ಉಪ ಚುನಾವಣೆಗೆ ಸಿದ್ಧನಾಗುತ್ತಿದ್ದೇನೆ : ಪ್ರತಾಪ್ ಗೌಡ ಪಾಟೀಲ್
ಬೆಂಗಳೂರು, ಆಗಸ್ಟ್ 18 : "ನಾನು ಉಪ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇನೆ. ಕುಟುಂಬದವರನ್ನು ಚುನಾವಣೆಗೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ, ನಾನೇ ಸ್ಪರ್ಧೆ ಮಾಡುತ್ತೇನೆ" ಎಂದು ಮುಸ್ಕಿ ಕ್ಷೇತ್ರದ ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್ ಹೇಳಿದರು.
ಭಾನುವಾರ ಪ್ರತಾಪ್ ಗೌಡ ಪಾಟೀಲ್ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪರನ್ನು ಭೇಟಿ ಮಾಡಿದರು. ಬಳಿಕ ಮಾತನಾಡಿದ ಅವರು, "ಬಿಜೆಪಿ ಸೇರುವ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ" ಎಂದು ಸ್ಪಷ್ಟಪಡಿಸಿದರು.
"ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ಮೇಲೆ ನಾನು ಭೇಟಿ ಮಾಡಿರಲಿಲ್ಲ. ಇವತ್ತು ಭೇಟಿ ಮಾಡಿ ಅಭಿನಂದನೆ ತಿಳಿಸಿದ್ದೇನೆ. ಕ್ಷೇತ್ರದ ಸಮಸ್ಯೆ ಬಗ್ಗೆ ಮಾತಾಡಿದ್ದೇನೆ" ಎಂದು ತಿಳಿಸಿದರು.

"ನಾನು ಉಪಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇನೆ. ಕುಟುಂಬದವರನ್ನು ಚುನಾವಣೆಗೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ. ನಾನೇ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ" ಎಂದು ಪ್ರತಾಪ್ ಗೌಡ ಪಾಟೀಲ್ ಹೇಳಿದರು.
'ಅನರ್ಹರಾದರೆ ಚುನಾವಣೆಗೆ ಸ್ಪರ್ಧಿಸಬಾರದೆಂಬ ನಿಯಮ ಇಲ್ಲ. ಆದರೆ, ಸ್ಪೀಕರ್ ತಪ್ಪು ಆದೇಶ ಕೊಟ್ಟಿದ್ದಾರೆ. ನ್ಯಾಯಾಲಯದಲ್ಲಿ ನಮ್ಮ ಪರ ತೀರ್ಪು ಬರಲಿದೆ. ತೀರ್ಪು ಬಂದ ಬಳಿಕ ಎಲ್ಲ ಅನರ್ಹ ಶಾಸಕರೂ ಚರ್ಚಿಸಿ ಬಿಜೆಪಿ ಸೇರ್ಪಡೆ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ" ಎಂದರು.
2018ರ ಚುನಾವಣೆಯಲ್ಲಿ ಕಾಂಗ್ರೆಸ್ಸಿಂದ ಮಸ್ಕಿ ಕ್ಷೇತ್ರದಿಂದ ಚುನಾವಣಾ ಕಣಕ್ಕಿಳಿದು 60,387 ಮತಗಳನ್ನು ಪಡೆದು ಪ್ರತಾಪ್ ಗೌಡ ಪಾಟೀಲ್ ಗೆದ್ದಿದ್ದರು. ಆದರೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಕಾಂಗ್ರೆಸ್ ನಾಯಕರು ನೀಡಿದ ದೂರಿನ ಅನ್ವಯ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು. ಬಳಿಕ ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿತ್ತು.












Click it and Unblock the Notifications