Prajwal Revanna: ಇದ್ದ ಒಬ್ಬ ಸಂಸದನೂ ಅನರ್ಹ- ಲೋಕಸಭೆಯಲ್ಲಿ ಜೆಡಿಎಸ್ ಪಕ್ಷದ ಸಂಸದರ ಸಂಖ್ಯೆ 'ಶೂನ್ಯ'
ಬೆಂಗಳೂರು, ಸೆಪ್ಟೆಂಬರ್ 01: ಚುನಾವಣಾ ಅಫಿಡವಿಟ್ನಲ್ಲಿ ಅಕ್ರಮ ಎಸಗಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಮುಖಂಡ ಪ್ರಜ್ವಲ್ ರೇವಣ್ಣ ಅವರನ್ನು ಹಾಸನ ಲೋಕಸಭಾ ಸಂಸದ ಸ್ಥಾನದಿಂದ ಕರ್ನಾಟಕ ಹೈಕೋರ್ಟ್ ಅನರ್ಹಗೊಳಿಸಿದೆ. ಪ್ರಜ್ವಲ್ ರೇವಣ್ಣ ಅವರ ತಂದೆ ಹೆಚ್ ಡಿ ರೇವಣ್ಣ ಮತ್ತು ಎ ಮಂಜು ಅವರಿಗೂ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಇದೀಗ ಪ್ರಜ್ವಲ್ ಪರ ವಕೀಲರು ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.
ಜೆಡಿಎಸ್ ಶಾಸಕ ಎ ಮಂಜು ( ಆಗ ಬಿಜೆಪಿಯಲ್ಲಿದ್ದರು ) ಮತ್ತು ವಕೀಲ ದೇವರಾಜೇಗೌಡ ಎಂಬುವವರು ಪ್ರಜ್ವಲ್ ವಿರುದ್ಧ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಪ್ರಜ್ವಲ್ ಅವರು ತಮ್ಮ ಚುನಾವಣಾ ಅಫಿಡವಿಟ್ನಲ್ಲಿನ ಮಾಹಿತಿಯನ್ನು ಮರೆಮಾಚಿದ್ದಾರೆ ಎಂದು ಆರೋಪಿಸಿದ್ದರು. ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸುವಂತೆ ನ್ಯಾಯಾಲಯಕ್ಕೆ ಒತ್ತಾಯಿಸಿದ್ದರು. ಎ ಮಂಜು 2019ರ ಲೋಕಸಭೆ ಚುನಾವಣೆಯಲ್ಲಿ ಹಾಸನದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ಮಂಜು ಅವರು ಮೇ ತಿಂಗಳಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಜೆಡಿಎಸ್ಗೆ ಸೇರಿದರು. ಅರಕಲಗೂಡು ವಿಧಾನಸಭಾ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಚುನಾವಣಾ ಅಫಿಡವಿಟ್ನಲ್ಲಿ ಪ್ರಜ್ವಲ್ ತಮ್ಮ ಆಸ್ತಿ ಬಗ್ಗೆ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಮಂಜು ಈ ಹಿಂದೆ ಆರೋಪಿಸಿದ್ದಾರೆ.
ಹೈಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಮುಂದಿನ ಆರು ವರ್ಷಗಳ ಕಾಲ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ.
ಪ್ರಜ್ವಲ್ ರೇವಣ್ಣ ಅವರು ರಾಜ್ಯದ ಏಕೈಕ ಜೆಡಿಎಸ್ ಸಂಸದರಾಗಿದ್ದರು. ಅವರು ತಮ್ಮ ಚೊಚ್ಚಲ ಪ್ರಯತ್ನದಲ್ಲಿ ಹಾಸನ ಲೋಕಸಭಾ ಕ್ಷೇತ್ರದಿಂದ ಭಾರೀ ಅಂತರದ ಗೆಲುವು ಸಾಧಿಸಿದ್ದರು.

ಈಗ ಪ್ರಜ್ವಲ್ ಅವರ ಅನರ್ಹತೆಯಿಂದ ಲೋಕಸಭೆಯಲ್ಲಿ ಜೆಡಿಎಸ್ ಸಂಸದರ ಸಂಖ್ಯೆ ಶೂನ್ಯಕ್ಕೆ ಇಳಿದಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಏಳು ಸ್ಥಾನಗಳಲ್ಲಿ ಸ್ಪರ್ಧಿಸಿತ್ತು. ಇದರಲ್ಲಿ ಪ್ರಜ್ವಲ್ ಒಬ್ಬರೇ ಜಯಗಳಿಸಿದ್ದರು. ಪ್ರಜ್ವಲ್ ರೇವಣ್ಣ ಅವರಿಗೆ ಕಾಂಗ್ರೆಸ್ ಪಕ್ಷವು ಬೆಂಬಲ ನೀಡಿತ್ತು.
ಪ್ರಸ್ತುತ ಪ್ರಜ್ವಲ್ ಅವರ ತಂದೆ, ಮಾಜಿ ಸಚಿವ ಎಚ್ಡಿ ರೇವಣ್ಣ ಅವರು ಹೊಳೆ ನರಸೀಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. ಪ್ರಜ್ವಲ್ ಅವರ ಸಹೋದರ ಎಂಎಲ್ಸಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ತಾಯಿ ಭವಾನಿ ರೇವಣ್ಣ ಅವರು ಸಕ್ರಿಯ ರಾಜಕೀಯದಲ್ಲಿದ್ದಾರೆ.
ಪ್ರಜ್ವಲ್ ಅವರ ತಾತ, ಮಾಜಿ ಪ್ರಧಾನಿ ದೇವೇಗೌಡ ಅವರು ಪ್ರಸ್ತುತ ರಾಜ್ಯಸಭಾ ಸದಸ್ಯರಾಗಿದ್ದಾರೆ. ಪ್ರಜ್ವಲ್ ಅವರ ಚಿಕ್ಕಪ್ಪ, ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಅವರು ಚನ್ನಪಟ್ಟಣ ಕ್ಷೇತ್ರದ ಶಾಸಕರಾಗಿದ್ದಾರೆ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ರಾಮನಗರ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದಾರೆ.
ದೇವೇಗೌಡರು ಮೇಲ್ಮನೆಯಲ್ಲಿ ರಾಜ್ಯಸಭಾ ಸದಸ್ಯರಾಗಿದ್ದರೂ, ಸಂಸತ್ತಿನ ಕೆಳಮನೆಯಲ್ಲಿ ಜೆಡಿಎಸ್ ಪ್ರತಿನಿಧಿಸಲು ಯಾವುದೇ ಸದಸ್ಯರಿಲ್ಲದಿರುವುದು ಪ್ರಾದೇಶಿಕ ಪಕ್ಷಕ್ಕೆ ಆತಂಕದ ವಿಚಾರವಾಗಿದೆ.












Click it and Unblock the Notifications