ಪ್ರಶಾಂತ್ ಮಾಡಾಳ್ ಲಂಚ ಪ್ರಕರಣ; ಇಬ್ಬರು ತನಿಖಾಧಿಕಾರಿ ಬದಲಾವಣೆ!
ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿರುವ ಪ್ರಶಾಂತ್ ಮಾಡಾಳ್ ಲಂಚ ಪ್ರಕರಣದ ಇಬ್ಬರು ತನಿಖಾಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು, ಮಾರ್ಚ್ 07; ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್ಡಿಎಲ್) ಟೆಂಡರ್ಗೆ ಲಂಚ ಪಡೆಯುವಾಗ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಲೋಕಾಯಕ್ತರ ಕೈಗೆ ಸಿಕ್ಕಿಬಿದಿದ್ದಾರೆ. ರಾಜ್ಯಾದ್ಯಂತ ಈ ಪ್ರಕರಣ ಭಾರೀ ಚರ್ಚೆಗೆ ಕಾರಣವಾಗಿದೆ. ಪ್ರಕರಣದ ತನಿಖೆ ಪ್ರಗತಿಯಲ್ಲಿರುವಾಗಲೇ ಇಬ್ಬರು ತನಿಖಾಧಿಕಾರಿಗಳ ವರ್ಗಾವಣೆಯಾಗಿದೆ.
ಪ್ರಶಾಂತ್ ಮಾಡಾಳ್ 14 ದಿನಗಳ ನ್ಯಾಯಾಂಗ ಬಂಧನದಲ್ಲಿದ್ದಾರೆ. ಸೋಮವಾರ ಲೋಕಾಯುಕ್ತ ಪೊಲೀಸರು ಪ್ರಶಾಂತ್ ಮಾಡಾಳ್ ಮತ್ತು ಇತರ ಆರೋಪಿಗಳನ್ನು 7 ದಿನಗಳ ಕಾಲ ವಶಕ್ಕೆ ನೀಡುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ. ಪ್ರಕರಣದ ಮೊದಲ ಆರೋಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಾಪತ್ತೆಯಾಗಿದ್ದಾರೆ, ನಿರೀಕ್ಷಣಾ ಜಾಮೀನಿಗಾಗಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಇದೇ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ತನಿಖಾಧಿಕಾರಿಗಳನ್ನು ಬದಲಾವಣೆ ಮಾಡಿದ್ದಾರೆ. ಈ ಪ್ರಕರಣದ ತನಿಖಾಧಿಕಾರಿಯಾಗಿದ್ದ ಡಿವೈಎಸ್ಪಿ ಪ್ರಮೋದ್ ಕುಮಾರ್, ಇನ್ಸ್ಪೆಕ್ಟರ್ ಕುಮಾರಸ್ವಾಮಿಯನ್ನು ಬದಲಾವಣೆ ಮಾಡಲಾಗಿದೆ. ಪ್ರಕರಣದ ತನಿಖೆ ಪ್ರಗತಿಯಲ್ಲಿರುವಾಗ ತನಿಖಾಧಿಕಾರಿಗಳ ವರ್ಗಾವಣೆ ಕುತೂಹಲಕ್ಕೆ ಕಾರಣವಾಗಿದೆ.
ಡಿವೈಎಸ್ಪಿ ಅಂಥೋನಿ ಜಾನ್ ಮತ್ತು ಇನ್ಸ್ಪೆಕ್ಟರ್ ಬಾಲಾಜಿ ಬಾಬು ಅವರನ್ನು ಪ್ರಕರಣದ ತನಿಖಾಧಿಕಾರಿಗಳಾಗಿ ನೇಮಕ ಮಾಡಲಾಗಿದೆ. ಲೋಕಾಯುಕ್ತ ಪೊಲೀಸರು ಪ್ರಕರಣದ ಮೊದಲ ಆರೋಪಿ ಮಾಡಾಳ್ ವಿರೂಪಾಕ್ಷಪ್ಪಗೆ ತನಿಖೆಗೆ ಹಾಜರಾಗುವಂತೆ ನೋಟಿಸ್ ನೀಡಿದರೂ ಅವರು ಆಗಮಿಸಿಲ್ಲ. ಅವರನ್ನು ಬಂಧಿಸಲು ಸಹ ಪೊಲೀಸರಿಗೆ ಸಾಧ್ಯವಾಗಿಲ್ಲ. ಈ ಹಂತದಲ್ಲಿಯೇ ತನಿಖಾಧಿಕಾರಿ ಬದಲಾವಣೆ ಮಾಡಲಾಗಿದೆ.

ಕರ್ನಾಟಕ ಹೈಕೋರ್ಟ್ನಲ್ಲಿ ನಿರೀಕ್ಷಣಾ ಜಾಮೀನು ಕೋರಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಲೋಕಾಯುಕ್ತ ಪೊಲೀಸರು ದಾಖಲು ಮಾಡಿರುವ ಎಫ್ಐಆರ್ ರದ್ದುಗೊಳಿಸಬೇಕು ಎಂದು ಸಹ ಮತ್ತೊಂದು ಅರ್ಜಿ ಸಲ್ಲಿಕೆ ಮಾಡಿದ್ದಾರೆ. 40 ಲಕ್ಷ ರೂ. ಲಂಚ ಪಡೆಯುವಾಗ ಶಾಸಕರ ಪುತ್ರ ಪ್ರಶಾಂತ್ ಮಾಡಾಳ್ ಸಿಕ್ಕಿಬಿದ್ದಿದ್ದರು. ಬಳಿಕ ಅವರ ಮನೆ ಮೇಲೆ ದಾಳಿ ಮಾಡಿದಾಗ 6 ಕೋಟಿ ರೂ. ನಗದು ಹಣ ಪತ್ತೆಯಾಗಿತ್ತು.
ಮಾಡಾಳ್ ಕುಟುಂಬಕ್ಕೆ ಮಹತ್ವದ ದಿನ; ಮಾರ್ಚ್ 7ರ ಮಂಗಳವಾರ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕುಟುಂಬಕ್ಕೆ ಮಹತ್ವದ ದಿನವಾಗಿದೆ. ಕರ್ನಾಟಕ ಹೈಕೋರ್ಟ್ನಲ್ಲಿ ನಿರೀಕ್ಷಣಾ ಜಾಮೀನು, ಲೋಕಾಯುಕ್ತ ಪೊಲೀಸರು ದಾಖಲು ಮಾಡಿರುವ ಎಫ್ಐಆರ್ ರದ್ದು ಕೋರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಕೆ ಮಾಡಿರುವ ಅರ್ಜಿಯ ವಿಚಾರಣೆ ಇಂದು ನಡೆಯಲಿದೆ. ಜಾಮೀನು ಸಿಗದಿದ್ದರೆ ಅವರನ್ನು ಪೊಲೀಸರು ಬಂಧಿಸಬಹುದಾಗಿದೆ.
ಮತ್ತೊಂದು ಕಡೆ ಪ್ರಶಾಂತ್ ಮಾಡಾಳ್ ಸೇರಿದಂತೆ ಇತರ ಆರೋಪಿಗಳನ್ನು ತಮ್ಮ ವಶಕ್ಕೆ ನೀಡುವಂತೆ ಲೋಕಾಯುಕ್ತ ಪೊಲೀಸರು ಸಲ್ಲಿಕೆ ಮಾಡಿರುವ ಅರ್ಜಿಯ ವಿಚಾರಣೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಲ್ಲಿ ನಡೆಯಲಿದೆ. ಅಲ್ಲದೇ ಇದೇ ಕೋರ್ಟ್ನಲ್ಲಿ ಆರೋಪಿಗಳು ಸಲ್ಲಿಕೆ ಮಾಡಿರುವ ಜಾಮೀನು ಅರ್ಜಿಯೂ ಇದೆ. 7 ದಿನ ಪೊಲೀಸರ ವಶಕ್ಕೆ ನೀಡುವಂತೆ ಲೋಕಾಯುಕ್ತ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಲಂಚ ಪ್ರಕರಣ ಬಿಜೆಪಿಗೆ, ಸರ್ಕಾರಕ್ಕೆ ಮುಜುಗರ ತಂದಿದೆ. ಅಲ್ಲದೇ ಚನ್ನಗಿರಿ ಕ್ಷೇತ್ರದಲ್ಲಿ ಈ ಬಾರಿಯ ಚುನಾವಣೆ ಮೇಳೆ ಯಾವ ರೀತಿ ಪರಿಣಾಮ ಬೀರಲಿದೆ? ಎಂಬ ಲೆಕ್ಕಾಚಾರ ಆರಂಭವಾಗಿದೆ. ಮಾಡಾಳ್ ವಿರೂಪಾಕ್ಷಪ್ಪ ಬೆಂಬಲಿಗರು ಸೋಮವಾರ ಸಂಜೆ ಕ್ಷೇತ್ರದಲ್ಲಿ ಸಭೆ ನಡೆಸಿದ್ದಾರೆ. ನಡೆಯುತ್ತಿರುವ ಬೆಳವಣಿಗೆ, ಮುಂದೇನು? ಎಂದು ಚರ್ಚೆ ನಡೆಸಿದ್ದಾರೆ. ಈ ಪ್ರಕರಣದ ಬಳಿಕ ಹಾಲಿ ಶಾಸಕರಿಗೆ ಟಿಕೆಟ್ ಸಿಗಲಿದೆಯೇ?, ಒಂದು ವೇಳೆ ಟಿಕೆಟ್ ನೀಡದಿದ್ದರೆ ಅಭ್ಯರ್ಥಿ ಯಾರು? ಎಂಬ ಚರ್ಚೆ ಸಾಗಿದೆ.












Click it and Unblock the Notifications