ಪ್ರಕರಣದ ಅಶ್ಲೀಲ ಫೋಟೋ ಹಾಗೂ ವಿಡಿಯೋಗಳನ್ನು ಹಂಚಿಕೆ ಮಾಡಿದ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ನಾಲ್ವರು ಆರೋಪಿಗಳು ನಿರೀಕ್ಷಣಾ ಜಾಮೀನು ಕೋರಿ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಪ್ರಕರಣದ ಆರೋಪಿಗಳಾದ ನವೀನ್ ಗೌಡ ಅಲಿಯಾಸ್ ಎನ್. ಆರ್. ನವೀನ್ ಕುಮಾರ್, ಎನ್. ಕಾರ್ತಿಕ್, ಬಿ. ಸಿ. ಚೇನತ್ ಕುಮಾರ್ ಮತ್ತು ಎಚ್. ವಿ. ಪುಟ್ಟರಾಜು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ಗೆ ಪ್ರತ್ಯೇಕ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದಾರೆ.

ಅವುಗಳನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ರಾಚಯ್ಯ ಅವರ ರಜಾಕಾಲದ ಪೀಠ, ಪ್ರತಿವಾದಿಯಾಗಿರುವ ಹಾಸನದ ಸಿಇಎನ್ ಠಾಣಾ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ. ಅಲ್ಲದೆ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಪೊಲೀಸರಿಗೆ ನಿರ್ದೇಶಿಸಿ, ವಿಚಾರಣೆ ಮುಂದೂಡಿದೆ.
ಪ್ರಕರಣದ ಹಿನ್ನೆಲೆ: ಪ್ರಕರಣ ಸಂಬಂಧ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಹಾಗೂ ಬಿಜೆಪಿ ಚುನಾವಣಾ ಏಜೆಂಟ್ ಆಗಿದ್ದ ಎಂ. ಜಿ. ಪೂರ್ಣಚಂದ್ರ ತೇಜಸ್ವಿ, ಹಾಸನ ಸಿಇಎನ್ ಪೊಲೀಸ್ ಠಾಣೆಗೆ 2024ರ ಏ.23ರಂದು ದೂರು ನೀಡಿದ್ದರು.
ಹಾಸನ ಲೋಕಸಭೆ ಕ್ಷೇತ್ರದ ಚುನಾವಣೆ ಏ.26ರಂದು ನಿಗದಿಯಾಗಿತ್ತು. ಆರೋಪಿಗಳಾದ ನವೀನ್ ಗೌಡ ಹಾಗೂ ಇತರರು ಏ.21ರಂದು ಸಂಜೆ 6.30ರಿಂದ ಹಾಸನ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ನಕಲಿ ಅಶ್ಲೀಲ ಭಾವಚಿತ್ರ ಮತ್ತು ವಿಡಿಯೋಗಳನ್ನು ಒಳಗೊಂಡ ಸಿಡಿ ಹಾಗೂ ಪೆನ್ಡ್ರೈವ್ ಸಿದ್ಧಪಡಿಸಿಕೊಂಡಿದ್ದಾರೆ.
ಬಳಿಕ ಕ್ಷೇತ್ರ ವ್ಯಾಪ್ತಿಯ ಮನೆ ಮನೆಗೆ ತೆರಳಿ ಮತದಾರರಿಗೆ ಹಂಚಿದ್ದಾರೆ. ವಾಟ್ಸ್ಪ್, ಮೊಬೈಲ್ಗಳಲ್ಲಿ ತೋರಿಸಿ ಜನರಿಗೆ ದಿಕ್ಕು ತಪ್ಪಿಸಿ ಪ್ರಜ್ವಲ್ ರೇವಣ್ಣಗೆ ಮತ ಹಾಕದಂತೆ ಪ್ರಚೋದಿಸುತ್ತಿದ್ದಾರೆ. ಆ ಮೂಲಕ ಚುನಾವಣೆಯಲ್ಲಿ ನ್ಯಾಯಯುತ ಮತದಾನ ನಡೆಯುವುದನ್ನು ತಪ್ಪಿಸಿ ಮೋಸವೆಸಗಿದ್ದಾರೆಂದು ದೂರುದಾರರು ಆರೋಪಿಸಿದ್ದರು.
ಈ ದೂರಿನ ಮೇರೆಗೆ ಅರ್ಜಿದಾರ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 171 (ಜಿ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67(ಎ) ಅಡಿಯಲ್ಲಿ ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರಲು ಸುಳ್ಳು ಹೇಳಿಕೆ ಪ್ರಕಟಿಸಿದ, ವಿದ್ಯುನ್ಮಾನ ರೂಪದಲ್ಲಿ ಅಶ್ಲೀಲ ಫೋಟೋ ಹಾಗೂ ವಿಡಿಯೋ ಪ್ರಕಟಿಸಿದ ಮತ್ತು ರವಾನಿಸಿದ ಆರೋಪ ಸಂಬಂಧ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.
ಇದರಿಂದ ಬಂಧನ ಭೀತಿ ಎದುರಾದ ಹಿನ್ನೆಲೆಯಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳು ನಿರೀಕ್ಷಣಾ ಜಾಮೀನು ಕೋರಿ ಹಾಸನದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅದನ್ನು ವಜಾಗೊಳಿಸಿ ನ್ಯಾಯಾಲಯವು ಮೇ 8ರಂದು ಆದೇಶಿಸಿತ್ತು. ಹಾಗಾಗಿ, ಈ ನಾಲ್ವರು ಆರೋಪಿಗಳು ಇದೀಗ ಹೈಕೊರ್ಟ್ ಮೊರೆ ಹೋಗಿದ್ದಾರೆ.












Click it and Unblock the Notifications