ಯಡಿಯೂರಪ್ಪ ಬದಲಾವಣೆ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸ್ಪಷ್ಟನೆ!
ಬೆಂಗಳೂರು, ಫೆ. 06: ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಬಳಿಕ ಮತ್ತೊಮ್ಮೆ ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಕುರಿತು ಚರ್ಚೆ ಆರಂಭವಾಗಿದೆ. ವಿಧಾನ ಕಲಾಪದ ಕೊನೆಯ ದಿನ ನಿನ್ನೆ (ಫೆ. 05) ವಿಧಾನಸಭೆಯಲ್ಲಿ ಮಾತನಾಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾವಣೆ ಮಾಡುತ್ತಾರೆ ಎಂದಿದ್ದರು. ಇದನ್ನು ನಾನು ಮಾತ್ರ ಹೇಳುತ್ತಿಲ್ಲ. ಯಡಿಯೂರಪ್ಪ ಅವರನ್ನು ಯುಗಾದಿ ಬಳಿಕ ಸಿಎಂ ಸ್ಥಾನದಿಂದ ಬದಲಾಯಿಸುತ್ತಾರೆ ಎಂದು ಬಿಜೆಪಿ ಶಾಸಕರೇ ಹೇಳುತ್ತಿದ್ದಾರೆ ಎಂದಿದ್ದರು. ತಮ್ಮ ಹೇಳಿಕೆಗೆ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೆಸರನ್ನು ಸಿದ್ದರಾಮಯ್ಯ ಅವರು ಉಲ್ಲೇಖಿಸಿದ್ದರು.
ಇದೀಗ ಸಿದ್ದರಾಮಯ್ಯ ಅವರು ಹೇಳಿಕೆ ಕೊಟ್ಟ ಮರು ದಿನವೇ ಮತ್ತೆ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಕುರಿತು ಚರ್ಚೆ ಶುರುವಾಗಿದೆ. ಬೆಂಗಳೂರಿನಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ರಾಜ್ಯದಲ್ಲಿ ಬಿಜೆಪಿ ನಾಯಕತ್ವದ ಕುರಿತು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಪ್ರಹ್ಲಾದ್ ಜೋಶಿ ಹೇಳಿದ್ದೇನು? ಮುಂದಿದೆ ಸಂಪೂರ್ಣ ವಿವರ.
ಯಡಿಯೂರಪ್ಪ ಬದಲಾವಣೆ?
ರಾಜ್ಯ ಬಿಜೆಪಿಯಲ್ಲಿನ ಬೆಳವಣಿಗೆಗಳು, ಶಾಸಕರ ಹೇಳಿಕೆಗಳ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಮಾತನಾಡಿದ್ದಾರೆ. ಸಿಎಂ ಸ್ಥಾನದಿಂದ ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಲಾಗುತ್ತಿದೆ ಎಂಬ ಹೇಳಿಕೆಗಳನ್ನು ಬಿಜೆಪಿ ಶಾಸಕರೇ ಕೊಡುತ್ತಿದ್ದಾರೆ. ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ವಿಚಾರವಾಗಿ ಮಾತ್ರವಲ್ಲ. ನಾಯಕತ್ವ ಬದಲಾವಣೆ ಆಗಬೇಕು ಎಂಬ ಕೂಗುಗಳು ಬಿಜೆಪಿ ವಲಯದಿಂದಲೇ ಕೇಳಿ ಬರುತ್ತಿವೆ. ಇದೇ ಸಮಯದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಮಹತ್ದದ ಮಾತನ್ನಾಡಿದ್ದಾರೆ.
ಪ್ರಲ್ಹಾದ್ ಜೋಶಿ ಮಾಹಿತಿ
ನಾಯಕತ್ವ ಬದಲಾವಣೆ ಮಾಡುವುದಾದರೇ ನಿಮಗೆ (ಮಾಧ್ಯಮದವರಿಗೆ) ಹೇಳಿಯೇ ಮಾಡುತ್ತೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಬೆಂಗಳೂರಿನಲ್ಲಿ ಹೇಳಿದ್ದಾರೆ. ಆದರೆ ಸದ್ಯಕ್ಕಂತೂ ಯಾವುದೇ ಬದಲಾವಣೆ ಇಲ್ಲ. ಸಿಎಂ ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರದ ಆಡಳಿತ ಚವೆನ್ನಾಗಿದೆ. ಹೀಗಾಗಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಯಾರೋ ಒಬ್ಬರು ಹೇಳಿಕೆ ಕೊಡುತ್ತಿದ್ದಾರೆ ಎಂದು ಹೆಸರು ಹೇಳದೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಲ್ಲೇಖಿಸಿದರು.
ಶಾಸಕ ಯತ್ನಾಳ್ ಮೇಲೆ ಕ್ರಮ?
ನಾಯಕತ್ವದ ಬಗ್ಗೆ ಹೇಳಿಕೆ ಕೊಡುತ್ತಿರುವುವುದಕ್ಕೆ ಸಂಬಂಧಿಸಿದಂತೆ ರಾಜ್ಯಾಕ್ಷ ಕಟೀಲ್ ಹಾಗೂ ಸಂಬಂಧಿಸಿದ ನಾಯಕರು ಗಮನಿಸುತ್ತಿದ್ದಾರೆ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಇವತ್ತು ಕೂಡ ಸ್ಪಷ್ಟನೆ ನೀಡಿದ್ದಾರೆ. ಅವರ ಹೇಳಿಕೆ ಬಗ್ಗೆ ಕೇಂದ್ರದ ವರಿಷ್ಠರು ಗಮನಿಸುತ್ತಿದ್ದಾರೆ ಎಂದು ಯತ್ನಾಳ್ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಯಾವುದೇ ಶಾಸಕರು ಸಮಸ್ಯೆಗಳಿದ್ದರೆ, ನೋವಿದ್ದರೆ ಸಿಎಂ ಯಡಿಯೂರಪ್ಪ ಅವರೊಂದಿಗೆ ಜೊತೆ ಹೇಳಿಕೊಳ್ಳಿ ಎಂದು ಇದೇ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಸಲಹೆ ನೀಡಿದ್ದಾರೆ.
ಇಲ್ಲಿ ಆಗದಿದ್ದರೆ ದೆಹಲಿಗೆ ಬನ್ನಿ
ಸಿಎಂ ಯಡಿಯೂರಪ್ಪ ಅವರೊಂದಿಗೆ ಮಾತನಾಡಿದ ಬಳಿಕವೂ ನಿಮ್ಮ ಸಮಸ್ಯೆ ಪರಿಹಾರ ಆಗದಿದ್ರೆ ದೆಹಲಿಗೆ ಬಂದು ಕೇಂದ್ರದ ನಾಯಕರ ಜೊತೆ ಮಾತನಾಡಿ. ಆದರೆ ಬಹಿರಂಗವಾಗಿ ಎಲ್ಲಿಯೂ ಹೇಳಿಕೆ ಕೊಡಬೇಡಿ ಎಂದು ಪ್ರಲ್ಹಾದ್ ಜೋಶಿ ಅವರು ಸೂಚನೆ ನೀಡಿದ್ದಾರೆ.
ರಾಜ್ಯದ ಒಬ್ಬ ನಾಯಕರು ಮಾತಾಡಿರೋದನ್ನು ಕೇಂದ್ರ ಬಿಜೆಪಿ ಶಿಸ್ತು ಸಮಿತಿ ಗಮನಿಸುತ್ತಿದೆ. ಶೀಘ್ರದಲ್ಲೇ ಈ ಬಗ್ಗೆ ಒಂದು ನಿರ್ಧಾರಕ್ಕೆ ಬರಲಿದೆ ಎಂದು ಬಸನಗೌಡ ಪಾಟೀಲ್ ಅವರ ಕುರಿತು ಪರೋಕ್ಷವಾಗಿ ಹೇಳಿದ್ದಾರೆ.