ಚಿಕ್ಕಬಳ್ಳಾಪುರದಲ್ಲಿ ಮೊಯ್ಲಿ ವಿರುದ್ಧ ಎಚ್ಡಿಕೆ?
ಬೆಂಗಳೂರು, ಮಾ. 17 : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಹೌದು. ಇಂತಹ ಸುದ್ದಿ ಬೆಂಗಳೂರು ಮತ್ತು ಚಿಕ್ಕಬಳ್ಳಾಪುರ ಜೆಡಿಎಸ್ ವಲಯದಲ್ಲಿ ಹಬ್ಬಿದೆ. ಪಕ್ಷದ ಕಾರ್ಯಕರ್ತರು ಸಹ ಕುಮಾರಸ್ವಾಮಿ ಅವರು ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರಂತೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಈಗಾಗಲೇ ಲೋಕಸಭೆ ಚುನಾವಣೆಗೆ ಕುಟುಂಬದಿಂದ ತಾವು ಮಾತ್ರ ಸ್ಪರ್ಧಿಸುವುದು ಎಂದು ಘೋಷಿಸಿದ್ದಾರೆ. ಆದರೆ, ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಆದ್ದರಿಂದ ಕುಮಾರಸ್ವಾಮಿ ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸಲು ಚಿಂತನೆ ನಡೆಸುತ್ತಿದ್ದಾರೆ. [ಜೆಡಿಎಸ್ ಪಟ್ಟಿ]

ಚಿಕ್ಕಬಳ್ಳಾಪುರ ಕೇಂದ್ರ ಸಚಿವ ಎಂ.ವೀರಪ್ಪ ಮೊಯ್ಲಿ ಅವರ ಕ್ಷೇತ್ರ. ಈ ಬಾರಿಯು ಅವರು ಚುನಾವಣೆ ಕಣಕ್ಕೆ ಧುಮುಕಿದ್ದಾರೆ. ಇನ್ನು ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಚಿವ ಬಚ್ಚೇಗೌಡ ಮತ್ತು ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಕೆ.ಅರ್ಕೇಶ್ ಸ್ಪರ್ಧಿಸುತ್ತಾರೆ. ಜೆಡಿಎಸ್ ಕ್ಷೇತ್ರಕ್ಕೆ ಇನ್ನೂ ಅಭ್ಯರ್ಥಿಯನ್ನು ಘೋಷಿಸಿಲ್ಲ. [ಕರ್ನಾಟಕ ಆಮ್ ಆದ್ಮಿ ಅಭ್ಯರ್ಥಿಗಳ ಪರಿಚಯ]
ಮೊದಲು ಅನಿತಾ ಕುಮಾರಸ್ವಾಮಿ ಅವರ ಹೆಸರು ಕ್ಷೇತ್ರಕ್ಕೆ ಕೇಳಿಬರುತ್ತಿತ್ತು. ಆದರೆ, ಈ ಕುರಿತು ಅಂತಿಮ ನಿರ್ಧಾರ ಕೈಗೊಂಡಿರಲಿಲ್ಲ. ಕ್ಷೇತ್ರದಲ್ಲಿ ವೀರಪ್ಪ ಮೊಯ್ಲಿ ವಿರೋಧಿ ಅಲೆ ಬೀಸುತ್ತಿದ್ದು, ಅದನ್ನು ಉಪಯೋಗಿಸಿಕೊಂಡು ಸುಲಭವಾಗಿ ಗೆಲುವು ಸಾಧಿಸಬಹುದು ಎಂಬುದು ಜೆಡಿಎಸ್ ಲೆಕ್ಕಾಚಾರ. [ಕಾಂಗ್ರೆಸ್ 2ನೇ ಪಟ್ಟಿ]
ಪಕ್ಷದ ಕಾರ್ಯಕರ್ತರು ಸಹ ಕುಮಾರಸ್ವಾಮಿ ಕ್ಷೇತ್ರದಿಂದ ಸ್ಪರ್ಧಿಸಿದರೆ ಗೆಲುವು ಸಾಧಿಸುತ್ತಾರೆ ಮತ್ತು ರಾಜ್ಯದಲ್ಲಿ ಪಕ್ಷದ ಶಕ್ತಿ ಹೆಚ್ಚುತ್ತದೆ ಎಂದು ಎಚ್ಡಿಕೆ ಅವರಿಗೆ ಒತ್ತಾಯ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಒತ್ತಾಯಕ್ಕೆ ಮಣಿದ ಕುಮಾರಸ್ವಾಮಿ ಸ್ಪರ್ಧೆಗೆ ಒಲವು ತೋರಿದ್ದಾರೆ. ದೇವೇಗೌಡರ ಬಳಿ ಚರ್ಚಿಸಿದ ನಂತರ ಈ ಬಗ್ಗೆ ಅವರು ಅಂತಿಮ ತೀರ್ಮಾನ ಘೋಷಿಸುವ ಸಾಧ್ಯತೆ ಇದೆ.
ಸಮಾವೇಶದಲ್ಲಿ ನಿರ್ಧಾರ ಪ್ರಕಟ : ಮಾ.19ರಂದು ಚಿಕ್ಕಬಳ್ಳಾಪುರದಲ್ಲಿ ಜೆಡಿಎಸ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಅಂದು ಕುಮಾರಸ್ವಾಮಿ ತಮ್ಮ ನಿರ್ಧಾರವನ್ನು ಪ್ರಕಟಿಸುವ ಸಾಧ್ಯತೆ ಇದೆ. ಒಂದು ವೇಳೆ ಅವರು ಸ್ಪರ್ಧಿಸುವುದಿಲ್ಲ ಎಂದಾದರೆ, ಬೇರೆ ಅಭ್ಯರ್ಥಿಯನ್ನು ಅಂದು ಘೋಷಿಸಬಹುದು ಎಂದು ಪಕ್ಷದ ಮೂಲಗಳು ತಿಳಿಸಿವೆ.











Click it and Unblock the Notifications