ಕರ್ನಾಟಕದಲ್ಲಿ ಎರಡನೇ ಸುತ್ತಿನ ಲಸಿಕೆ ಡ್ರೈ ರನ್; ಏನೆಲ್ಲಾ ತಯಾರಿಯಾಗಿದೆ?
ಬೆಂಗಳೂರು, ಜನವರಿ 7: ರಾಜ್ಯದ 263 ಕಡೆಗಳಲ್ಲಿ ಲಸಿಕೆ ವಿತರಣೆಯ ತಾಲೀಮು (ಡ್ರೈ ರನ್) ನಡೆಯಲಿದೆ. ಲಸಿಕೆ ಬಂದ ಬಳಿಕ ವಿತರಣೆಯ ಕಾರ್ಯ ಜನಾಂದೋಲನದಂತೆ ನಡೆಯಬೇಕಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರೊಂದಿಗೆ ಗುರುವಾರ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಲಸಿಕೆಯ ವಿತರಣೆಗೆ ಸಿದ್ಧತೆ, ಕೇಂದ್ರ ಸರ್ಕಾರದಿಂದ ಬೇಕಿರುವ ಸಹಾಯದ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿದೆ. ಜನವರಿ 8ರಂದು ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಮೂರು ಕಡೆ ಲಸಿಕೆ ವಿತರಣೆಯ ತಾಲೀಮು ನಡೆಯಬೇಕಿತ್ತು. ಆದರೆ ನಮ್ಮ ರಾಜ್ಯದಲ್ಲಿ ಪ್ರತಿ ಜಿಲ್ಲೆಯಲ್ಲಿ ಏಳು ಕಡೆಗಳಲ್ಲಿ ತಯಾರಿ ಮಾಡಿಕೊಳ್ಳಲಾಗಿದೆ ಎಂದರು. ಮುಂದೆ ಓದಿ...
263 ಪ್ರದೇಶಗಳಲ್ಲಿ ಲಸಿಕೆ ವಿತರಣೆ
ಪ್ರತಿ ಜಿಲ್ಲೆಯ ಏಳು ಕಡೆ, 263 ಪ್ರದೇಶಗಳಲ್ಲಿ ಲಸಿಕೆ ವಿತರಣೆ ನಡೆಯಲಿದೆ. 24 ಜಿಲ್ಲಾಸ್ಪತ್ರೆ, 20 ಮೆಡಿಕಲ್ ಕಾಲೇಜು, 43 ತಾಲೂಕು ಆಸ್ಪತ್ರೆ, 31 ಸಮುದಾಯ ಆರೋಗ್ಯ ಕೇಂದ್ರ, 87 ಪ್ರಾಥಮಿಕ ಆರೋಗ್ಯ ಕೇಂದ್ರ, 30 ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, 28 ಖಾಸಗಿ ಆರೋಗ್ಯ ಕೇಂದ್ರಗಳಲ್ಲಿ ತಾಲೀಮು ನಡೆಯಲಿದೆ ಎಂದು ತಿಳಿಸಿದರು.
ಜನವರಿ 8ಕ್ಕೆ ಕೊರೊನಾ ಲಸಿಕೆಯ ಎರಡನೇ ಡ್ರೈ ರನ್
ಕೇಂದ್ರದಿಂದ ರಾಜ್ಯಕ್ಕೆ ಅಗತ್ಯ ಸಾಮಗ್ರಿಗಳ ವಿತರಣೆ
ಕೇಂದ್ರ ಸರ್ಕಾರ 24 ಲಕ್ಷ ಸಿರಿಂಜುಗಳನ್ನು ಕಳುಹಿಸಿಕೊಟ್ಟಿದೆ. ಇವುಗಳನ್ನು ಎಲ್ಲ ಜಿಲ್ಲೆಗಳಿಗೆ ಕಳುಹಿಸಿಕೊಡಲಾಗಿದೆ. ರಾಜ್ಯದಲ್ಲಿ 10 ವಾಕ್ - ಇನ್ ಕೂಲರ್, 4 ವಾಕ್ -ಇನ್ ಫ್ರೀಜರ್, 3,201 ಐಎಲ್ ಆರ್, 3039 ಡೀಪ್ ಫ್ರೀಜರ್, 3,312 ಕೋಲ್ಡ್ ಬಾಕ್ಸ್, 46,591 ಲಸಿಕೆ ಕ್ಯಾರಿಯರ್, 2,25,749 ಐಸ್ ಪ್ಯಾಕ್ ಲಭ್ಯವಿದೆ. ಕೇಂದ್ರ ಸರ್ಕಾರ 225 ಲೀಟರ್ ಸಾಮರ್ಥ್ಯದ 64 ಐಎಲ್ ಆರ್ ಗಳನ್ನು ಕಳುಹಿಸಿಕೊಟ್ಟಿದೆ. ಇನ್ನೂ 2 ವಾಕ್ - ಇನ್ ಕೂಲರ್, 1 ವಾಕ್ - ಇನ್ ಫ್ರೀಜರ್ ಕಳುಹಿಸಿಕೊಡುವುದಾಗಿ ಕೇಂದ್ರ ತಿಳಿಸಿದೆ ಎಂದು ಮಾಹಿತಿ ನೀಡಿದರು.
6.30 ಲಕ್ಷ ಸಿಬ್ಬಂದಿ ಹೆಸರು ನೋಂದಣಿ
ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 6.30 ಲಕ್ಷ ಸಿಬ್ಬಂದಿ ಲಸಿಕೆ ವಿತರಣೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ. ಇನ್ನೂ ನೋಂದಣಿ ಮಾಡಿಸುವುದಾದರೆ ಬರಬಹುದು. 1 ಕೋಟಿ ಲಸಿಕೆಗಳನ್ನು ಕೇಂದ್ರ ಸರ್ಕಾರ ನಾನಾ ರಾಜ್ಯಗಳಿಗೆ ನೀಡಲಿದೆ. ಪೊಲೀಸರು, ಆರೋಗ್ಯ ಸಿಬ್ಬಂದಿ, ರಕ್ಷಣಾ ಸಿಬ್ಬಂದಿ, ಕೊರೊನಾ ನಿಯಂತ್ರಣದಲ್ಲಿ ಕಾರ್ಯಪ್ರವೃತ್ತರಾಗಿರುವವರಿಗೆ ಲಸಿಕೆ ಮೊದಲಿಗೆ ದೊರೆಯಲಿದೆ ಎಂದು ತಿಳಿಸಿದರು.
ಉತ್ತರ ಕನ್ನಡ; 6 ಕಡೆ ಶುಕ್ರವಾರ ಕೋವಿಡ್ ಲಸಿಕೆ ಡ್ರೈ ರನ್
ಜನವರಿ 17ರಿಂದ ಪೋಲಿಯೋ ಲಸಿಕೆ ವಿತರಣೆ
ಲಸಿಕೆಯಿಂದ ಯಾವುದೇ ಅಪಾಯವಿಲ್ಲ. ಇದರಿಂದಾಗಿ ಜನರಿಗೆ ಅನುಕೂಲವಾಗುತ್ತದೆ. ಎಲ್ಲರೂ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ಸಚಿವರು ಸಲಹೆ ನೀಡಿದ್ದಾರೆ. ಜನವರಿ 17 ರಂದು ಪೋಲಿಯೋ ಲಸಿಕೆ ವಿತರಣೆ ಕಾರ್ಯ ನಡೆಯಲಿದೆ. ಒಟ್ಟು 65 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಉದ್ದೇಶವಿದೆ ಎಂದು ತಿಳಿಸಿದರು.
ಹಕ್ಕಿ ಜ್ವರ ಪ್ರಕರಣಗಳ ಕುರಿತು ಮಾತನಾಡಿ, ದಕ್ಷಿಣ ಕನ್ನಡದಲ್ಲಿ 6 ಕಾಗೆಗಳು ಸಾವನ್ನಪ್ಪಿದ್ದು, ಮಾದರಿ ಪರೀಕ್ಷೆಗೆ ಕಳುಹಿಸಲಾಗಿದೆ. ಹಕ್ಕಿಜ್ವರ ಬಾರದಂತೆ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದರು.
ಲಕ್ಷಾಂತರ ಮಕ್ಕಳು ಶಾಲೆಗೆ ಹೋಗುತ್ತಿರುವ ಸಮಯದಲ್ಲಿ ಕೊರೊನಾ ಬಗ್ಗೆ ವಿನಾಕಾರಣ ಭೀತಿ ಮೂಡಿಸಬಾರದು. ಸರ್ಕಾರ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿದೆ ಎಂದು ಭರವಸೆ ನೀಡಿದರು.