ಪ್ರವೀಣ್ ನೆಟ್ಟಾರು ಹತ್ಯೆ: 21ನೇ ಆರೋಪಿಗಿಲ್ಲ ಜಾಮೀನು
ಬೆಂಗಳೂರು, ಮಾರ್ಚ್ 20: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಯುವ ಮೋರ್ಚಾದ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ 21ನೇ ಆರೋಪಿಯಾಗಿರುವ ಮೊಹಮ್ಮದ್ ಜಬೀರ್ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾ ಮಾಡಿದೆ.
ಜಬೀರ್ ತಮ್ಮ ಕಸ್ಟಡಿ ವಿಸ್ತರಣೆ ಮಾಡಿ ಡೀಫಾಲ್ಟ್ ಜಾಮೀನು ತಿರಸ್ಕರಿಸಿ ಎನ್ಐಎ ವಿಶೇಷ ನ್ಯಾಯಾಲಯವು 2023ರ ಫೆಬ್ರವರಿ 9ರಂದು ಮಾಡಿದ್ದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಶ್ರೀನಿವಾಸ್ ಹರೀಶ್ ಕುಮಾರ್ ಮತ್ತು ವಿಜಯಕುಮಾರ್ ಎ. ಪಾಟೀಲ್ ಅವರ ನೇತೃತ್ವದ ವಿಭಾಗೀಯ ಪೀಠವು ತಿರಸ್ಕರಿಸಿದೆ.

ವಿಶೇಷ ಕೋರ್ಟ್ ನಿರ್ಧಾರ ಸರಿ: 'ಕಸ್ಟಡಿ ವಿಸ್ತರಣೆ ಕೋರಿ ಎನ್ಐಎ ಮತ್ತು ಡೀಫಾಲ್ಟ್ ಜಾಮೀನು ಕೋರಿ ಅರ್ಜಿದಾರರು ಒಂದೇ ದಿನ ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ, ಎರಡೂ ಅರ್ಜಿಗಳನ್ನು ಎನ್ಐಎ ವಿಶೇಷ ನ್ಯಾಯಾಲಯ ಒಂದೇ ದಿನ ವಿಚಾರಣೆ ನಡೆಸಿದೆ. ಅರ್ಜಿದಾರರ ಕಸ್ಟಡಿ ವಿಸ್ತರಣೆ ಕೋರಿ ನಿರ್ದಿಷ್ಟ ಕಾರಣಗಳನ್ನು ಒಳಗೊಂಡ ಮನವಿಯನ್ನು ಎನ್ಐಎ ಸಲ್ಲಿಸಿದೆ. ಎನ್ಐಎ ಅರ್ಜಿಯನ್ನು ಪುರಸ್ಕರಿಸಿರುವುದರಿಂದ ಡೀಫಾಲ್ಟ್ ಜಾಮೀನು ಕೋರಿರುವ ಅರ್ಜಿದಾರರ ಕೋರಿಕೆಯನ್ನು ತಿರಸ್ಕರಿಸಲಾಗಿದೆ. ಅರ್ಜಿದಾರರ ಕಸ್ಟಡಿ ಪಡೆಯಲು ಸೂಕ್ತ ಮತ್ತು ನಿರ್ದಿಷ್ಟ ಕಾರಣ ನೀಡಲಾಗಿಲ್ಲ ಎಂದು ಅರ್ಜಿದಾರರು ಕೋರದೇ ಇರುವುದರಿಂದ ಅದನ್ನು ಪರಿಶೀಲನೆ ಮಾಡುವ ಅಗತ್ಯವಿಲ್ಲ' ಎಂದು ನ್ಯಾಯಾಲಯ ಆದೇಶದಲ್ಲಿ ವಿವರಿಸಿದೆ.
'ವಿಶೇಷ ಸರ್ಕಾರಿ ಅಭಿಯೋಜಕರ ಕಿರಿಯ ಸಹೋದ್ಯೋಗಿ ಹಾಜರಾಗಿ ತನಿಖಾಧಿಕಾರಿಯು ಆರೋಪಪಟ್ಟಿ ಸಲ್ಲಿಸಿಲ್ಲ. ಈ ಸಂಬಂಧ ಸೂಕ್ತ ಅರ್ಜಿ ಸಲ್ಲಿಸಲಾಗುವುದು. ಈ ಹಿನ್ನೆಲೆಯಲ್ಲಿ ಆರೋಪಿ ಜಬೀರ್ ಅವರ ಕಸ್ಟಡಿ ವಿಸ್ತರಿಸುವಂತೆ ಮೌಖಿಕವಾಗಿ ಕೋರಿದ್ದಾರೆ. ಅದರಂತೆ 2023ರ ಫೆಬ್ರವರಿ 8ರಂದು ಪ್ರಕರಣದ ವಿಚಾರಣೆ ನಡೆಸಲಾಗಿದೆ. ಹೀಗಾಗಿ, 2023ರ ಫೆಬ್ರವರಿ 7ರಂದು ನ್ಯಾಯಾಲಯದ ಮುಂದೆ ಹಾಜರಾಗಿ ಕಸ್ಟಡಿ ವಿಸ್ತರಣೆ ಕೋರಲು ಆ ವಕೀಲರಿಗೆ ಅವಕಾಶವಿಲ್ಲ ಎಂದು ಹೇಳಲಾಗದು' ಎಂದು ನ್ಯಾಯಾಲಯವು ಹೇಳಿದೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಆರೋಪಿ ಜಬೀರ್ ಅವರು 21ನೇ ಆರೋಪಿಯಾಗಿದ್ದು, ಅವರ ವಿರುದ್ಧ ಐಪಿಸಿ ಸೆಕ್ಷನ್ 302, ಶಸ್ತ್ರಾಸ್ತ್ರ ಕಾಯಿದೆ ಹಾಗೂ ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯಿದೆ ಸೆಕ್ಷನ್ಗಳಾದ 16, 18, 19 ಮತ್ತು 20ರ ಅಡಿ ಪ್ರಕರಣ ದಾಖಲಿಸಲಾಗಿದೆ.
2022 ನ.7ರಂದು ಜಬೀರ್ ಬಂಧನವಾಗಿದೆ. 2023ರಲ್ಲಿ 20 ಆರೋಪಿಗಳ ವಿರುದ್ಧ ಎನ್ಐಎ ಆರೋಪ ಪಟ್ಟಿ ಸಲ್ಲಿಸಿ, ಹೆಚ್ಚುವರಿ ತನಿಖೆಗೆ ಮನವಿ ಮಾಡಿತ್ತು. ಆದರೆ, ಜಬೀರ್ ಅವರ ವಿರುದ್ಧ ಯಾವುದೇ ಆರೋಪ ಪಟ್ಟಿ ಸಲ್ಲಿಸಿರಲಿಲ್ಲ. 90 ದಿನಗಳ ಬಂಧನ ಅವಧಿ ಮುಗಿದಿದ್ದರೂ ಎನ್ಐಎ ಆರೋಪ ಪಟ್ಟಿ ಸಲ್ಲಿಸಿರಲಿಲ್ಲ. ಎನ್ಐಎ ಕಸ್ಟಡಿ ವಿಸ್ತರಣೆಯನ್ನೂ ಕೋರಿರಲಿಲ್ಲ., ಅದೇ ದಿನ ಅರ್ಜಿದಾರರು ಡೀಫಾಲ್ಟ್ ಜಾಮೀನು ಕೋರಿದ್ದರು. ಇದನ್ನು ವಿಶೇಷ ನ್ಯಾಯಾಲಯ ತಿರಸ್ಕರಿಸಿತ್ತು. ಆ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.
ಪ್ರಕರಣದ ಹಿನ್ನೆಲೆ: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾದ ಕಾರ್ಯಕಾರಿ ಸಮಿತಿಯ ಸದಸ್ಯನಾಗಿದ್ದ ಪ್ರವೀಣ್ ನೆಟ್ಟಾರು, ಸುಳ್ಯ ತಾಲ್ಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಅಕ್ಷಯ ಫ್ರೆಶ್ ಚಿಕನ್ ಫಾರ್ಮ್ ಶಾಪ್ ಹೊಂದಿದ್ದರು.
2022ರ ಜುಲೈ 26ರಂದು ರಾತ್ರಿ 8.30ರ ವೇಳೆ ಅಂಗಡಿ ಮುಚ್ಚಿ ಮನೆಗೆ ಮೋಟಾರು ವಾಹನದಲ್ಲಿ ಹೋಗುತ್ತಿದ್ದಾಗ ಕೆಲ ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ನೆಟ್ಟಾರು ಮೇಲೆ ದಾಳಿ ನಡೆಸಿ, ಆತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ತೀವ್ರವಾಗಿ ಗಾಯಗೊಂಡಿದ್ದ ನೆಟ್ಟಾರು ಅವರನ್ನು ಪುತ್ತೂರಿನ ಪ್ರಗತಿ ಆಸ್ಪತ್ರೆಗೆ ದಾಖಲಿಸಲು ಆ್ಯಂಬುಲೆನ್ಸ್ನಲ್ಲಿ ಕರೆದೊಯ್ಯುವಾಗಲೇ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದರು.
ಘಟನೆ ಕುರಿತು ಪ್ರವೀಣ್ ಸ್ನೇಹಿತ ಮಧು ಕುಮಾರ್ ಬೆಳ್ಳಾರೆ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ನಡೆಯುತ್ತಿದ್ದ ವೇಳೆ ಪ್ರಕರಣವನ್ನು ಎನ್ಐಎಗೆ ವಹಿಸಿ 2022ರ ಆಗಸ್ಟ್ 3ರಂದು ಕೇಂದ್ರ ಸರ್ಕಾರ ಆದೇಶಿಸಿತ್ತು. 2022ರ ಆಗಸ್ಟ್ 4ರಂದು ಎನ್ಐಎ ತನಿಖಾಧಿಕಾರಿಗಳು ಪ್ರಕರಣವನ್ನು ಮತ್ತೆ ದಾಖಲಿಸಿಕೊಂಡಿದ್ದರು. ಬಳಿಕ ತನಿಖೆ ಮುಂದುವರಿಸಿ, ಆರೋಪಿಗಳನ್ನು ಬಂಧಿಸಿದ್ದರು.












Click it and Unblock the Notifications