Annamalai: ವಿಜಯೇಂದ್ರಗೆ ಅಧ್ಯಕ್ಷ ಸ್ಥಾನ- ಬಿಎಲ್ ಸಂತೋಷ್ ಶಿಷ್ಯ ಅಣ್ಣಾಮಲೈ ಏನಂದರು?
ಬೆಂಗಳೂರು, ನವೆಂಬರ್ 22: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿಎಸ್ ಯಡಿಯೂರಪ್ಪ ಅವರ ಮಗ, ಶಾಸಕ ಬಿವೈ ವಿಜಯೇಂದ್ರ ನೇಮಕವಾದ ಬೆನ್ನಲ್ಲೇ ಪಕ್ಷದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ಬಿಎಲ್ ಸಂತೋಷ್ ಆಪ್ತರಾದ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರು ವಿಜಯೇಂದ್ರ ನೇಮಕದ ಬಗ್ಗೆ ಹೇಳಿಕೆ ನೀಡಿದ್ದಾರೆ.
ಪಕ್ಷದ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿಎಸ್ ವಿಜಯೇಂದ್ರ ಅವರನ್ನು ಕರ್ನಾಟಕ ಘಟಕದ ಅಧ್ಯಕ್ಷರನ್ನಾಗಿ ನೇಮಿಸಿರುವುದನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ನವೆಂಬರ್ 30 ರಂದು ನಡೆಯುತ್ತಿರುವ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಿರುವ ಅಣ್ಣಾಮಲೈ ಸುದ್ದಿಗಾರರೊಂದಿಗೆ ಮಾತನಾಡಿ, ವಿಜಯೇಂದ್ರ ಅವರು ರಾಜ್ಯ ಪಕ್ಷದ ಮುಖ್ಯಸ್ಥರಾಗುವ ಮೊದಲು ಹಲವು ವರ್ಷಗಳ ಕಾಲ ಪಕ್ಷಕ್ಕಾಗಿ ದುಡಿದಿದ್ದಾರೆ ಎಂದು ಹೇಳಿದ್ದಾರೆ.

ವಿಜಯೇಂದ್ರ ಅವರು ಯಡಿಯೂರಪ್ಪ ಅವರ ಪುತ್ರ ಎಂಬುದು ಕೇವಲ ಕಾಕತಾಳೀಯ. ಪಕ್ಷದ ಕಾರ್ಯಕರ್ತರ ವಿಶ್ವಾಸ ಗಳಿಸಿದ್ದಾರೆ. ಬಹಳ ಕಾಲ ಯುವ ಮೋರ್ಚಾ ನಾಯಕರಾಗಿದ್ದರು. ಆದರೆ ಇಲ್ಲಿ ತೆಲಂಗಾಣ ಮತ್ತು ತಮಿಳುನಾಡಿನಲ್ಲಿ, ಪರಿವಾರ್ವಾದವು ಒಂದೇ ಕುಟುಂಬದ ಸದಸ್ಯರು ಸರ್ಕಾರದಲ್ಲಿ ಪ್ರಭಾವಿ ಮತ್ತು ಶಕ್ತಿಯುತ ಸ್ಥಾನಗಳನ್ನು ಹೊಂದಿರುವ ಮತ್ತು ರಾಜ್ಯವನ್ನು ನಿಯಂತ್ರಿಸುತ್ತಿದ್ದಾರೆ ಎಂದರು.
"ರಾಜ್ಯ ಪಕ್ಷದ ಮುಖ್ಯಸ್ಥರಾಗಲು ವಿಜಯೇಂದ್ರ ಅವರು ಪಕ್ಷದಲ್ಲಿ ಬಹಳ ಕಾಲ ಕೆಲಸ ಮಾಡಿದರು. ಅದು ಅತ್ಯಂತ ಪ್ರಜಾಸತ್ತಾತ್ಮಕ ರೀತಿಯಲ್ಲಿ ನಡೆದಿದೆ. ಕುಟುಂಬ ಆಡಳಿತವಿರುವ ರಾಜ್ಯಗಳಾದ ತೆಲಂಗಾಣ, ತಮಿಳುನಾಡುಗಳಲ್ಲಿ ಬೆರಳೆಣಿಕೆಯಷ್ಟು ಜನ ಪೊಲೀಸರಿಂದ ನಿಯಂತ್ರಿಸಲ್ಪಡುತ್ತಿದ್ದು ಅದು ರಾಜ್ಯಗಳ ಕಾನೂನು ಸುವ್ಯವಸ್ಥೆ ಮೇಲೆ ಪರಿಣಾಮ ಬೀರುತ್ತದೆ" ಎಂದು ಹೇಳಿದರು.
ವಿಜಯೇಂದ್ರ ನೇಮಕವನ್ನು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ಆಕ್ಷೇಪಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಆಪ್ತರೇ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬರುತ್ತಾರೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪ ಅವರ ಪ್ರಾಬಲ್ಯತೆ ಇರುವುದರಿಂದ ವಿಜಯೇಂದ್ರ ನೇಮಕಾತಿ ಯಶಸ್ವಿಯಾಗಿ ಆಯಿತು ಎಂದು ಚರ್ಚೆಗಳು ನಡೆದಿವೆ.

ಕಳೆದ ವಿಧಾನಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕ ಸ್ಥಾನ 6 ತಿಂಗಳಿನಿಂದ ಖಾಲಿ ಉಳಿದಿತ್ತು. ಇದು ಬಜೆಪಿ ಪಕ್ಷಕ್ಕೆ ಮುಜುಗರದ ಸಂಗತಿಯೂ ಆಗಿತ್ತು. ಹೀಗಾಗಿ ನೇಮಕಾತಿಯಲ್ಲಿ ಮೊದಲೇ ನಿರ್ಧರಿಸಿದಂತೆ ಜಾತಿ ಸಮೀಕರಣದ ಲೆಕ್ಕಾಚಾರಗಳು ಮುನ್ನಲೆಗೆ ಬಂದು ರಾಜ್ಯಾಧ್ಯಕ್ಷ ಸ್ಥಾನವನ್ನು ಲಿಂಗಾಯತ ಸಮುದಾಯಕ್ಕೆ ನೀಡಿದರೇ ವಿಪಕ್ಷ ನಾಯಕ ಸ್ಥಾನವನ್ನು ಒಕ್ಕಲಿಗ ಸಮುದಾಯಕ್ಕೆ ನೀಡಲಾಗಿದೆ. ಅದರಂತೆ ಲಿಂಗಾಯತ ಸಮುದಾಯದ ಬಿವೈ ವಿಜಯೇಂದ್ರ ರಾಜ್ಯಾಧ್ಯಕ್ಷರಾದರೆ, ವಿಪಕ್ಷ ನಾಯಕರನಾಗಿ ಒಕ್ಕಲಿಗ ಸಮುದಾಯದ ಆರ್ ಅಶೋಕ್ ನೇಮಕವಾಗಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಪಕ್ಷ ಸಂಘಟನೆ ಅಗತ್ಯವಾಗಿರುವುದರಿಂದ ಇದಕ್ಕೆ ಬಿಎಸ್ ಯಡಿಯೂರಪ್ಪ ಅವರ ಪಾತ್ರವೂ ದೊಡ್ಡದಿದೆ. ಹಾಗಾಗಿ ಅವರನ್ನು ಮತ್ತೆ ಬಳಸಿಕೊಳ್ಳುವ ತಂತ್ರವಾಗಿ ಅವರ ಮಗನಾದ ಬಿವೈ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನವನ್ನು ನೀಡಲಾಗಿದೆ ಎಂದು ಮಾತುಗಳು ಕೇಳಿ ಬಂದಿವೆ.
ವಿಧಾನಸಭೆಗೂ ಮುನ್ನವೇ ಬಿಎಸ್ ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಲಾಗಿದೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದ್ದವು, ಇದಕ್ಕೆ ಬಿಜೆಪಿ ರಾಷ್ಟ್ರ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಎಂದು ಎಲ್ಲರೂ ಮಾತನಾಡಿಕೊಳ್ಳ ತೊಡಗಿದರು. ಹೀಗಾಗಿ ಮೇ ನಲ್ಲಿ ನಡೆದ ಅಸೆಂಬ್ಲಿ ಚುನಾವಣೆಯಲ್ಲಿ ಪಕ್ಷ ಹೀನಾಯವಾಗಿ ಸೋಲೊಪ್ಪಿಕೊಳ್ಳಬೇಕಾಯಿತು. ಇದರಿಂದ ಬುದ್ದಿ ಬಂದಂತೆ ಕಂಡ ಹೈಕಮಾಂಡ್ ಬಿಎಸ್ ಯಡಿಯೂರಪ್ಪ ಅವರನ್ನು ಮತ್ತೆ ಮುನ್ನೆಲೆಗೆ ತಂದು ಅವರ ಕೃಪಾಕಟಾಕ್ಷ ಬೇಡಬೇಕಾಯಿತು.












Click it and Unblock the Notifications