ಕರ್ನಾಟಕಕ್ಕೆ 7ನೇ ಬಾರಿ ಭೇಟಿ ನೀಡಲಿದ್ದಾರೆ ಪ್ರಧಾನಿ ಮೋದಿ
ಮೋದಿ ಅವರು ಶನಿವಾರ ತಮ್ಮ ಭೇಟಿಯ ಸಂದರ್ಭದಲ್ಲಿ ಕೆಆರ್ ಪುರಂ ವೈಟ್ಫೀಲ್ಸ್ ಮೆಟ್ರೋ ಉದ್ಘಾಟನೆ ಮಾಡಿ ಮೆಟ್ರೋ ರೈಲಿನಲ್ಲಿ ಅದರಲ್ಲಿ ಚಾಲನೆ ಮಾಡಲಿದ್ದಾರೆ.
ಬೆಂಗಳೂರು, ಮಾರ್ಚ್ 21: ಕರ್ನಾಟಕ ವಿಧಾನಸಭಾ ಚುನಾವಣೆ ಹತ್ತಿರ ಬಂದಿರುವ ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 25ರಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಈ ವರ್ಷದಲ್ಲಿ ಇದು ಅವರ ಏಳನೇ ಭೇಟಿಯಾಗಿರಲಿದೆ.
ಮಾರ್ಚ್ 25ರಂದು ಶನಿವಾರ ಮೋದಿ ಅವರು ತಮ್ಮ ಭೇಟಿಯ ಸಂದರ್ಭದಲ್ಲಿ ಕೆಆರ್ ಪುರಂ ವೈಟ್ಫೀಲ್ಸ್ ಮೆಟ್ರೋ ಉದ್ಘಾಟನೆ ಮಾಡಿ ಅಲ್ಪ ದೂರ ಸಂಚಾರ ಮಾಡಲಿದ್ದಾರೆ. ಇದರೊಂದಿಗೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಬಿಜೆಪಿ ಆಯೋಜಿಸಿರುವ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಮೇ ವೇಳೆಗೆ ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮುಂದಿನ ದಿನಗಳಲ್ಲಿ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ. ಮೋದಿ ಅವರು ತಮ್ಮ ಕರ್ನಾಟಕ ಪ್ರವಾಸದ ವೇಳೆ ಚಿಕ್ಕಬಳ್ಳಾಪುರ, ಬೆಂಗಳೂರು, ದಾವಣಗೆರೆ ಜಿಲ್ಲೆಗಳಲ್ಲಿ ಆಯೋಜಿಸಿರುವ ಕಾರ್ಯಕ್ರಮಗಳಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ.
ಅಧಿಕೃತ ಪ್ರಕಟಣೆಯ ಪ್ರಕಾರ, ಶನಿವಾರ ಬೆಳಗ್ಗೆ ಆಗಮಿಸುವ ಪ್ರಧಾನಿ ಮೋದಿಯವರು ಹೆಲಿಕಾಪ್ಟರ್ ಮೂಲಕ ಚಿಕ್ಕಬಳ್ಳಾಪುರಕ್ಕೆ ತೆರಳಿ ಶ್ರೀ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಉದ್ಘಾಟಿಸಲಿದ್ದಾರೆ. ನಂತರ ಬೆಂಗಳೂರಿನಲ್ಲಿ ವೈಟ್ಫೀಲ್ಡ್ ಕೆಆರ್ ಪುರಂ ಮೆಟ್ರೋ ಮಾರ್ಗವನ್ನು ಉದ್ಘಾಟಿಸಲಿದ್ದಾರೆ.

ನಂತರ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲು ದಾವಣಗೆರೆಗೆ ಪ್ರಧಾನಿ ಮೋದಿ ತೆರಳಲಿದ್ದಾರೆ. ನಂತರ ಶಿವಮೊಗ್ಗ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಲಿದ್ದಾರೆ. ಅಧಿಕೃತ ಪ್ರಕಟಣೆಯಲ್ಲಿ ಸಾರ್ವಜನಿಕ ಸಭೆಯ ವಿವರಗಳನ್ನು ಹಂಚಿಕೊಳ್ಳದಿದ್ದರೂ, ಇದು ಕರ್ನಾಟಕದಲ್ಲಿ ತನ್ನ ಚುನಾವಣಾ ತಯಾರಿಯ ಭಾಗವಾಗಿ ಆಡಳಿತಾರೂಢ ಬಿಜೆಪಿಯ ಮೆಗಾ ರ್ಯಾಲಿಯಾಗಿರಲಿದೆ.
8,000 ಕಿ.ಮೀ ಸಂಚರಿಸಿರುವ ವಿಜಯ ಸಂಕಲ್ಪ ಯಾತ್ರೆ ಮಾರ್ಚ್ 25ರಂದು ಮಧ್ಯ ಕರ್ನಾಟಕದ ಪ್ರಮುಖ ಜಿಲ್ಲಾ ಕೇಂದ್ರ ದಾವಣಗೆರೆಯಲ್ಲಿ ಸಂಪನ್ನಗೊಳ್ಳಲಿದೆ. ಇದರ ಅಂಗವಾಗಿ ನಡೆಯುವ ಮೆಗಾ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮಾರ್ಚ್ 1 ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ರಾಜ್ಯದ ನಾಲ್ಕು ಭಾಗಗಳಿಂದ ಆರಂಭವಾದ 20 ದಿನಗಳ ರಾಜ್ಯಾದ್ಯಂತ ಪ್ರವಾಸವನ್ನು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ರಾರಂಭಿಸಿದ್ದರು. ಬಿಜೆಪಿಯ ಹಲವಾರು ಹಿರಿಯ ನಾಯಕರು, ಬಿಜೆಪಿ ಆಡಳಿತವಿರುವ ಇತರ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕೇಂದ್ರ ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕರ್ನಾಟಕದಲ್ಲಿ ಚುನಾವಣಾ ತಯಾರಿ ಆರಂಭವಾದ ನಂತರ ಪ್ರಧಾನಿ ಪಾಲ್ಗೊಳ್ಳುವ ಮೊದಲ ಪಕ್ಷದ ಸಭೆ ಇದಾಗಿದೆ ಎಂದು ಹೇಳಲಾಗಿದೆ. ಪಕ್ಷದ ಪದಾಧಿಕಾರಿಗಳ ಪ್ರಕಾರ, ವಿಧಾನಸಭೆ ಚುನಾವಣೆಗೆ ಪೂರ್ವಭಾವಿಯಾಗಿ ಬಿಜೆಪಿ ಕಾರ್ಯಕರ್ತರಿಗೆ ಶಕ್ತಿ ತುಂಬುವ ಗುರಿಯನ್ನು ಈ ಕಾರ್ಯಕ್ರಮ ಹೊಂದಿದೆ ಎಂದು ತಿಳಿಸಿದ್ದಾರೆ.
ಈ ಬಾರಿ ಸಂಪೂರ್ಣ ಬಹುಮತದೊಂದಿಗೆ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಗುರಿ ಹೊಂದಿರುವ ಬಿಜೆಪಿ, ವಿಧಾನಸಭೆಯ ಒಟ್ಟು 224 ಸ್ಥಾನಗಳಲ್ಲಿ ಕನಿಷ್ಠ 150 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದೆ. ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ವೇ ಕಾಮಗಾರಿ ಅಪೂರ್ಣಗೊಂಡಿದ್ದರೂ ಮಾರ್ಚ್ 12ರಂದು ಉದ್ಘಾಟನೆಗೊಂಡಿತ್ತು. ಈಗ ಕೆಆರ್ಪುರಂ ಹಾಗೂ ವೈಟ್ಫೀಲ್ಡ್ ನಡುವೆಯೂ ನೇರಳ ಬಣ್ಣದ ಮಾರ್ಗ ಅಪೂರ್ಣಗೊಂಡಿದ್ದರೂ ಮೋದಿ ಉದ್ಘಾಟಿಸುತ್ತಿದ್ದಾರೆ ಎಂದು ಕಾಂಗ್ರೆಸ್ ವರಿಷ್ಠ ರಣದೀಪ್ ಸಿಂಗ್ ಸುರ್ಜೆವಾಲಾ ಆರೋಪಿಸಿದ್ದಾರೆ.












Click it and Unblock the Notifications